ಇಸ್ರೇಲ್ ಮೂಲದ NSO ಸಂಸ್ಥೆಯ ಗೂಢಚಾರ ತಂತ್ರಾಂಶವಾದ ಪೆಗಾಸಸ್ ಅನ್ನು ಬಳಸಿಕೊಂಡು ಭಾರತದ ಗಣ್ಯ ವ್ಯಕ್ತಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರ ಮೇಲೆ ಕಣ್ಗಾವಲು ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ಮೂರು ಸದಸ್ಯರ ಸಮಿತಿ ನೇಮಿಸಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ನೇತೃತ್ವದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಆದೇಶ ಹೊರಡಿಸಿದೆ. ಮೂವರು ಸದಸ್ಯರ ಸಮಿತಿಯನ್ನು ನಿವೃತ್ತ ನ್ಯಾಯಮೂರ್ತಿ ಆರ್.ವಿ.ರವೀಂದ್ರನ್ ಮೇಲ್ವಿಚಾರಣೆ ನಡೆಸಲಿದೆ.
ಡಾ. ನವೀನ್ ಕುಮಾರ್ ಚೌಧರಿ, ಗಾಂಧಿನಗರದ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಡೀನ್, ಡಾ. ಪ್ರಭಾಹರನ್ ಪಿ, ಕೇರಳದ ಅಮೃತ ವಿಶ್ವ ವಿದ್ಯಾಪೀಠದ ಪ್ರಾಧ್ಯಾಪಕ ಮತ್ತು ಡಾ. ಅಶ್ವಿನ್ ಅನಿಲ್ ಗುಮಸ್ತೆ, ಬಾಂಬೆಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇನ್ಸ್ಟಿಟ್ಯೂಟ್ ಚೇರ್ ಅಸೋಸಿಯೇಟ್ ಪ್ರೊಫೆಸರ್ ಈ ಮೂವರು ಸಮಿತಿ ಸದಸ್ಯರಾಗಿದ್ದಾರೆ.
ಇದನ್ನೂ ಓದಿ: ಪೆಗಾಸಸ್ ಹಗರಣ ತನಿಖೆಗೆ ಸಮಿತಿ ರಚನೆ: ಸುಪ್ರೀಂ ಹೇಳಿಕೆ
ಸಮಿತಿಯ ಮೇಲ್ವಿಚಾರಣೆ ನಡೆಸಲಿರುವ ನಿವೃತ್ತ ನ್ಯಾಯಮೂರ್ತಿ ಆರ್. ವಿ. ರವೀಂದ್ರನ್, ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು. ಇತ್ತೀಚೆಗೆ ಭಾರತದ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ಅವರು “ಭಾರತದ ಸುಪ್ರೀಂ ಕೋರ್ಟ್ನ ಪ್ರತಿಷ್ಠೆಯನ್ನು ಹೆಚ್ಚಿಸಿದ ದಂತಕಥೆಗಳಲ್ಲಿ ಒಬ್ಬರು” ಎಂದು ಉಲ್ಲೇಖಿಸಿದ್ದರು.
ಪ್ರೊ.ಡಾ.ನವೀನ್ ಕುಮಾರ್ ಚೌಧರಿ: ಸೈಬರ್ ಸೆಕ್ಯುರಿಟಿ, ಇ-ಆಡಳಿತ, ಡಿಜಿಟಲ್ ಫೊರೆನ್ಸಿಕ್ಸ್, ನೆಟ್ವರ್ಕ್ ಸೆಕ್ಯುರಿಟಿ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಪರಿಣಿತರಾಗಿದ್ದಾರೆ. ಪ್ರೊ.ಚೌಧರಿ ಯುಜಿಸಿ ಸಮಿತಿಯ ಸದಸ್ಯರೂ ಆಗಿದ್ದಾರೆ. ಜೊತೆಗೆ ಗುಜರಾತ್ನ ಗಾಂಧಿನಗರದಲ್ಲಿರುವ ರಾಷ್ಟ್ರೀಯ ವಿಧಿವಿಜ್ಞಾನ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಡೀನ್ ಆಗಿದ್ದಾರೆ.
ಡಾ. ಅಶ್ವಿನ್ ಅನಿಲ್ ಗುಮಸ್ತೆ: ಇವರು ಐಐಟಿ ಬಾಂಬೆಯಲ್ಲಿ ಇನ್ಸ್ಟಿಟ್ಯೂಟ್ ಚೇರ್ ಅಸೋಸಿಯೇಟ್ ಪ್ರೊಫೆಸರ್ (ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್) ಹುದ್ದೆಯನ್ನು ಹೊಂದಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನದ ಕೊಡುಗೆಗಾಗಿ 2018 ರಲ್ಲಿ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಆಪ್ಟಿಕಲ್ ನೆಟ್ವರ್ಕ್ಗಳು, ಬ್ರಾಡ್ಬ್ಯಾಂಡ್ ಸಂವಹನ, ಎಂಡ್-ಟು-ಎಂಡ್ ನೆಟ್ವರ್ಕ್ಗಳು ಇವರು ಪರಿಣತಿ ಹೊಂದಿರುವ ಕೆಲವು ಕ್ಷೇತ್ರಗಳಾಗಿವೆ.
ಡಾ. ಪ್ರಭಾಹರನ್ ಪಿ: ಕೇರಳದ ಅಮೃತ ವಿಶ್ವ ವಿದ್ಯಾಪೀಠಂ ಸ್ಕೂಲ್ ಆಫ್ ಎಂಜಿನಿಯರಿಂಗ್ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಸೈಬರ್ ಸೆಕ್ಯೂರಿಟಿಯಲ್ಲಿ ಪರಿಣತಿ ಹೊಂದಿದ್ದಾರೆ.
ನಿವೃತ್ತ ನ್ಯಾಯಮೂರ್ತಿ ಆರ್.ವಿ.ರವೀಂದ್ರನ್ ಅವರ ಮೇಲ್ವಿಚಾರಣೆಯ ತ್ರಿಸದಸ್ಯ ಸಮಿತಿ ಪೆಗಾಸಸ್ ಕುರಿತಾದ ಆರೋಪಗಳನ್ನು ಕೂಲಂಕುಷವಾಗಿ ಮತ್ತು ತ್ವರಿತವಾಗಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಹೇಳಿದೆ. ಎಂಟು ವಾರಗಳ ನಂತರ ನ್ಯಾಯಾಲಯವು ಪ್ರಕರಣವನ್ನು ಮತ್ತೊಮ್ಮೆ ವಿಚಾರಣೆ ನಡೆಸಲಿದೆ.
ವಿಚಾರಣೆ ವೇಳೆ, “ಪ್ರಕರಣದಲ್ಲಿ ಸರ್ಕಾರದಿಂದ ಅಸ್ಪಷ್ಟ ನಿರಾಕರಣೆ ಸಾಕಾಗುವುದಿಲ್ಲ. ಹೀಗಾಗಿ ಆರೋಪಗಳ ಬಗ್ಗೆ ತನಿಖೆಯಾಗಬೇಕು. ಪದೇ ಪದೇ ಅವಕಾಶ ನೀಡಿದರೂ ಸರ್ಕಾರ ಸ್ಪಷ್ಟತೆ ನೀಡದ ಸೀಮಿತ ಅಫಿಡವಿಟ್ ನೀಡುತ್ತಿದ್ದಾರೆ. ಅವರು ಸ್ಪಷ್ಟನೆ ನೀಡಿದ್ದರೆ ನಮ್ಮ ಮೇಲಿನ ಹೊರೆ ಕಡಿಮೆಯಾಗುತ್ತಿತ್ತು. ನ್ಯಾಯಾಲಯವು ರಾಷ್ಟ್ರೀಯ ಭದ್ರತೆಯನ್ನು ಅತಿಕ್ರಮಿಸುವುದಿಲ್ಲ. ಆದರೆ, ನ್ಯಾಯಾಲಯ ಮೂಕ ಪ್ರೇಕ್ಷಕರಂತೆ ಇರುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ.
ಇದನ್ನೂ ಓದಿ: ಪೆಗಾಸಸ್ ಪ್ರಕರಣ: ಕೇಂದ್ರದ ಅಸ್ಪಷ್ಟ ನಿರಾಕರಣೆ ಸಾಕಾಗದು, ಸ್ವತಂತ್ರ ತನಿಖೆ ಅಗತ್ಯ- ಸುಪ್ರೀಂ