ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಯಶವಂತ್ ಸಿನ್ಹಾ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಬಗ್ಗೆ ತಮ್ಮ ಟ್ವೀಟ್ನಲ್ಲಿ ಯಶವಂತ್ ಸಿನ್ಹಾ ಸುಳಿವು ನೀಡಿದ್ದಾರೆ.
ಇಂದು ಮುಂಬರುವ ಜುಲೈನಲ್ಲಿ ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ಸಭೆ ನಡೆಯಲಿದೆ. ಇದಕ್ಕೆ ಮುಂಚಿತವಾಗಿ, ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರು ತಮ್ಮ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಇಂದು ಟ್ವೀಟ್ ಮಾಡಿರುವ ಅವರು, “ಟಿಎಂಸಿಯಲ್ಲಿ ಮಮತಾಜಿ ಅವರು ನನಗೆ ನೀಡಿದ ಗೌರವ ಮತ್ತು ಪ್ರತಿಷ್ಠೆಗೆ ನಾನು ಆಭಾರಿಯಾಗಿದ್ದೇನೆ. ಈಗ ಒಂದು ದೊಡ್ಡ ರಾಷ್ಟ್ರೀಯ ಉದ್ದೇಶಕ್ಕಾಗಿ ಮತ್ತು ಪ್ರತಿಪಕ್ಷಗಳ ಒಗ್ಗಟಿಗಾಗಿ ಕೆಲಸ ಮಾಡಲು ನಾನು ಪಕ್ಷದಿಂದ ದೂರ ಸರಿಯಬೇಕಾದ ಸಮಯ ಬಂದಿದೆ. ಮಮತಾ ಬ್ಯಾನರ್ಜಿ ಅವರು ನನ್ನ ನಿರ್ಧಾರವನ್ನು ಗೌರವಿಸುತ್ತಾರೆ ಎಂದು ನನಗೆ ಖಾತ್ರಿಯಿದೆ” ಎಂದಿದ್ದಾರೆ.
ಇದನ್ನೂ ಓದಿ: Explained: ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?
I am grateful to Mamataji for the honour and prestige she bestowed on me in the TMC. Now a time has come when for a larger national cause I must step aside from the party to work for greater opposition unity. I am sure she approves of the step.
— Yashwant Sinha (@YashwantSinha) June 21, 2022
ತಮ್ಮ ರಾಜೀನಾಮೆಯನ್ನು ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರಿಗೆ ಕಳುಹಿಸಿದ್ದಾರೆ ಎಂದು ಮೂಲಗಳು ಎನ್ಡಿಟಿವಿಗೆ ತಿಳಿಸಿವೆ. ಯಶವಂತ್ ಸಿನ್ಹಾ ಅವರು 2018 ರಲ್ಲಿ ಬಿಜೆಪಿ ತೊರೆದು, 2021 ರಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದರು. ನಂತರ ಅವರನ್ನು ಟಿಎಂಸಿ ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.
ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುವ ವಿರೋಧ ಪಕ್ಷಗಳ ಮನವಿಯನ್ನು ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಸೋಮವಾರ ತಿರಸ್ಕರಿಸಿದ್ದಾರೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಕೂಡಾ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ತಾವು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ನಿರ್ಧಾರ ಪ್ರಕಟಿಸಿದ್ದರು.
ಗೋಪಾಲಕೃಷ್ಣ ಗಾಂಧಿ ಅವರು ತಮ್ಮ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಸೋಮವಾರ ಯಶವಂತ್ ಸಿನ್ಹಾ ಅವರ ಹೆಸರನ್ನು ವಿರೋಧ ಪಕ್ಷಗಳು ಚರ್ಚಿಸಿವೆ ಎಂದು ವರದಿಗಳು ತಿಳಿಸಿವೆ.
ಶರದ್ ಪವಾರ್ ಅವರು ಇಂದು ಕರೆದಿರುವ ವಿರೋಧ ಪಕ್ಷದ ಸಭೆಗೆ ಮಮತಾ ಬ್ಯಾನರ್ಜಿ ಗೈರುಹಾಜರಾಗುವ ಸಾಧ್ಯತೆಯಿದೆ. ಬದಲಾಗಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ತೃಣಮೂಲ ಕಾಂಗ್ರೆಸ್ ಪ್ರತಿನಿಧಿಯಾಗಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದರ ಜೊತೆಗೆ ಬಿಜೆಪಿ ಕೂಡ ಇಂದು ತನ್ನ ಸಂಸದೀಯ ಮಂಡಳಿ ಸಭೆಯನ್ನು ನಡೆಸಲಿದ್ದು, ರಾಷ್ಟ್ರಪತಿ ಚುನಾವಣೆಗೆ ತನ್ನ ಆಯ್ಕೆಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಮನವಿ ತಿರಸ್ಕರಿಸಿದ ಮಹಾತ್ಮ ಗಾಂಧಿ ಮೊಮ್ಮಗ!



60 ವರ್ಷ ದೇಶ ಆಳಿದ ಪಕ್ಷಕ್ಕೆ ರಾಷ್ಟ್ರಪತಿ ಅಭ್ಯರ್ಥಿ ಇಲ್ಲಾ ಎಂಬುದು ಆ ಪಕ್ಷದ ಅಳಿವು ಉಳಿವನ್ನು ಸೂಚಿಸಿದೆ.ಜೈ ಹಿಂದೂ ರಾಷ್ಟ್ರ