ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿಯವರು ಇಂದು ಕರ್ನಾಟಕದ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನು ನಡೆಸಿದೆ. ಆದರೆ ಪ್ರತಿಪಕ್ಷ ಕಾಂಗ್ರೆಸ್ ಪ್ರಧಾನಿ ಭೇಟಿಗೆ ವಿರೋಧ ವ್ಯಕ್ತಪಡಿಸಿ ಪ್ರಶ್ನೆಗಳ ಸುರಿಮಳೆಗೈದಿದೆ.
ದಕ್ಷಿಣ ಕನ್ನಡದ ಉದ್ಯಮ ಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ. ಇದು ವಿಕಾಸವೋ? ವಿನಾಶವೋ? ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬಜ್ಪೆ ವಿಮಾನ ನಿಲ್ದಾಣ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಕೊಡುಗೆ. (25-12-1971) ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ಈ ವಿಮಾನ ನಿಲ್ದಾಣವನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದ್ದು (20-10-2020) ಪ್ರಧಾನಿ ನರೇಂದ್ರ ಮೋದಿ. ಇದು ವಿಕಾಸವೋ? ವಿನಾಶವೋ? ಉತ್ತರಿಸಿ ಎಂದಿದ್ದಾರೆ.
ದಕ್ಷಿಣ ಕನ್ನಡದ ಉದ್ಯಮಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್ ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ.
ಇದು ವಿಕಾಸವೋ? ವಿನಾಶವೋ @narendramodi? 2/12#AnswerMadiModi
— Siddaramaiah (@siddaramaiah) September 2, 2022
ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ (1975). ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ಪ್ರಧಾನಿ ನರೇಂದ್ರ ಮೋದಿ. ಅಲ್ಲದೆ ಬಜ್ಪೆ ವಿಮಾನ ನಿಲ್ದಾಣ, ಎನ್ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್-ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ.
ಬಿಜೆಪಿ ಸಂಸದ ನಳಿನ್ ಕುಮಾರ ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು ಅಥವಾ ಕೋಮುದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಜೂನ್ ತಿಂಗಳೊಂದರಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದುವರೆ ಕೋಟಿ ಬೆಲೆಯ ಮಾದಕ ದ್ರವ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾದಕದ್ರವ್ಯ ಸೇವನೆಯಲ್ಲಿ ದೇಶದಲ್ಲಿಯೇ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ. ಇದು ವಿಕಾಸನೋ? ವಿನಾಶನೋ? ಉತ್ತರಿಸಿ ಎಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿದೆ. ಹೆಜ್ಜೆಹೆಜ್ಜೆಗೂ ಗುಂಡಿಬಿದ್ದ ರಸ್ತೆಗಳು, ಕುಸಿದು ಬಿದ್ದಿರುವ ಮನೆಗಳು, ನೆರೆಯಲ್ಲಿ ಕೊಚ್ಚಿಹೋದ ರೈತರ ಬೆಳೆಗಳು.. ಪ್ರಧಾನಿ ಭೇಟಿಗಾಗಿ ಮಳೆ ಹುಳುಕನ್ನು ಮುಚ್ಚಿಟ್ಟು ರಸ್ತೆಗಳಿಗೆ ತೇಪೆ ಹಾಕಲಾಗಿದೆ ಇದು ವಿಕಾಸನೋ? ವಿನಾಶನೋ? ಎಂದು ಅವರು ಪ್ರಶ್ನಿಸಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಕಡಲ್ಕೊರೆತ ತಡೆಗೆ ರಾಜ್ಯ ಸರ್ಕಾರ ಖರ್ಚು ಮಾಡಿರುವ ಹಣ ಅಂದಾಜು ರೂ.250 ಕೋಟಿ. ಇದರಲ್ಲಿ 40% ಜನಪ್ರತಿನಿಧಿಗಳ ಜೇಬಿಗೆ, 60% ಕಡಲ ನೀರಿಗೆ. ಕಡಲ್ಕೊರೆತ ಮುಂದುವರಿದಿದೆ. ಕರಾವಳಿ ಮೀನುಗಾರರ ಮೇಲೆ ಸಿಆರ್ ಜೆಡ್, ಸಿಎಂ ಜೆಡ್ ನಿಯಮಾವಳಿಗಳ ಹೇರಿಕೆ
ಪ್ರವಾಸೋದ್ಯಮದ ಹೆಸರಲ್ಲಿ ರೆಸಾರ್ಟ್, ಥೀಮ್ ಪಾರ್ಕ್ ಗಳಿಗೆ ಮುಕ್ತ ಪರವಾನಿಗೆ
ಇದು ವಿಕಾಸನೋ? ವಿನಾಶನೋ? ಎಂದು ಅವರು ಕೇಳಿದ್ದಾರೆ.
48 ಕಿ.ಮೀ. ಅಂತರದಲ್ಲಿ ಬ್ರಹ್ಮರಕೂಟ್ಲು, ಸುರತ್ಕಲ್, ತಲಪಾಡಿ ಮತ್ತು ಹೆಜಮಾಡಿಗಳಲ್ಲಿ 4 ನಿಯಮಬಾಹಿರ ಟೋಲ್ ಗೇಟ್ಗಳಿಂದಾಗಿ ವಾಹನ ಸಂಚಾರಿಗಳ ಜೇಬು ಖಾಲಿಯಾಗಿದೆ. ಆದರೆ ಅಕ್ರಮದ ರೂವಾರಿಗಳಾದ ಬಿಜೆಪಿ ಸಂಸದರು ಮತ್ತು ಶಾಸಕರ ಜೇಬು ಭರ್ತಿಯಾಗಿದೆ ಇದು ವಿಕಾಸನೋ? ವಿನಾಶನೋ? ಮೋದಿಯವರೆ ಉತ್ತರಿಸಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಅತ್ಯಾಚಾರ ಪ್ರಕರಣ: ಎದೆ ನೋವು ನೆಪದಲ್ಲಿ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಆದ ಮುರುಘಾ ಶರಣರು


