ಒಳಮೀಸಲಾತಿ ಜಾರಿಗೊಳಿಸುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಮಾಡಿರುವ ಬೆನ್ನಲ್ಲೇ ವಿರೋಧಗಳೂ ವ್ಯಕ್ತವಾಗುತ್ತಿವೆ. ಪರಿಶಿಷ್ಟ ಜಾತಿಯೊಳಗಿನ ಮಾದಿಗ ಸಮುದಾಯಕ್ಕೆ ಶೇ.6, ಹೊಲೆಯ ಸಮುದಾಯಕ್ಕೆ ಶೇ.5.5, ಸ್ಪೃಶ್ಯ ಪಟ್ಟಿಯಲ್ಲಿನ ಬೋವಿ, ಬಂಜಾರ, ಕೊರಚ, ಕೊರಮ ಸಮುದಾಯಗಳಿಗೆ ಶೇ.4.5, ಇತರೆ ಸಮುದಾಯಗಳಿಗೆ ಶೇ.1ರಷ್ಟು ಮೀಸಲಾತಿಯನ್ನು ನೀಡುವುದಾಗಿ ಘೋಷಿಸಲಾಗಿದ್ದು, ಬಂಜಾರ ಸಮುದಾಯ ಹೋರಾಟಕ್ಕಿಳಿದಿದೆ.
ರಾಜ್ಯ ವಿವಿಧೆಡೆ ಹೋರಾಟಗಳು ನಡೆಯುತ್ತಿದ್ದು ಮೀಸಲು ಸಂರಕ್ಷಣಾ ಒಕ್ಕೂಟ ಶಹಾಪುರ ನಗರದಲ್ಲಿ ಗುರುವಾರ ಪ್ರತಿಭಟನೆಗೆ ಕರೆ ನೀಡಿತ್ತು. ಆದರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆರ್.ಸ್ನೇಹಲ್ ಆದೇಶ ಹೊರಡಿಸಿದ್ದಾರೆ.
“ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಗುರುವಾರ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 14ರನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಶಹಾಪುರ ನಗರದ ಬಸವೇಶ್ವರ ವೃತ್ತದಿಂದ ಹೊಸ ತಹಶೀಲ್ದಾರ್ ಕಾರ್ಯಾಲಯದವರೆಗೆ ಕಾಲ್ನಡಿಗೆಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆಗೆ ಶಹಾಪುರ, ವಡಗೇರಾ ತಾಲ್ಲೂಕುಗಳ ವ್ಯಾಪ್ತಿಯ ಹಾಗೂ ಯಾದಗಿರಿ ಜಿಲ್ಲೆಯ ಕೆಲವು ತಾಂಡಾಗಳಿಂದ ಜನರು ಆಗಮಿಸುವ ಸಾಧ್ಯತೆ ಇತ್ತು.
“ಈ ಸಂದರ್ಭದಲ್ಲಿ ಶಾಂತಿ ಕದಡಿ ಸಾರ್ವಜನಿಕರ ಆಸ್ತಿ- ಪಾಸ್ತಿಗೆ ನಷ್ಟ ಉಂಟಾಗುವ ಸಾದ್ಯತೆಗಳಿರುತ್ತವೆ. ಅಲ್ಲದೆ ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮತ್ತು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿರುವುದರಿಂದ ಶಹಾಪುರ ನಗರ ಮತ್ತು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಶಹಾಪುರ ನಗರದಾದ್ಯಂತ ಹಾಗೂ ಶಹಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜಾರಿಗೊಳಿಸಬೇಕು” ಎಂದು ಪೊಲೀಸರು ಜಿಲ್ಲಾಧಿಕಾರಿಗೆ ಪತ್ರ ಬರೆದ್ದರು. ಈ ಹಿನ್ನೆಲೆಯನ್ನು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
“ಶಹಾಪುರ ನಗರದಲ್ಲಿ ಮತ್ತು ಶಹಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚಿನ ಯಾವುದೇ ವ್ಯಕ್ತಿ, ಗುಂಪು ಕೂಡುವುದು, ಮೆರವಣಿಗೆ ಸಭೆ ಸಮಾರಂಭ ಬಹಿರಂಗ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ. ಯಾವುದೇ ಮಾರಕಾಸ್ತ್ರಗಳನ್ನು (ಬಂದೂಕು, ಭರ್ಚಿ, ಕತ್ತಿ, ಚಾಕು, ಕುಡುಗೋಲು, ಕೊಡಲಿ, ಬಡಿಗೆ, ಇತ್ಯಾದಿ) ಮತ್ತು ಸ್ಫೋಟಕ ವಸ್ತುಗಳನ್ನು ಸಂಗಡ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಭಾಷಣ, ಕೂಗಾಡುವುದು, ಹಾಡುವುದು, ವಾದ್ಯ ಬಾರಿಸುವುದು, ಅಣಕವಾಡುವುದು ಮುಂತಾದ ಕಾರ್ಯಗಳನ್ನು ನಿಷೇಧಿಸಲಾಗಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಾಯ್ದೆ ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವುದು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಆದೇಶ ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕು” ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್ ಆದೇಶಿಸಿದ್ದಾರೆ.
ಇದನ್ನೂ ಓದಿರಿ: ಒಳಮೀಸಲಾತಿ ಜಾರಿ ಎಂದು ಸುಳ್ಳು ಜಾಹೀರಾತು ನೀಡದಿರಿ: ಹೋರಾಟ ಸಮಿತಿ ಆಗ್ರಹ
ಇತ್ತೀಚೆಗೆ ಶಿಕಾರಿಪುರದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ಕಲ್ಲು ತೂರಾಟ ಮಾಡಲಾಗಿತ್ತು.
ಪ್ರತಿಭಟನಾಕಾರರು ಮಾಜಿ ಬಿ.ಎಸ್.ಯಡಿಯೂರಪ್ಪರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದರು. ಆದರೆ ಕೆಲವು ಕಿಡಿಗೇಡಿಗಳು ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಕಲ್ಲು ತೂರಾಟದಿಂದ ಮನೆಯ ಕಿಟಕಿ ಗಾಜಿಗೆ ಹಾನಿಯಾಗಿತ್ತು. ತಡೆಯಲು ಬಂದ ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಲಾಗಿತ್ತು. ಯಡಿಯೂರಪ್ಪ ನಿವಾಸದ ಮುಂದೆ ಹಾಕಲಾಗಿದ್ದ ಬ್ಯಾನರ್ಗಳನ್ನು ಸಹ ಹರಿದು ಹಾಕಲಾಗಿತ್ತು. ನಿವಾಸದ ಮೇಲೆ ಚಪ್ಪಲಿ ಎಸೆದು ಆಕ್ರೋಶ ಹೊರಹಾಕಿದ್ದರು.
ಈ ವೇಳೆ ಪಟ್ಟಣದಲ್ಲಿ ಹಾಕಲಾಗಿದ್ದ ಬಿಜೆಪಿ, ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ಬ್ಯಾನರ್, ಫ್ಲೆಕ್ಸ್ಗಳನ್ನು ಕಿತ್ತೊಗೆದಿದ್ದರು. ಟೈರ್, ಸೀರೆಗಳಿಗೆ ಬೆಂಕಿ ಹಚ್ಚಿ, ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು. ಘಟನೆಯಲ್ಲಿ ಪ್ರತಿಭಟನಾಕಾರರು ಮತ್ತು ಕೆಲವು ಪೊಲೀಸರು ಗಾಯಗೊಂಡಿದ್ದರು ಎಂದು ವರದಿಯಾಗಿತ್ತು.