ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರನ್ನು ಬೆದರಿಸಲು ಸಾವಿರಕ್ಕೂ ಹೆಚ್ಚು IT, ED, CBI ಅಧಿಕಾರಿಗಳನ್ನು ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕಳುಹಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಕಾಂಗ್ರೆಸ್ ಅಭ್ಯರ್ಥಿಗಳು, ನಾಯಕರು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಬಗ್ಗೆ ಒಲವು ಹೊಂದಿರುವರ ಮೇಲೆ ದಾಳಿ ಮಾಡಿ ಬೆದರಿಸಲು ಕೇಂದ್ರ ಬಿಜೆಪಿ ಸರ್ಕಾರ ಸಾವಿರಕ್ಕೂ ಹೆಚ್ಚು ಐ.ಟಿ, ಇ.ಡಿ ಮತ್ತು ಸಿಬಿಐ ಅಧಿಕಾರಿಗಳನ್ನು ಕರ್ನಾಟಕಕ್ಕೆ ಕಳುಹಿಸಿದೆ. ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ತತ್ತರಿಸಿಹೋಗಿದ್ದಾರೆ. ಅವರ ಪಕ್ಷದೊಳಗೆ ಜಗಳ-ಬಂಡಾಯಗಳು ಹೆಚ್ಚಿವೆ, ಅವರಲ್ಲಿ ಹಲವಾರು ಮಂದಿ ನಮ್ಮ ಪಕ್ಷ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಇದರಿಂದ ಭೀತಿಗೀಡಾಗಿರುವ ಬಿಜೆಪಿ ನಾಯಕರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ದಾಳಿಗಿಳಿದಿದ್ದಾರೆ” ಎಂದಿದ್ದಾರೆ.
ಬಿಜೆಪಿ ಸರ್ಕಾರದ ಈ ಷಡ್ಯಂತ್ರವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಹೋರಾಟದ ಮೂಲಕವೇ ಬಿಜೆಪಿ ಪಕ್ಷದ ಈ ದಮನಕಾರ್ಯವನ್ನು ಎದುರಿಸುತ್ತೇವೆ. ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಭೀತಿಗೀಡಾಗದೆ ಪರಿಸ್ಥಿತಿಯನ್ನು ಧೈರ್ಯದಿಂದ ಎದುರಿಸಬೇಕು ಎಂದು ಅವರು ಕರೆ ನೀಡಿದ್ದಾರೆ.
ಬಿಜೆಪಿ ನಾಯಕರು ಸೋಲಿನ ಭೀತಿಯಿಂದ ತತ್ತರಿಸಿಹೋಗಿದ್ದಾರೆ. ಅವರ ಪಕ್ಷದೊಳಗೆ ಜಗಳ-ಬಂಡಾಯಗಳು ಹೆಚ್ಚಿವೆ, ಅವರಲ್ಲಿ ಹಲವಾರು ಮಂದಿ ನಮ್ಮ ಪಕ್ಷ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಇದರಿಂದ ಭೀತಿಗೀಡಾಗಿರುವ @BJP4India ನಾಯಕರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ದಾಳಿಗಿಳಿದಿದ್ದಾರೆ. 2/3
— Siddaramaiah (@siddaramaiah) April 4, 2023
“ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ ಎಂದು ಕರ್ನಾಟಕದ ಪ್ರತಿಯೊಬ್ಬರಿಗೂ ಗೊತ್ತಿದೆ. ಈ ಕಾರಣದಿಂದ ಹಾಲಿ ಶಾಸಕರು ಕಾಂಗ್ರೆಸ್ ಸೇರುತ್ತಿದ್ದಾರೆ. ಅವರ್ಯಾರು ಮೂರ್ಖರಲ್ಲ, ತಾವು ಬಿಜೆಪಿಯಲ್ಲಿಯೇ ಮುಂದುವರೆದರೆ ಸೋಲುತ್ತೇವೆ ಎಂಬುದು ಅವರಿಗೆ ಗೊತ್ತಾಗಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
“ಬಿಜೆಪಿ ಹೈಕಮಾಂಡ್ಗೂ ಕೂಡ ಕರ್ನಾಟಕದ ಬಿಜೆಪಿ ಮುಳುಗುತ್ತಿದೆ, ಮುಂದೆ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಗೊತ್ತಿದೆ. ತಮ್ಮ ದ್ವೇಷ ರಾಜಕೀಯ ಮತ್ತು ಹಿಂದುತ್ವದ ಅಜೆಂಡಾ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕೆಲಸ ಮಾಡುವುದಿಲ್ಲ ಎಂಬುದು ಅವರಿಗೆ ಅರ್ಥವಾಗಿದೆ” ಎಂದು ಹೇಳಿದ್ದಾರೆ.
“ಬಿಜೆಪಿಗೆ ಉಳಿದಿರುವ ಏಕೈಕ ಮಾರ್ಗವೆಂದರೆ ಅಧಿಕಾರದ ದುರುಪಯೋಗ ಮತ್ತು ತಮ್ಮ ಹಣಬಲದ ಬಳಕೆ. ಹಣ ನೀಡಿದರೂ ಕೂಡ ರಾಜ್ಯದ ಜನ ಕಾಂಗ್ರೆಸ್ ಗೆ ಮತ ನೀಡಬೇಕು ಎಂದು ನಿರ್ಧಾರ ಮಾಡಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
“ಬಿಜೆಪಿ ಸರ್ಕಾರ ಕರ್ನಾಟಕ ಕಂಡ ಅತ್ಯಂತ ಭ್ರಷ್ಟ ಸರ್ಕಾರ. ರಾಜ್ಯದ ಮತದಾರರಿಗೆ ತಾವು ಹಿಂದಿನ ಚುನಾವಣೆಯಲ್ಲಿ ಮಾಡಿದ ತಪ್ಪಿನ ಅರಿವಾಗಿದೆ. ಜನ ಹಿಂದಿನ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಸ್ಮರಿಸುತ್ತಿದ್ದಾರೆ. ಇದರಿಂದ ಬಿಜೆಪಿಗರು ಬೆದರಿದ್ದಾರೆ” ಎಂದು ಬಿಜೆಪಿಯನ್ನು ಟೀಕಿಸಿದ್ದಾರೆ.
“ಕಾಂಗ್ರೆಸ್ ಪಕ್ಷಕ್ಕೆ ಯಾರೂ ಬೆಂಬಲ ನೀಡಬಾರದು ಎಂಬುದು ಬಿಜೆಪಿಯವರ ಉದ್ದೇಶ. ಇದಕ್ಕೆ ನಮ್ಮ ಕಾರ್ಯಕರ್ತರು ಮತ್ತು ನಾಯಕರು ಬಗ್ಗುವವರಲ್ಲ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಧುಗಿರಿ: ಕೆ.ಎನ್. ರಾಜಣ್ಣ, ವೀರಭದ್ರಯ್ಯ ನಡುವಿನ ಹಣಾಹಣಿಗೆ ಬಿಜೆಪಿ ಎಂಟ್ರಿ