Homeಮುಖಪುಟ"ಒಂದು ದೇಶ ಒಂದು ಚುನಾವಣೆ": ಇದು ಕಣ್ಕಟ್ಟೋ ಅಥವಾ ಹಲವಾರು ಭ್ರಾಂತಿಗಳ ಮೊತ್ತವೋ?

“ಒಂದು ದೇಶ ಒಂದು ಚುನಾವಣೆ”: ಇದು ಕಣ್ಕಟ್ಟೋ ಅಥವಾ ಹಲವಾರು ಭ್ರಾಂತಿಗಳ ಮೊತ್ತವೋ?

- Advertisement -
- Advertisement -

ಭಾರತವು ಕಣ್ಕಟ್ಟುಗಳ ದೇಶವಾಗಿದೆ. ಈ ಸತ್ಯವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗಿಂತ ಚೆನ್ನಾಗಿ ಇನ್ಯಾರೂ ಅರಿತಿಲ್ಲ. ದೇಶದಲ್ಲಿ ಬೆಲೆಏರಿಕೆ ಇರಲಿ, ಅದಾನಿಯ ಹಗರಣವಿರಲಿ ಅಥವಾ ನಮ್ಮ ಭೂಮಿಯ ಮೇಲೆ ಚೀನಾದ ಆಕ್ರಮಣವಿರಲಿ- ಇವುಗಳ ಬಗ್ಗೆ ನೀವು ಚಿಂತಿಸಬೇಡಿ; ಒಂದು ಹೊಸ ಕಣ್ಕಟ್ಟನ್ನು ತೇಲಿಬಿಡಿ: “ಒಂದು ದೇಶ ಒಂದು ಚುನಾವಣೆ”. ಟಿವಿ ಚಾನೆಲ್‌ಗಳಿಗೆ ಸೂಚನೆ ನೀಡಿಬಿಡಿ. ಜನರು ತಮ್ಮ ಕಷ್ಟಗಳನ್ನು ಮರೆತು ಹೊಸ ನಾಟಕ ನೋಡಲು ಶುರುಮಾಡುತ್ತಾರೆ. ಅಲ್ಲಿಗೆ ಆಟವೂ ಮುಗೀತು, ವೋಟು ಕಬ್ಜಾ ಆಯಿತು.

ಮುಂಬರುವ ಲೋಕಸಭೆ ಚುನಾವಣೆಗೆ ಎಂಟು ತಿಂಗಳ ಮುನ್ನ “ಒಂದು ದೇಶ ಒಂದು ಚುನಾವಣೆ” ಎಂಬ ಹೆಸರಿನಲ್ಲಿ ಲಾಂಚ್ ಮಾಡಲಾದ ಕಣ್ಕಟ್ಟಿನ ಅಸಲಿಯತ್ತನ್ನು ಅರಿಯಲು, ಈ ಬಣ್ಣಬಣ್ಣ ಲಕೋಟೆಯನ್ನು ತೆರೆದು ಅದರಲ್ಲಿರುವ ಎಂಟು ಭ್ರಾಂತಿಗಳನ್ನು ಗುರುತಿಸಿ, ಅದರ ಹಿಂದಿರುವ ಸಂಪೂರ್ಣ ಸತ್ಯವನ್ನು ಅರಿಯುವ ಅವಶ್ಯಕತೆ ಇದೆ.

ಮೊದಲ ಭ್ರಾಂತಿ: “ಒಂದು ದೇಶ ಒಂದು ಚುನಾವಣೆ” ಎಂಬುದು ಒಂದು ಸಾಧಾರಣವಾದ ಆಡಳಿತಾತ್ಮಕ ಸುಧಾರಣೆಯಾಗಿದ್ದು, ಅದು ದೇಶದ ಚುನಾವಣಾ ಕ್ಯಾಲೆಂಡರ್‌ನಲ್ಲಿರುವ ಕೊರತೆಗಳನ್ನು ನೀಗಿಸುತ್ತದೆ.

ವಾಸ್ತವ: ಇಲ್ಲ ಸ್ವಾಮಿ, ಇದು ಯಾವುದೇ ಸಣ್ಣಪುಟ್ಟ ಆಡಳಿತಾತ್ಮಕ ಸುಧಾರಣೆ ಅಲ್ಲ. ಸದಾಕಾಲ ಲೋಕಸಭೆಯೊಂದಿಗೆ ವಿಧಾನಸಭೆಗಳಿಗೆ ಚುನಾವಣೆ ನಡೆಸಬೇಕಾದರೆ ನಮ್ಮ ಸಂವಿಧಾನದ ಅಡಿಪಾಯದ ಮೂಲರೂಪವನ್ನೇ ಬದಲಿಸಬೇಕಾಗುತ್ತದೆ. ಇದು ಸಂವಿಧಾನದ ಬಹು ದೊಡ್ಡ ತಿದ್ದುಪಡಿಯಾಗುತ್ತದೆ.

ಎರಡನೆಯ ಭ್ರಾಂತಿ: ದೇಶದ ಏಕತೆ ಮತ್ತು ಚುನಾವಣೆಗಳಲ್ಲಿ ಏಕರೂಪತೆ ತರಲು ಇದೊಂದು ಸ್ವಾಭಾವಿಕ ಹೆಜ್ಜೆಯಾಗಿದೆ.

ವಾಸ್ತವ: ಇಲ್ಲಿ ’ಒಂದು ಚುನಾವಣೆ’ಯ ಅರ್ಥ ಒಂದೇ ಸಮಯಕ್ಕೆ ಚುನಾವಣೆ ಎಂದು. ಇದಕ್ಕೂ ಏಕತೆಗೂ ಅಥವಾ ಏಕರೂಪತೆಗೂ ಯಾವ ಸಂಬಂಧವೂ ಇಲ್ಲ. ಪಂಚಾಯತಿ ಮತ್ತು ನಗರ ಪಾಲಿಕೆಗಳ ಚುನಾವಣೆಗಳಲ್ಲಿ ಬಳಕೆಯಾಗುವ ಮತದಾರರ ಪಟ್ಟಿ, ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಬಳಕೆಯಾಗುವ ಪಟ್ಟಿ ಬೇರೆಯಾಗಿದ್ದು, ಅದನ್ನು ಒಂದೇ ಆಗಿಸಬೇಕಿದೆ. ವಾಸ್ತವದಲ್ಲಿ ದೇಶದಲ್ಲಿ ಚುನಾವಣಾ ಏಕರೂಪತೆಗೆ ಅವಶ್ಯಕತೆ ಇರುವುದು ಇಲ್ಲಿ. ಆದರೆ ಈ ಪ್ರಸ್ತಾಪದಲ್ಲಿ ಈ ಅವಶ್ಯಕ ಏಕರೂಪತೆಗಾಗಿ ಯಾವ ಸ್ಥಾನವೂ ಕಂಡುಬಂದಿಲ್ಲ.

ಮೂರನೆಯ ಭ್ರಾಂತಿ: ಇದೊಂದು ಸಾರ್ವತ್ರಿಕ ಪ್ರಸ್ತಾಪವಾಗಿದ್ದು, ಇದರ ಬಗ್ಗೆ ದೀರ್ಘಕಾಲದಿಂದ ರಾಷ್ಟ್ರೀಯ ಒಮ್ಮತಕ್ಕೆ ಬರಲಾಗಿದೆ.

ವಾಸ್ತವ: ಈ ಪ್ರಸ್ತಾಪವನ್ನು ಕಳೆದ ನಾಲ್ಕು ದಶಕಗಳಲ್ಲಿ ಪದೇಪದೇ ಮುಂದಿಡಲಾಗಿದೆ. ಕಾಲಕಾಲಕ್ಕೆ ಹಲವು ಸರಕಾರಿ ಸಮಿತಿಗಳು ಹಾಗೂ ಚುನಾವಣಾ ಆಯೋಗವು ಇದರ ಸಮರ್ಥನೆ ಮಾಡಿವೆ. ಆದರೆ, ಈ ಬಾರಿಯ ರೀತಿಯಲ್ಲಿಯೇ, ಅನೇಕ ಪಕ್ಷಗಳು ಮತ್ತು ವಿಶೇಷಜ್ಞರು ಇದನ್ನು ವಿರೋಧಿಸಿದ್ದಾರೆ. ಇಷ್ಟು ದೊಡ್ಡ ಸಾಂವಿಧಾನಿಕ ಬದಲಾವಣೆಯನ್ನು ಸರ್ವಪಕ್ಷಗಳ ಒಮ್ಮತವಿಲ್ಲದೇ ಅನುಷ್ಠಾನಗೊಳಿಸುವುದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ.

ನಾಲ್ಕನೆಯ ಭ್ರಾಂತಿ: ಸಂವಿಧಾನ ಅನುಷ್ಠಾನಗೊಂಡ ನಂತರ ಆರಂಭದಲ್ಲಿ “ಒಂದು ದೇಶ ಒಂದು ಚುನಾವಣೆ”ಯ ಆಧಾರದ ಮೇಲೆ ಚುನಾವಣೆ ನಡೆಯುತ್ತಿದ್ದವು. ನಂತರ ಚುನಾವಣಾ ಚಕ್ರ ಬೇರೆ ಬೇರೆಯಾಗಿದ್ದ ಕಾರಣದಿಂದ ವಿಕೃತಿ ಹುಟ್ಟಿಕೊಂಡಿದೆ.

ಪೂರ್ಣ ಸತ್ಯ: ಲೋಕಸಭೆ ಮತ್ತು ವಿಧಾನಸಭೆಗಳಿಗೆ ಬೇರೆ ಬೇರೆ ಕಾಲದಲ್ಲಿ ಚುನಾವಣೆ ಆಗುವುದು ಯಾವ ವಿಕೃತಿಯೂ ಅಲ್ಲ. ಅದರ ಬದಲಿಗೆ ನಮ್ಮ ಸಾಂವಿಧಾನಿಕ ಅಡಿಪಾಯದ ಎರಡು ಮೂಲಭೂತ ತತ್ವಗಳ (ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ) ಸ್ವಾಭಾವಿಕ ಪರಿಣಾಮವಾಗಿದೆ. ಆರಂಭದಲ್ಲಿ ಎರಡೂ ಚುನಾವಣೆಗಳು ಒಂದೇಕಾಲಕ್ಕೆ ಆಗಲೇಬೇಕಿತ್ತು ಏಕೆಂದರೆ, ಆರಂಭದಲ್ಲಿ ಏಕಕಾಲಕ್ಕೆ ಆಗುವುದು ಸ್ವಾಭಾವಿಕವಾಗಿತ್ತು. ಸಂವಿಧಾನದ ರಚನಾಕಾರರು ಇದನ್ನು ಅರಿತಿದ್ದರು. ಚಿಕಿತ್ಸೆ ನೀಡಬೇಕಾದಂತಹ ಯಾವ ವಿಕೃತಿಯೂ ಇದರಲ್ಲಿ ಇಲ್ಲ.

ಇದನ್ನೂ ಓದಿ: ಒಂದು ದೇಶ-ಒಂದು ಚುನಾವಣೆ ಕಲ್ಪನೆಯಲ್ಲಿ ಬಿಜೆಪಿ ರಾಜಕೀಯ, ಸೈದ್ಧಾಂತಿಕ ಉದ್ದೇಶ ಹೊಂದಿದೆ; ಶಿವಸುಂದರ್

ಐದನೆಯ ಭ್ರಾಂತಿ: ಏಕಕಾಲಕ್ಕೆ ಚುನಾವಣೆ ನಡೆಸುವುದರಿಂದ ಸರಕಾರದ ಚುನಾವಣಾ ವೆಚ್ಚ ತುಂಬಾ ಕಡಿಮೆಯಾಗಲಿದೆ.

ವಾಸ್ತವ: ಸ್ವಾಭಾವಿಕವಾಗಿಯೇ ಬೇರೆಬೇರೆ ಚುನಾವಣೆ ನಡೆಸುವುದರ ಬದಲಿಗೆ ಒಂದೇ ಬಾರಿ ಚುನಾವಣೆ ನಡೆಸುವುದರಿಂದ ಸರಕಾರಿ ವೆಚ್ಚದಲ್ಲಿ ಉಳಿತಾಯವಾಗುವುದು, ಆದರೆ ಪ್ರಶ್ನೆ ಇರುವುದು, ಎಷ್ಟು? ಈ ರೀತಿಯಲ್ಲಿ ಚುನಾವಣೆ ನಡೆಸುವುದರಿಂದ ಹೆಚ್ಚೆಂದರೆ ಐದು ವರ್ಷಗಳಲ್ಲಿ 5,000 ಕೋಟಿ ಉಳಿತಾಯ ಆಗಬಲ್ಲದು. ಈ ಮೊತ್ತ ಮುಂದಿನ ಐದು ವರ್ಷಗಳ ಕೇಂದ್ರೀಯ ಬಜೆಟ್‌ನ 0.02%ಆಗಲಿದೆ ಅಂದರೆ 100 ರೂಪಾಯಿಗಳಲ್ಲಿ ಐದು ಪೈಸೆ ಬಳಸಿದಂತೆ. ಪಕ್ಷಗಳು ಮತ್ತು ಅಭ್ಯರ್ಥಿಗಳು ಚುನಾವಣೆಗಳಲ್ಲಿ ಎಷ್ಟು ಖರ್ಚು ಮಾಡುತ್ತಾರೋ, ಅದನ್ನು ನೋಡಿದರೆ. ಈ ಸರಕಾರಿ ವೆಚ್ಚವು ಏನೇನೂ ಅಲ್ಲ.

ಆರನೆಯ ಭ್ರಾಂತಿ: ಪದೇಪದೇ ಚುನಾವಣೆ ನಡೆಸುವಾಗ ನೀತಿಸಂಹಿತೆ ಜಾರಿಯಾಗುವುದರಿಂದ ಸರಕಾರಿ ಕೆಲಸಗಳು ನಿಂತುಕೊಳ್ಳುತ್ತವೆ, ಸರಕಾರಗಳ ಮೇಲೆ ಸದಾಕಾಲ ಚುನಾವಣೆಗಳ ಒತ್ತಡ ಇರುತ್ತದೆ. ಈ ಸಮಸ್ಯೆಗೆ ಇದೊಂದೇ ಪರಿಹಾರ.

ವಾಸ್ತವ: ಈ ಮಾತಿನಲ್ಲಿ ಒಂದಿಷ್ಟು ಸತ್ಯಾಂಶವಿದೆ. ಆದರೆ ಈ ಸಮಸ್ಯೆ ಪರಿಹರಿಸಲು ಇನ್ನೂ ಸುಲಭವಾದ ಮಾರ್ಗಗಳಿವೆ. ಸದ್ಯಕ್ಕೆ ಐದು ವರ್ಷಗಳಲ್ಲಿ ಕನಿಷ್ಠ ಎಂಟು ಬಾರಿ ದೊಡ್ಡ ರಾಜ್ಯಗಳ ಚುನಾವಣೆ ನಡೆಯುತ್ತವೆ. ಇದನ್ನು ಕಡಿಮೆ ಮಾಡಲು, ಒಂದು ವರ್ಷದಲ್ಲಿ ಬರುವ ಎಲ್ಲಾ ರಾಜ್ಯಗಳ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಅಧಿಕಾರವನ್ನು ಚುನಾವಣಾ ಆಯೋಗಕ್ಕೆ ನೀಡಬಹುದಾಗಿದೆ. ಆಯಾ ರಾಜ್ಯಗಳಿಗೆ ವಿಶೇಷ ಸಂಬಂಧವಿಲ್ಲದೇ ಇದ್ದರೆ ಕೇಂದ್ರ ಸರಕಾರದ ಎಲ್ಲಾ ತೀರ್ಮಾನಗಳನ್ನು ನಿಲ್ಲಿಸದೇ ಇರುವಂತೆ ನೀತಿ ಸಂಹಿತೆಯಲ್ಲಿ ತಿದ್ದುಪಡಿ ಮಾಡಬೇಕಿದೆ. ರಾಜ್ಯ ಚುನಾವಣೆಗಳನ್ನು ಹಲವಾರು ಸುತ್ತುಗಳಲ್ಲಿ ಮಾಡುವುದರ ಬದಲಿಗೆ ಒಂದು ಅಥವಾ ಎರಡು ಸುತ್ತಿನಲ್ಲಿ ಮಾಡುವುದರಿಂದ ಚುನಾವಣೆಯ ಅವಧಿಯನ್ನು ಕಡಿಮೆ ಮಾಡಬಹುದಾಗಿದೆ.

ಏಳನೆಯ ಭ್ರಾಂತಿ: ಈ ಪ್ರಸ್ತಾಪದಲ್ಲಿ ಹೆಚ್ಚಿನ ಲಾಭ ಇಲ್ಲವೆಂದಿಟ್ಟುಕೊಂಡರೂ, ಯಾವುದೇ ನಷ್ಟವೂ ಇಲ್ಲ.

ವಾಸ್ತವ: ನಷ್ಟ ಇದೆ, ಅದೇನೆಂದರೆ, ಇದರಿಂದ ಸಂಸದೀಯ ಪ್ರಜಾಪ್ರಭುತ್ವದ ಅಡಿಪಾಯ ಕುಸಿದುಬೀಳುತ್ತದೆ. ಒಂದುವೇಳೆ ಯಾವುದೋ ರಾಜ್ಯದಲ್ಲಿ ಸರಕಾರವು ವಿಧಾನಸಭೆಯಲ್ಲಿ ಬಹುಮತ ವಿಶ್ವಾಸ ಕಳೆದುಕೊಳ್ಳುತ್ತದೆ ಹಾಗೂ ಇತರ ಯಾವ ಪಕ್ಷಕ್ಕೂ ಬಹುಮತ ಇಲ್ಲದಿರುವ ಸಂದರ್ಭದಲ್ಲಿ ಏನಾಗುವುದು? ಬಜೆಟ್ ಜಾರಿಗೊಳಿಸಲಾಗದ, ದುಡ್ಡು ಖರ್ಚು ಮಾಡುವ ಅಧಿಕಾರವಿಲ್ಲದ ಆ ಸರಕಾರವು ಐದು ವರ್ಷ ಮುಂದುವರಿಯುವಂತೆ ಮಾಡಲಾಗುವುದೇ? ಅಥವಾ ವಿಧಾನಸಭೆಯನ್ನು ವಿಸರ್ಜಿಸಿ, ಹಲವಾರು ವರ್ಷಗಳ ತನಕ ರಾಜ್ಯಪಾಲರ ಆಳ್ವಕೆ ನಡೆಯುವುದೇ? ಹಾಗೂ ಒಂದುವೇಳೆ ಈ ರೀತಿ ಕೇಂದ್ರದಲ್ಲಿ ಆದರೆ ಏನಾಗುವುದು? ಇದು ಪ್ರಜಾಪ್ರಭುತ್ವದೊಂದಿಗೆ ಆಟವಾಡಿದಂತೆ.

ಎಂಟನೆಯ ಭ್ರಾಂತಿ: ಇದು ಚುನಾವಣಾ ಸುಧಾರಣೆಯ ನಿಜವಾದ ಪ್ರಯತ್ನವಾಗಿದೆ. ಇದಕ್ಕೂ ರಾಜಕೀಯಕ್ಕೂ ಯಾವ ಸಂಬಂಧವೂ ಇಲ್ಲ.

ವಾಸ್ತವ: ಒಂದು ವೇಳೆ ರಾಜಕೀಯಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದಲ್ಲಿ, ಕಳೆದ 25 ವರ್ಷಗಳಲ್ಲಿ ಪದೇಪದೇ ಕೇವಲ ಬಿಜೆಪಿ ಮತ್ತು ಅದರ ನಾಯಕರೇ ಈ ಪ್ರಸ್ತಾಪದ ವಕಾಲತ್ತು ಮಾಡುತ್ತಿರುವುದು ಏಕೆ? ಒಂದು ವೇಳೆ ಲೋಕಸಭೆಗೆ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆದರೆ ರಾಷ್ಟ್ರೀಯ ಚುನಾವಣೆಯ ವಾತಾವರಣ ಸೃಷ್ಟಿಯಾಗಿ, ವಿಧಾನಸಭೆಯ ಚುನಾವಣೆಯಲ್ಲಿಯೂ ದೊಡ್ಡ ರಾಷ್ಟ್ರೀಯ ಪಕ್ಷಕ್ಕೆ ಹೆಚ್ಚಿನ ಮತಗಳು ಸಿಗುತ್ತವೆ ಎಂಬುದು ಸ್ವಾಭಾವಿಕ ಹಾಗೂ ಇಂದಿನ ಸಂದರ್ಭದಲ್ಲಿ ಹೆಚ್ಚಿನ ಲಾಭ ಬಿಜೆಪಿಗೆ ಆಗುತ್ತದೆ ಎಂಬುದು ಸಹಜವಾಗಿದೆ. ಅಲ್ಲದೇ ಯೋಚಿಸಿ, ಒಂದುವೇಳೆ ಈ ಪ್ರಸ್ತಾಪದ ಹಿಂದಿನ ಉದ್ದೇಶ ಶುದ್ಧ ರಾಜಕೀಯ ಸುಧಾರಣೆಯೇ ಆಗಿದ್ದರೆ, 2019ರಲ್ಲಿ ಪ್ರಧಾನಮಂತ್ರಿ ಇದರ ವಕಾಲತ್ತು ವಹಿಸಿದ್ದಾಗ ಈ ಸಮಿತಿಯನ್ನು ಏಕೆ ರಚಿಸಲಿಲ್ಲ? ಲೋಕಸಭೆ ಚುನಾವಣೆಗೆ ಕೇವಲ ಎಂಟು ತಿಂಗಳ ಮುನ್ನ ಹಾಗೂ ಸಂಸತ್ತಿನ ಪ್ರಸ್ತಾಪಿತ ವಿಶೇಷ ಅಧಿವೇಶನಕ್ಕೆ 20 ದಿನಗಳ ಮುನ್ನ ದಿಢೀರನೇ ಒಂದು ಹೈ-ಪವರ್ ಸಮಿತಿ ರಚಿಸಲಾಗಿ, ಅದರಲ್ಲಿ ರಾಜ್ಯಸಭೆಯ ವಿರೋಧಪಕ್ಷಗಳನ್ನು ಹೊರಗಿಟ್ಟು, ಹಳೆಯ ಜಿ-ಹುಜೂರ್‌ಗಳನ್ನು (ಆಜ್ಞೆಯನ್ನು ಪಾಲಿಸುವವರು) ತುಂಬಿಸಲಾಗಿ, ರಾತ್ರೋರಾತ್ರಿ ಸಮಿತಿಯ ಕೆಲಸ ಶುರುಮಾಡಲಾಗಿದೆ. ಇಷ್ಟಾದ ಮೇಲೆ ಇದರ ಹಿಂದೆ ಯಾವುದೇ ರಾಜಕೀಯ ಇಲ್ಲ ಎನ್ನುತ್ತೀರಿ, ನೀವು ಒಳ್ಳೇ ತಮಾಷೆ ಮಾಡ್ತೀರಿ.

ಕನ್ನಡಕ್ಕೆ: ರಾಜಶೇಖರ ಅಕ್ಕಿ

ಯೋಗೇಂದ್ರ ಯಾದವ್

ಯೋಗೇಂದ್ರ ಯಾದವ್
ಸ್ವರಾಜ್ ಇಂಡಿಯಾ ಸಂಸ್ಥಾಪಕರಲ್ಲೊಬ್ಬರು, ರಾಜಕೀಯ ಚಿಂತಕರು. ಪ್ರಸ್ತುತ ರಾಜಕೀಯ ಸಂಗತಿಗಳ ಬಗ್ಗೆ, ಪ್ರಜಾಪ್ರಭುತ್ವವನ್ನು ಉಳಿಸುವ ತಮ್ಮ ಚಿಂತನೆಗಳನ್ನು ಹಲವು ಪತ್ರಿಕೆಗಳಲ್ಲಿ ಸಕ್ರಿಯವಾಗಿ ಮಂಡಿಸುತ್ತಾರೆ. ‘ಮೇಕಿಂಗ್ ಸೆನ್ಸ್ ಆಫ್ ಇಂಡಿಯನ್ ಡೆಮಾಕ್ರಸಿ’ ಪುಸ್ತಕ ರಚಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...