ವಿಶ್ವದಲ್ಲಿ ’ಓಮಿಕ್ರಾನ್’ ಬಗ್ಗೆ ಹೆಚ್ಚುತ್ತಿರುವ ಆತಂಕದ ಮಧ್ಯೆಯೇ ರಾಜ್ಯದಲ್ಲಿಯೂ ಸೋಂಕು ನಿಯಂತ್ರಣಕ್ಕೆ ಕ್ರಮ ವಹಿಸುತ್ತಿದ್ದು, ಗಡಿ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
“ರಾಜ್ಯಕ್ಕೆ ಕೇರಳದಿಂದ ಬರುವವರಿಂದ ಸೋಂಕು ಹರಡುತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಕೇರಳದಿಂದ ಬಂದಿರುವ ಅರೆವೈದ್ಯಕೀಯ ಸಿಬ್ಬಂದಿಗಳಲ್ಲಿ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇರಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮಡಿಕೇರಿ, ಚಾಮರಾಜನಗರ, ಮೈಸೂರು ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು. ಆರ್ ಟಿಸಿಪಿಆರ್ ಪರೀಕ್ಷೆ ನಡೆಸಿ ನೆಗಟಿವ್ ರಿಪೋರ್ಟ್ ಬಂದರೆ ಮಾತ್ರ ರಾಜ್ಯದೊಳಗೆ ಪ್ರವೇಶಕ್ಕೆ ಅನುಮತಿ ನೀಡಲಾಗುವುದು. ಕೇರಳ ರಾಜ್ಯದಿಂದ ಬರುವವರು ಎರಡೂ ಡೋಸ್ ಲಸಿಕೆ ಪಡೆದಿರಬೇಕು. RTPCR ಪರೀಕ್ಷೆಗಳನ್ನು ಹೆಚ್ಚಿಸಲು ಸೂಚನೆ ನೀಡಲಾಗಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
“ಗಡಿ ಭಾಗಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಹೆಚ್ಚಿನ ಎಚ್ಚರಿಕೆ ನೀಡುವ ಬಗ್ಗೆ ಉತ್ತರ ನೀಡುತ್ತಾ, ಗಡಿಗಳನ್ನು ಸಂಪೂರ್ಣವಾಗಿ ತಪಾಸಣೆಗೆ ಒಳಪಡಿಸುವುದು. 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್ ಟಿ ಸಿಪಿಆರ್ ಪರೀಕ್ಷೆ ಮಾಡಿಸುವುದು ಹಾಗೂ ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್ ಟಿಸಿಪಿಆರ್ ಪರೀಕ್ಷೆ ಮಾಡಿಸಲು ಸೂಚನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಓಮಿಕ್ರಾನ್ ಆತಂಕ: ಹೆಚ್ಚಿನ ಪರೀಕ್ಷೆ, ಹಾಟ್ಸ್ಪಾಟ್ಗಳ ಮೇಲೆ ನಿಗಾ ಇರಿಸಲು ರಾಜ್ಯಗಳಿಗೆ ಕೇಂದ್ರದ ಸೂಚನೆ
“ದಕ್ಷಿಣ ಆಫ್ರಿಕಾ, ಹಾಂಕಾಂಗ್, ಬೊಟ್ಸ್ವಾನಾ ದೇಶಗಳಲ್ಲಿ ಹರಡುತ್ತಿರುವ ಸೋಂಕಿನ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಪ್ರಧಾನಿಯವರು ಕೋವಿಡ್ ರೂಪಾಂತರಿ ನಿಯಂತ್ರಣಕ್ಕೆ ಹಲವಾರು ನಿರ್ದೇಶನಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಇದುವರೆಗೂ ಹೊಸ ಪ್ರಬೇಧದ ಸೋಂಕಿನ ಪ್ರಕರಣ ಕಂಡುಬಂದಿಲ್ಲ. ಧಾರವಾಡ , ಮೈಸೂರು, ಬೆಂಗಳೂರಿನ ವಿದ್ಯಾರ್ಥಿ ಹಾಸ್ಟೆಲ್ ಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಹಾಸ್ಟೆಲ್ ಗಳನ್ನು ಕಂಟೈನ್ಮೆಂಟ್ ಮಾಡಿ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. SDM ಕಾಲೇಜನ ವೈದ್ಯರು, ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಹೊರರೋಗಿಗಳನ್ನು ನಿರ್ಬಂಧಿಸಲಾಗಿದೆ. ಮೈಸೂರಿನಲ್ಲಿಯೂ ಸೋಂಕು ಕಾಣಿಸಿಕೊಂಡಿರುವ ಜಾಗಗಳನ್ನು ಕಂಟೇನಮೆಂಟ್ ಮಾಡಿ ತೀವ್ರ ನಿಗಾ ವಹಿಸಲಾಗಿದೆ. ಕೋವಿಡ್ ಪರೀಕ್ಷೆ ಮಾತ್ರವಲ್ಲದೇ ಚಿಕಿತ್ಸೆಯನ್ನು ನೀಡಲು ಪ್ರಾರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.
“ಹೊರ ದೇಶದಿಂದ ಆಗಮಿಸುವ ಜನರನ್ನು ತಪಾಸಣೆಗೆ ಒಳಪಡಿಸಿ ನೆಗಟಿವ್ ರಿಪೋರ್ಟ್ ಬಂದರೆ ಮಾತ್ರ ನಗರ ಪ್ರವೇಶಕ್ಕೆ ಅನುಮತಿ ನೀಡುವುದು. ಇಲ್ಲವಾದಲ್ಲಿ ಕಂಟೈನ್ಮೆಂಟ್ ಸ್ಥಳಕ್ಕೆ ಸ್ಥಳಾಂತರಿಸುವುದು. ವಿಶೇಷವಾಗಿ ಓಮಿಕ್ರಾನ್ ಹೊಸ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಈ ಮೂರು ದೇಶಗಳಿಂದ ನಗರಕ್ಕೆ ಪ್ರಯಾಣಿಕರ ಆಗಮನವನ್ನು ಸಂಪೂರ್ಣವಾಗಿ ನಿಷೇದಿಸಬೇಕೆನ್ನುವ ಬೇಡಿಕೆಯನ್ನು ಕೇಂದ್ರ ಸರ್ಕಾರಕ್ಕೆ ಇಡಲಾಗಿದೆ” ಎಂದಿದ್ದಾರೆ.
ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲು ಕೇಂದ್ರದ ಅನುಮತಿಗೆ ಪತ್ರ ಬರೆಯಲಾಗಿದೆ. ಮಾಲ್, ಸಾರ್ವಜನಿಕ ಸ್ಥಳಗಳು, ಕಚೇರಿಗಳಲ್ಲಿ ಎಲ್ಲರಿಗೂ ಎರಡೂ ಡೋಸ್ ಆಗಿರಲೇಬೇಕು. ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವವರೂ ಕೂಡ ಎರಡು ಡೋಸ್ ಪಡೆದಿರಬೇಕು. ಮಾಲ್ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ರಾಜ್ಯದಲ್ಲಿ 80 ಲಕ್ಷ ಲಸಿಕೆ ಲಭ್ಯವಿದ್ದು, ಈಗಾಗಲೆ ಮೊದಲನೇ ಡೋಸ್ 91 ಲಕ್ಷವಾಗಿದೆ. ಡಿಸೆಂಬರ್ ಅಂತ್ಯದೊಳಗೆ 70% ರಷ್ಟು ಎರಡನೇ ಡೋಸ್ ನೀಡುವ ಗುರಿಯನ್ನು ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.