ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ‘ಅನಿರೀಕ್ಷಿತ ಕೃತ್ಯ’ ಎಸಗಲು ಸಂಚು ರೂಪಿಸುತ್ತಿದ್ದಾರೆ ಎಂದು ಓಂ ಬಿರ್ಲಾ ಅವರು ಕಳೆದ ವಾರ ಲೋಕಸಭೆಯಲ್ಲಿ ಆರೋಪಿಸಿದ್ದರು. ಅಲ್ಲದೆ, ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷದವರಿಗೆ ಮಾತನಾಡಲು ಸ್ಪೀಕರ್ ಅವಕಾಶ ನೀಡುತ್ತಿಲ್ಲ ಎಂದು ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿವೆ.
ಈ ಹಿನ್ನೆಲೆ ವಿರೋಧ ಪಕ್ಷಗಳು ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಸಿದ್ಧತೆ ನಡೆಸುತ್ತಿವೆ ಎಂಬುವುದಾಗಿ ಮೂಲಗಳು ಹೇಳಿವೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಸೋಮವಾರ (ಫೆ.9) ವರದಿ ಮಾಡಿದೆ.
ಸೋಮವಾರ ಬೆಳಿಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವಿಶ್ವಾಸ ನಿರ್ಣಯದ ಕುರಿತು ಚರ್ಚೆ ನಡೆದಿದ್ದು, ಇಂಡಿಯಾ ಮೈತ್ರಿಕೂಟದ ಭಾಗವಲ್ಲದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಇದಕ್ಕೆ ಸಮ್ಮತಿಸಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ.
ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲು ವಿರೋಧ ಪಕ್ಷಕ್ಕೆ 100 ಸಂಸದರ ಸಹಿ ಅಗತ್ಯವಿದೆ.
ಸೋಮವಾರ ವಿರೋಧ ಪಕ್ಷದವರು ಸದನದಲ್ಲಿ ಅಡ್ಡಿಪಡಿಸಲು “ಯೋಜಿಸುತ್ತಿದ್ದಾರೆ” ಎಂದು ಆರೋಪಿಸಿ ಸ್ಪೀಕರ್ ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಿದ್ದಾರೆ.
ಕಳೆದ ಒಂದು ವಾರದಿಂದ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ವಾಗ್ವಾದಗಳು ನಡೆಯುತ್ತಿದ್ದು, ಸತತ ಪ್ರತಿಭಟನೆಗಳ ನಡುವೆ ಲೋಕಸಭೆಯ ಕಲಾಪಗಳು ಪದೇ ಪದೇ ಮುಂದೂಡಿಕೆಯಾಗಿವೆ. ಸೋಮವಾರ ಕೂಡ ಗದ್ದಲದ ಹಿನ್ನೆಲೆ ಕಲಾಪವನ್ನು ಮುಂದೂಡಲಾಗಿದೆ.


