ಭಾರತೀಯ ಚುನಾವಣೆಗಳಲ್ಲಿ ಅಭ್ಯರ್ಥಿಯ ಶೈಕ್ಷಣಿಕ ಅರ್ಹತೆಗಳು ಅಪ್ರಸ್ತುತವಾಗುತ್ತಿದ್ದು, ಕೇರಳ ರಾಜ್ಯ ಮಾತ್ರ ಇದಕ್ಕೆ ಹೊರತಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಭಿಪ್ರಾಯಪಟ್ಟಿರುವುದಾಗಿ ‘ಬಾರ್ ಅಂಡ್ ಬೆಂಚ್’ ವರದಿ ಮಾಡಿದೆ.
ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠವು, “ಹೆಚ್ಚಿನ ಮತದಾರರು ಮತ ಚಲಾಯಿಸುವ ಮೊದಲು ಅಭ್ಯರ್ಥಿಯ ಶೈಕ್ಷಣಿಕ ಹಿನ್ನೆಲೆಯನ್ನು ನೋಡುವುದಿಲ್ಲ. ಕೇರಳ ರಾಜ್ಯದಲ್ಲಿ ಮಾತ್ರ ಮತದಾರರು ತಮ್ಮ ಅಭ್ಯರ್ಥಿಯ ವಿದ್ಯಾರ್ಹತೆ ಗಮನಿಸುತ್ತಾರೆ” ಎಂದಿದೆ.
ಭಾರತೀಯ ಜನತಾ ಪಕ್ಷದ ಶಾಸಕ ಹರ್ಷವರ್ಧನ್ ಬಾಜಪೇಯಿ ಅವರು ತಮ್ಮ ಶೈಕ್ಷಣಿಕ ಅರ್ಹತೆಯ ಬಗ್ಗೆ 2017ರಲ್ಲಿ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿರುವ ಅರ್ಜಿಯನ್ನು ಪೀಠವು ವಿಚಾರಣೆ ನಡೆಸುತ್ತಿದೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.
2017ರಲ್ಲಿ ಉತ್ತರ ಪ್ರದೇಶ ವಿಧಾನಸಭೆಗೆ ಬಾಜಪೇಯಿ ಅವರು ಆಯ್ಕೆಯಾಗಿರುವುದನ್ನು ಅನೂರ್ಜಿತ ಮತ್ತು ಅಸಿಂಧು ಎಂದು ಘೋಷಿಸಬೇಕೆಂದು ಮಾಜಿ ಕಾಂಗ್ರೆಸ್ ಶಾಸಕ ಅನುಗ್ರಹ ನಾರಾಯಣ್ ಸಿಂಗ್ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.
ಬಾಜ್ಪೇಯಿ ಅವರು ಆಯ್ಕೆಯಾದ ಅವಧಿ ಈಗಾಗಲೇ 2022 ರಲ್ಲಿ ಕೊನೆಗೊಂಡಿತ್ತು. ಹೀಗಾಗಿ ಇದು ಲಾಭದಾಯಕವಲ್ಲದ ಕಾರಣ ಸೆಪ್ಟೆಂಬರ್ನಲ್ಲಿ ಅಲಹಾಬಾದ್ ಹೈಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತ್ತು. ನಂತರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು.
ಬಾಜಪೇಯಿ ಅವರು 2007, 2012 ಮತ್ತು 2017 ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತಮ್ಮ ನಾಮಪತ್ರಗಳ ಜೊತೆಗೆ ಸಲ್ಲಿಸಿದ ಅಫಿಡವಿಟ್ಗಳಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. ಸರಿಯಾದ ಶೈಕ್ಷಣಿಕ ಅರ್ಹತೆ ಮತ್ತು ಹೊಣೆಗಾರಿಕೆಗಳನ್ನು ಬಹಿರಂಗಪಡಿಸದೆ ಅಪರಾಧ ಎಸಗಿದ್ದಾರೆ ಎಂದು ಅನುಗ್ರಹ ಸಿಂಗ್ ಆರೋಪಿಸಿದ್ದಾರೆ.
ಇಂಗ್ಲೆಂಡ್ನಲ್ಲಿರುವ ಸೆಫರ್ಡ್ ಎಂಬ ಅಸ್ತಿತ್ವದಲ್ಲಿಲ್ಲದ ವಿಶ್ವವಿದ್ಯಾನಿಲಯದಿಂದ ಬ್ಯಾಚುಲರ್ ಆಫ್ ಟೆಕ್ನಾಲಜಿ ಪದವಿಯನ್ನು ಪಡೆದಿರುವುದಾಗಿ ಬಾಜ್ಪೇಯಿ ಹೇಳಿಕೊಂಡಿದ್ದಾರೆ ಎಂದು ಅವರು ವಾದಿಸಿದ್ದರು.
2006 ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ ಎಂದು ಬಾಜ್ಪೇಯಿ ಹೇಳಿಕೊಂಡಿದ್ದಾರೆ. ಆದರೆ ಅದೇ ವರ್ಷ ಬಿಟೆಕ್ ಪರೀಕ್ಷೆಯಲ್ಲಿಯೂ ತೇರ್ಗಡೆಯಾಗಿದ್ದಾರೆ ಎಂದು ಸಿಂಗ್ ಟೀಕಿಸಿದ್ದಾರೆ.