ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ವಿರೋಧ ಪಕ್ಷದ ಸಂಸದರು ಸೋಮವಾರ (ಮಾ.9) ಸಂಸತ್ ಭವನದ ಸಂಕೀರ್ಣದಲ್ಲಿ ಪ್ರತಿಭಟನೆ ನಡೆಸಿದರು.
ಇದಕ್ಕೂ ಮೊದಲು, ಎರಡನೇ ಹಂತದ ಬಜೆಟ್ ಅಧಿವೇಶನದ ಕಾರ್ಯತಂತ್ರಗಳ ಕುರಿತು ಚರ್ಚಿಸಲು ವಿರೋಧ ಪಕ್ಷಗಳ ಸದನದ ನಾಯಕರು ಸಂಸತ್ ಭವನದ ಸಂಕೀರ್ಣದಲ್ಲಿರುವ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಸಭೆ ಸೇರಿದ್ದರು.
ಮಲ್ಲಿಕಾರ್ಜು ಖರ್ಗೆ ಮತ್ತು ರಾಹುಲ್ ಗಾಂಧಿ ಮಾತ್ರವಲ್ಲದೆ, ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್, ಡಿಎಂಕೆಯ ದಯಾನಿಧಿ ಮಾರನ್, ಎನ್ಸಿಪಿ (ಎಸ್ಪಿ) ಯ ಸುಪ್ರಿಯಾ ಸುಳೆ ಮತ್ತು ಶಿವಸೇನೆಯ (ಯುಬಿಟಿ) ಸಂಜಯ್ ರಾವತ್ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದ್ದರು.
“ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಪ್ರಾರಂಭಗೊಳ್ಳುತ್ತಿದ್ದಂತೆ ಇರಾನ್ ಜೊತೆಗಿನ ಅಮೆರಿಕ-ಇಸ್ರೇಲ್ ಯುದ್ಧವು ನಮ್ಮ ಹಿತ್ತಲನ್ನು ತಲುಪಿದೆ. ಈ ಸಂದರ್ಭದಲ್ಲಿ, ಪ್ರಸ್ತುತ ಭೌಗೋಳಿಕ ರಾಜಕೀಯ ಬಿಕ್ಕಟ್ಟಿನ ಕುರಿತು ಪೂರ್ಣ ಪ್ರಮಾಣದ ಚರ್ಚೆ ನಡೆಸುವುದು ಕಡ್ಡಾಯವಾಗಿದೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹಾಕಿರುವ ಪೋಸ್ಟ್ನಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
“ವಿದೇಶಾಂಗ ವ್ಯವಹಾರಗಳ ಸಚಿವರ ಏಕಪಕ್ಷೀಯ ಹೇಳಿಕೆ ಇದಕ್ಕೆ ಪರಿಹಾರವಲ್ಲ. ನಾವು ಸಾಮೂಹಿಕವಾಗಿ ಇಡೀ ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಅಗತ್ಯವಿದೆ. ಭಾರತ ಸರ್ಕಾರವು ನಮ್ಮ ಇಂಧನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು, ನಮ್ಮ ವ್ಯಾಪಾರಿಗಳಿಗೆ ನೆರವಾಗಲು, ನಮ್ಮ ರಫ್ತುಗಳ ಪೂರೈಕೆ ಸರಪಳಿಯನ್ನು ವೈವಿಧ್ಯಗೊಳಿಸಲು ಮತ್ತು ಬೆಲೆ ಏರಿಕೆಯ ಮೂಲಕ ನಮ್ಮ ಜನರ ಮೇಲೆ ಹೊರೆ ಹೇರುವುದನ್ನು ನಿಲ್ಲಿಸಲು ವಿವರವಾದ ತುರ್ತು ಯೋಜನೆಯೊಂದಿಗೆ ಮುಂದೆ ಬರಬೇಕು. ವಿರೋಧ ಪಕ್ಷವು ನಮ್ಮ ಜನರ ಬಗ್ಗೆ ಸಂವೇದನಾಶೀಲತೆಯನ್ನು ತೋರಬೇಕೆಂದು ಒತ್ತಾಯಿಸುತ್ತದೆ” ಎಂದು ಸಭೆಯ ನಂತರ ಖರ್ಗೆ ಹೇಳಿದ್ದಾರೆ.
ವಿರೋಧ ಪಕ್ಷದ ಸಂಸದರು ಸಂಸತ್ತಿನ ಮಕರ ದ್ವಾರದ ಬಳಿ ಪ್ರತಿಭಟನೆ ನಡೆಸಿದರು, ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಚರ್ಚೆಗೆ ಒತ್ತಾಯಿಸಿದರು ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರದ ‘ಮೌನ’ವನ್ನು ಖಂಡಿಸಿದರು.
“ಗಲ್ಫ್ ಉರಿಯುತ್ತಿದೆ, ತೈಲ ಆಘಾತ. ಭಾರತೀಯರು ಸಂಕಷ್ಟದಲ್ಲಿದ್ದಾರೆ. ಭಾರತಕ್ಕೆ ನಾಯಕತ್ವದ ಅಗತ್ಯವಿದೆ – ಮೌನದಲ್ಲ” ಎಂದು ಬರೆದಿದ್ದ ಬೃಹತ್ ಬ್ಯಾನರ್ ಹಿಡಿದ ಸಂಸದರು, ಸರ್ಕಾರ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಟಿಎಂಸಿಯ ಸಾಗರಿಕಾ ಘೋಷ್ ಸೇರಿದಂತೆ ಹಲವರು ಭಾಗವಹಿಸಿದ್ದರು.


