ಹಿಂದುಳಿದ ವರ್ಗಗಳ ಕ್ಷೇಮಾಭಿವೃದ್ಧಿಗಾಗಿ 29 ವರ್ಷಗಳ ಹಿಂದೆ ಆರಂಭವಾಗಿದ್ದ ಡಿ.ದೇವರಾಜ ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚದಂತೆ ಚಿತ್ತಾಪುರ ಶಾಸಕರಾದ ಪ್ರಿಯಾಂಕ್ ಖರ್ಗೆ ಒತ್ತಾಯಿಸಿದ್ದಾರೆ.
ಈ ಕುರಿತು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ ’ ಹಿಂದುಳಿದ ವರ್ಗಗಳನ್ನು ಮುನ್ನೆಲೆಗೆ ತರುವ ಉದ್ದೇಶದಿಂದ 1993ರಲ್ಲಿ ಡಿ. ದೇವರಾಜು ಅರಸು ಸಂಶೋಧನಾ ಸಂಸ್ಥೆಯನ್ನು ಸ್ಥಾಪಿಸಲಾಗಿದ್ದು, ಸಂಸ್ಥೆಯು ಹಿಂದುಳಿದ ಜನಾಂಗಗಳ ಬಗ್ಗೆ ಅಧ್ಯಯನ ನಡೆಸಿ ಕಾರ್ಯಗಾರವನ್ನು ನಡೆಸುತ್ತಿದೆ. ಸಂಸ್ಥೆಯು ನಡೆಸುವ ಸಮೀಕ್ಷೆ ಹಾಗೂ ವರ್ಗಗಳ ಸ್ಥಿತಿಗತಿಯ ಅಧ್ಯಯನದ ವರದಿಯಿಂದ ಹಿಂದುಳಿದ ವರ್ಗಗಳ ಉನ್ನತಿಗೆ ಹೊಸ ಯೋಜನೆ ರೂಪಿಸಲು ಸರ್ಕಾರಕ್ಕೆ ಅನುಕೂಲವಾಗಿರುತ್ತದೆ’ ಎಂದಿದ್ದಾರೆ.
ಮುಂದುವರೆದು, ‘ಒಂದು ವೇಳೆ ಸಂಸ್ಥೆ ಮುಚ್ಚಿದ್ದಲ್ಲಿ ಹಿಂದುಳಿದ ಸಮುದಾಯಗಳ ಕುಲ ಶಾಸ್ತ್ರೀಯ ಅಧ್ಯಯನ ಮತ್ತು ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿ, ಔದ್ಯೋಗಿಕ ಹಾಗೂ ಆರ್ಥೀಕ ಸ್ಥಿತಿಗತಿಗಳ ಅಧ್ಯಯನ ಮೇಲೆ ಪರಿಣಾಮ ಬೀರಲಿದ್ದು, ಸಮುದಾಯಗಳು ಸಬಲೀಕರಣಗೊಳ್ಳದೇ ಹಿಂದುಳಿಯಲು ಸರ್ಕಾರವೇ ನೇರ ಕಾರಣವಾಗುತ್ತದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಸಂಸ್ಥೆಯನ್ನು ಮುಚ್ಚಬಾರದು ಎಂದು ಒತ್ತಾಯಿಸಿರುವ ಪ್ರಿಯಾಂಕ್ ಖರ್ಗೆ, ‘ಸರ್ಕಾರವು ಈ ಸಂಸ್ಥೆಯನ್ನು ಬಳಸಿಕೊಂಡು ಹಿಂದುಳಿದ ವರ್ಗದ ಮಹಿಳೆಯರ ಆರ್ಥಿಕ ಸ್ಥಿತಿ, ಸಾಮಾಜಿಕ ಸ್ಥಾಮ ಮತ್ತು ಶೈಕ್ಷಣಿಕ ಸೌಲಭ್ಯ ಹಾಗೂ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸುವ ಮೂಲಕ ನೂತನ ಕ್ರಮಗಳನ್ನು ಕೈಗೊಳ್ಳಬೇಕು ಎಂದಿದ್ದಾರೆ.
ಇದನ್ನೂ ಓದಿ: ಹಿಂದುತ್ವದಿಂದ ಬಂಧುತ್ವದೆಡೆಗೆ…: ಸುನಿಲ್ ಬಜಿಲಕೇರಿ