Homeಕರ್ನಾಟಕಕೃಷಿ ಕಾಯ್ದೆಗಳ ಜಾರಿಗೆ ಒಂದು ವರ್ಷ; ನಿಲ್ಲದ ಪ್ರತಿಭಟನೆ; ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಚುನಾವಣೆಗಳ...

ಕೃಷಿ ಕಾಯ್ದೆಗಳ ಜಾರಿಗೆ ಒಂದು ವರ್ಷ; ನಿಲ್ಲದ ಪ್ರತಿಭಟನೆ; ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಚುನಾವಣೆಗಳ ಮೇಲೆ ಪ್ರಭಾವ?

- Advertisement -
- Advertisement -

ಕಿಸಾನ್ ಆಂದೋಲನ, ರೈತ ಹೋರಾಟ, ಐತಿಹಾಸಿಕ ಹೋರಾಟ, ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದು ರೈತರ ಪರವಾಗಿದ್ದವರಿಂದ, ಕೇವಲ ಪಂಜಾಬ್, ಹರಿಯಾಣ ರೈತರ ಪ್ರತಿಭಟನೆ, ಖಲಿಸ್ತಾನಿಗಳ ಪ್ರತಿಭಟನೆ, ದಲ್ಲಾಳಿಗಳ ಹೋರಾಟ ಎಂದು ಪ್ರಭುತ್ವ ಪರಿವಾರದವರಿಂದ, ಹೀ॒ಗೆ ಒಂದೆರಡಲ್ಲ, ಹತ್ತು ಹಲವು ಹೆಸರುಗಳಿಂದ ಕರೆಸಿಕೊಂಡಿತ್ತು ದೆಹಲಿಯ ಗಡಿಗಳಲ್ಲಿ ಕಳೆದ 10 ತಿಂಗಳಿನಿಂದ ನಡೆಯುತ್ತಿರುವ ರೈತರ ಹೋರಾಟ.

ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಕಾಯಿದೆ 2020, ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯಿದೆ 2020 ಮತ್ತು ಅಗತ್ಯ ಸರಕುಗಳ (ತಿದ್ದುಪಡಿ) ಕಾಯಿದೆ 2020 ಈ ಕಾಯ್ದೆಗಳನ್ನು ಒಕ್ಕೂಟ ಸರ್ಕಾರ ಜಾರಿಗೊಳಿಸಿದೆ. ಇವುಗಳ ರದ್ದತಿಗಾಗಿ ರೈತರು ತಿಂಗಳುಗಳಿಂದ ರಾಷ್ಟ್ರದಾದ್ಯಂತ ಹೋರಾಟ ನಡೆಸುತ್ತಿದ್ದಾರೆ.

ಐತಿಹಾಸಿಕ ರೈತ ಪ್ರತಿಭಟನೆಗೆ ಕಾರಣವಾದ ಈ ವಿವಾದಿತ ಕೃಷಿ ಕಾನೂನುಗಳನ್ನು ಜಾರಿಗೊಳಿಸಿ ಸೆಪ್ಟಂಬರ್‌ಗೆ ಒಂದು ವರ್ಷವಾಗುತ್ತಿದೆ. ರೈತರ ಪ್ರತಿಭಟನೆಗೆ ಬರೋಬ್ಬರಿ 10 ತಿಂಗಳು ತುಂಬುತ್ತಿದೆ. ಈ ನಡುವೆ ರೈತರ ಆಂದೋಲನ ಕೊನೆಗೊಳ್ಳುವ, ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸುವ ಯಾವ ಲಕ್ಷಣಗಳೂ ಕಾಣಿಸುತ್ತಿಲ್ಲ. ಈ ನೆಪದಲ್ಲಿ ರೈತ ಪ್ರತಿಭಟನೆಯನ್ನು ಮತ್ತು ಅದು ಮುಂದುವರೆದಿರುವ ಬಗೆಯನ್ನು ಮತ್ತೆ ನೆನಪಿಸಿಕೊಳ್ಳುವುದಾದರೆ..

ಪಂಜಾಬ್, ಹರಿಯಾಣ, ಉತ್ತರಪ್ರದೇಶದ ರೈತರು ಹೆಚ್ಚಾಗಿರುವ ದೆಹಲಿಯ ಸಿಂಘು, ಟಿಕ್ರಿ, ಗಾಝಿಪುರ್ ಗಡಿಗಳು ಮತ್ತು ರಾಜಸ್ತಾನದ ಶಹಜಾನ್ಪುರ್ ಗಡಿಗಳ ಜೊತೆಗೆ, ಪಂಜಾಬ್, ಹರಿಯಾಣದ ಪ್ರತಿ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆಯುತ್ತಿದೆ. ಹರಿಯಾಣದ ಕರ್ನಾಲ್‌ನಲ್ಲಿ ನಡೆದ ಲಾಠಿಚಾರ್ಜ್ ಘಟನೆ ರೈತ ಆಂದೋಲನ ಹರಿಯಾಣದಲ್ಲಿ ತೀವ್ರಗೊಳ್ಳಲು ಮತ್ತೊಂದು ಕಾರಣವಾಗಿದೆ.

ಎಸ್‌ಡಿಎಂ ಅಧಿಕಾರಿ ಆಯುಶ್ ಸಿನ್ಹಾ ಅವರ ’ರೈತರ ತಲೆ ಒಡೆಯುವ ಆದೇಶ’ದ ವಿಡಿಯೋ ಕರ್ನಾಲ್‌ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಸಾಕ್ಷಿಯಾಗಿತ್ತು. ಬಿಜೆಪಿ ಪಕ್ಷದ ಯಾವುದೇ ಕಾರ್ಯಕ್ರಮಗಳು ಹರಿಯಾಣದಲ್ಲಿ ನಡೆಯದಂತೆ ರೈತರು ತಡೆಹಿಡಿದಿದ್ದಾರೆ.

ಪಂಜಾಬ್‌ನಲ್ಲಿ ರೈತ ಪ್ರತಿಭಟನೆಯಿಂದ ಆರ್ಥಿಕ ಪರಿಸ್ಥಿತಿ ಕುಂಠಿತವಾಗುತ್ತಿದೆ. ಒಕ್ಕೂಟ ಸರ್ಕಾರದ ಮೇಲೆ ಒತ್ತಡ ತರಲು ನೀವು ದೆಹಲಿಗೆ ಹೋಗಿ ಎಂದು ರೈತರ ಬಳಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮನವಿ ಮಾಡಿದ್ದಾರೆ.

ಕಳೆದ ಅಕ್ಟೋಬರ್‌ನಿಂದ ಆರಂಭವಾಗಿರುವ ಈ ಆಂದೋಲನ ವರ್ಷವಾಗುತ್ತಾ ಬಂದರೂ ರೈತರ ಉತ್ಸಾಹ ಕಳೆಗುಂದಿಲ್ಲ. ತಮ್ಮ ನೋವುಗಳನ್ನು ಬದಿಗಿರಿಸಿಕೊಂಡು, ಮತ್ತೆ ಪ್ರತಿಭಟನೆಯನ್ನು ತೀವ್ರಗೊಳಿಸುವತ್ತ ಮುನ್ನುಗ್ಗುತ್ತಿದ್ದಾರೆ. ನಿಮಗೆ ತಿಳಿದಿರಲಿ ತೀವ್ರ ಚಳಿ, ಮಳೆ, ತೀವ್ರ ಬಿಸಿಗಾಳಿ, ಅನಾರೋಗ್ಯಕ್ಕೆ ಈ 10 ತಿಂಗಳ 292 ದಿನಗಳಲ್ಲಿ ಹುತಾತ್ಮರಾಗಿದ್ದು ಬರೋಬ್ಬರಿ 596 ಮಂದಿ ರೈತರು ಎನ್ನುತ್ತವೆ ಹಲವು ವರದಿಗಳು.

ಈ ಹೊತ್ತಿನಲ್ಲಿ ರೈತರ ಮುಂದಿನ ಕ್ರಮಗಳೇನು ಎಂಬ ಪ್ರಶ್ನೆ ಹಲವು ರೈತ ಬೆಂಬಲಿಗರಲ್ಲಿ ತಳೆದಿದೆ. ಹೌದು, ಕಳೆದ 10 ತಿಂಗಳುಗಳಿಂದ ಬದಲಾಗದ ಒಕ್ಕೂಟ ಸರ್ಕಾರದ ನಿರ್ಧಾರದಿಂದ ರೈತರ ಉತ್ಸಾಹ ಕುಗ್ಗಿಲ್ಲವೇ? ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ ಎನ್ನುತ್ತಿರುವ ರೈತರ ಮುಂದಿನ ನಡೆಗಳೇನು ಎಂಬುದಕ್ಕೆ ರೈತ ನಾಯಕರು ಕೊಟ್ಟ ಉತ್ತರಗಳಿವು.

ನ್ಯಾಯಪಥ ಜೊತೆಗೆ ಮಾತನಾಡಿದ ರೈತ ಮುಖಂಡ ಯೋಗೇಂದ್ರ ಯಾದವ್, “ನಾವೀಗ ಈ ಪ್ರತಿಭಟನೆಯನ್ನು ರಾಷ್ಟ್ರಾದ್ಯಂತ ವಿಸ್ತರಿಸುವ ಹಂತಕ್ಕೆ ಬಂದಿದ್ದೇವೆ. ಒಂದು ಚಿಕ್ಕ ಭಾಗದಿಂದ ಇಡೀ ದೇಶಕ್ಕೆ ಹೋರಾಟ ವಿಸ್ತರಿಸುತ್ತಿದೆ. ಉತ್ತರ ಭಾರತದಲ್ಲಿ ಅದರಲ್ಲೂ ಪಂಜಾಬ್, ಹರಿಯಾಣ, ರಾಜಸ್ತಾನ, ಉತ್ತರಾಖಂಡ, ಉತ್ತರ ಪ್ರದೇಶಗಳಲ್ಲಿ ರೈತ ಪ್ರತಿಭಟನೆ ತಾನಾಗೇ ವಿಸ್ತರಿಸಿದೆ. ಈಗ ಈ ಪ್ರತಿಭಟನೆ ದೇಶಾದ್ಯಂತ ವಿಸ್ತರಿಸಬೇಕಿದೆ. ಅದರ ಭಾಗವಾಗಿ ಮಿಷನ್ ಉತ್ತರ ಪ್ರದೇಶ, ಮಿಷನ್ ಉತ್ತರಾಖಂಡವನ್ನು ಸಂಯುಕ್ತ ಕಿಸಾನ್ ಮೋರ್ಚಾ ಘೋಷಿಸಿದೆ” ಎಂದಿದ್ದಾರೆ.

“ಇದರ ಜೊತೆಗೆ ಬೇರೆ ರಾಜ್ಯಗಳಲ್ಲೂ ಪ್ರತಿಭಟನೆಗಳು ತೀವ್ರಗೊಳಿಸಲು ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಇದರ ಭಾಗವಾಗಿ ಉಳಿದ ರಾಜ್ಯಗಳಲ್ಲಿಯೂ ಸಭೆಗಳು ನಡೆಯುತ್ತಿವೆ. ಉದಾಹರಣೆಗೆ ಕರ್ನಾಟಕದಲ್ಲಿ ಸಂಯುಕ್ತ ಹೋರಾಟ ಈಗಾಗಲೇ ಸಭೆಗಳನ್ನು ನಡೆಸುತ್ತಿದೆ. ಇನ್ನೊಂದು ಭಾಗವಾಗಿ ಸೆಪ್ಟಂಬರ್ 27ರಂದು ಭಾರತ್ ಬಂದ್‌ಗೆ ಕರೆ ನೀಡಲಾಗಿದೆ” ಎಂದು ಹೇಳಿದ್ದಾರೆ.

ಮುಂದುವರೆದು, “ನವೆಂಬರ್ 26, 27ರಂದು ಈ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ. ಇದರಲ್ಲಿ, ಈ ಪ್ರತಿಭಟನೆ ಬೇರೆ ಆಯಾಮಗಳನ್ನು ಪಡೆದುಕೊಂಡು ಬೆಳೆಯುತ್ತಿದೆ. ಸಮಾಜದಲ್ಲಿರುವ ಮುಖ್ಯ ಸಮಸ್ಯೆಗಳ ವಿರುದ್ಧ ಕೂಡ ಇದು ಹೋರಾಡುತ್ತಿದೆ. ಕೋಮುವಾದದ ವಿರುದ್ಧ ಹೋರಾಡುವ, ಒಗ್ಗಟ್ಟನ್ನು ತೋರಿಸುವ, ಪ್ರಜಾಪ್ರಭುತ್ವವನ್ನು ಉಳಿಸುವ ಪ್ರತಿಭಟನೆಯಾಗಿಯೂ ಇದು ರೂಪುಗೊಳ್ಳುತ್ತಿದೆ” ಎಂದು ಯೋಗೇಂದ್ರ ಯಾದವ್ ತಿಳಿಸಿದ್ದಾರೆ.

ಕರ್ನಾಟಕದ ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, “ರೈತ ಹೋರಾಟ ವಿಸ್ತರಿಸದ ಕಡೆಗಳಲ್ಲಿ ಇದನ್ನು ವಿಸ್ತರಿಸುವುದು ಮುಂದಿನ ಕ್ರಮವಾಗಿದೆ. ಏಕೆಂದರೆ ಆಯಾ ಪ್ರದೇಶದ ರೈತರ ಸಮಸ್ಯೆಗಳು ಬೇರೆ ಬೇರೆ. ಪಂಜಾಬ್ ಮತ್ತು ಹರಿಯಾಣದ ರೈತರಿಗೆ ಎಂಎಸ್‌ಪಿ (ಬೆಂಬಲ ಬೆಲೆ) ಅರ್ಥವಾಗುವ ಹಾಗೆ ನಮ್ಮ ಭಾಗದ ರೈತರಿಗೆ ಅರ್ಥ ಆಗುವುದಿಲ್ಲ. ಏಕೆಂದರೆ ಎಂಎಸ್‌ಪಿಯ ಬಹುಪಾಲು ಫಲಾನುಭವಿಗಳು ಪಂಜಾಬ್ ಮತ್ತು
ಹರಿಯಾಣದವರು. ಹೀಗಾಗಿ ಹೋರಾಟವನ್ನು ವಿಸ್ತರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ” ಎಂದರು.

“ಸದ್ಯ ತಮಿಳುನಾಡಿನ ತಿರುಚಿಯಲ್ಲಿ ರೈತ ಸಂಘಗಳ ಒಕ್ಕೂಟ ಅಕ್ಟೋಬರ್ 2 ರಂದು ಉಪವಾಸ ಸತ್ಯಾಗ್ರಹ ನಡೆಸಿ, ನವೆಂಬರ್ 26ಕ್ಕೆ ಕನಿಷ್ಠ 5000 ಜನರನ್ನು ದೆಹಲಿಗೆ ಹೊರಡಿಸುವ ನಿರ್ಣಯ ಕೈಗೊಂಡಿದ್ದಾರೆ. ಕೇರಳದಲ್ಲಿಯೂ ಅದಾನಿ ಪೋರ್ಟ್ ಬಳಿ ಅನಿರ್ದಿಷ್ಟಾವದಿಯ ಹೋರಾಟ ನಡೆಸುವ ಚರ್ಚೆ ನಡೆಯುತ್ತಿದೆ. ಜೊತೆಗೆ ಕರ್ನಾಟಕದಲ್ಲಿ ದೆಹಲಿಯ ಸಿಂಘು, ಟಿಕ್ರಿ ಗಡಿಗಳಲ್ಲಿರುವಂತೆಯೇ ಅನಿರ್ದಿಷ್ಟಾವದಿಯ ಧರಣಿ ನಡೆಸಲು ಚರ್ಚೆ ನಡೆಸಲಾಗುತ್ತಿದೆ” ಎಂದು ದಕ್ಷಿಣ ಭಾರತದಲ್ಲಿ ರೈತ ಹೋರಾಟ ವಿಸ್ತರಿಸುವ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

ಇನ್ನು, 10 ತಿಂಗಳ ಹೋರಾಟದ ಬಳಿಕವು ರೈತರಲ್ಲಿರುವ ಉತ್ಸಾಹದ ಬಗ್ಗೆ ಮಾತನಾಡಿದ ಚುಕ್ಕಿ ನಂಜುಂಡಸ್ವಾಮಿ, “ಉತ್ತರ ಭಾರತದ ರೈತರಲ್ಲಿ ಖಂಡಿತ ಇನ್ನೂ ಉತ್ಸಾಹ ಇದೆ. ನಿಜ ಹೇಳಬೇಕೆಂದರೆ ಅವರು ರೊಚ್ಚಿಗೆದ್ದಿದ್ದಾರೆ. ಏಕೆಂದರೆ ಈ ಕಾಯ್ದೆಗಳ ಸಮಸ್ಯೆಗಳ ಬಗ್ಗೆ ಅವರಿಗೆ ತುಂಬಾ ಚೆನ್ನಾಗಿ ಅರ್ಥ ಆಗಿದೆ. ಸಾಮಾನ್ಯ ರೈತರಿಗೂ ಕಾಯ್ದೆಗಳಲ್ಲಿರುವ ವಿಷಯಗಳು ಮನದಟ್ಟಾಗಿದೆ. ಪ್ರತಿಭಟನೆಯಲ್ಲಿರುವ ರೈತರು ಶಿಫ್ಟ್ ಪ್ರಕಾರ ಭಾಗವಹಿಸುತ್ತಿದ್ದಾರೆ. ಆದರೆ ಸದ್ಯಕ್ಕೆ ಮನೆಗಳನ್ನು ಬಿಟ್ಟು ದೂರ ಇರುವುದು ರೈತ ಮುಖಂಡರು” ಎಂದಿದ್ದಾರೆ.

ರಾಜ್ಯದಲ್ಲಿಯೂ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ನಿರ್ಧಾರಗಳಿಗೆ ಅನುಗುಣವಾಗಿ ಬಂದ್ ಆಚರಿಸಲು ನಿರ್ಧರಿಸಲಾಗಿದೆ. ಬಿಜೆಪಿಯನ್ನು ರಾಜಕೀಯವಾಗಿ ಎದುರಿಸಲು ಮಿಷನ್ ಉತ್ತರ ಪ್ರದೇಶ ಮತ್ತು ಮಿಷನ್ ಉತ್ತರಾಖಂಡಕ್ಕೆ ಸಜ್ಜಾಗುತ್ತಿದೆ. ದೇಶಾದ್ಯಂತ ಸೆ.27ಕ್ಕೆ ಕರಾಳ ದಿನ ಆಚರಣೆ ನಡೆಸುವ ತೀರ್ಮಾನಗಳನ್ನು ಜಾರಿಗೆ ತರಲು ಸಂಯುಕ್ತ ಹೋರಾಟ ಕರ್ನಾಟಕ ನಿರ್ಧರಿಸಿದೆ.

“ಕರ್ನಾಟಕದ ಸುಮಾರು 40ಕ್ಕೂ ಹೆಚ್ಚು ರೈತ, ಕಾರ್ಮಿಕ, ಮಹಿಳಾ, ವಿದ್ಯಾರ್ಥಿ ಮತ್ತು ಜನಪರ ಸಂಘಟನೆಗಳು ಸೆ.15ರಂದು ಫ್ರೀಡಂ ಪಾರ್ಕ್‌ನಲ್ಲಿ ಸಭೆ ನಡೆಸಲು ನಿರ್ಧರಿಸಿವೆ. ಕರ್ನಾಟಕ ಬಂದ್ ಮತ್ತು ಬೆಂಗಳೂರು ಬಂದ್ ಯಶಸ್ವಿಯಾಗಿ ಮಾಡಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗುತ್ತದೆ. ಬಳಿಕ
ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ ಸೇರಿ ಚಳವಳಿಯನ್ನು ಮುಂದುವರೆಸುವ ಬಗ್ಗೆ ಚರ್ಚಿಸುತ್ತವೆ” ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷ ಯಶವಂತ್ ತಿಳಿಸಿದ್ದಾರೆ.

ಇನ್ನು ರೈತರ ಪ್ರತಿಭಟನೆಯಿಂದ ವಾಣಿಜ್ಯ ಚಟುವಟಿಕೆಗಳು ಹಾಗೂ ಜನರ ಸಂಚಾರದ ಮೇಲಾಗುತ್ತಿರುವ ಪರಿಣಾಮಗಳ ಕುರಿತು ವರದಿ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC), ಕೇಂದ್ರ ಸರ್ಕಾರ, ದೆಹಲಿ, ರಾಜಸ್ತಾನ, ಹರಿಯಾಣ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ದೇಶದ ಅನ್ನದಾತರನ್ನು ಎದುರು ಹಾಕಿಕೊಂಡಿರುವ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಗಳಿಸಲು ಸಾಧ್ಯವಾಗದೆ ಸೋಲನುಭವಿಸಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ರೈತರು ನಡೆಸಿದ ಅಭಿಯಾನದ ಫಲವಾಗಿ ಮಮತಾ ಬ್ಯಾನರ್ಜಿ ಸರ್ಕಾರ ಭರ್ಜರಿ ಜಯಗಳಿಸಿದೆ. ಈಗ ಮಿಷನ್ ಉತ್ತರ ಪ್ರದೇಶ, ಮಿಷನ್ ಉತ್ತರಾಖಂಡಗಳ ಮೂಲಕ ಬಿಜೆಪಿ ಗೆಲುವಿಗೆ ಪ್ರತಿಭಟನಾನಿರತ ರೈತರು ಅಡ್ಡಿಯಾಗಲಿದ್ದಾರೆಯೇ ಎಂಬ ಚರ್ಚೆ ಮುಖ್ಯವೇದಿಕೆಗೆ ಬಂದಿದೆ.

ಒಟ್ಟಾರೆಯಾಗಿ, ಉತ್ಸಾಹ, ದಿಟ್ಟತನ, ತಾಳ್ಮೆ, ಬದ್ಧತೆಗಳಿಂದ ಕೂಡಿದ ಶಿಸ್ತಿನ ರೈತ ಹೋರಾಟ ಇನ್ನು ಇದೇ ರೀತಿಯಲ್ಲಿ ಮುಂದುವರೆಯುವುದು ಮಾತ್ರ ಖಚಿತ ಎಂಬುದು ರೈತ ಹೋರಾಟಗಾರರ ಒಕ್ಕೊರಲಿನ ಮಾತು. ಪ್ರಾಕೃತಿಕ ಸವಾಲುಗಳ ಜೊತೆಗೆ ಒಕ್ಕೂಟ ಸರ್ಕಾರ ನೀಡಿದ, ನೀಡುತ್ತಿರುವ ಪರೀಕ್ಷೆಗಳನ್ನು ಎದುರಿಸುತ್ತಾ ರೈತ ಪ್ರತಿಭಟನೆ 300 ದಿನಗಳತ್ತ ದಾಪುಗಾಲು ಹಾಕುತ್ತಿದೆ. ಈಗಲಾದರೂ ರೈತ ಪರ ಎಂದು ಹೇಳುವ ಒಕ್ಕೂಟ ಸರ್ಕಾರ ತನ್ನ ಹಠವನ್ನು ಬಿಟ್ಟು ರೈತರ ಬೇಡಿಕೆಗಳನ್ನು ಈಡೇರಿಸುತ್ತಾ ಎಂಬುದೇ ರೈತ ಬೆಂಬಲಿಗರ ಯಕ್ಷ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಕೇಂದ್ರದ ಮೇಲೆ ಒತ್ತಡ ತರಲು ಪ್ರತಿಭಟನೆಯನ್ನು ದೆಹಲಿಗೆ ವರ್ಗಾಯಿಸಿ: ರೈತರಲ್ಲಿ ಅಮರಿಂದರ್ ಸಿಂಗ್ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...