ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಆಪ್ತ ಸಹಾಯಕಿ ವಿ.ಕೆ.ಶಶಿಕಲಾ ಮತ್ತು ಇಳವರಸಿ ಅವರಿಗೆ ಅನಧಿಕೃತವಾಗಿ ವಿಶೇಷ ಸೌಲಭ್ಯ ಕಲ್ಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಪ್ರಕರಣದ ಮೊದಲನೇ ಆರೋಪಿ ಬೆಳಗಾವಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ಮತ್ತು ಎರಡನೇ ಆರೋಪಿ ಕರ್ನಾಟಕ ಕಾರಾಗೃಹ ಅಕಾಡೆಮಿಯ ಉಪ ನಿರ್ದೇಶಕಿ ಡಾ. ಆರ್ ಅನಿತಾ ವಿರುದ್ಧ ಪ್ರಾಸಿಕ್ಯೂಷನ್ಗೆ ಪೂರ್ವಾನುಮತಿ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ್ಗೆ ಬುಧವಾರ ಮಾಹಿತಿ ನೀಡಿದೆ.
ಪ್ರಕರಣದ ತನಿಖೆ ಪೂರ್ಣಗೊಳಿಸಿ, ವರದಿ ಸಲ್ಲಿಸಲು ವಿಧಿಸಲಾಗಿರುವ ಗಡುವು ವಿಸ್ತರಣೆಗೆ ಕೋರಿ ಎಸಿಬಿ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ನೇತೃತ್ವದ ವಿಭಾಗೀಯ ಪೀಠ ನಡೆಸಿತು. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ವಿಚಾರಣಾ ನ್ಯಾಯಾಲಯಕ್ಕೆ 2022 ರ ಜನವರಿ 7ರಂದು ದೋಷಾರೋಪ ಪಟ್ಟಿ ಸಲ್ಲಿಸಿದ ಬಗ್ಗೆ ಎಸಿಬಿ ಪರ ವಕೀಲ ಪಿ.ಎನ್.ಮನಮೋಹನ್ ಅವರ ಹೇಳಿಕೆ ದಾಖಲಿಸಿಕೊಂಡಿದೆ.
ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಗೇಟ್ ಮುಚ್ಚಿದ ಕುಂದಾಪುರ ಕಾಲೇಜ್: ಧ್ವನಿ ಎತ್ತಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ
“ಆರೋಪಿಗಳಾದ ಕೃಷ್ಣ ಕುಮಾರ್ ಮತ್ತು ಡಾ. ಆರ್.ಅನಿತಾ ಅವರು ಶಶಿಕಲಾ ಮತ್ತು ಇಳವರಸಿ ಅವರಿಗೆ ಅನಧಿಕೃತವಾಗಿ ವಿಶೇಷ ಸೌಲಭ್ಯ ಕಲ್ಪಿಸಿದ್ದಾರೆ. ಮಹಿಳಾ ಕೈದಿಗಳ ವಿಭಾಗದ ಕಾರಿಡಾರ್ ಅನ್ನು ಬಳಸಿಕೊಳ್ಳಲು, ಇತರೆ ಕೈದಿಗಳಿಂದ ಸ್ವತಂತ್ರವಾಗಿ ವಾಸಿಸಲು ಅನುಕೂಲ ಮಾಡಿಕೊಟ್ಟಿದ್ದಾರೆ. ಇಬ್ಬರಿಗೂ ಮಂಚ ಹಾಗೂ ಹಾಸಿಗೆ ವ್ಯವಸ್ಥೆ ಒದಗಿಸಿದ್ದಾರೆ. ಅವರ ಸಂದರ್ಶನಕ್ಕೆ ಬಂದವರಿಗೆ ಜೈಲು ಅಧಿಕಾರಿಗಳ ಕಚೇರಿಯಲ್ಲಿಯೇ, ಹೆಚ್ಚಿನ ಸಮಯಾವಕಾಶ ನೀಡಿ, ಅವಕಾಶ ಮಾಡಿಕೊಟ್ಟಿರುವ ಬಗ್ಗೆ ದೃಢಪಟ್ಟಿರುತ್ತದೆ. ಇವರ ವಿರುದ್ಧ ಐಪಿಸಿ ಕಲಂ 120(ಬಿ) ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ -1988ರ ಕಲಂ 13(1)(ಸಿ) ಅಡಿಯಲ್ಲಿ ವಿಚಾರಣೆ ನಡೆಸಲು ಪೂರ್ವಾನುಮತಿ ನೀಡಲಾಗಿದೆ” ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ಅಲ್ಲದೆ, ಶಶಿಕಲಾಗೆ ವಿಶೇಷ ಸೌಲಭ್ಯ ಕಲ್ಪಿಸಲು ಲಂಚ ಪಡೆದ ಆರೋಪ ಸಂಬಂಧ ಕಾರಾಗೃಹ ಡಿಜಿಪಿಯಾಗಿದ್ದ ಐಪಿಎಸ್ ಅಧಿಕಾರಿ ಎಚ್.ಎನ್. ಸತ್ಯನಾರಾಯಣ ಅವರು ನಿರ್ದೋಷಿಯಾಗಿದ್ದಾರೆ ಎಂದು ಎಸಿಬಿ ತನ್ನ ವರದಿಯಲ್ಲಿ ತಿಳಿಸಿದೆ” ಎಂದು ಸರ್ಕಾರ ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಪ್ರಕರಣದ ಹಿನ್ನೆಲೆ: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಶಶಿಕಲಾ, ಮತ್ತವರ ಸಂಬಂಧಿ ಇಳವರಸಿಗೆ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ಜೈಲಿನ ಅಧಿಕಾರಿಗಳು 2 ಕೋಟಿ ರೂಪಾಯಿ ಲಂಚ ಪಡೆದ ಆರೋಪವಿತ್ತು. ಈ ಪ್ರಕರಣವನ್ನು ನಿವೃತ್ತ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದ ಏಕ ಸದಸ್ಯ ಸಮಿತಿ ವಿಚಾರಣೆ ನಡೆಸಿ ವರದಿ ಸಲ್ಲಿಸಿತ್ತು. ನಂತರ ಎಸಿಬಿ ಪ್ರಕರಣದ ತನಿಖೆ ನಡೆಸಿತು. ಎಸಿಬಿ ವಿಳಂಬ ಮಾಡುತ್ತಿರುವುದಾಗಿ ಆಕ್ಷೇಪಿಸಿ, ತಮಿಳುನಾಡಿನ ಸಾಮಾಜಿಕ ಕಾರ್ಯಕರ್ತೆ ಕೆ.ಎಸ್.ಗೀತಾ ಎಂಬುವರು ಹೈಕೋರ್ಟ್ಗೆ 2021ರ ಮಾರ್ಚ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಿದ್ದರು.
ಎರಡು ತಿಂಗಳಲ್ಲಿ ಪ್ರಕರಣದ ತನಿಖೆ ಪೂರ್ಣಗೊಳಿಸಿ ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ 2021ರ ಜೂನ್ 11 ರಂದು ಹೈಕೋರ್ಟ್ ಎಸಿಬಿಗೆ ನಿರ್ದೇಶಿಸಿತ್ತು. ಹೈಕೋರ್ಟ್ ನೀಡಿದ್ದ ಗಡುವಿನಲ್ಲಿ ತನಿಖೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಎಸಿಬಿ ಮಧ್ಯಂತರ ಅರ್ಜಿ ಸಲ್ಲಿಸಿ, ಗಡುವು ವಿಸ್ತರಣೆಗೆ ಕೋರಿತ್ತು. 2017 ರಲ್ಲಿ ಅಕ್ರಮ ಆಸ್ತಿ ಗಳಿಗೆ ಪ್ರಕರಣದಡಿ ಜೈಲು ಸೇರಿದ್ದ ಶಶಿಕಲಾ ಹಾಗೂ ಇಳವರಸಿ 2021 ರಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.
ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ: ಪ್ರಕರಣ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಪೂರ್ವಾನುಮತಿ ನೀಡಿದ ಸರ್ಕಾರದ ಆದೇಶ ರದ್ದು ಕೋರಿ ಆರೋಪಿ ಡಾ.ಆರ್ ಅನಿತಾ ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ನೇತೃತ್ವದ ಏಕ ಸದಸ್ಯ ಪೀಠ ಅನಿತಾ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.
ಇದನ್ನೂ ಓದಿ: ಮೋದಿ ಸೇನಾ ಸಮವಸ್ತ್ರ ಧರಿಸಿದ್ದ ಪ್ರಕರಣ: ಪ್ರಧಾನಿ ಕಚೇರಿಗೆ ನೋಟಿಸ್ ಜಾರಿ


