Homeಕರ್ನಾಟಕ'ನಮ್ಮದು ಪ್ರಜಾಪ್ರಭುತ್ವ; ಪ್ರಧಾನಮಂತ್ರಿ ಏಕಚಕ್ರಾಧಿಪತಿ ಅಲ್ಲ..'; ದೇವೇಗೌಡರಿಗೆ 'ಫೆಡರಲಿಸಂ' ಪಾಠ ಮಾಡಿದ ಸಿಎಂ

‘ನಮ್ಮದು ಪ್ರಜಾಪ್ರಭುತ್ವ; ಪ್ರಧಾನಮಂತ್ರಿ ಏಕಚಕ್ರಾಧಿಪತಿ ಅಲ್ಲ..’; ದೇವೇಗೌಡರಿಗೆ ‘ಫೆಡರಲಿಸಂ’ ಪಾಠ ಮಾಡಿದ ಸಿಎಂ

- Advertisement -
- Advertisement -

‘ನಮ್ಮದು ಒಕ್ಕೂಟ ವ್ಯವಸ್ಥೆಯ ಪ್ರಜಾಪ್ರಭುತ್ವ. ಇಲ್ಲಿ ಪ್ರಧಾನನಮಂತ್ರಿ ಏಕಚಕ್ರಾಧಿಪತಿಯೂ ಅಲ್ಲ, ಮುಖ್ಯಮಂತ್ರಿ ಮಾಂಡಲೀಕನೂ ಅಲ್ಲ. ಇಬ್ಬರು ಅವರವರ ಸ್ಥಾನಮಾನದಲ್ಲಿ ಸಮಾನರು’ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರಿಗೆ ಒಕ್ಕೂಟ ವ್ಯವಸ್ಥೆಯ (ಫೆಡರಲಿಸಂ) ಮಾಠ ಮಾಡಿದ್ದಾರೆ.

ಏಪ್ರಿಲ್ 14 ರಂದು ಮೈಸೂರಿನಲ್ಲಿ ನಡೆದ ಎನ್‌ಡಿಎ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದರು. ಈ ಕುರಿತು ತಮ್ಮ ಆಕ್ರೋಶ ಹೊರಹಾಕಿರುವ ಸಿಎಂ, ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಸನ್ಮಾನ್ಯ ಎಚ್.ಡಿ. ದೇವೇಗೌಡರೇ, ನೂರು ಕೋಟಿ ಜನರ ಪ್ರತಿನಿಧಿಯಾಗಿರುವ ಪ್ರಧಾನಮಂತ್ರಿಯವರನ್ನು ಆರು ಕೋಟಿ ಜನರ ಪ್ರತಿನಿಧಿಯಾದ ಮುಖ್ಯಮಂತ್ರಿ ಪ್ರಶ್ನೆ ಮಾಡಬಾರದು ಎಂಬ ನಿಮ್ಮ ಮಾತು ನನ್ನಲ್ಲಿ ಅತ್ಯಾಶ್ಚರ್ಯವನ್ನು ಮಾತ್ರವಲ್ಲ, ನಿಮ್ಮ ಬಗ್ಗೆ ಕನಿಕರವನ್ನೂ ಉಂಟು ಮಾಡಿದೆ. ಒಂದು ಪ್ರಾದೇಶಿಕ ಪಕ್ಷವನ್ನು ಇಷ್ಟು ವರ್ಷಗಳ ಕಾಲ ಮುನ್ನಡೆಸುತ್ತಾ ಬಂದ ನೀವು ನಿರಂತರವಾಗಿ ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿಯವರನ್ನು ಟೀಕಿಸುತ್ತಾ ಬಂದವರು. ಇದೀಗ ಈ ಇಳಿವಯಸ್ಸಿನಲ್ಲಿ ಈ ಬಗೆಯ ಶರಣಾಗತಿಯ ಸ್ಥಿತಿ ಯಾಕೆ ಬಂತು’ ಎಂದು ಪ್ರಶ್ನಿಸಿದ್ದಾರೆ.

‘ನಮ್ಮದು ಒಕ್ಕೂಟ ವ್ಯವಸ್ಥೆಯ ಪ್ರಜಾಪ್ರಭುತ್ವ. ಇಲ್ಲಿ ಪ್ರಧಾನನಮಂತ್ರಿ ಏಕಚಕ್ರಾಧಿಪತಿಯೂ ಅಲ್ಲ, ಮುಖ್ಯಮಂತ್ರಿ ಮಾಂಡಲೀಕನೂ ಅಲ್ಲ. ಇಬ್ಬರು ಅವರವರ ಸ್ಥಾನಮಾನದಲ್ಲಿ ಸಮಾನರು. ಎರಡೂ ಪದವಿಗಳು ಸಮಾನವಾದುದು, ವಯಸ್ಸಿನ ಹಿರಿ-ಕಿರಿತನಗಳು ಪದವಿಗಳಿಗೆ ಅನ್ವಯವಾಗುವುದಿಲ್ಲ. ಅತಿ ಸಣ್ಣ ವಯಸ್ಸಿಗೆ ಪ್ರಧಾನಿಯಾದ ರಾಜೀವ್ ಗಾಂಧಿಯವರಿದ್ದಾಗಲೂ ಅವರಿಗಿಂತ ಹಿರಿಯರಾದ ಮುಖ್ಯಮಂತ್ರಿಗಳೂ ಇದ್ದರು. ಆಗಲೂ ಪರಸ್ಪರ ಟೀಕೆ-ಟಿಪ್ಪಣಿಗಳು ವಿನಿಮಯವಾಗುತ್ತಿದ್ದವು. ಇಲ್ಲಿಯ ವರೆಗೆ ಯಾರೂ ಕೂಡಾ ನಿಮ್ಮ ರೀತಿಯ ಉಪದ್ವಾಪ್ಯತನದ ಪ್ರಶ್ನೆಗಳನ್ನು ಎತ್ತಿರಲಿಲ್ಲ. ನೀವು ಹಿಂದಿನ ಪ್ರಧಾನಿಗಳನ್ನು ಯಾವ ಯಾವ ರೀತಿಯಲ್ಲಿ ಪ್ರಶ್ನಿಸಿದ್ದೀರಿ, ದೂರಿದ್ದೀರಿ, ಕೆಣಕಿದ್ದೀರಿ ಎನ್ನುವ ಪಟ್ಟಿಯನ್ನು ನಾನು ನಿಮಗೆ ಕೊಡಬಲ್ಲೆ’ ಎಂದು ಹೇಳಿರುವ ಮುಖ್ಯಮಂತ್ರಿಗಳು, ಪ್ರಧಾನಿ ಮೋದಿ ಕುರಿತು ದೇವೇಗೌಡರು ಮಾಡಿರುವ ಟೀಕೆಗಳ ಪತ್ರಿಕಾ ತುಣುಕುಗಳನ್ನು ಹಂಚಿಕೊಂಡಿದ್ದಾರೆ.

‘2002ರ ಗುಜರಾತ್ ಗಲಭೆಯ ಬಗ್ಗೆ ಲೋಕಸಭೆಯಲ್ಲಿ ನಡುರಾತ್ರಿವರೆಗೆ ನಡೆದ ಚರ್ಚೆಯಲ್ಲಿ ನೀವು ಆಗಿನ ಪ್ರಧಾನಿ ಅಟಲ್‌ಬಿಹಾರಿ ವಾಜಪೇಯಿ ಅವರ ವಿರುದ್ಧ ಪ್ರಯೋಗ ಮಾಡಿರುವ ಟೀಕಾಸ್ತ್ರಗಳು ಸದನದ ದಾಖಲೆಯಲ್ಲಿರಬಹುದು. ಇದನ್ನು ಈಗಲೂ ನಾನು ತಪ್ಪೆಂದು ಹೇಳುವುದಿಲ್ಲ. ಇವೆಲ್ಲವೂ ಸಂಸದೀಯ ಪ್ರಜಾಪ್ರಭುತ್ವದ ನಡವಳಿಕೆಗಳ ಭಾಗವಾಗಿರುತ್ತದೆ. ಆಗ ನೀವು ಮುಖ್ಯಮಂತ್ರಿಯೂ ಆಗಿರಲಿಲ್ಲ, ನೀವು ಕೇವಲ ಒಂದು ಲೋಕಸಭಾ ಕ್ಷೇತ್ರದ ಪ್ರತಿನಿಧಿಯಾಗಿದ್ದವರು. ಆಗ ಈ ನೂರು ಕೋಟಿ, ಆರು ಕೋಟಿ ವ್ಯತ್ಯಾಸಗಳು ಬಾಧಿಸಿರಲಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.

‘ಕೆಲವೇ ತಿಂಗಳುಗಳ ಹಿಂದೆ ನರೇಂದ್ರ ಮೋದಿ ಅವರಿಗಿಂತ ಕನಿಷ್ಠ ಹತ್ತು ವರ್ಷ ಸಣ್ಣವರಾಗಿರುವ ಮತ್ತು ಕೇವಲ ಒಬ್ಬ ಶಾಸಕರಾಗಿರುವ ನಿಮ್ಮ ಮಗ ಎಚ್.ಡಿ.ಕುಮಾರಸ್ವಾಮಿಯವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಯಾವ ಭಾಷೆ ಬಳಸಿ ತರಾಟೆಗೆ ತೆಗೆದುಕೊಂಡಿದ್ದರೆನ್ನುವುದನ್ನು ನಾಡಿನ ಜನ ಇನ್ನೂ ಮರೆತಿಲ್ಲ, ನಿಮ್ಮ ನೆನಪಲ್ಲಿಯೂ ಇರಬಹುದು. ಆಗ ಯಾಕೆ ನೀವು ನೂರು ಕೋಟಿ ಜನರನ್ನು ಪ್ರತಿನಿಧಿಸುವ ಪ್ರಧಾನಮಂತ್ರಿಯವರನ್ನು ಟೀಕಿಸಬಾರದು ಎಂದು ಮಗನಿಗೆ ಕಿವಿ ಹಿಂಡಿ ಬುದ್ದಿ ಹೇಳಿರಲಿಲ್ಲ? ಇವೆಲ್ಲವೂ ಅನುಕೂಲಶಾಸ್ತ್ರ ಅಷ್ಟೆ ಎನ್ನುವುದು ರಾಜ್ಯದ ಜನರಿಗೆ ತಿಳಿದಿದೆ’ ಎಂದು ಹೇಳಿದ್ದಾರೆ.

‘ರಾಜ್ಯ ಸರ್ಕಾರಕ್ಕೆ ಅನ್ಯಾಯವಾದಾಗ ಅದನ್ನು ವಿರೋಧಿಸಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿಯವರನ್ನು ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೆ. ಇದೇ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ದೇಶ ಕಂಡ ಅತ್ಯಂತ ಸಭ್ಯ ಮತ್ತು ಗೌರವಾರ್ಹ ರಾಜಕೀಯ ನಾಯಕರಾಗಿರುವ ಮನಮೋಹನ್ ಸಿಂಗ್ ವಿರುದ್ಧ ಯಾವ ಭಾಷೆ ಬಳಸಿದ್ದರೆನ್ನುವುದು ನಿಮಗೆ ನೆನಪಿರಬಹುದೆಂದು ಭಾವಿಸಿದ್ದೇನೆ.
ನೀವು ದೇಶದ ಪ್ರಧಾನಿಯಾಗಿದ್ದಾಗ ಕನ್ನಡಿಗರು ಎದೆಯುಬ್ಬಿಸಿ ಖುಷಿಪಟ್ಟರು. ನೀವು ರಾಜ್ಯದ ನೆಲ-ಜಲ-ಭಾಷೆಯ ರಕ್ಷಣೆಗಾಗಿ ಕೇಂದ್ರ ಸರ್ಕಾರದ ವಿರುದ್ಧ ಆಯಾ ಕಾಲಗಳ ಪ್ರಧಾನಿಗಳ ವಿರುದ್ಧ ಹೋರಾಟಕ್ಕಿಳಿದಾಗಲೂ ಕನ್ನಡಿಗರು ನಿಮ್ಮನ್ನು ತಲೆಮೇಲೆ ಕೂರಿಸಿ ಕೊಂಡಾಡಿದರು’ ಎಂದಿದ್ದಾರೆ.

‘ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳು ತಮ್ಮ ಪಕ್ಷವನ್ನು ಬೆಂಬಲಿಸುತ್ತಿಲ್ಲ ಎಂಬ ಏಕೈಕ ಕಾರಣಕ್ಕಾಗಿ ಪ್ರಧಾನ ಮಂತ್ರಿಗಳು ಈ ರಾಜ್ಯಗಳ ವಿರುದ್ಧ ಸೇಡು ತೀರಿಸಿಕೊಳ್ಳುವವರಂತೆ ನಡೆದುಕೊಳ್ಳುತ್ತಿರುವ ಸಂದರ್ಭದಲ್ಲಿ ನೀವು ಕೇಂದ್ರದ ವಿರುದ್ಧದ ಹೋರಾಟದ ಮುಂಚೂಣಿಯಲ್ಲಿರಬೇಕಾಗಿತ್ತು. ದುರ್ದೈವದ ಸಂಗತಿ ಎಂದರೆ ಈಗ ನೀವು ಕೇವಲ ನಿಮ್ಮ ಪಕ್ಷ ಮತ್ತು ಕುಟುಂಬದ ರಾಜಕೀಯ ಉಳಿವಿಗಾಗಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿರುವ ಪ್ರಧಾನಮಂತ್ರಿಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಅವರ ಪರವಾಗಿ ನಮ್ಮ ವಿರುದ್ಧ ಕತ್ತಿ ಬೀಸುತ್ತಿದ್ದೀರಿ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಈಗಲೂ ಕಾಲ ಮಿಂಚಿಲ್ಲ, ನಿಮ್ಮ ತಪ್ಪನ್ನು ತಿದ್ದಿಕೊಂಡು ಕನ್ನಡಿಗರಿಗೆ ಕೇಂದ್ರ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಿ. ತೆರಿಗೆ ಹಂಚಿಕೆ, ಬರ ಪರಿಹಾರ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ನರೇಂದ್ರ ಮೋದಿ ಸರ್ಕಾರ ಕನ್ನಡಿಗರ ಕತ್ತು ಕುಯ್ಯುತ್ತಿದೆ. ಇದರ ವಿರುದ್ಧ ನೀವು ದನಿ ಎತ್ತದೆ ಇರುವುದರಿಂದ ವರ್ತಮಾನದಲ್ಲಿ ನಿಮ್ಮ ಪಕ್ಷಕ್ಕೆ ಒಂದಷ್ಟು ಲಾಭವಾಗಲೂ ಬಹುದು. ಆದರೆ ಇತಿಹಾಸ ನಿಮ್ಮನ್ನು ಖಂಡಿತಾ ಕ್ಷಮಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ; ಬಿಜೆಪಿ-ಆರೆಸ್ಸೆಸ್ ಕಾರ್ಯಕರ್ತರ ಬಗ್ಗೆ ಮತದಾರರು ಜಾಗರೂಕರಾಗಿರಿ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...