ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿ ಜಾರ್ಖಂಡ್ನ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಅವರನ್ನು ಹೆಸರಿಸಲಾಗಿದೆ. ಒಡಿಶಾದ ಬುಡಕಟ್ಟು ಸಮುದಾಯದಕ್ಕೆ ಸೇರಿರುವ ದ್ರೌಪದಿ ಮುರ್ಮು ಅವರು ವಿರೋಧ ಪಕ್ಷದ ಅಭ್ಯರ್ಥಿಯಾಗಿರುವ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ವಿರುದ್ಧ ಕಣಕ್ಕಿಳಿಯಲಿದ್ದಾರೆ.
ಜುಲೈ 18 ರಂದು ನಡೆಯಲಿರುವ ಚುನಾವಣೆಯಲ್ಲಿ 64 ವರ್ಷದ ದ್ರೌಪದಿ ಮುರ್ಮು ಅವರು ಆಯ್ಕೆಯಾದರೆ ಭಾರತದ ರಾಷ್ಟ್ರಪತಿಯಾದ ಮೊದಲ ಬುಡಕಟ್ಟು ಮಹಿಳೆ ಎನಿಸಲಿದ್ದಾರೆ.
ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಗಾಗಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಸಿದ ನಂತರ ಮುರ್ಮು ಅವರ ಹೆಸರನ್ನು ಘೋಷಿಸಲಾಯಿತು. ಮಂಡಳಿಯು ಈ ಹುದ್ದೆಗೆ 20 ಹೆಸರುಗಳನ್ನು ಚರ್ಚಿಸಿದೆ. ಆದರೆ, ಪೂರ್ವ ಭಾರತದಿಂದ ಒಬ್ಬ ಬುಡಕಟ್ಟು ಮಹಿಳೆಯನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಹೇಳಿದ್ದರು.
ಈ ಹಿಂದೆ ದ್ರೌಪದಿ ಮುರ್ಮು ಅವರು 2017 ರ ಅಧ್ಯಕ್ಷೀಯ ಚುನಾವಣೆಗೂ ಪ್ರಬಲ ಸ್ಪರ್ಧಿಯಾಗಿದ್ದರು. ಆದರೆ ಆ ಸಂದರ್ಭದಲ್ಲಿ, ಬಿಹಾರದ ರಾಜ್ಯಪಾಲರಾಗಿದ್ದ ರಾಮ್ ನಾಥ್ ಕೋವಿಂದ್ ಅವರನ್ನು ದಲಿತ ಎಂದು ಆಯ್ಕೆ ಮಾಡಲಾಗಿತ್ತು.
ಇದನ್ನೂ ಓದಿ: ಅಗ್ನಿಪಥ್ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್
ಜಾರ್ಖಂಡ್ನ ಮೊದಲ ಮಹಿಳಾ ಗವರ್ನರ್, ದ್ರೌಪದಿ ಮುರ್ಮು ಕೌನ್ಸಿಲರ್ ಆಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದವರು. ಒಡಿಶಾದಿಂದ ಎರಡು ಬಾರಿ ಬಿಜೆಪಿ ಶಾಸಕರಾಗಿದ್ದ ಮುರ್ಮು ಅವರು ನವೀನ್ ಪಟ್ನಾಯಕ್ ಸಂಪುಟದಲ್ಲಿ ಬಿಜು ಜನತಾ ದಳ, ಬಿಜೆಪಿ ಬೆಂಬಲದೊಂದಿಗೆ ರಾಜ್ಯದಲ್ಲಿ ಆಡಳಿತ ನಡೆಸಿದಾಗ ಸಚಿವರಾಗಿದ್ದರು. ಇವರು ಒಡಿಶಾದ ಬಿಜೆಪಿಯ ಮಯೂರ್ಭಂಜ್ ಜಿಲ್ಲಾ ಘಟಕದ ಮುಖ್ಯಸ್ಥರಾಗಿದ್ದರು. ಒಡಿಶಾ ವಿಧಾನಸಭೆಯಲ್ಲಿ ರಾಯರಂಗ್ಪುರವನ್ನು ಪ್ರತಿನಿಧಿಸಿದ್ದರು.
ಇತ್ತ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರನ್ನು ಆಯ್ಕೆ ಮಾಡಲಾಗಿದೆ.
“ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ನಾವು ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿದ್ದೇವೆ. ಮೋದಿ ಸರ್ಕಾರ ಮತ್ತಷ್ಟು ಹಾನಿ ಮಾಡದಂತೆ ತಡೆಯಲು ನಿರ್ಧರಿಸಿದ್ದೇವೆ. ಇಂದು ನಡೆದ ಸಭೆಯಲ್ಲಿ ನಾವು ಯಶವಂತ್ ಸಿನ್ಹಾ ಅವರನ್ನು ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದೇವೆ. ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಯಶವಂತ್ ಸಿನ್ಹಾ ಅವರಿಗೆ ಮತ ನೀಡುವಂತೆ ಮನವಿ ಮಾಡುತ್ತೇವೆ” ಎಂದು ಪ್ರತಿಪಕ್ಷಗಳ ಜಂಟಿ ಹೇಳಿಕೆಯನ್ನು ಓದಿದ ಕಾಂಗ್ರೆಸ್ನ ನಾಯಕ ಜೈರಾಮ್ ರಮೇಶ್ ಹೇಳಿದ್ದರು.
ಮುಂದಿನ ರಾಷ್ಟ್ರಪತಿ ಆಯ್ಕೆಗೆ ಜುಲೈ 18 ರಂದು ಚುನಾವಣೆ, ಜುಲೈ 21 ರಂದು ಮತ ಎಣಿಕೆ ನಡೆಯಲಿದೆ. ಜುಲೈ 25 ರಂದು ನೂತನ ಅಧ್ಯಕ್ಷರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಘೋಷಣೆ