Homeಕರ್ನಾಟಕಕೋಮುವಾದಿಗಳು ಎಬ್ಬಿಸಿದ ವಿವಾದದ ಸುಳಿಯಲ್ಲಿ ಈದ್ಗಾ ಮೈದಾನದ ಬಯಲು

ಕೋಮುವಾದಿಗಳು ಎಬ್ಬಿಸಿದ ವಿವಾದದ ಸುಳಿಯಲ್ಲಿ ಈದ್ಗಾ ಮೈದಾನದ ಬಯಲು

- Advertisement -
- Advertisement -

(ಸೂಚನೆ: ಈ ವರದಿಯು ‘ನ್ಯಾಯಪಥ’ ವಾರಪತ್ರಿಕೆಯಲ್ಲಿ ಪ್ರಕಟವಾಗಿದೆ. ವರದಿ ಮುದ್ರಣವಾದ ಒಂದು ದಿನದ ನಂತರದಲ್ಲಿ ಬಿಬಿಎಂಪಿ ಪ್ರತಿಕ್ರಿಯೆ ನೀಡಿದ್ದು, ‘ಚಾಮರಾಜಪೇಟೆ ಈದ್ಗಾ ಮೈದಾನ ತನಗೆ ಸೇರಿಲ್ಲ’ ಎಂದು ಸ್ಪಷ್ಟನೆ ನೀಡಿದೆ.)

ಮಸೀದಿ ಮತ್ತು ಅನ್ಯ ಧರ್ಮೀಯರ ಪ್ರಾರ್ಥನಾ ಸ್ಥಳಗಳ ಕೆಳಗೆ ದೇವಾಲಯಗಳನ್ನು ದೇವರ ವಿಗ್ರಹಗಳನ್ನು ಹುಡುಕಿ ಒಂದು ಮಟ್ಟಕ್ಕೆ ಸಹಬಾಳ್ವೆಯಿಂದ ಬದುಕುತ್ತಿರುವ ಸಮಾಜಕ್ಕೆ ಕೋಮು ದ್ವೇಷ ಹಚ್ಚುವ ಪ್ರವೃತ್ತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇಲ್ಲದೇ ಇರುವ ವಿವಾದವನ್ನು ಸೃಷ್ಟಿಸಿ, ಸಮಾಜದಲ್ಲಿ ಅಶಾಂತಿ ವಾತಾವರಣ ಸೃಷ್ಟಿಸುವ ’ಫ್ರಿಂಜ್ ಎಲಿಮೆಂಟ್’ಗಳು ರಾರಾಜಿಸುತ್ತಿವೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿನ ಪುರಾತನ ಈದ್ಗಾ ಮೈದಾನಕ್ಕೂ ಈ ’ಫ್ರಿಂಜ್‌ಗಳು’ ಕೈಹಾಕಿರುವಂತಿದೆ.

ಚಾಮರಾಜಪೇಟೆಯ ಈದ್ಗಾ ಮೈದಾನದ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಕೆಲವು ಹಿಂದುತ್ವ ಸಂಘಟನೆಗಳು ಬಿಬಿಎಂಪಿಯಿಂದ ಸ್ಪಷ್ಟೀಕರಣ ಕೇಳಿದವು. ವಿಚಾರವಾದಿಗಳ ಹತ್ಯೆಗಳಲ್ಲಿ ಹೆಸರಿಸಲಾಗಿ ಆರೋಪ ಎದುರಿಸುತ್ತಿರುವ ಸನಾತನ ಸಂಸ್ಥೆ ಹಾಗೂ ಹಿಂದೂ ಜನಜಾಗೃತಿ ಸಮಿತಿ ಸಂಘಟನೆಗಳು ವಿವಾದ ಸೃಷ್ಟಿಗೆ ಮುಂದಾಗಿ, “ಈ ಆಟದ ಮೈದಾನ ಬಿಬಿಎಂಪಿಗೆ ಸೇರಿರುವುದರಿಂದ ತಮಗೂ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಬೇಕು” ಎಂದವು.

ಯಾರೋ ಬಂದು ಏನನ್ನೋ ಪ್ರತಿಪಾದಿಸುತ್ತಾರೆ. ಆದರೆ ಆಡಳಿತ ವರ್ಗವೂ ಇದೇ ಪ್ರತಿಪಾದನೆಯನ್ನು ಮಾಡಿದಾಗ ವಿಷಯ ಬೇರೊಂದು ಮಗ್ಗುಲಿಗೆ ಹೊರಳಿತು. “ಚಾಮರಾಜಪೇಟೆಯ ಈದ್ಗಾ ಮೈದಾನವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಸೇರಿದೆ. ಪಾಲಿಕೆಯ ದಾಖಲೆಗಳ ಪ್ರಕಾರ ಪೂರ್ವಾನುಮತಿ ಪಡೆದು ಎಲ್ಲ ಸಮುದಾಯದವರು ಈ ಮೈದಾನವನ್ನು ಬಳಸಬಹುದು” ಎಂದು ಬಿಬಿಎಂಪಿ ಹೇಳಿಬಿಟ್ಟಿದೆ.

ಬಿಬಿಎಂಪಿ ವಿಶೇಷ ಆಯುಕ್ತ ಡಾ.ಹರೀಶ್ ಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡುತ್ತಾ, “ಇದು ಬಿಬಿಎಂಪಿ ಆಸ್ತಿಯಾಗಿದ್ದು, ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತರು ಉಸ್ತುವಾರಿ ವಹಿಸಿಕೊಂಡಿದ್ದಾರೆ. ಆಟದ ಮೈದಾನದಲ್ಲಿ ವರ್ಷಕ್ಕೆ ಎರಡು ಬಾರಿ ಮುಸ್ಲಿಮರಿಗೆ ಪ್ರಾರ್ಥನೆ ಸಲ್ಲಿಸಲು ಈ ಸ್ಥಳವನ್ನು ನೀಡಬಹುದು ಎಂದು ನ್ಯಾಯಾಲಯದ ಆದೇಶವಿದೆ” ಎಂದು ತಿಳಿಸಿದ್ದಾರೆ.

“ನ್ಯಾಯಾಲಯದ ಆದೇಶದ ಪ್ರಕಾರ ಪಶ್ಚಿಮ ವಲಯ ಜಂಟಿ ಆಯುಕ್ತರ ಅನುಮತಿಯೊಂದಿಗೆ ಮುಸ್ಲಿಮರು ರಂಜಾನ್ ಮತ್ತು ಬಕ್ರೀದ್ ಸಮಯದಲ್ಲಿ ಪ್ರಾರ್ಥನೆಗಾಗಿ ಇಲ್ಲಿ ಸೇರುತ್ತಾರೆ” ಎಂದು ತಿಳಿಸಿದ್ದಾರೆ.

“ಪ್ರತಿ ವರ್ಷ ರಂಜಾನ್ ಮತ್ತು ಬಕ್ರೀದ್ ಸಮಯದಲ್ಲಿ, ಈ ಸ್ಥಳವು ಧಾರ್ಮಿಕ ಚಟುವಟಿಕೆಯ ಕೇಂದ್ರವಾಗುತ್ತದೆ. ಬಕ್ರೀದ್ ಸಮಯದಲ್ಲಿ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಮತ್ತು ಇತರ ಜಿಲ್ಲೆಗಳ ರೈತರು ಕುರಿ ಮತ್ತು ಮೇಕೆಗಳನ್ನು ಇಲ್ಲಿಗೆ ತಂದು ಮಾರುತ್ತಾರೆ. ಈ ಎರಡು ಸಂದರ್ಭಗಳನ್ನು ಹೊರತುಪಡಿಸಿ, ಇತರ ಚಟುವಟಿಕೆಗಳಿಗೆ ಅವಕಾಶ ನೀಡುವ ಬಗ್ಗೆ ಜಂಟಿ ಆಯುಕ್ತರು ನಿರ್ಧಾರ ತೆಗೆದುಕೊಳ್ಳಬಹುದು” ಎಂದು ಪಾಲಿಕೆ ಹೇಳಿತು.

ಈ ಜಾಗವನ್ನು ಬೇರೆ ಯಾವುದೇ ಉದ್ದೇಶಕ್ಕೆ ಬಳಸಲು ಸಿದ್ಧರಿರುವ ಯಾರಾದರೂ ಬಿಬಿಎಂಪಿಗೆ ಪ್ರಸ್ತಾವನೆಯನ್ನು ಕಳುಹಿಸಬಹುದು. ಅರ್ಜಿಯನ್ನು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಪಾಲಿಕೆ ತಿಳಿಸಿದೆ.

ಈ ಮೂಲಕ ಈ ಜಾಗ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಸೇರಿದ್ದೋ ಅಥವಾ ಬಿಬಿಎಂಪಿಗೆ ಸೇರಿದ್ದೋ ಎಂಬ ಪ್ರಶ್ನೆ ಎದ್ದಿದೆ. ವಿವಾದವನ್ನು ಸುಖಾಸುಮ್ಮನೆ ಹುಟ್ಟು ಹಾಕಲಾಗುತ್ತಿದೆಯೇ ಎಂಬ ಗುಮಾನಿಯೂ ಹುಟ್ಟಿಕೊಂಡಿದೆ.

ಚಾಮರಾಜಪೇಟೆಯ ಈದ್ಗಾ ಮೈದಾನ ಸರ್ವ ಜನಾಂಗದ ಶಾಂತಿಯ ತೋಟವಾಗಿತ್ತು ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತ ಲಿಯೋ ಎಫ್ ಸಾಲ್ಡಾನಾ. “ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಮತ್ತು ಆಡಳಿತಾಧಿಕಾರಿಗಳು ಒಂದು ಕ್ಷುಲ್ಲಕ ವಿಷಯವನ್ನು ಅನಾವಶ್ಯಕವಾಗಿ ಕದಡಿ ರಾಡಿ ಎಬ್ಬಿಸಿರುವ ತಮ್ಮ ಅಧೀನ ಅಧಿಕಾರಿಯ ವಿರುದ್ಧ ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳಬೇಕು. ಇದು ರಾಜ್ಯಾದ್ಯಂತ ದ್ವೇಷ ಮತ್ತು ಕೋಮುವಾದವನ್ನು ಹರಡುತ್ತಿರುವವರ ಬೇಡಿಕೆಗಳಿಗೆ ಪ್ರತಿಕ್ರಿಯೆಯಾಗಿರಬೇಕು” ಎಂದು ಆಗ್ರಹಿಸುತ್ತಾರೆ.

ತಮ್ಮ ಬಾಲ್ಯದ ದಿನಗಳನ್ನು ಮೆಲುಕು ಹಾಕುವ ಅವರು, ಈದ್ಗಾ ಮೈದಾನ ಕೇವಲ ಕ್ರಿಕೆಟ್ ಆಟಕ್ಕಷ್ಟೇ ಅಲ್ಲದೆ ಸರ್ವಜನಾಂಗಗಳ ಸಾಮರಸ್ಯ ಕೇಂದ್ರವಾಗಿತ್ತು ಎನ್ನುತ್ತಾರೆ. “ಚಾಮರಾಜಪೇಟೆಯ ಉದ್ದಗಲಕ್ಕೂ ಗೆಳೆಯರ ಭೇಟಿಗೆ ಹೋಗುತ್ತಿದ್ದಾಗ, ಅವರು ಯಾವ ಧರ್ಮ ಅಥವಾ ಜಾತಿಗೆ ಸೇರಿದವರು, ಅವರು ಎಲ್ಲಿಂದ ಬಂದವರು ಎಂಬ ಚಿಂತೆಯನ್ನು ನಾವು ಎಳ್ಳಷ್ಟೂ ಮಾಡುತ್ತಿರಲಿಲ್ಲ. ಒಬ್ಬರು ಇನ್ನೊಬ್ಬರ ಸಹವಾಸವನ್ನು ಸಾಧ್ಯವಿರುವ ಎಲ್ಲಾ ರೀತಿಗಳಲ್ಲಿ ನಾವು ಆನಂದಿಸುತ್ತಿದ್ದೆವು” ಎನ್ನುತ್ತಾರೆ ಸಾಲ್ಡಾನಾ.

ಡಾ.ಹರೀಶ್ ಕುಮಾರ್

ಈಗಲೂ ಯಾವುದೇ ಬೇಲಿಯನ್ನು ಹೊಂದಿರದ ಈ ಮೈದಾನದಲ್ಲಿ ಸಂತೆ ನಡೆಯುತ್ತದೆ. ಎಲ್ಲ ಜಾತಿ, ಜನಾಂಗಗಳು ಸೇರುತ್ತವೆ. ಎಪ್ಪತ್ತರ ದಶಕದಿಂದೀಚೆಗೆ ದೇಶದಲ್ಲಿ ಘಟಿಸಿರುವ ಕೋಮು ಸಂದಿಗ್ಧತೆಯ ಏರಿಳಿತಗಳಿಗೂ ಈ ಮೈದಾನ ಸಾಕ್ಷಿಯಾಗಿದೆ ಎಂಬುದು ಸಾಲ್ಡಾನಾ ಅವರ ಅನುಭವ.

ಈದ್ಗಾ ಮೈದಾನದೊಂದಿಗಿನ ತಮ್ಮ ಬಾಲ್ಯದ ನೆನಪುಗಳನ್ನು ’ನ್ಯಾಯಪಥ’ದ ಜೊತೆ ಹಂಚಿಕೊಂಡ ಬೆಂಗಳೂರಿನ ನಿವಾಸಿ ದಿನೇಶ್ ಫ್ರಾನ್ಸಿಸ್, “ಶಿವರಾತ್ರಿ ಹಬ್ಬ ಬಂದಾಗಲೂ ಆಚರಣೆಗಳು ನಡೆಯುತ್ತಿದ್ದವು. ಮುಸ್ಲಿಮರು ತಮ್ಮ ಹಬ್ಬಗಳ ಸಂದರ್ಭದಲ್ಲಿ ಪ್ರಾರ್ಥನೆಯನ್ನು ಸಲ್ಲಿಸುತ್ತಿದ್ದರು. ಇಪ್ಪತ್ತು ವರ್ಷಗಳ ಹಿಂದೆ ಈ ಮೈದಾನವನ್ನು ಸರ್ಕಾರ ತನ್ನ ಹಿಡಿತಕ್ಕೆ ಪಡೆದು ಬೇರೆ ಅಭಿವೃದ್ಧಿ ಕಾಮಗಾರಿ ನಡೆಸಲು ಮುಂದಾಗಿತ್ತು. ಆಗ ನಾವೆಲ್ಲ ವಿರೋಧಿಸಿ ತಡೆದೆವು. ಮಕ್ಕಳು ಆಟವಾಡಲು ಸೂಕ್ತವಾದ ಮೈದಾನವಿದೆಂದು ಹೋರಾಟ ನಡೆಸಿದೆವು. ಇಲ್ಲಿ ಯಾವುದೇ ರಾಜಕೀಯ ರ್‍ಯಾಲಿಗಳು ನಡೆಯುತ್ತಿರಲಿಲ್ಲ. ಧರ್ಮಗಳ ಸಂಗತಿ ನಮಗೆ ಮುಖ್ಯವೇ ಆಗಿರಲಿಲ್ಲ ಎಂದರು.

ಬದುಕಿನ ಭಾವಕೋಶಗಳಲ್ಲಿ ಇಷ್ಟೆಲ್ಲ ಬೆರೆತಿರುವ ಈದ್ಗಾ ಮೈದಾನ ವಿವಾದದ ಕೇಂದ್ರವಾಗುತ್ತಿರುವುದು ಏತಕ್ಕೆ? ’ಈ ಜಾಗ ಯಾರಿಗೆ ಸೇರಿದ್ದು?’ ಎಂಬ ಚರ್ಚೆ ಹುಟ್ಟಿಕೊಂಡಿದ್ದು ಹೇಗೆ? ಈ ಜಾಗ ಬಿಬಿಎಂಪಿಗೆ ಸೇರಬೇಕೋ, ವಕ್ಫ್ ಮಂಡಳಿಗೆ ಸೇರಬೇಕೋ? ಈ ಎರಡು ಸರ್ಕಾರಿ ಸಂಸ್ಥೆಗಳ ನಡುವೆ ಗುದ್ದಾಟ ಶುರುವಾಗಿದ್ದು ಎಲ್ಲಿಂದ?

’ಬಿಬಿಎಂಪಿ ಹೇಳಿಕೆ ಹಿಂಪಡೆಯಲಿ’ ’ಚಾಮರಾಜಪೇಟೆ ಈದ್ಗಾ ಮೈದಾನ ತಮ್ಮದೆಂದು ಹೇಳಿಕೆ ನೀಡಿರುವ ಬಿಬಿಎಂಪಿ ತನ್ನ ಹೇಳಿಕೆಯನ್ನು ಹಿಂಪಡೆಯಬೇಕು’ ಎಂದು ಕೇಂದ್ರ ಮುಸ್ಲಿಂ ಅಸೋಸಿಯೇಷನ್ (ಸಿಎಂಎ) ಆಗ್ರಹಿಸಿದೆ.

ಬಿಬಿಎಂಪಿ ವಿಶೇಷ ಆಯುಕ್ತರಿಗೆ ಪತ್ರ ಬರೆದಿರುವ ಸಿಎಂಎ ಪ್ರಧಾನ ಕಾರ್ಯದರ್ಶಿ ಡಾ.ಜಹೀರುದ್ದೀನ್ ಅಹ್ಮದ್, “ಈ ಭೂಮಿ ವಕ್ಫ್‌ಗೆ ಸೇರಿದೆ. ಸರ್ವೋಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠವು ಅಂದಿನ ಬೆಂಗಳೂರು ಸಿಟಿ ಕಾರ್ಪೊರೇಶನ್ ಪ್ರತಿಪಾದನೆಯನ್ನು ವಜಾಗೊಳಿಸಿತ್ತು. ಈ ಕುರಿತು ವಕ್ಫ್ ಗೆಜೆಟ್ ಅಧಿಸೂಚನೆಯನ್ನು ಜೂನ್ 7, 1965ರಂದು ಹೊರಡಿಸಿದೆ” ಎಂದು ತಿಳಿಸಿದ್ದಾರೆ.

“ಪಾಲಿಕೆಯು ಈದ್ಗಾ ಮೈದಾನದ ನೈಋತ್ಯ ಮೂಲೆಯಲ್ಲಿ ಅನಧಿಕೃತವಾಗಿ ವಾರ್ಡ್ ಕಚೇರಿಯನ್ನು ನಿರ್ಮಿಸಿತ್ತು. ಆದರೆ 1971ರ ಆಗಸ್ಟ್ 28ರಂದು ಅಂದಿನ ಮೇಯರ್ ಎಂ.ಬಿ.ಲಿಂಗಯ್ಯ ಮತ್ತು ಸಿಎಂಎ ಪ್ರತಿನಿಧಿಗಳ ನಡುವೆ ಸಭೆ ನಡೆಯಿತು. 30 ವರ್ಷಗಳ ಕಾಲ ಜಾಗವನ್ನು ಗುತ್ತಿಗೆ ನೀಡಲು ಒಪ್ಪಿಗೆ ನೀಡಲಾಯಿತು” ಎಂದಿದ್ದಾರೆ ಅಹ್ಮದ್.

“1994ರ ಮಾರ್ಚ್ 3ರಂದು ಪಾಲಿಕೆಗೆ ಪತ್ರ ಬರೆದು ವಾರ್ಡ್ ಕಚೇರಿಯನ್ನು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸಿಲ್ಲ. ಈದ್ಗಾ ಮೈದಾನ ಆಟದ ಮೈದಾನವಾಗಿದ್ದು, ಅದು ತಮಗೆ ಸೇರಿದೆ ಎಂದು ಬಿಬಿಎಂಪಿ ಹೇಳಿರುವುದು ಅಚ್ಚರಿಯ ಸಂಗತಿಯಾಗಿದೆ. ಬಿಬಿಎಂಪಿ ತನ್ನ ಹೇಳಿಕೆಯನ್ನು ವಾಪಸ್ ಪಡೆಯಬೇಕು” ಎಂದು ಅವರು ಆಗ್ರಹಿಸಿದ್ದಾರೆ.

’ನ್ಯಾಯಪಥ’ದೊಂದಿಗೆ ಮಾತನಾಡಿದ ವಕ್ಫ್ ಮಂಡಳಿ ಕಾರ್ಯ ನಿರ್ವಾಹಕ ಅಧಿಕಾರಿ ಪರ್ವೀಜ಼್ ಖಾನ್ ಕೂಡ ಇದೇ ಪ್ರತಿಪಾದನೆಯನ್ನು ಮಾಡಿದ್ದಾರೆ. “ಸುಪ್ರೀಂ ಕೋರ್ಟ್ ಆದೇಶದಲ್ಲಿ ಎಲ್ಲವೂ ಸ್ಪಷ್ಟವಾಗಿದೆ. ಅದು ಸಾರ್ವಜನಿಕವಾಗಿಯೂ ಲಭ್ಯವಿದೆ. ಈಗ ಬಿಬಿಎಂಪಿಯವರು ತಮ್ಮದೆಂದು ಯಾಕೆ ಹೇಳುತ್ತಿದ್ದಾರೆಂದು ಗೊತ್ತಿಲ್ಲ. ಎಲ್ಲ ದಾಖಲೆಗಳನ್ನು ಬಿಬಿಎಂಪಿಗೆ ಸಲ್ಲಿಸಿದ್ದೇವೆ. ಕಾನೂನು ಪ್ರಕ್ರಿಯೆ ನಡೆಯಬೇಕು ಎಂದು ಬಿಬಿಎಂಪಿ ತಿಳಿಸಿದೆ” ಎಂದು ಮಾಹಿತಿ ನೀಡಿದರು.

ಲಿಯೋ ಎಫ್ ಸಾಲ್ಡಾನಾ

“ನ್ಯಾಯಾಲಯದ ಆದೇಶವೇ ಅಂತಿಮ. ಹೀಗಾಗಿ ಯಾರು ಏನೇ ಹೇಳಿದರೂ ನಾವು ಅತಿಯಾದ ಪ್ರತಿಕ್ರಿಯೆ ನೀಡಲು ಇಚ್ಛಿಸುವುದಿಲ್ಲ. ಎರಡು ಸರ್ಕಾರಿ ಸಂಸ್ಥೆಗಳ ನಡುವೆ ಈ ಗೊಂದಲ ಏರ್ಪಟ್ಟಿದೆ. ನಾವು ಕಾನೂನಿನ ಚೌಕಟ್ಟಿನಲ್ಲಿ ಸಾಗುತ್ತೇವೆ” ಎಂದು ಅವರು ತಿಳಿಸಿದರು.

“ಇಷ್ಟು ವರ್ಷ ಕಳೆದರೂ ವಕ್ಫ್ ಮಂಡಳಿ ಈ ಮೈದಾನಕ್ಕೆ ತಂತಿ ಬೇಲಿಯನ್ನು ಹಾಕಿಲ್ಲ. ಎಲ್ಲರೂ ಜೊತೆಯಲ್ಲಿ ಇರಬೇಕೆಂಬುದು ನಮ್ಮ ಆಶಯ. ಇತ್ತೀಚೆಗೆ ಈ ವಿವಾದ ಬಂದಿದೆ. ಹೀಗಾಗಿ ವಿವಾದ ಸೃಷ್ಟಿಸಲು ಯತ್ನಿಸುವವರಿಗೆ ಪ್ರತಿಕ್ರಿಯೆ ನೀಡಲು ನಾವು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಬಿಎಂಪಿ ಪಶ್ಚಿಮ ವಿಭಾಗದ ಆಯುಕ್ತರಾದ ಶ್ರೀನಿವಾಸ್ ’ನ್ಯಾಯಪಥ’ಕ್ಕೆ ಪ್ರತಿಕ್ರಿಯೆ ನೀಡಿ, “ಸುಪ್ರೀಂ ಕೋರ್ಟ್ ಆದೇಶವಿರುವ ದಾಖಲೆಗಳನ್ನು ವಕ್ಫ್ ಬೋರ್ಡ್ ಕಳುಹಿಸಿಕೊಟ್ಟಿದೆ. ಇದು ಬಿಬಿಎಂಪಿಗೆ ಸೇರಿದೆ ಎಂಬ ದಾಖಲೆಗಳೂ ಇವೆ. ಅವುಗಳನ್ನು ಮುಖ್ಯ ಕಚೇರಿಯ ಕಾನೂನು ವಿಭಾಗಕ್ಕೆ ಸಲ್ಲಿಸಿದ್ದೇವೆ. ಈಗ ಇರುವ ಪ್ರಸ್ತುತ ದಾಖಲೆಗಳ ಪ್ರಕಾರ ಈ ಆಟದ ಮೈದಾನ ಬಿಬಿಎಂಪಿಗೆ ಸೇರಿದೆ. ಈ ಸಮಸ್ಯೆ ಇತ್ಯರ್ಥವಾಗಲು ಇನ್ನೂ ಹತ್ತು ದಿನ ಬೇಕಾಗಬಹುದು. ಈ ಸ್ಥಳವು ಯಾರಿಗೆ ಸೇರಿದ್ದೆಂದು ತಿಳಿಯಲು ಹಳೆಯ ದಾಖಲೆಗಳನ್ನು ಕಳುಹಿಸಿಕೊಡುವಂತೆ ಕಂದಾಯ ಇಲಾಖೆಗೂ ಪತ್ರ ಬರೆದಿದ್ದೇವೆ” ಎಂದು ಹೇಳಿದರು.

“ಇಲ್ಲಿಯವರೆಗೂ ನಡೆಯುತ್ತಿದ್ದ ಪ್ರಾರ್ಥನೆಗೆ ನಿಮ್ಮ ಅನುಮತಿಯನ್ನು ಪಡೆಯಲಾಗುತ್ತಿತ್ತೇ?” ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಇಲ್ಲಿಯವರೆಗೆ ಈ ರೀತಿಯ ಮನವಿಗಳು ಬಂದಿದ್ದು ಇಲ್ಲ. ವರ್ಷಕ್ಕೆ ಎರಡು ಭಾರಿ ಪ್ರಾರ್ಥನೆ ನಡೆಯುತ್ತಿತ್ತು. ಉಳಿದಂತೆ ಆಟದ ಮೈದಾನವಾಗಿ ಬಳಕೆಯಾಗುತ್ತಿತ್ತು. ವಕ್ಫ್‌ನವರು ಈ ಜಾಗ ನಮ್ಮದೆಂದು ಹೇಳಿದ ಬಳಿಕ ವಿವಾದ ಸೃಷ್ಟಿಯಾಗಿದೆ” ಎಂದು ಹೇಳಿದರು.

ಹೀಗೆ ಕೆಲವು ’ಫ್ರಿಂಜ್ ಎಲಿಮೆಂಟ್’ಗಳ ಕಾರಣದಿಂದ ಎರಡು ಸರ್ಕಾರಿ ಸಂಸ್ಥೆಗಳು ವಿವಾದ ಕೇಂದ್ರವಾಗಿಬಿಟ್ಟಿವೆ. ಬೇಕೆಂದೇ ಕೆಲವು ಕೋಮುವಾದಿ ಸಂಘಟನೆಗಳು ಎಬ್ಬಿಸಿರುವ ಈ ವಿವಾದ ಕೊನೆಗೊಂಡು ಈದ್ಗಾ ಮೈದಾನ ಎಂದಿನಂತೆ ಮುಕ್ತ ಮೈದಾನವಾಗಿ ಉಳಿಯಬೇಕಿದೆ ಎಂಬುದು ಬೆಂಗಳೂರಿನ ಪ್ರಜ್ಞಾವಂತರ ಕೂಗು.


ಇದನ್ನೂ ಓದಿ: ಈದ್ಗಾ ಮೈದಾನ ವಿವಾದ; ಬದಲಾದ ಚಾಮರಾಜಪೇಟೆಯ ಕಥನ ಭಾರತದ್ದೂ ಹೌದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....