ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಸಾಲು ಸಾಲು ಪ್ರಶ್ನೆಗಳನ್ನು ಎತ್ತಿರುವ ಅವರು, ಕೆಪಿಎಸ್ಸಿ ನೇಮಕಾತಿ ಅಕ್ರಮದ ಹಳೆಯ ಪುಟಗಳನ್ನು ಕೆದಕಿ ಕುಮಾರಸ್ವಾಮಿ ಅವರನ್ನು ಕುಟುಕಿದ್ದಾರೆ.
ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ಜವಾಬ್ದಾರಿಯಿಂದ ಮಾತನಾಡಬೇಕು. ವಿಷಯಾಂತರ ಮಾಡುವ ಬದಲು ನೇರ ಉತ್ತರ ನೀಡಬೇಕು ಎಂದು ಆಗ್ರಹಿಸಿರುವ ಪ್ರಿಯಾಂಕ್ ಖರ್ಗೆ, ಕೆಪಿಎಸ್ಸಿ ಸುತ್ತ ಹೆಣೆದುಕೊಂಡಿರುವ ಹಲವು ಸಂಶಯಾಸ್ಪದ ನಡೆಗಳನ್ನು ಸಾರ್ವಜನಿಕವಾಗಿ ಪ್ರಶ್ನಿಸಿದ್ದಾರೆ.
‘ತಾವು ಮಾಡಿದರೆ ಮೃಷ್ಟಾನ್ನ, ಬೇರೆಯವರು ಮಾಡಿದರೆ ಚಿತ್ರಾನ್ನವೇ?’
2011ರ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಆಯ್ಕೆ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ಕಾರಣಕ್ಕೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಆ ನೇಮಕಾತಿಯನ್ನೇ ರದ್ದುಗೊಳಿಸಿದ್ದನ್ನು ಪ್ರಿಯಾಂಕ್ ಖರ್ಗೆ ಸ್ಮರಿಸಿದ್ದಾರೆ. ರಾಜ್ಯ ಸರ್ಕಾರದ ಮೇಲ್ಮನವಿಯನ್ನೂ ನ್ಯಾಯಾಲಯ ವಜಾಗೊಳಿಸಿತ್ತು. ಹೀಗಿದ್ದರೂ, ಅಕ್ರಮದ ಆರೋಪ ಹೊತ್ತಿದ್ದ ಅಭ್ಯರ್ಥಿಗಳನ್ನು ನೇಮಕ ಮಾಡುವಂತೆ ಅಂದಿನ ಮುಖ್ಯಮಂತ್ರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಶಿಫಾರಸು ಪತ್ರ ನೀಡಿದ್ದರು ಎಂದು ಖರ್ಗೆ ಆರೋಪಿಸಿದ್ದಾರೆ.
“ನ್ಯಾಯಾಲಯವೇ ಆಯ್ಕೆ ಪ್ರಕ್ರಿಯೆಯ ಅಕ್ರಮವನ್ನು ಎತ್ತಿಹಿಡಿದ ಮೇಲೆಯೂ ಆ ಅಭ್ಯರ್ಥಿಗಳ ಪರವಾಗಿ ಶಿಫಾರಸು ಮಾಡಲು ಕುಮಾರಸ್ವಾಮಿ ಅವರಿಗೆ ಇದ್ದ ಹಿತಾಸಕ್ತಿ ಏನಿತ್ತು? ಬೇರೆಯವರು ಮಾಡಿದರೆ ತಪ್ಪು, ತಮ್ಮವರು ಮಾಡಿದರೆ ಸರಿ ಎನ್ನುವಂತೆ ‘ಕುಮಾರಸ್ವಾಮಿ ಮಾಡಿದರೆ ಮೃಷ್ಟಾನ್ನ, ಬೇರೆಯವರು ಮಾಡಿದರೆ ಚಿತ್ರಾನ್ನವೇ?'” ಎಂದು ಅವರು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.
ಜೈಲಿನಲ್ಲಿದ್ದ ಕೆಪಿಎಸ್ಸಿ ಅಧ್ಯಕ್ಷರ ಭೇಟಿ ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ
ಕೆಪಿಎಸ್ಸಿ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಕೆಪಿಎಸ್ಸಿಯ ಹಿಂದಿನ ಅಧ್ಯಕ್ಷರೊಬ್ಬರನ್ನು ಕುಮಾರಸ್ವಾಮಿ ಖುದ್ದಾಗಿ ಹೋಗಿ ಭೇಟಿಯಾಗಿದ್ದರು ಎಂಬ ವಿಚಾರವನ್ನೂ ಖರ್ಗೆ ಪ್ರಸ್ತಾಪಿಸಿದ್ದಾರೆ. ಜೈಲಿನಲ್ಲಿದ್ದ ಕೆಪಿಎಸ್ಸಿ ಅಧ್ಯಕ್ಷರನ್ನು ಭೇಟಿ ಮಾಡುವ ಅಗತ್ಯ ಕುಮಾರಸ್ವಾಮಿ ಅವರಿಗೆ ಏನಿತ್ತು? ಪ್ರಕರಣದಲ್ಲಿ ತಮ್ಮ ಹೆಸರು ಹೊರಬರದಂತೆ ನೋಡಿಕೊಳ್ಳಲು ಅಥವಾ ಬೆದರಿಕೆ ಹಾಕಲು ಈ ಭೇಟಿ ನಡೆದತ್ತೇ? ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ಕುಮಾರಸ್ವಾಮಿ ಅವರ ಸಂಬಂಧಿಕ ಅಧಿಕಾರಿಯೊಬ್ಬರ ನೇಮಕಾತಿಯನ್ನು ರದ್ದುಪಡಿಸಿದ್ದರೂ, ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (CAT) ಮೂಲಕ ತಡೆಯಾಜ್ಞೆ ತಂದು ಐಎಎಸ್ ಹುದ್ದೆಗೆ ಬಡ್ತಿ ದೊರೆಯುವಂತೆ ಮಾಡಿದ್ದು ಯಾರ ಪ್ರಭಾವದಿಂದ ಎಂಬ ಸತ್ಯವನ್ನೂ ಕುಮಾರಸ್ವಾಮಿ ಬಹಿರಂಗಪಡಿಸಬೇಕು ಎಂದು ಖರ್ಗೆ ಆಗ್ರಹಿಸಿದ್ದಾರೆ.
ನ್ಯಾಯಾಲಯದ ತೀರ್ಪಿನ ಹೊರತಾಗಿಯೂ ಅಕ್ರಮ ನೇಮಕಾತಿಗೆ ಶಿಫಾರಸು ಮಾಡಿದ ದಾಖಲೆ ಹೊಂದಿರುವವರು, ಈಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೇಮಕಾತಿಯನ್ನು ಪ್ರಶ್ನಿಸುತ್ತಿರುವುದು ದೊಡ್ಡ ವಿರೋಧಾಭಾಸ ಎಂದು ಖರ್ಗೆ ವ್ಯಂಗ್ಯವಾಡಿದ್ದಾರೆ. ಕೆಪಿಎಸ್ಸಿ ಸುತ್ತಲಿನ ರಾಜಕೀಯ ಆರೋಪ ಮತ್ತು ಪ್ರತ್ಯಾರೋಪಗಳು ಈಗ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿವೆ.


