ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಓಮಿಕ್ರಾನ್ ರೂಪಾಂತರಿಯ ಆತಂಕ ದೇಶದಲ್ಲಿ ಹೆಚ್ಚುತ್ತಿರುವ ನಡುವೆಯೇ ಅಲ್ಲಿಂದ ಮುಂಬೈಗೆ ಬಂದಿರುವ ಪ್ರಯಾಣಿಕರೊಬ್ಬರಲ್ಲಿ ಕೊರೊನಾ ಸೋಂಕು ಬಂದಿರುವುದು ಮತ್ತಷ್ಟು ಆಂತಂಕಕ್ಕೆ ಕಾರಣವಾಗಿದೆ.
ನವೆಂಬರ್ 24 ರಂದು ದಕ್ಷಿಣ ಆಫ್ರಿಕಾದಿಂದ ದೆಹಲಿ ಮೂಲಕ ಆಗಮಿಸಿದ ಮುಂಬೈನ ಡೊಂಬಿವ್ಲಿಯ 32 ವರ್ಷದ ನಿವಾಸಿಗೆ ಕೊರೊನಾ ಸೋಂಕು ಬಂದಿರುವುದು ಧೃಡಪಟ್ಟಿದೆ. ಆದರೆ, ಅವರು ಕೊರೊನಾ ಓಮಿಕ್ರಾನ್ ರೂಪಾಂತರದ ಸೋಂಕಿಗೆ ಒಳಗಾಗಿದ್ದಾರೆಯೇ ಎಂಬುದನ್ನು ಆರೋಗ್ಯ ಅಧಿಕಾರಿಗಳು ಇನ್ನೂ ಖಚಿತಪಡಿಸಿಲ್ಲ.
“ಪ್ರಯಾಣಿಕರು ಕೇಪ್ ಟೌನ್ನಿಂದ ದುಬೈ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ದೆಹಲಿಯಲ್ಲಿ ಕೊರೊನಾ ಟೆಸ್ಟ್ಗೆ ನೀಡಿ, ಮುಂಬೈಗೆ ವಿಮಾನ ಹತ್ತಿದ್ದಾರೆ. ಮುಂಬೈಗೆ ಆಗಮಿಸಿದಾಗ ಅವರಿಗೆ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಅವರಲ್ಲಿ ಯಾವುದೇ ರೋಗ ಲಕ್ಷಣವಿರಲಿಲ್ಲ ಅವರ ಸ್ವತಃ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದರು. ನಂತರ, ಮುನ್ಸಿಪಲ್ ಕಾರ್ಪೊರೇಶನ್ ಅವರನ್ನು ಬೇರೆಡೆಗೆ ಕ್ವಾರಂಟೈನ್ ಮಾಡಿದೆ” ಎಂದು ಕಲ್ಯಾಣ್ ಡೊಂಬಿವಿಲಿ ಮುನ್ಸಿಪಲ್ ಕಾರ್ಪೊರೇಶನ್ (ಕೆಡಿಎಂಸಿ) ಮುಖ್ಯ ವೈದ್ಯಕೀಯ ಅಧಿಕಾರಿ ಪ್ರತಿಭಾ ಪನ್ಪಾಟೀಲ್ ಹೇಳಿದ್ದಾರೆ.
ಇದನ್ನೂ ಓದಿ: ಓಮಿಕ್ರಾನ್ ಆತಂಕ: ಹೆಚ್ಚಿನ ಪರೀಕ್ಷೆ, ಹಾಟ್ಸ್ಪಾಟ್ಗಳ ಮೇಲೆ ನಿಗಾ ಇರಿಸಲು ರಾಜ್ಯಗಳಿಗೆ ಕೇಂದ್ರದ ಸೂಚನೆ
ಕೆಡಿಎಂಸಿ ಆರೋಗ್ಯ ಅಧಿಕಾರಿಗಳು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದು, ವ್ಯಕ್ತಿಯ ಸಹ-ಪ್ರಯಾಣಿಕರ ಪತ್ತೆಗೆ ಪ್ರಯತ್ನಗಳು ನಡೆಸುತ್ತಿದ್ದಾರೆ.
ಇತ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಓಮಿಕ್ರಾನ್ ಬಗ್ಗೆ ರಾಜ್ಯದಲ್ಲಿ ಕಟ್ಟುನಿಟ್ಟನ ಕ್ರಮ ಕೈಗೊಳ್ಳುತ್ತಿರುವುದರ ಕುರಿತು ಮಾಹಿತಿ ನೀಡಿದ್ದಾರೆ. “ರಾಜ್ಯದಲ್ಲಿಯೂ ಓಮಿಕ್ರಾನ್ ಆತಂಕ ಹೆಚ್ಚಿದ್ದು, ಕಟ್ಟಿನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ದಕ್ಷಿಣ ಆಫ್ರಿಕಾ, ಹಾಂಕಾಂಗ್, ಬೊಟ್ಸ್ವಾನಾ ದೇಶಗಳಲ್ಲಿ ಹರಡುತ್ತಿರುವ ಸೋಂಕಿನ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಪ್ರಧಾನಿಯವರು ಕೋವಿಡ್ ರೂಪಾಂತರಿ ನಿಯಂತ್ರಣಕ್ಕೆ ಹಲವಾರು ನಿರ್ದೇಶನಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಇದುವರೆಗೂ ಹೊಸ ಪ್ರಬೇಧದ ಸೋಂಕಿನ ಪ್ರಕರಣ ಕಂಡುಬಂದಿಲ್ಲ” ಎಂದು ತಿಳಿಸಿದ್ದಾರೆ .
“ಹೊರ ದೇಶದಿಂದ ಆಗಮಿಸುವ ಜನರನ್ನು ತಪಾಸಣೆಗೆ ಒಳಪಡಿಸಿ ನೆಗಟಿವ್ ರಿಪೋರ್ಟ್ ಬಂದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡಲಾಗುವುದು. ಇಲ್ಲವಾದಲ್ಲಿ ಕಂಟೈನ್ಮೆಂಟ್ ಸ್ಥಳಕ್ಕೆ ಸ್ಥಳಾಂತರಿಸುವುದು. ವಿಶೇಷವಾಗಿ ಓಮಿಕ್ರಾನ್ ಹೊಸ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ದಕ್ಷಿಣ ಆಫ್ರಿಕಾ, ಹಾಂಕಾಂಗ್, ಬೊಟ್ಸ್ವಾನಾ ಈ ಮೂರು ದೇಶಗಳಿಂದ ನಗರಕ್ಕೆ ಪ್ರಯಾಣಿಕರ ಆಗಮನವನ್ನು ಸಂಪೂರ್ಣವಾಗಿ ನಿಷೇದಿಸಬೇಕೆನ್ನುವ ಬೇಡಿಕೆಯನ್ನು ಕೇಂದ್ರ ಸರ್ಕಾರದ ಮುಂದೆ ಇಡಲಾಗಿದೆ” ಎಂದು ತಿಳಿಸಿದ್ದಾರೆ.
“ರಾಜ್ಯಕ್ಕೆ ಕೇರಳದಿಂದ ಬರುವವರಿಂದ ಸೋಂಕು ಹರಡುತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಕೇರಳದಿಂದ ಬಂದಿರುವ ಅರೆವೈದ್ಯಕೀಯ ಸಿಬ್ಬಂದಿಗಳಲ್ಲಿ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇರಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮಡಿಕೇರಿ, ಚಾಮರಾಜನಗರ, ಮೈಸೂರು ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು. ಆರ್ ಟಿಸಿಪಿಆರ್ ಪರೀಕ್ಷೆ ನಡೆಸಿ ನೆಗಟಿವ್ ರಿಪೋರ್ಟ್ ಬಂದರೆ ಮಾತ್ರ ರಾಜ್ಯದೊಳಗೆ ಪ್ರವೇಶಕ್ಕೆ ಅನುಮತಿ ನೀಡಲಾಗುವುದು. ಕೇರಳ ರಾಜ್ಯದಿಂದ ಬರುವವರು ಎರಡೂ ಡೋಸ್ ಲಸಿಕೆ ಪಡೆದಿರಬೇಕು. RTPCR ಪರೀಕ್ಷೆಗಳನ್ನು ಹೆಚ್ಚಿಸಲು ಸೂಚನೆ ನೀಡಲಾಗಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.