ಕೇಂದ್ರ ಸರ್ಕಾರ ಸಂವಿಧಾನ 370ನೇ ವಿಧಿಯನ್ನು ರದ್ದುಗೊಳಿಸಿ ವಿಶೇಷ ಸ್ಥಾನವನ್ನು ತೆಗೆದುಹಾಕಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಮುಖ್ಯಮಂತ್ರಿ ಫರೂಕ್ ಅಬ್ದುಲ್ಲಾ ಅವರ ತಂಗಿ ಸುರೈಯಾ ಮಗಳು ಸಫಿಯಾ ಸೇರಿದಂತೆ ಹಲವು ಮಹಿಳಾ ಕಾರ್ಯಕರ್ತೆಯರನ್ನು ಶ್ರೀನಗರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಸುರೈಯಾ ಮತ್ತು ಸಫಿಯಾ ನೇತೃತ್ವದಲ್ಲಿ ಮಹಿಳೆಯರು ಕೈಗಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕೈಯಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ಪ್ರತಿಭಟನೆಯ ಆರಂಭದಲ್ಲೇ ಪೊಲೀಸರು ಮಹಿಳೆಯರು ಗುಂಪು ಸೇರುವುದರನ್ನು ತಡೆದರು. ಗುಂಪನ್ನು ಚದರಿಸಲು ಪ್ರಯತ್ನಿಸಿದರು.
ಪೊಲೀಸರು ತಡೆದರೂ ಬಿಡದೆ ಪ್ರತಿಭಟನಾಕಾರರು ರಸ್ತೆಯಲ್ಲೇ ಕುಳಿತು ಧರಣಿ ನಡೆಸಿದರು. ಸ್ಥಳಕ್ಕೆ ಬಂದ ಸಿಆರ್ ಪಿಎಫ್ ಪೊಲೀಸರು ಮಹಿಳಾ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಪೊಲೀಸ್ ವ್ಯಾನ್ ಗೆ ಹತ್ತಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು ಕಾಶ್ಮೀರದ ಮಹಿಳೆಯರಾದ ನಾವು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನ ಮಾನವನ್ನು ಏಕಪಕ್ಷೀಯವಾಗಿ ಕೇಂದ್ರ ಸರ್ಕಾರ ರದ್ದು ಮಾಡಿದೆ. ಕೇಂದ್ರದ ಈ ಕ್ರಮವನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ.
ಕಣಿವೆಯಲ್ಲಿ ನಾಗರಿಕ ಸ್ವಾತಂತ್ರ್ಯವನ್ನು ಮತ್ತು ಮೂಲಭೂತ ಹಕ್ಕುಗಳನ್ನು ಮರುಸ್ಥಾಪಿಸಬೇಕು. ಈಗಾಗಲೇ ಬಂಧಿಸಿರುವ ಮತ್ತು ವಶಕ್ಕೆ ತೆಗೆದುಕೊಂಡಿರುವ ಎಲ್ಲರನ್ನು ತಕ್ಷಣವೇ ಬಿಡುಗಡೆಗೊಳಿಸಬೇಕು. ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ನಿಯೋಜಿಸಿರುವ ಸೇನೆಯನ್ನು ಹಿಂಪಡೆಯಬೇಕು ಎಂದು ಹೇಳಿಕೆಯಲ್ಲಿ ಒತ್ತಾಯಿಸಲಾಗಿದೆ.