Homeಮುಖಪುಟಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

- Advertisement -
- Advertisement -

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಭಗೀರತ್ ಕಳೆದ ಆರು ತಿಂಗಳಿನಿಂದ ಬಾಲಕಿಗೆ ಕಿರುಕುಳ ನೀಡುತ್ತಿದ್ದ. ಹೈದರಾಬಾದ್‌ನ ಮೊಯಿನಾಬಾದ್‌ನಲ್ಲಿರುವ ಫಾರ್ಮ್‌ಹೌಸ್‌ನಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ಹೈದರಾಬಾದ್‌ನ ಪೆಟ್ ಬಶೀರಾಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

2025ರ ಡಿಸೆಂಬರ್ 31ರಂದು ಫಾರ್ಮ್‌ಹೌಸ್‌ನಲ್ಲಿ ಬಾಲಕಿಗೆ ಬಲವಂತವಾಗಿ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ದೂರು ಆಧರಿಸಿ ಭಗೀರತ್ ವಿರುದ್ಧ ಪೋಕ್ಸೋ ಕಾಯ್ದೆಯ ಸೆಕ್ಷನ್ 11 ಮತ್ತು 12 (ಲೈಂಗಿಕ ಕಿರುಕುಳ) ಹಾಗೂ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 74 ಮತ್ತು 75ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಆರೋಪಗಳನ್ನು ನಿರಾಕರಿಸಿರುವ ಭಗೀರತ್, ಬಾಲಕಿ ಮತ್ತು ಆಕೆಯ ಪೋಷಕರು ತನ್ನಿಂದ 5 ಕೋಟಿ ರೂಪಾಯಿ ಹಣಕ್ಕಾಗಿ ಬೇಡಿಕೆಯಿಟ್ಟು ಬೆದರಿಕೆ ಹಾಕುತ್ತಿದ್ದಾರೆ. ಇದು ಹನಿಟ್ರ್ಯಾಪ್ ಪ್ರಕರಣ ಎಂದು ಕರೀಂ ನಗರ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾನೆ.

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಈ ಪ್ರಕರಣದ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡಗಳನ್ನು ರಚಿಸುವಂತೆ ಡಿಜಿಪಿಗೆ ಆದೇಶಿಸಿದ್ದಾರೆ.

ವಿರೋಧ ಪಕ್ಷವಾದ ಬಿಆರ್‌ಎಸ್, ಬಂಡಿ ಸಂಜಯ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದೆ. ಒಟ್ಟಿನಲ್ಲಿ ಈ ಪ್ರಕರಣ ತೆಲಂಗಾಣದಲ್ಲಿ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ಗಮನಾರ್ಹ ವಿಷಯವೆಂದರೆ, ತನ್ನ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗುವ ಕೆಲವೇ ಗಂಟೆಗಳ ಮೊದಲು, ಭಗೀರತ್ ಕರೀಂ ನಗರ ಪೊಲೀಸರಿಗೆ ಬಾಲಕಿಯ ಕುಟುಂಬದ ವಿರುದ್ಧ ದೂರು ನೀಡಿದ್ದ.

“ತನ್ನನ್ನು ಹನಿ ಟ್ರ್ಯಾಪ್ ಮೂಲಕ ಸಿಲುಕಿಸಿ, ಮದುವೆಯಾಗುವಂತೆ ಒತ್ತಡ ಹೇರಲಾಗುತ್ತಿದೆ. 5 ಕೋಟಿ ರೂಪಾಯಿ ಹಣಕ್ಕಾಗಿ ಬೇಡಿಕೆ ಇಡಲಾಗುತ್ತಿದೆ” ಎಂದು ಆರೋಪಿಸಿರುವ ಆರೋಪಿ ಭಗೀರತ್, ಭಯದಿಂದ ತಾನು ಈಗಾಗಲೇ 50,000 ರೂಪಾಯಿ ನೀಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾನೆ.

ಪ್ರಕರಣದ ಗಂಭೀರತೆ ಪರಿಗಣಿಸಿ ಮತ್ತು ತನಿಖೆಯಲ್ಲಿ ವಿಳಂಬವಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆ ಸಿಎಂ ಆದೇಶದಂತೆ ಡಿಜಿಪಿ ವಿಶೇಷ ತನಿಖಾ ತಂಡವನ್ನು(ಎಸ್‌ಐಟಿ) ರಚಿಸಿದ್ದಾರೆ. ಈ ತಂಡದ ಮೇಲ್ವಿಚಾರಣೆಯ ಜವಾಬ್ದಾರಿಯನ್ನು ಕುಕಟ್‌ಪಲ್ಲಿಯ ಮಹಿಳಾ ಐಪಿಎಸ್ ಅಧಿಕಾರಿ ಡಿಸಿಪಿ ರಿತಿರಾಜ್ ಗಾಯಕ್ವಾಡ್ ಅವರಿಗೆ ವಹಿಸಲಾಗಿದೆ.

ಪೊಲೀಸರು ಎರಡೂ ದೂರುಗಳನ್ನು ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ಬಾಲಕಿಯ ತಾಯಿ ನೀಡಿದ ದೂರಿನ ಮೇಲೆ ಹೈದರಾಬಾದ್‌ನ ಪೆಟ್ ಬಶೀರಾಬಾದ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ (FIR No. 684/2026) ದಾಖಲಾಗಿದೆ. ಅದೇ ರೀತಿ, ಭಗೀರತ್ ನೀಡಿದ ದೂರಿನ ಮೇಲೆ ಕರೀಂ ನಗರದಲ್ಲಿ ಬಾಲಕಿಯ ಕುಟುಂಬದ ವಿರುದ್ಧ ಸುಲಿಗೆ ಮತ್ತು ಬೆದರಿಕೆ ಪ್ರಕರಣ ದಾಖಲಾಗಿದೆ.

ಪೊಲೀಸರು ಈಗಾಗಲೇ ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮತ್ತೊಮ್ಮೆ ಹೇಳಿಕೆ ಪಡೆಯುವ ಸಾಧ್ಯತೆಯಿದೆ. ಜೊತೆಗೆ, ಆರೋಪಿಯ ಮೊಬೈಲ್ ಕರೆ ವಿವರಗಳನ್ನು (ಸಿಡಿಆರ್) ತನಿಖಾ ತಂಡವು ಪರಿಶೀಲಿಸುತ್ತಿದೆ ಎಂದು ವರದಿಯಾಗಿದೆ.  

ಪೊಲೀಸರ ಪ್ರಕಾರ, ಕಳೆದ ಮೂರ್ನಾಲ್ಕು ದಿನಗಳಿಂದ ಭಗೀರತ್‌ನ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ. ಆತನನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ.

“ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು” ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಪಿ ಸಿ.ವಿ. ಆನಂದ್ ಹೇಳಿದ್ದಾರೆ.

ಆದರೆ, ಪ್ರಕರಣ ದಾಖಲಿಸಲು ವಿಳಂಬವೇಕಾಯಿತು ಎಂಬ ಪ್ರಶ್ನೆಗೆ, ಹೈದರಾಬಾದ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಭದ್ರತಾ ವ್ಯವಸ್ಥೆಯಲ್ಲಿ ಇಡೀ ಪೊಲೀಸ್ ಪಡೆ ಕಾರ್ಯನಿರತವಾಗಿತ್ತು ಎಂದು ಡಿಜಿಪಿ ಸಮಯಜಾಯಿಸಿ ನೀಡಿದ್ದಾರೆ.

ಭಗೀರತ್ ವಿರುದ್ದ ಪ್ರಕರಣ ದಾಖಲಿಸುವಲ್ಲಿ ವಿಳಂಬ

ಬಾಲಕಿಯ ತಾಯಿ ನೀಡಿದ ದೂರಿನ ಪ್ರಕಾರ, ಲೈಂಗಿಕ ದೌರ್ಜನ್ಯದ ಘಟನೆಯು 2025ರ ಡಿಸೆಂಬರ್ 31ರಂದು ಮೊಯಿನಾಬಾದ್‌ನ ಫಾರ್ಮ್‌ಹೌಸ್‌ನಲ್ಲಿ ನಡೆದಿದೆ. ಆದರೆ, ಈ ಬಗ್ಗೆ ಅಧಿಕೃತವಾಗಿ ಪೋಕ್ಸೋ ಪ್ರಕರಣ ದಾಖಲಾಗಿರುವುದು 2026ರ ಮೇ 8ರಂದು. ಅಂದರೆ, ಘಟನೆ ನಡೆದ ಸುಮಾರು ನಾಲ್ಕು ತಿಂಗಳ ನಂತರ ಪ್ರಕರಣ ದಾಖಲಾಗಿದೆ.

ಮೇ 8ರಂದು ಎಫ್‌ಐಆರ್ ದಾಖಲಾದರೂ, ಮೇ 11ರವರೆಗೆ ಆರೋಪಿಯ ವಿರುದ್ಧ ಯಾವುದೇ ಕಠಿಣ ಕ್ರಮ ಅಥವಾ ತನಿಖೆ ವೇಗವಾಗಿ ನಡೆದಿಲ್ಲ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ಈ ವಿಳಂಬಕ್ಕೆ ಹೈದರಾಬಾದ್ ಪೊಲೀಸ್ ಕಮಿಷನರ್ ಸಿ.ವಿ. ಆನಂದ್ ಅವರು ನೀಡಿದ ವಿವರಣೆಯೆಂದರೆ, ಮೇ 9 ಮತ್ತು 10ರಂದು ಹೈದರಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಇದ್ದ ಕಾರಣ ಸುಮಾರು 10,000ಕ್ಕೂ ಹೆಚ್ಚು ಪೊಲೀಸರು ಭದ್ರತಾ ಕರ್ತವ್ಯದಲ್ಲಿ ನಿರತರಾಗಿದ್ದರು. ಈ ಕಾರಣದಿಂದಾಗಿ ಪ್ರಕರಣದ ತನಿಖೆ ತಡವಾಗಿದೆ ಎಂದು ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಯ ಈ ಸಮಜಾಯಿಸಿ ನಗು ತರಿಸುವಂತಿದೆ. ಪ್ರಧಾನಿ ಬಂದರೆ ಪೊಲೀಸರು ಎಲ್ಲಾ ಕೆಲಸ ಬಿಟ್ಟು ಪ್ರಧಾನಿಗೆ ಭದ್ರತೆ ಕೊಡುವ ಬಗ್ಗೆ ಮಾತ್ರ ಯೋಚಿಸಬೇಕೆ? ಯಾವುದೇ ಅಪರಾಧಗಳು, ಅವಘಡಗಳು ನಡೆದರೂ, ಕಾನೂನು ಸುವ್ಯವಸ್ಥೆ ಹಾಳಾದರೂ ತಲೆ ಕೆಡಿಸಿಕೊಳ್ಳುವುದು ಬೇಡವೇ? ಎಂಬ ಪ್ರಶ್ನೆ ಮೂಡುತ್ತದೆ.

ಕೋರ್ಟ್ ಮೊರೆ ಹೋದ ಆರೋಪಿ ಭಗೀರತ್

ತನ್ನ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನ ಭೀತಿಯಿಂದ ಪಾರಾಗಲು ಭಗೀರತ್ ತೆಲಂಗಾಣ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾನೆ ಎಂದು ವರದಿಯಾಗಿದೆ. ಈ ಅರ್ಜಿಯ ವಿಚಾರಣೆಯು ಮೇ 14ರಂದು ಹೈಕೋರ್ಟ್‌ನ ರಜಾಕಾಲದ ಪೀಠದ ಮುಂದೆ ನಡೆಯಲಿದೆ.

ಮೇ 12ರಂದು ಟೈಮ್ಸ್ ಆಫ್ ಇಂಡಿಯಾ ಮಾಡಿರುವ ವರದಿಯ ಪ್ರಕಾರ, ತನ್ನ ಅರ್ಜಿಯಲ್ಲಿ 23 ವರ್ಷದ ಭಗೀರತ್, ತಾನು ಲೈಂಗಿಕ ಕಿರುಕುಳ ನೀಡಿದ್ದೇನೆ ಎಂದು ಆರೋಪಿಸಲಾದ ಹುಡುಗಿಯು ಘಟನೆ ನಡೆದ ಸಮಯದಲ್ಲಿ ಅಪ್ರಾಪ್ತೆಯಾಗಿರಲಿಲ್ಲ ಮತ್ತು ತನ್ನ ವಿರುದ್ಧ ಮಾಡಲಾದ ಆರೋಪಗಳು ಸುಳ್ಳಾಗಿದ್ದು, ತನ್ನ ಕುಟುಂಬ ಹಾಗೂ ಸಂತ್ರಸ್ತೆಯ ಕುಟುಂಬದ ನಡುವಿನ ವೈಯಕ್ತಿಕ ಭಿನ್ನಾಭಿಪ್ರಾಯಗಳಿಂದ ಪ್ರೇರಿತವಾಗಿವೆ ಎಂದು ವಾದಿಸಿದ್ದಾನೆ.

ಅಲ್ಲದೆ, ತಾನು ಮತ್ತು ಹುಡುಗಿಯ ನಡುವಿನ ಸಂಬಂಧವು ಪರಸ್ಪರ ಒಪ್ಪಿಗೆಯಿಂದ ಕೂಡಿದ್ದು, ಯಾವುದೇ ದೂರು ದಾಖಲಾಗದೆ ಸುದೀರ್ಘ ಅವಧಿಯವರೆಗೆ ಮುಂದುವರಿದಿತ್ತು ಎಂದು ಹೇಳಿದ್ದಾನೆ. ಜನವರಿ 2026ರಲ್ಲಿ ಹುಡುಗಿಯ ಕುಟುಂಬಕ್ಕೆ ಈ ಸಂಬಂಧದ ಬಗ್ಗೆ ತಿಳಿದ ನಂತರವೂ ತಕ್ಷಣವೇ ಯಾವುದೇ ಪೊಲೀಸ್ ದೂರು ದಾಖಲಾಗಿರಲಿಲ್ಲ ಮತ್ತು ಎರಡು ಕಡೆಯವರ ನಡುವೆ ಭಿನ್ನಾಭಿಪ್ರಾಯಗಳು ಉಂಟಾದ ನಂತರವಷ್ಟೇ, ಅಂದರೆ ಮೇ 2026ರಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾನೆ. ಅಲ್ಲದೆ, ಹಣ ಸುಲಿಗೆಯ ಬೇಡಿಕೆಗಳು ಮತ್ತು ಸುಳ್ಳು ಪ್ರಕರಣದಲ್ಲಿ ಸಿಲುಕಿಸುವ ಬೆದರಿಕೆಗಳ ವಿರುದ್ಧ ತಾನು ಈಗಾಗಲೇ ಹುಡುಗಿಯ ಕುಟುಂಬದವರ ಮೇಲೆ ಹಿಂದೆಯೇ ದೂರುಗಳನ್ನು ದಾಖಲಿಸಿದ್ದಾಗಿ ತಿಳಿಸಿದ್ದಾನೆ. ಪ್ರಸ್ತುತ ಎಫ್‌ಐಆರ್ ಅನ್ನು ಪ್ರತಿಕಾರದ ಕ್ರಮವಾಗಿ ದಾಖಲಿಸಲಾಗಿದೆ ಎಂದು ಪ್ರತಿಪಾದಿಸಿರುವ ಭಗೀರತ್, ಬಂಧನದಿಂದ ರಕ್ಷಣೆ ಕೋರಿದ್ದಾನೆ.

2021ರಲ್ಲಿ ಸಂತ್ರಸ್ತ ಬಾಲಕಿಯ ವಿರುದ್ಧ ದಾಖಲಾಗಿದ್ದ ‘ಅಪ್ರಾಪ್ತ ವಯಸ್ಸಿನ ಚಾಲನೆ’ (Under-age driving) ಪ್ರಕರಣದಲ್ಲಿ ಆಕೆಯ ವಯಸ್ಸು 15 ವರ್ಷ ಹಾಗೂ ಆಕೆ 9ನೇ ತರಗತಿ ಓದುತ್ತಿದ್ದಳು ಎಂದು ದಾಖಲಾಗಿದೆ. ಆ ಲೆಕ್ಕಾಚಾರದ ಪ್ರಕಾರ ಪ್ರಸ್ತುತ ಆಕೆಗೆ 19 ರಿಂದ 20 ವರ್ಷ ವಯಸ್ಸಾಗಿರಬೇಕು. ಹೀಗಾಗಿ ಆಕೆ ಅಪ್ರಾಪ್ತೆಯಲ್ಲದ ಕಾರಣ ಈ ಪ್ರಕರಣದಲ್ಲಿ ಪೋಕ್ಸೊ ಕಾಯ್ದೆ ಅನ್ವಯಿಸುವುದಿಲ್ಲ ಎಂದು ಭಗೀರತ್ ವಾದಿಸಿದ್ದಾನೆ.

ಇದಲ್ಲದೆ, ಬಾಲಕಿಯ ತಾಯಿ ನೀಡಿದ ದೂರಿನಲ್ಲೇ ವಿರೋಧಾಭಾಸಗಳಿವೆ. ಡಿಸೆಂಬರ್ 31 ರಂದು ದೌರ್ಜನ್ಯ ನಡೆದಿದೆ ಎಂದು ಆರೋಪಿಸಲಾಗಿದ್ದರೂ, ಜನವರಿ 7ರವರೆಗೂ ಇಬ್ಬರ ನಡುವೆ ಸಂಬಂಧ ಮುಂದುವರಿದಿತ್ತು ಎಂದು ದೂರಿನಲ್ಲೇ ಹೇಳಲಾಗಿದೆ. ಹಾಗಾಗಿ, ತನ್ನ ಮತ್ತು ಆ ಹುಡುಗಿ ನಡುವೆ ಇದ್ದದ್ದು ಪರಸ್ಪರ ಸಮ್ಮತಿಯಿಂದ ಕೂಡಿದ ದೀರ್ಘಾವಧಿಯ ಸಂಬಂಧವಾಗಿತ್ತು. ಆ ಸಮಯದಲ್ಲಿ ಯಾವುದೇ ದೂರುಗಳು ಇರಲಿಲ್ಲ ಎಂದು ಹೇಳಿದ್ದಾನೆ.

ಸರ್ಕಾರದ ನಡೆಯ ವಿರುದ್ದ ಆಕ್ರೋಶ

ತೆಲಂಗಾಣ ಟುಡೇ ಮೇ 12ರಂದು ಮಾಡಿರುವ ವರದಿಯ ಪ್ರಕಾರ, ಭಗೀರತ್ ವಿರುದ್ದದ ಗಂಭೀರ ಪ್ರಕರಣದಲ್ಲಿ ತೆಲಂಗಾಣದ ಕಾಂಗ್ರೆಸ್ ಸರ್ಕಾರದ ನಡೆ ಸ್ವತಃ ಕಾಂಗ್ರೆಸ್‌ ನಾಯಕರಲ್ಲೇ ಅಸಮಾಧಾನ ಉಂಟು ಮಾಡಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ, ಕೇಂದ್ರ ಸಚಿವನ ಮಗನ ವಿರುದ್ಧದ ಪ್ರಕರಣ ಎಂದು ಮೃದು ಧೋರಣೆ ತೋರುತ್ತಿದೆ ಎಂಬ ದಾಟಿಯಲ್ಲಿ ಬಹಿರಂಗವಾಗಿ ಹೇಳಿಕೆ ನೀಡಲು ಶುರು ಮಾಡಿದ್ದಾರೆ.

ಆರಂಭದಲ್ಲಿ ಮೌನವಹಿಸಿ, ಪ್ರಕರಣ ದಾಖಲಾದ ಮೂರು ದಿನಗಳ ನಂತರ ಸಿಎಂ ರೇವಂತ್ ರೆಡ್ಡಿ ಮಾತನಾಡಿರುವುದು ಕೂಡ ಅಸಮಧಾನಕ್ಕೆ ಕಾರಣವಾಗಿದೆ.

ಸೋಮವಾರ ಸಿಎಂಒ (ಮುಖ್ಯಮಂತ್ರಿಗಳ ಕಚೇರಿ) ಪ್ರಕಟಣೆ ಹೊರಡಿಸಿದ್ದು, ಎಫ್‌ಐಆರ್ ದಾಖಲಾದ ನಂತರವೂ ಯಾವುದೇ ಕ್ರಮ ಕೈಗೊಳ್ಳದಿರಲು ಕಾರಣ ಏನೆಂದು ಡಿಜಿಪಿ ಸಿವಿ ಆನಂದ್ ಅವರನ್ನು ಮುಖ್ಯಮಂತ್ರಿಗಳು ಪ್ರಶ್ನಿಸಿದ್ದಾರೆ ಎಂದು ತಿಳಿಸಿದೆ.

ಸಾಮಾಜಿಕ ಜಾಲತಾಣಗಳಲ್ಲೂ ಸರ್ಕಾರದ ನಡೆಯ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ತಮ್ಮ ಪ್ರೊಫೈಲ್ ಸ್ಟೇಟಸ್‌ನಲ್ಲಿ “ಆರ್‌ಜಿ (ರಾಹುಲ್ ಗಾಂಧಿ) ಅವರ ಒಳಗೊಳ್ಳುವಿಕೆಯ ದೃಷ್ಟಿಕೋನದಿಂದ ಪ್ರೇರಿತ” ಎಂದು ಬರೆದುಕೊಂಡಿರುವ, ಎಕ್ಸ್ ಬಳಕೆದಾರರಾದ ಅಮಾಕ್, ಮಂಗಳವಾರ ಸಿಎಂಗೆ ಟ್ಯಾಗ್ ಮಾಡಿ, “ಅವರನ್ನು (ಆರೋಪಿ ಭಗೀರತ್‌) ಯಾವಾಗ ಬಂಧಿಸುತ್ತೀರಿ” ಎಂದು ಪ್ರಶ್ನಿಸಿದ್ದಾರೆ.

ಸಾರ್ವಜನಿಕ ವಲಯದಲ್ಲಿ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಸರ್ಕಾರ ಪೊಲೀಸರ ಕೈ ತೋರಿಸುತ್ತಿದೆ.

“ಪೋಕ್ಸೊ ಪ್ರಕರಣದಲ್ಲಿ ರೇವಂತ್ ರೆಡ್ಡಿ ಅವರಿಗೆ ಕೆಟ್ಟ ಪ್ರಚಾರ (Bad PR) ಸಿಗುತ್ತಿದೆ. ಬಿಜೆಪಿ ಕೇಂದ್ರ ಸಚಿವರ ಮಗನನ್ನು ಸರ್ಕಾರ ಬೆಂಬಲಿಸುತ್ತಿರುವುದರ ವಿರುದ್ಧ ಪಕ್ಷದೊಳಗಿನ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ” ಎಂದು ಎಕ್ಸ್ ಬಳಕೆದಾರರಾದ ಪ್ರವೀಣ್ ಹೇಳಿದ್ದಾರೆ.

“ಗೂಂಡಾಗಳು ಸಂತ್ರಸ್ತೆ ಮತ್ತು ಆಕೆಯ ಕುಟುಂಬದ ಫೋಟೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಹರಡುತ್ತಿದ್ದರೂ, ಪೊಲೀಸರು ಅವರಿಗೆ ಒಂದು ಎಚ್ಚರಿಕೆಯನ್ನೂ ನೀಡುವಲ್ಲಿ ವಿಫಲರಾಗಿದ್ದಾರೆ. ಇದರ ಮೂಲಕ ಪೊಲೀಸರು ಸಂಪೂರ್ಣವಾಗಿ ಬೆತ್ತಲಾಗಿದ್ದಾರೆ” ಎಂದು ಪ್ರವೀಣ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯು ಈ ಬಗ್ಗೆ ಏನಾದರೂ ಕ್ರಮ ಕೈಗೊಳ್ಳಬೇಕು. ದಯವಿಟ್ಟು ಸಾರ್ವಜನಿಕರ ಬೆಂಬಲವನ್ನು ಲಘುವಾಗಿ ತೆಗೆದುಕೊಳ್ಳಬೇಡಿ” ಎಂದು ಮತ್ತೊಬ್ಬ ಎಕ್ಸ್ ಬಳಕೆದಾರರಾದ ತುಷಾರ್ ಮಂಗಲ್ ಹೇಳಿದ್ದಾರೆ.

ಪ್ರಸ್ತುತ ಭಗೀರತ್ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದಾನೆ. ಆತನಿಗೆ ಇನ್ನೂ ಜಾಮೀನು ಸಿಕ್ಕಿಲ್ಲ. ಹಾಗಾಗಿ, ಬಂಧಿಸಲು ಪೊಲೀಸರಿಗೆ ಇನ್ನೂ ಅವಕಾಶವಿದೆ. ಮೇ 8ರಂದು ಎಫ್‌ಐಆರ್‌ ದಾಖಲಾಗಿರುವುದನ್ನು ಲೆಕ್ಕ ಹಾಕಿದರೆ ಇಂದಿಗೆ 5 ದಿನಗಳಾಯಿತು. ಇದುವರೆಗೆ ಪೊಲೀಸರು ಆತನ ಬಂಧನದ ಬಗ್ಗೆ ಗಂಭೀರವಾಗಿ ಪ್ರಯತ್ನಿಸಿದಂತೆ ತೋರುತ್ತಿಲ್ಲ. ಪೊಲೀಸರ ನಡೆ ಆತ ನಿರೀಕ್ಷಣಾ ಜಾಮೀನು ಪಡೆಯಲು ಸಮಯವಕಾಶ ನೀಡಿದಂತಿದೆ. ಇದು ಜನಾಕ್ರೋಶಕ್ಕೆ ಕಾರಣವಾಗಿದೆ.

ಅಂತರ ಕಾಯ್ದಕೊಂಡ ಬಿಜೆಪಿ

ಭಗೀರತ್ ವಿರುದ್ದದ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಕೈ ತೊಳೆದುಕೊಂಡಿದೆ. ಈ ಪ್ರಕರಣದಲ್ಲಿ ಬಿಜೆಪಿ ಮೌನ ವಹಿಸಿದೆ ಅಥವಾ ದೂರ ಸರಿದಿದೆ ಎಂಬ ಚರ್ಚೆಗಳ ಬೆನ್ನಲ್ಲೇ, ತೆಲಂಗಾಣ ರಾಜ್ಯ ಬಿಜೆಪಿ ಘಟಕವು ಈ ವಿಷಯದ ಕುರಿತು ತನ್ನ ನಿಲುವನ್ನು ಬಹಿರಂಗಪಡಿಸಿದೆ.

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಎನ್. ರಾಮಚಂದ್ರ ರಾವ್ ಅವರು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿ, ಈ ಪ್ರಕರಣವು ಕೇವಲ ಬಂಡಿ ಸಂಜಯ್ ಅವರ ವೈಯಕ್ತಿಕ ಹಾಗೂ ಕೌಟುಂಬಿಕ ವಿಷಯವಾಗಿದ್ದು, ಇದಕ್ಕೆ ಪಕ್ಷವನ್ನು ಜೋಡಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಈ ವಿವಾದಕ್ಕೂ ಕೇಂದ್ರ ಸಚಿವ ಬಂಡಿ ಸಂಜಯ್ ಅವರಿಗೂ ಯಾವುದೇ ನೇರ ಸಂಬಂಧವಿಲ್ಲ. ಅವರ ಮಗನ ವಿರುದ್ಧದ ಆರೋಪಗಳಿಗೆ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ ಎಂದು ಪಕ್ಷ ತಿಳಿಸಿದೆ.

ಕಾನೂನಿನ ಮುಂದೆ ಎಲ್ಲರೂ ಒಂದೇ ಆಗಿದ್ದು, ಪೊಲೀಸರು ಈ ಬಗ್ಗೆ ಯಾವುದೇ ರಾಜಕೀಯ ಪ್ರಭಾವವಿಲ್ಲದೆ ನಿಷ್ಪಕ್ಷಪಾತವಾಗಿ ಮತ್ತು ಪಾರದರ್ಶಕವಾಗಿ ಸಮಗ್ರ ತನಿಖೆ ನಡೆಸಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. 



 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...