ಬಿಜೆಪಿಯ ಧ್ರುವೀಕರಣದ ರಾಜಕೀಯವನ್ನು ರಾಜಸ್ಥಾನದ ಜನರು ತಿರಸ್ಕರಿಸುತ್ತಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಶನಿವಾರ ಹೇಳಿದ್ದಾರೆ.
ರಾಜಸ್ಥಾನ ವಿಧಾನಸಭೆಗೆ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಅವರು ಮಾತನಾಡಿದ್ದಾರೆ. ರಾಜಸ್ಥಾನದ ಜನರು ಪ್ರಧಾನಿ ನರೇಂದ್ರ ಮೋದಿ ಅವರ ಸುಳ್ಳು ಯೋಜನೆಗಳನ್ನು ತಿರಸ್ಕರಿಸಲಿದ್ದಾರೆ. ಜೊತೆಗೆ ಕೇಂದ್ರದ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುವುದಕ್ಕೂ ಮಿತಿ ಇದೆ ಎಂಬುದನ್ನು ಅವರ ಸರ್ಕಾರಕ್ಕೆ ಅರ್ಥ ಮಾಡಿಸಲಿದ್ದಾರೆ ಎಂದು ಹೇಳಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆ ಮತ್ತು ಕಳೆದ ಐದು ವರ್ಷಗಳ ರಾಜ್ಯ ಸರ್ಕಾರದ ಸಾಧನೆಯ ಆಧಾರದ ಮೇಲೆ ಆಡಳಿತಾರೂಢ ಕಾಂಗ್ರೆಸ್ನ್ನು ಬೆಂಬಲಿಸುತ್ತಾರೆ. ಬಿಜೆಪಿ ತನ್ನ ಚುನಾವಣಾ ಲಾಭಕ್ಕಾಗಿ ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ರಮೇಶ್ ವಾಗ್ದಾಳಿ ನಡೆಸಿದರು.
ರಾಜಸ್ಥಾನದಲ್ಲಿ ಮತದಾನ ನಡೆಯುತ್ತಿದೆ. ಇಂದು ಅಲ್ಲಿನ ಜನರು ಪ್ರಧಾನಮಂತ್ರಿಯವರ ಸುಳ್ಳು ಯೋಜನೆಗಳನ್ನು ತಿರಸ್ಕರಿಸಲಿದ್ದಾರೆ. ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ನಂತಹ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ರಮೇಶ್ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
”ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸಂಗಡಿಗರು ಧ್ರುವೀಕರಣದ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಮತ್ತು ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಆದರೆ ಜನರು ರಾಜಕೀಯ ಧೃವೀಕರಣವನ್ನು ಧಿಕ್ಕರಿಸಲಿದ್ದಾರೆ. ಕಾಂಗ್ರೆಸ್ ಸರ್ಕಾರದ ಸಾಧನೆ ಹಾಗೂ ಗ್ಯಾರಂಟಿಗಳನ್ನು ನೋಡಿ ಮತ ಹಾಕಲಿದ್ದಾರೆ” ಎಂದು ಹೇಳಿದ್ದಾರೆ.
ಕರ್ನಾಟಕದ ಮತದಾರರು ವಿಧಾನಸಭೆ ಚುನಾವಣೆಯಲ್ಲಿ ಮಾಡಿದಂತೆಯೇ ರಾಜಸ್ಥಾನದ ಮತದಾರರು ಧ್ರುವೀಕರಣದ ರಾಜಕೀಯವನ್ನು ತಿರಸ್ಕರಿಸುತ್ತಾರೆ. ಹಣದುಬ್ಬರ, ನಿರುದ್ಯೋಗ, ಆರ್ಥಿಕ ಅಸಮಾನತೆ ಮತ್ತು ಬಿಜೆಪಿಯ ಪ್ರತೀಕಾರದ ರಾಜಕೀಯದಿಂದ ಜನರು ಬೇಸತ್ತಿದ್ದಾರೆ ಎಂದು ಜೈರಾಮ್ ರಮೇಶ್ ಕಿಡಿಕಾರಿದರು.
ಡಿಸೆಂಬರ್ 3ಕ್ಕೆ ಫಲಿತಾಂಶ ರಾಜಸ್ಥಾನ ವಿಧಾನಸಭೆಯು 200 ಸದಸ್ಯ ಬಲ ಹೊಂದಿದ್ದು, ಒಂದು ಸ್ಥಾನ ಹೊರತುಪಡಿಸಿ ಉಳಿದ 199 ಕ್ಷೇತ್ರಗಳಿಗೆ ಇಂದು (ನವೆಂಬರ್ 25ರಂದು) ಮತದಾನ ನಡೆಯುತ್ತಿದೆ.
ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಗುರ್ಮೀತ್ ಸಿಂಗ್ ಕೊನೂರ್ ಅವರು ನಿಧನರಾದ ಹಿನ್ನೆಲೆಯಲ್ಲಿ ಶ್ರೀಗಂಗಾನಗರದ ಕರಣ್ಪುರ ಕ್ಷೇತ್ರದಲ್ಲಿ ಮತದಾನ ಮುಂದೂಡಲಾಗಿದೆ. ಡಿಸೆಂಬರ್ 3ರಂದು ಫಲಿತಾಂಶ ಹೊರಬೀಳಲಿದೆ.
ಇದನ್ನೂ ಓದಿ: ಶಿವಮೊಗ್ಗ: ಮೊಟ್ಟೆ ತಿನ್ನುವಂತೆ ಶಿಕ್ಷಕರು ಬಲವಂತ ಮಾಡಿಲ್ಲ- ಬಿಇಓ ಸ್ಪಷ್ಟನೆ