ಸಂವಿಧಾನ ದಿನದ ಅಂಗವಾಗಿ ಸುಪ್ರೀಂಕೋರ್ಟ್ ಆವರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಡಾ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಭಾರತೀಯ ಸಂವಿಧಾನದ ಪಿತಾಮಹ ಡಾ ಬಿ ಆರ್ ಅಂಬೇಡ್ಕರ್ ಅವರ 7 ಅಡಿ ಎತ್ತರದ ಶಿಲ್ಪಕ್ಕೆ ಪುಷ್ಪ ನಮನ ಸಲ್ಲಿಸಿದರು.
ರಾಷ್ಟ್ರಪತಿ ಮುರ್ಮು ಮತ್ತು ಸಿಜೆಐ ಚಂದ್ರಚೂಡ್ ಅವರು ಸಸಿ ನೆಡುವ ಮೂಲಕ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದ್ದಾರೆ. ಸಮಾರಂಭದಲ್ಲಿ ಈ ವೇಳೆ ಉನ್ನತ ನ್ಯಾಯಾಲಯದ ಹಲವು ನ್ಯಾಯಾಧೀಶರು ಭಾಗವಹಿಸಿದ್ದರು.
ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಡಾ. ಅಂಬೇಡ್ಕರ್ ಅವರು 1949ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸುವ ನಿರ್ಣಯವನ್ನು ಮಂಡಿಸಿದ್ದರು. 1950 ಜನವರಿ 26ರಂದು ಸಂವಿಧಾನವನ್ನು ಜಾರಿಗೆ ತರಲಾಯಿತು. ಸಂವಿಧಾನವನ್ನು ಸಭೆಯು ಅಂಗೀಕರಿಸಿದ ಇದೇ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.
ಸಂವಿಧಾನ ದಿನವನ್ನು ಸಂವಿಧಾನ್ ದಿವಸ್ ಎಂದೂ ಕೂಡ ಕರೆಯಲಾಗುತ್ತದೆ. ಬ್ರಿಟಿಷರ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯ ಪಡೆದ ನಂತರ ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ರಚಿಸುವ ಜವಾಬ್ದಾರಿಯನ್ನು ಸಮಿತಿಗೆ ವಹಿಸಿತು. ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು ಸಂವಿಧಾನ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಯಿತು. ಡಾ. ರಾಜೇಂದ್ರ ಪ್ರಸಾದ್ ಅವರು ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದರು. 1948ರ ಆರಂಭದಲ್ಲಿ ಡಾ. ಅಂಬೇಡ್ಕರ್ ಭಾರತೀಯ ಸಂವಿಧಾನದ ಕರಡನ್ನು ಪೂರ್ಣಗೊಳಿಸಿದರು ಹಾಗೂ ಅದನ್ನು ಸಂವಿಧಾನ ಸಭೆಯಲ್ಲಿ ಮಂಡಿಸಿದರು. ನವೆಂಬರ್ 26, 1946ರಂದು ಈ ಕರಡನ್ನು ಕೆಲವು ತಿದ್ದುಪಡಿಗಳೊಂದಿಗೆ ಅಂಗೀಕರಿಸಲಾಯಿತು.
ಸ್ವತಂತ್ರ ಭಾರತಕ್ಕಾಗಿ ಸಂವಿಧಾನವನ್ನು ರಚಿಸುವ ಮಹತ್ವದ ಕಾರ್ಯವನ್ನು ಪೂರ್ಣಗೊಳಿಸಲು ಸಂವಿಧಾನ ಸಭೆಯು ಸುಮಾರು 2 ವರ್ಷ 11 ತಿಂಗಳು ಮತ್ತು 18 ದಿನಗಳನ್ನು ತೆಗೆದುಕೊಂಡಿದೆ. ಭಾರತೀಯ ಸಂವಿಧಾನವು ಅಂಗ್ಲ ಭಾಷೆಯಲ್ಲಿ 1,17,360 ಪದಗಳನ್ನು ಹೊಂದಿರುವ ವಿಶ್ವ ಅತಿದೊಡ್ಡ ಲಿಖಿತ ಸಂವಿಧಾನವಾಗಿದೆ.
President Droupadi Murmu unveils statue of Dr. BR Ambedkar in Supreme Court on Constitution Day#ConstitutionDay #SupremeCourt
Read story: https://t.co/c7xEZcsNaB pic.twitter.com/3ZR2FQn0ua
— Bar & Bench (@barandbench) November 26, 2023
ಇದನ್ನು ಓದಿ: ಟಿಂಡರ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವಕನ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ