ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅನುವಾಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರುವ ಮಸೂದೆಯನ್ನು ಇಂದು (ಡಿ.17) ಲೋಕಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದ್ದು, ಉಭಯ ಸದನಗಳ ಜಂಟಿ ಸಂಸದೀಯ ಸಮಿತಿಗೆ ಶಿಫಾರಸು ಮಾಡಬಹುದು.
‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಎಂದು ಕರೆಯಲ್ಪಡುವ ಸಂವಿಧಾನದ (129 ತಿದ್ದುಪಡಿ) ಮಸೂದೆ- 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಮಂಡಿಸುವ ನಿರೀಕ್ಷೆಯಿದೆ ಎಂದು ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ.
ಮಸೂದೆ ಮಂಡನೆ ಬಳಿಕ, ಅದರ ಕುರಿತು ವಿಸ್ಕೃತ ಚರ್ಚೆ ನಡೆಸಲು ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ವಹಿಸುವಂತೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಚಿವ ಮೇಘವಾಲ್ ಮನವಿ ಮಾಡಲಿದ್ದಾರೆ.
ವಿವಿಧ ಪಕ್ಷಗಳ ಸಂಸದರ ಸಂಖ್ಯಾಬಲದ ಆಧಾರದ ಮೇಲೆ ಜಂಟಿ ಸಂಸದೀಯ ಸಮಿತಿಯನ್ನು (ಜೆಪಿಸಿ) ರಚಿಸಲಾಗುತ್ತದೆ. ದೊಡ್ಡ ಪಕ್ಷ ಬಿಜೆಪಿಗೆ ಅಧ್ಯಕ್ಷ ಸ್ಥಾನ ಸಿಗಲಿದ್ದು, ಹೆಚ್ಚಿನ ಪ್ರಾತಿನಿಧ್ಯವೂ ದೊರೆಯಲಿದೆ.
ಕಳೆದ ವಾರ ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿ ಈ ಬಗ್ಗೆ ಅಧ್ಯಯನ ನಡೆಸಿ ಸರ್ಕಾರಕ್ಕೆ ವಿಸ್ಕೃತ ವರದಿ ನೀಡಿದೆ.
ಸಂಸದರಿಗೆ ವಿಪ್ ಜಾರಿ
‘ಒಂದು ದೇಶ ಒಂದು ಚುನಾವಣೆ’ ಮಸೂದೆ ಮಂಡನೆ ಸಾಧ್ಯತೆ ಹಿನ್ನೆಲೆ ಬಿಜೆಪಿ, ಕಾಂಗ್ರೆಸ್, ಶಿವಸೇನೆ ಸೇರಿದಂತೆ ಪ್ರಮುಖ ಪಕ್ಷಗಳು ತಮ್ಮ ಸಂಸದರಿಗೆ ಕಡ್ಡಾಯವಾಗಿ ಸದನಕ್ಕೆ ಹಾಜರಾಗುವಂತೆ ವಿಪ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : 21 ನಕಲಿ ವಿಶ್ವವಿದ್ಯಾಲಯಗಳನ್ನು ಪಟ್ಟಿ ಮಾಡಿದ ಕೇಂದ್ರ ಸರ್ಕಾರ; ಅಗ್ರ ಸ್ಥಾನದಲ್ಲಿ ದೆಹಲಿ


