ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಚಿತ್ರದುರ್ಗದ ಮುರುಘಾ ಶರಣರನ್ನು ಮತ್ತೆ ಬಂಧಿಸಲಾಗಿದೆ. ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದರು.
ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದಿಂದ ಮುರುಘಾ ಶ್ರೀ ವಿರುದ್ಧ ಅರೆಸ್ಟ್ ವಾರಂಟ್ ಜಾರಿಯಾಗಿತ್ತು. ಹೀಗಾಗಿ ದಾವಣಗೆರೆಯ ವಿರುಕ್ತ ಮಠಕ್ಕೆ ಆಗಮಿಸಿದ ಪೊಲೀಸರು ಶ್ರೀಗಳನ್ನು ಬಂಧಿಸಿದ್ದು ಚಿತ್ರದುರ್ಗಕ್ಕೆ ಕರೆದೊಯ್ಯುತ್ತಿದ್ದಾರೆ.
ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಬಿ ಕೆ ಕೋಮಲಾ ಅವರು ಜಾಮೀನು ರಹಿತ ವಾರೆಂಟ್ ಹೊರಡಿಸಿದ್ದು, ಮಂಗಳವಾರದೊಳಗೆ ಶಿವಮೂರ್ತಿ ಶರಣರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ.
2022ರ ಸೆಪ್ಟೆಂಬರ್ 1 ರಿಂದ ಬಂಧನದಲ್ಲಿದ್ದ ಮುರುಘಾ ಶ್ರೀಗಳ ವಿರುದ್ಧ ಎರಡು POCSO ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಮೊದಲ ಪ್ರಕರಣದಲ್ಲಿ ನವೆಂಬರ್ 8ರಂದು ಹೈಕೋರ್ಟ್ ಜಾಮೀನು ನೀಡಿದ್ದರಿಂದ ನವೆಂಬರ್ 16ರಂದು ಶ್ರೀಗಳು ಜೈಲಿನಿಂದ ಬಿಡುಗಡೆಯಾಗಿದ್ದರು.
ಮಠಾಧೀಶರು ಮತ್ತು ಇತರ ನಾಲ್ವರ ವಿರುದ್ಧ ಮೈಸೂರಿನ ‘ಒಡನಾಡಿ ಸೇವಾ ಸಂಸ್ಥೆ’ ಎಂಬ ಎನ್ಜಿಒ, ಮಠದ ಶಾಲೆಯಲ್ಲಿ ಓದುತ್ತಿರುವ ಮತ್ತು ಚಿತ್ರದುರ್ಗದ ಹಾಸ್ಟೆಲ್ನಲ್ಲಿ ವಾಸಿಸುತ್ತಿರುವ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಮೊದಲ ದೂರು ದಾಖಲಿಸಿತ್ತು.
ಮೈಸೂರಿನ ನಜರಾಬಾದ್ ಪೊಲೀಸರು ಪೋಕ್ಸೊ ಮತ್ತು ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ನಂತರ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿತ್ತು.
2019 ಮತ್ತು 2022ರ ಹಾಸ್ಟೆಲ್ನಲ್ಲಿ ವಾಸಿಸುತ್ತಿದ್ದಾಗ ಇಬ್ಬರು ಅಪ್ರಾಪ್ತ ಬಾಲಕಿಯರ ತಾಯಿ ತನ್ನ ಇಬ್ಬರು ಹೆಣ್ಣುಮಕ್ಕಳು ಮತ್ತು ಇತರ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ದೂರು ನೀಡಿದ ನಂತರ ಪೋಕ್ಸೊ ಅಡಿಯಲ್ಲಿ ಎರಡನೇ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಪೋಕ್ಸೋ ಪ್ರಕರಣ: ಮುರುಘಾಶ್ರೀಗೆ ಮತ್ತೆ ಬಂಧನ ಭೀತಿ


