Homeಮುಖಪುಟಮಹಾರಾಷ್ಟ್ರ: ಮುಟ್ಟು ಪರೀಕ್ಷೆಗೆ 10 ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಶಾಲೆ; ಪ್ರಾಂಶುಪಾಲ, ಸಿಬ್ಬಂದಿ ಬಂಧನ

ಮಹಾರಾಷ್ಟ್ರ: ಮುಟ್ಟು ಪರೀಕ್ಷೆಗೆ 10 ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಶಾಲೆ; ಪ್ರಾಂಶುಪಾಲ, ಸಿಬ್ಬಂದಿ ಬಂಧನ

- Advertisement -
- Advertisement -

ಈ ಘಟನೆ ಮುಟ್ಟು ಕುರಿತು ಸಮಾಜದ ಕಾಯಿಲೆಯ ಪ್ರತಿಬಿಂಬ: ಪರಿಹಾರವೇನು?

ಥಾಣೆ, ಮಹಾರಾಷ್ಟ್ರ: ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆಗಳು ಕಂಡುಬಂದ ಕಾರಣಕ್ಕೆ, ಯಾರು ಋತುಮತಿಯಾಗಿದ್ದಾರೆಂದು ಪತ್ತೆಹಚ್ಚಲು ಸುಮಾರು 10 ವಿದ್ಯಾರ್ಥಿನಿಯರನ್ನು ಬಟ್ಟೆ ಬಿಚ್ಚಿಸಿ ಪರೀಕ್ಷೆ ನಡೆಸಿದ ಆಘಾತಕಾರಿ ಘಟನೆ ಥಾಣೆ ಜಿಲ್ಲೆಯ ಶಹಾಪುರದ ಆರ್.ಎಸ್. ದಮಾನಿ ಶಾಲೆಯಲ್ಲಿ ನಡೆದಿದೆ. ಈ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲ ಮತ್ತು ಮಹಿಳಾ ಸಿಬ್ಬಂದಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ವಿವರ

ಮಂಗಳವಾರ ಶಾಲೆಯ ಶೌಚಾಲಯವೊಂದರಲ್ಲಿ ರಕ್ತದ ಕಲೆಗಳನ್ನು ಗಮನಿಸಿದ ಶಾಲಾ ಸಿಬ್ಬಂದಿ, ಈ ವಿಷಯವನ್ನು ಪ್ರಾಂಶುಪಾಲರು ಮತ್ತು ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ನಂತರ, 5 ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿನಿಯರನ್ನು ಶಾಲೆಯ ಸಭಾಂಗಣದಲ್ಲಿ ಒಟ್ಟುಗೂಡಿಸಲಾಗಿದೆ. ಅಲ್ಲಿ, ಶೌಚಾಲಯದಲ್ಲಿ ಕಂಡುಬಂದ ರಕ್ತದ ಕಲೆಗಳ ಚಿತ್ರಗಳನ್ನು ಪ್ರೊಜೆಕ್ಟರ್ ಮೂಲಕ ಪ್ರದರ್ಶಿಸಿ, ಯಾರು ಋತುಮತಿಯಾಗಿದ್ದೀರೆಂದು ಸ್ವಯಂಪ್ರೇರಿತವಾಗಿ ಮುಂದೆ ಬರುವಂತೆ ಸೂಚಿಸಲಾಗಿದೆ.

ಕೆಲವು ವಿದ್ಯಾರ್ಥಿನಿಯರು ತಾವು ಋತುಮತಿಯಾಗಿರುವುದಾಗಿ ಒಪ್ಪಿಕೊಂಡಾಗ, ಅವರಿಂದ ಹೆಬ್ಬೆಟ್ಟಿನ ಗುರುತು ಪಡೆಯಲಾಗಿದೆ. ಉಳಿದ ವಿದ್ಯಾರ್ಥಿನಿಯರನ್ನು ಶೌಚಾಲಯಕ್ಕೆ ಕರೆದೊಯ್ದು, ಮಹಿಳಾ ಸಿಬ್ಬಂದಿಯೊಬ್ಬರ ಮೇಲ್ವಿಚಾರಣೆಯಲ್ಲಿ ಬಟ್ಟೆ ಬಿಚ್ಚಿಸಿ ದೈಹಿಕವಾಗಿ ಪರೀಕ್ಷಿಸಲಾಗಿದೆ. 10 ರಿಂದ 12 ವರ್ಷದೊಳಗಿನ ವಿದ್ಯಾರ್ಥಿನಿಯರ ಒಳಉಡುಪುಗಳನ್ನು ಮುಟ್ಟಿ ಪರೀಕ್ಷಿಸುವಂತೆ ಪ್ರಾಂಶುಪಾಲರು ಮಹಿಳಾ ಸಿಬ್ಬಂದಿಗೆ ಸೂಚಿಸಿದ್ದರು ಎಂದು ಆರೋಪಿಸಲಾಗಿದೆ.

ಈ ವೇಳೆ, ವಿದ್ಯಾರ್ಥಿನಿಯೊಬ್ಬಳು ಸ್ಯಾನಿಟರಿ ಪ್ಯಾಡ್ ಧರಿಸಿದ್ದು ಕಂಡುಬಂದಿದೆ. ಆಗ ಪ್ರಾಂಶುಪಾಲರು, “ನೀನು ಋತುಮತಿಯಾಗಿಲ್ಲದಿದ್ದರೂ ಸ್ಯಾನಿಟರಿ ಪ್ಯಾಡ್ ಏಕೆ ಧರಿಸಿದ್ದೀಯ?” ಎಂದು ಗದರಿಸಿ, ಆಕೆಯನ್ನು ಸುಳ್ಳುಗಾರ್ತಿ ಎಂದು ನಿಂದಿಸಿ, ಬಲವಂತವಾಗಿ ಹೆಬ್ಬೆಟ್ಟಿನ ಗುರುತು ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಘಟನೆಯಿಂದ ವಿದ್ಯಾರ್ಥಿನಿಯು ಶಿಕ್ಷಕರು ಮತ್ತು ಇತರ ವಿದ್ಯಾರ್ಥಿಗಳಿಂದ ಅಪಮಾನಕ್ಕೊಳಗಾಗಿದ್ದಾಳೆ.

ಪೋಷಕರ ಆಕ್ರೋಶ ಮತ್ತು ಪೊಲೀಸ್ ಕ್ರಮ

ಈ ಆಘಾತಕಾರಿ ಘಟನೆಯಿಂದ ಮಾನಸಿಕವಾಗಿ ನೊಂದ ವಿದ್ಯಾರ್ಥಿನಿಯರು ಮನೆಗೆ ತೆರಳಿ ಪೋಷಕರಿಗೆ ವಿಷಯ ತಿಳಿಸಿದ್ದಾರೆ. ಮರುದಿನ ಶಾಲೆಗೆ ಬಂದ ಪೋಷಕರು, ಶಾಲಾ ಆಡಳಿತ ಮಂಡಳಿಯ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಇದು ಶಾಲಾ ಆವರಣದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಯಿತು.

ಪೋಷಕರೊಬ್ಬರು ನೀಡಿದ ದೂರಿನ ಅನ್ವಯ, ಶಹಾಪುರ ಪೊಲೀಸರು ಶಾಲೆಯ ಪ್ರಾಂಶುಪಾಲ, ನಾಲ್ವರು ಶಿಕ್ಷಕರು, ಓರ್ವ ಮಹಿಳಾ ಸಿಬ್ಬಂದಿ ಹಾಗೂ ಇಬ್ಬರು ಟ್ರಸ್ಟಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 74 (ಮಹಿಳೆಯ ಮಾನಭಂಗ ಮಾಡುವ ಉದ್ದೇಶದಿಂದ ಹಲ್ಲೆ) ಮತ್ತು ಸೆಕ್ಷನ್ 76 (ಮಹಿಳೆಯನ್ನು ವಿವಸ್ತ್ರಗೊಳಿಸುವ ಉದ್ದೇಶದಿಂದ ಹಲ್ಲೆ) ಹಾಗೂ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲ ಮತ್ತು ಮಹಿಳಾ ಸಿಬ್ಬಂದಿಯನ್ನು ಬುಧವಾರ ಬಂಧಿಸಲಾಗಿದ್ದು, ಅವರನ್ನು ಇಂದು (ಗುರುವಾರ) ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಥಾಣೆ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.

ಸದ್ಯಕ್ಕೆ ನಾವು ಹೇಳಿಕೆಗಳನ್ನು ಸಂಗ್ರಹಿಸುತ್ತಿದ್ದೇವೆ ಮತ್ತು ಘಟನೆಯ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಥಾಣೆ ಗ್ರಾಮಾಂತರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಝಾಲ್ಟೆ ಹೇಳಿದ್ದಾರೆ.

ಥಾಣೆ ಘಟನೆ ಮುಟ್ಟಿನ ಬಗೆಗಿನ ನಮ್ಮ ಸಮಾಜದ ಕಾಯಿಲೆಯ ಪ್ರತಿಬಿಂಬ!

ಮಹಾರಾಷ್ಟ್ರದ ಥಾಣೆಯ ಶಾಲೆಯಲ್ಲಿ ನಡೆದ ವಿದ್ಯಾರ್ಥಿನಿಯರ ವಿವಸ್ತ್ರೀಕರಣ ಘಟನೆಯನ್ನು ಕೇವಲ ಒಂದು ಸ್ಥಳೀಯ ಅಪರಾಧವೆಂದು ಪರಿಗಣಿಸಿದರೆ ಅದು ನಮ್ಮ ದೊಡ್ಡ ತಪ್ಪಾಗುತ್ತದೆ. ವಾಸ್ತವದಲ್ಲಿ, ಇದು ನಮ್ಮ ಸಮಾಜದಲ್ಲಿ ಮುಟ್ಟಿನ (ಋತುಚಕ್ರ) ಬಗ್ಗೆ ಆಳವಾಗಿ ಬೇರೂರಿರುವ ಅಜ್ಞಾನ, ಮೂಢನಂಬಿಕೆ, ಮತ್ತು ಮಹಿಳಾ ವಿರೋಧಿ ಮನಸ್ಥಿತಿಯಾಗಿದೆ.

ಸಮಸ್ಯೆಯ ಮೂಲ ಎಲ್ಲಿದೆ?

ಋತುಚಕ್ರವು ಮಹಿಳೆಯ ದೇಹದಲ್ಲಿ ನಡೆಯುವ ಒಂದು ಸಹಜ ಮತ್ತು ಆರೋಗ್ಯಕರ ಜೈವಿಕ ಪ್ರಕ್ರಿಯೆ. ಆದರೆ ನಮ್ಮ ಸಮಾಜದಲ್ಲಿ ಅದನ್ನು ‘ಅಶುದ್ಧ’, ‘ಮೈಲಿಗೆ’ ಮತ್ತು ಮುಚ್ಚಿಡಬೇಕಾದ ವಿಚಾರವೆಂದು ಬಿಂಬಿಸಲಾಗಿದೆ. ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆ ಕಂಡಾಗ, ಅದನ್ನು ನೈರ್ಮಲ್ಯದ ಸಮಸ್ಯೆಯಾಗಿ ನೋಡುವ ಬದಲು, ಒಂದು ‘ಅಪರಾಧ’ ಎಂಬಂತೆ ನೋಡಿ, ‘ಅಪರಾಧಿ’ಯನ್ನು ಪತ್ತೆಹಚ್ಚಲು ಹೊರಟಿದ್ದೇ ಈ ಮನಸ್ಥಿತಿಯ ಫಲವಾಗಿದೆ.

ವಿಜ್ಞಾನವನ್ನು ಬೋಧಿಸಬೇಕಾದ ಶಾಲೆಯಲ್ಲೇ ಇಂತಹ ಅವೈಜ್ಞಾನಿಕ ಮತ್ತು ಅಮಾನವೀಯ ಘಟನೆ ನಡೆದಿದೆ ಎಂದರೆ, ನಮ್ಮ ಶಿಕ್ಷಣ ವ್ಯವಸ್ಥೆ ಎಲ್ಲಿ ಎಡವುತ್ತಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಲೈಂಗಿಕ ಶಿಕ್ಷಣ ಮತ್ತು ಮುಟ್ಟಿನ ಕುರಿತ ಆರೋಗ್ಯಕರ ಚರ್ಚೆಗಳು ಪಠ್ಯಕ್ರಮದ ಭಾಗವಾಗಿದ್ದರೂ, ಶಿಕ್ಷಕರಿಗೇ ಈ ಕುರಿತು ಸರಿಯಾದ ಜ್ಞಾನ ಇಲ್ಲದಿರುವುದು ಈ ಘಟನೆಯಿಂದ ಸ್ಪಷ್ಟವಾಗುತ್ತದೆ.

ಈ ಘಟನೆಯಲ್ಲಿ ಪ್ರಾಂಶುಪಾಲ ಮತ್ತು ಶಿಕ್ಷಕರು ತಮ್ಮ ಅಧಿಕಾರವನ್ನು ಬಳಸಿ, ಮಕ್ಕಳ ಮೇಲೆ ನಡೆಸಿದ ಈ ದೌರ್ಜನ್ಯವು ಪೋಕ್ಸೋ ಕಾಯ್ದೆಯ ವ್ಯಾಪ್ತಿಗೆ ಬರುತ್ತದೆ. ಪೋಕ್ಸೋ ಕಾಯ್ದೆಯು ಮಕ್ಕಳನ್ನು ಲೈಂಗಿಕ ದೌರ್ಜನ್ಯದಿಂದ ರಕ್ಷಿಸಲು ಇರುವ ಅತ್ಯಂತ ಕಠಿಣ ಕಾನೂನು ಆಗಿದೆ. ಮಕ್ಕಳ ಖಾಸಗಿತನವನ್ನು ಗೌರವಿಸುವುದು, ಅವರ ಘನತೆಗೆ ಧಕ್ಕೆ ತರದಂತೆ ನೋಡಿಕೊಳ್ಳುವುದು ಶಾಲೆಯ ಪ್ರಮುಖ ಜವಾಬ್ದಾರಿ. ಇಲ್ಲಿ ಆ ಜವಾಬ್ದಾರಿಯ ಸಂಪೂರ್ಣ ಉಲ್ಲಂಘನೆಯಾಗಿದೆ.

ಮುಂದೇನು?

ಆರೋಪಿಗಳ ಬಂಧನ ಮತ್ತು ಅವರಿಗೆ ಕಠಿಣ ಶಿಕ್ಷೆಯಾಗುವುದು ಕಾನೂನು ಪ್ರಕ್ರಿಯೆಯ ಒಂದು ಭಾಗವಷ್ಟೇ ಆಗಿದೆ. ಆದರೆ, ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಈ ಕೆಳಗಿನ ಕ್ರಮಗಳು ಅಗತ್ಯವಾಗಿದೆ.

ಇಂದಿನ ಶೈಕ್ಷಣಿಕ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯಕ್ರಮದ ಕಲಿಕೆಯಷ್ಟೇ ಮುಖ್ಯವಾಗಿ, ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಅಂಶಗಳ ಬಗ್ಗೆ ಅರಿವು ಮೂಡಿಸುವುದು ಅತಿ ಅವಶ್ಯಕ. ಈ ನಿಟ್ಟಿನಲ್ಲಿ ಶಾಲಾ ಶಿಕ್ಷಕರಿಗೆ ಮತ್ತು ಸಿಬ್ಬಂದಿಗೆ ಲಿಂಗ ಸಂವೇದನೆ ಮತ್ತು ಮುಟ್ಟಿನ ನೈರ್ಮಲ್ಯ (ಸ್ಯಾನಿಟರ್ ಪ್ಯಾಡ್‌) ನಿರ್ವಹಣೆ ಕುರಿತು ಕಡ್ಡಾಯವಾಗಿ ತರಬೇತಿ ನೀಡುವುದು ಅಗತ್ಯವಾಗಿದೆ.

ಈ ತರಬೇತಿಯು ಕೇವಲ ಮಾಹಿತಿ ನೀಡುವ ಕಾರ್ಯಕ್ರಮವಾಗಿರದೆ, ಶಿಕ್ಷಕರಲ್ಲಿ ಮತ್ತು ಸಿಬ್ಬಂದಿಯಲ್ಲಿ ಲಿಂಗ ಸಮಾನತೆ ಮತ್ತು ಮುಟ್ಟಿನ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ತಿಳುವಳಿಕೆ ಮತ್ತು ಸಂವೇದನೆಯನ್ನು ಬೆಳೆಸುವ ಗುರಿ ಹೊಂದಿರಬೇಕು. ಲಿಂಗದ ಆಧಾರದ ಮೇಲೆ ಸಮಾಜದಲ್ಲಿ ಹಾಸುಹೊಕ್ಕಾಗಿರುವ ತಪ್ಪು ಕಲ್ಪನೆಗಳನ್ನು ನಿವಾರಿಸುವ ವಿಧಾನಗಳ ಬಗ್ಗೆ ಶಿಕ್ಷಕರಿಗೆ ಅರಿವು ಮೂಡಿಸುವುದು. ಮುಟ್ಟಿನ ಶಾರೀರಿಕ ಪ್ರಕ್ರಿಯೆ, ಶುಚಿತ್ವದ ಮಹತ್ವ, ಲಭ್ಯವಿರುವ ನೈರ್ಮಲ್ಯ ಉತ್ಪನ್ನಗಳು (ಸ್ಯಾನಿಟರಿ ಪ್ಯಾಡ್‌ಗಳು) ಮತ್ತು ಅವುಗಳ ಸರಿಯಾದ ವಿಲೇವಾರಿ ಬಗ್ಗೆ ಸಂಪೂರ್ಣ ಮಾಹಿತಿ ಒದಗಿಸುವುದು. ತುರ್ತು ಸಂದರ್ಭಗಳಲ್ಲಿ ವಿದ್ಯಾರ್ಥಿನಿಯರಿಗೆ ನೆರವಾಗುವ ವಿಧಾನಗಳ ಬಗ್ಗೆಯೂ ತಿಳಿಸುವಂತಹ ತರಬೇತಿಯನ್ನು ನೀಡಬೇಕಿದೆ.

ಶಾಲೆಗಳು ಕೇವಲ ಪಾಠ ಹೇಳುವ ಕೇಂದ್ರಗಳಾಗಿರದೆ, ವಿದ್ಯಾರ್ಥಿಗಳು ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಮುಕ್ತವಾಗಿ ಚರ್ಚಿಸಲು, ಪ್ರಶ್ನೆ ಕೇಳುವ ಸುರಕ್ಷಿತ ಸ್ಥಳಗಳಾಗಿ ರೂಪುಗೊಳ್ಳಬೇಕು. ಮುಟ್ಟಿನ ಬಗ್ಗೆ ತಜ್ಞರು, ವೈದ್ಯರು ಅಥವಾ ನುರಿತ ಶಿಕ್ಷಕರಿಂದ ನಿಯಮಿತವಾಗಿ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ವಿಜ್ಞಾನ ಮತ್ತು ಆರೋಗ್ಯ ಶಿಕ್ಷಣ ಪಠ್ಯಕ್ರಮದಲ್ಲಿ ಮುಟ್ಟಿನ ನೈರ್ಮಲ್ಯ ಮತ್ತು ಲಿಂಗ ಸಂವೇದನಾ ವಿಷಯಗಳನ್ನು ಸಮಗ್ರವಾಗಿ ಸೇರಿಸಬೇಕು.

ಶಾಲೆಯಲ್ಲಿ ಮುಟ್ಟಿಗೆ ಸಂಬಂಧಿಸಿದ ತಮಾಷೆ ಅಥವಾ ಅವಮಾನವನ್ನು ನಿಷೇಧಿಸಬೇಕು. ಸ್ವಚ್ಛ ಮತ್ತು ಸುಲಭವಾಗಿ ಲಭ್ಯವಿರುವ ಶೌಚಾಲಯಗಳು, ಮುಟ್ಟಿನ ನೈರ್ಮಲ್ಯ ಉತ್ಪನ್ನ(ಸ್ಯಾನಿಟರಿ ಪ್ಯಾಡ್‌ಗಳು)ಗಳು ಮತ್ತು ಅವುಗಳ ವಿಲೇವಾರಿಗೆ ಸೂಕ್ತ ವ್ಯವಸ್ಥೆಗಳನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಒದಗಿಸಬೇಕು.

ಮಕ್ಕಳನ್ನು ಲೈಂಗಿಕ ದೌರ್ಜನ್ಯದಿಂದ ರಕ್ಷಿಸಲು ಇರುವ ಪೋಕ್ಸೋ (POCSO – Protection of Children from Sexual Offences) ಕಾಯ್ದೆ-2012 ಕುರಿತು ಮಕ್ಕಳಿಗೆ ಸಂಪೂರ್ಣ ಅರಿವು ಮೂಡಿಸಬೇಕಾಗಿದೆ. ತಮ್ಮ ಹಕ್ಕುಗಳ ಕುರಿತು ಮತ್ತು ದೌರ್ಜನ್ಯ ನಡೆದಾಗ ಯಾರಿಗೆ ಮತ್ತು ಹೇಗೆ ದೂರು ನೀಡಬೇಕು ಎಂಬುದರ ಬಗ್ಗೆ ಮಕ್ಕಳಿಗೆ ಸ್ಪಷ್ಟವಾಗಿ ತಿಳಿಸಬೇಕು.

ಪೋಕ್ಸೋ ಕಾಯ್ದೆಯು ಜಟಿಲವಾದ ಕಾನೂನು ಭಾಷೆಯಲ್ಲಿದೆ. ಇದನ್ನು ಮಕ್ಕಳಿಗೆ ಅರ್ಥವಾಗುವ ಸರಳ ಭಾಷೆ, ಕಥೆಗಳು, ಚಿತ್ರಗಳು ಮತ್ತು ಸಣ್ಣ ನಾಟಕಗಳ ಮೂಲಕ ವಿವರಿಸಬೇಕು.

ಶಾಲೆಯಲ್ಲಿ ಯಾರನ್ನು ವಿಶ್ವಾಸದಿಂದ ಸಂಪರ್ಕಿಸಬಹುದು (ಉದಾ: ಪ್ರಾಂಶುಪಾಲರು, ಶಿಕ್ಷಕರು, ಸಲಹೆಗಾರರು) ಎಂಬ ಬಗ್ಗೆ ಮಕ್ಕಳಿಗೆ ತಿಳಿಸಬೇಕು. ಮಕ್ಕಳ ಸಹಾಯವಾಣಿ 1098ರ ಬಗ್ಗೆಯೂ ಮಾಹಿತಿ ನೀಡಬೇಕು. ದೂರು ನೀಡಿದಾಗ ಮಕ್ಕಳ ಗೌಪ್ಯತೆಯನ್ನು ಖಚಿತಪಡಿಸಲಾಗುವುದು ಎಂಬ ಭರವಸೆಯನ್ನು ನೀಡಬೇಕು.

ಈ ಪ್ರಮುಖ ಅಂಶಗಳನ್ನು ಶಾಲಾ ವ್ಯವಸ್ಥೆಯಲ್ಲಿ ಅಳವಡಿಸಿಕೊಳ್ಳುವ ಮೂಲಕ, ವಿದ್ಯಾರ್ಥಿಗಳಿಗೆ ಹೆಚ್ಚು ಸುರಕ್ಷಿತ, ಸಮಾನತೆ ಆಧಾರಿತ ಮತ್ತು ವೈಜ್ಞಾನಿಕ ಚಿಂತನೆಯ ವಾತಾವರಣವನ್ನು ನಿರ್ಮಿಸಲು ಸಾಧ್ಯ. ಇದು ಮಕ್ಕಳ ಒಟ್ಟಾರೆ ಬೆಳವಣಿಗೆಗೆ ಮತ್ತು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಅಡಿಪಾಯ ಹಾಕುತ್ತದೆ.

ಸೌಜನ್ಯ ಪ್ರಕರಣ| ಹೈಕೋರ್ಟ್ ನ್ಯಾಯಮೂರ್ತಿ ದೇವದಾಸ್ ವಾಗ್ದಂಡನೆಗೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...