ಭಾನುವಾರ ಜೈಪುರ ದೆಹಲಿ ಗಡಿಯಲ್ಲಿರುವ ಶಹಜಹಾನ್ಪುರ್ ರೈತ ಹೋರಾಟ ಸ್ಥಳಕ್ಕೆ ಭೇಟಿ ನೀಡಿದ ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಹೋರಾಟ ನಿರತ ರೈತರಿಗೆ ಬೆಂಬಲ ಸೂಚಿಸಿ ಬಿಜೆಪಿ ನೇತೃತ್ವದ ಸರ್ಕಾರವನ್ನು ತೀವ್ರವಾಗಿ ಟೀಕಿಸಿದರು.
ರೈತ ವಿರೋಧಿ ಕಾನೂನುಗಳನ್ನು ಲಾಕ್ಡೌನ್ ಅವಧಿಯಲ್ಲಿ ಅವಸರದಲ್ಲಿ ಜಾರಿಗೆ ತಂದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮೇಧಾ ಪಾಟ್ಕರ್ “ಇತ್ತ ಬಿಜೆಪಿ ಸರ್ಕಾರ ಕಾನೂನುಗಳನ್ನು ಜಾರಿಗೆ ತಂದು, ಮಧ್ಯಪ್ರದೇಶದಲ್ಲಿ ಅಧಿಕಾರದಲ್ಲಿರುವ ಇದೇ ಪಕ್ಷದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ತಮ್ಮ ಉತ್ಪನ್ನಗಳನ್ನು ರಾಜ್ಯದಲ್ಲಿ ಮಾರಾಟ ಮಾಡಲು ಬರಲಿ ಅವರನ್ನು ಬಂಧಿಸಲಾಗುವುದು ಎಂದು ಹೇಳಿಕೆ ನೀಡುತ್ತಿದ್ದಾರೆ. ಇದು ಬಿಜೆಪಿ ಉದ್ದೇಶವನ್ನು ಸ್ಪಷ್ಟವಾಗಿ ತಿಳಿಸುತ್ತದೆ” ಎಂದು ಹೇಳಿದರು.
‘ಇಂಥ ಕಾನೂನು ವಿರೋಧಿಸಿ ರೈತರು ನಡೆಸಿರುವ ಈ ಮಹಾ ಹೋರಾಟ, ದೇಶದ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುತ್ತದೆ ಮತ್ತು ಶೋಷಿತರು ದನಿ ಎತ್ತುವುದಕ್ಕೆ ನೆರವಾಗುತ್ತಿದೆ’ ಎಂದು ಹೇಳಿದರು.
ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ರೈತರು ದೆಹಲಿಯ ಸಿಂಘು ಗಡಿಯಲ್ಲಿ ಸುಮಾರು ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದು, ಅವರಲ್ಲಿ 40 ವರ್ಷದ ರೈತರೊಬ್ಬರು ಶನಿವಾರ ವಿಷ ಸೇವಿಸಿ ಪ್ರಾಣತ್ಯಾಗ ಮಾಡಿದ್ದಾರೆ.
ಅಮರಿಂದರ್ ಸಿಂಗ್ ಎಂದು ಗುರುತಿಸಲಾಗಿರುವ ರೈತ, ಕೇಂದ್ರ ಸರ್ಕಾರವು ರೈತರ ಬೇಡಿಕೆಗಳನ್ನು ಆಲಿಸುತ್ತಿಲ್ಲ. ನನ್ನ ಸಾವು ರೈತ ಆಂದೋಲನಕ್ಕೆ ಯಶಸ್ಸನ್ನು ತರುತ್ತದೆ ಎನ್ನುವ ಕಾರಣಕ್ಕೆ ಪ್ರಾಣತ್ಯಾಗ ಮಾಡುವುದಾಗಿ ತನ್ನ ಸ್ನೇಹಿತರ ಬಳಿ ಹೇಳಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ರೈತರ ಈ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರೈತ ಒಕ್ಕೂಟ, ಕೇಂದ್ರ ಸರ್ಕಾರ ಮತ್ತು ಮೋದಿಯ ಮೌನವನ್ನು ಪ್ರಶ್ನಿಸಿ #FarmerSuicideModiQuiet ಎನ್ನುವ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದೆ. ಈ ಹ್ಯಾಶ್ಟ್ಯಾಗ್ ಬಳಸಿ 1,00,000 ಕ್ಕೂ ಅಧಿಕ ಜನ ಟ್ವೀಟ್ ಮಾಡಿದ್ದು, ಟ್ವಿಟರ್ ಟ್ರೆಂಡಿಂಗ್ನಲ್ಲಿ ಮೂರನೇ ಸ್ಥಾನದಲ್ಲಿದೆ.
ಇದನ್ನೂ ಓದಿ: ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ