ಸರ್ಕಾರಿ ಉದ್ಯೋಗಕ್ಕೆ ಸಿದ್ಧತೆ ಮಾಡುತ್ತಿದ್ದ ಯುವತಿಯೋರ್ವಳು ನೇಮಕಾತಿ ಆದೇಶವನ್ನು ಸರಕಾರ ರದ್ದುಗೊಳಿಸಿದ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಅಶೋಕ್ ನಗರ ಪ್ರದೇಶದ ಖಾಸಗಿ ಹಾಸ್ಟೆಲ್ನಲ್ಲಿ ವಾರಂಗಲ್ ಮೂಲದ ಮರ್ರಿ ಪ್ರವಳಿಕಾ (23) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸರ್ಕಾರಿ ನೇಮಕಾತಿ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು ಮತ್ತು ಇತ್ತೀಚೆಗೆ ಗ್ರೂಪ್ 2 ಪರೀಕ್ಷೆ ರದ್ದುಗೊಳಿಸಿದ್ದಕ್ಕಾಗಿ ನೊಂದುಕೊಂಡಿದ್ದರು ಎನ್ನಲಾಗಿದೆ.
ಘಟನೆ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರು ಘಟನೆಯ ಕುರಿತು 48 ಗಂಟೆಗಳ ಒಳಗೆ ವಿವರವಾದ ವರದಿಯನ್ನು ಕಳುಹಿಸುವಂತೆ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಮತ್ತು ತೆಲಂಗಾಣ ರಾಜ್ಯ ಲೋಕಸೇವಾ ಆಯೋಗದ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಮರ್ರಿ ಪ್ರವಳಿಕಾ ಶುಕ್ರವಾರ ರಾತ್ರಿ ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳ ಕೇಂದ್ರವೆಂದು ಕರೆಯಲ್ಪಡುವ ಅಶೋಕ್ ನಗರ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಹರಡುತ್ತಿದ್ದಂತೆ, ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಹಾಸ್ಟೆಲ್ನ ಹೊರಗೆ ಪ್ರತಿಭಟನೆಯನ್ನು ನಡೆಸಿದ್ದಾರೆ.
ಪೊಲೀಸರು ಸ್ಥಳಕ್ಕೆ ತೆರಳಿದ್ದು ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆಕೆಯ ಮೊಬೈಲ್ ಫೋನ್ ವಶಪಡಿಸಿಕೊಂಡು ಪರೀಕ್ಷೆಗೆ ಕಳುಹಿಸಿದ್ದಾರೆ.
ಘಟನೆ ತೆಲಂಗಾಣದಲ್ಲಿ ರಾಜಕೀಯ ತಿರುವು ಪಡೆದುಕೊಂಡಿದೆ. ಈ ಕುರಿತು ಎಕ್ಸ್ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್ ಮಾಡಿದ್ದು, ತೆಲಂಗಾಣದಲ್ಲಿ 23 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆಯಿಂದ ವೇದೆನೆಯಾಗಿದೆ. ರಾಜ್ಯ ಲೋಕಸೇವಾ ಆಯೋಗದ ಪರೀಕ್ಷೆ ಪದೇ ಪದೇ ಮುಂದೂಡಿಕೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮರ್ರಿ ಪ್ರವಲ್ಲಿಕಾ ಕುಟುಂಬದ ಜೊತೆ ಈ ದುಃಖ ಮತ್ತು ನೋವಿನ ಸಂದರ್ಭದಲ್ಲಿ ನಾವು ಜೊತೆಯಾಗಿದ್ದೇವೆ ಎಂದು ಹೇಳಿದ್ದಾರೆ.
ತೆಲಂಗಾಣದ ಸಾವಿರಾರು ಯುವ ಉದ್ಯೋಗಾಕಾಂಕ್ಷಿಗಳು ಪರೀಕ್ಷೆಗಳನ್ನು ನಡೆಸುವಲ್ಲಿ BRS ಸರ್ಕಾರದ ನಿರಾಸಕ್ತಿಯಿಂದಾಗಿ ಹತಾಶರಾಗಿದ್ದಾರೆ ಮತ್ತು ಕೋಪಗೊಂಡಿದ್ದಾರೆ. ತೆಲಂಗಾಣದ ಯುವಕರು, ಭ್ರಷ್ಟ, ಅಸಮರ್ಥ BRS ಸರ್ಕಾರವನ್ನು ಇದಕ್ಕೆ ಹೊಣೆಗಾರರನ್ನಾಗಿ ಮಾಡಿ ರಾಜ್ಯದಲ್ಲಿ ಅಧಿಕಾರದಿಂದ ಹೊರಹಾಕಲಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.
ಇದನ್ನು ಓದಿ: ಭಯೋತ್ಪಾದನ ಕೃತ್ಯದ ಆರೋಪಿ ವೈಭವ್ ರಾವುತ್ ಜೈಲಿನಿಂದ ಬಿಡುಗಡೆ ವೇಳೆ ಅದ್ದೂರಿ ಸ್ವಾಗತ