ಪುಣೆಯ ಸಾವಿತ್ರಿಬಾಯಿ ಫುಲೆ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಲಲಿತ ಕಲಾ ಕೇಂದ್ರದಲ್ಲಿ ಬಿಜೆವೈಎಂ ಮತ್ತು ಎಬಿವಿಪಿ ಸದಸ್ಯರು ಮಸಿ ಎರಚಿ ಸೂಚನಾ ಫಲಕವನ್ನು ಹಾನಿಗೊಳಿಸಿದ್ದು, ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಕರ್ತವ್ಯಲೋಪ ಎಸಗಿದ್ದಾರೆ. ಈ ಪ್ರಕರಣದಲ್ಲಿ ಇದೀಗ ಪೊಲೀಸ್ ಸಬ್ ಇನ್ಸ್ಪೆಕ್ಟರ್ನ್ನು ಅಮಾನತುಗೊಳಿಸಲಾಗಿದೆ.
ಶುಕ್ರವಾರ ಸಂಜೆ ಪುಣೆಯ ಸಾವಿತ್ರಿಬಾಯಿ ಫುಲೆ ವಿಶ್ವವಿದ್ಯಾನಿಲಯದ ನಾಟಕ ಪ್ರದರ್ಶನದ ವಿಚಾರವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮತ್ತು ಲಲಿತ ಕಲಾ ಕೇಂದ್ರದ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಇದರ ಬೆನ್ನಲ್ಲಿ ವಿಶ್ವವಿದ್ಯಾಲಯದ ಆವರಣದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಲಲಿತ ಕಲಾ ಕೇಂದ್ರದಿಂದ ನಾಟಕವನ್ನು ಪ್ರದರ್ಶನ ಮಾಡಿರುವ ಬಗ್ಗೆ ಎಬಿವಿಪಿ ದೂರನ್ನು ನೀಡಿದೆ. ಪ್ರೊಫೆಸರ್ ಮತ್ತು ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಪ್ರಥಮ ಮಾಹಿತಿ ವರದಿ ಪ್ರಕಾರ, ನಾಟಕದಲ್ಲಿ ಸೀತೆಯನ್ನು ಚಿತ್ರಿಸುವ ಪುರುಷ ಕಲಾವಿದರು ಸಿಗರೇಟ್ ಸೇದುವುದು ಮತ್ತು ನಿಂದನೀಯ ಭಾಷೆ ಬಳಸುವುದನ್ನು ತೋರಿಸಲಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆರೋಪಿಸಿದ್ದರು. ಇದಲ್ಲದೆ ನಾಟಕಕ್ಕೆ ಆಕ್ಷೇಪ ವ್ಯಕ್ತಪಡಿಸಿದಾಗ ಕಲಾವಿದರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಎಬಿವಿಪಿಯ ದೂರಿನ ಮೇರೆಗೆ, ಆಕ್ಷೇಪಾರ್ಹ ಸಂಭಾಷಣೆ ಮತ್ತು ದೃಶ್ಯಗಳನ್ನು ಹೊಂದಿದ್ದ ‘ರಾಮಲೀಲಾ’ ನಾಟಕವನ್ನು ಪ್ರದರ್ಶಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಪ್ರಾಧ್ಯಾಪಕರು ಮತ್ತು ಐವರು ವಿದ್ಯಾರ್ಥಿಗಳನ್ನು ಶನಿವಾರ ಬಂಧಿಸಲಾಗಿದೆ.
ಶನಿವಾರ ಸಂಜೆ ABVP ಮತ್ತು ಭಾರತೀಯ ಜನತಾ ಯುವ ಮೋರ್ಚಾದ ಕೆಲವು ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಲಲಿತ ಕಲಾ ಕೇಂದ್ರದ ಆವರಣಕ್ಕೆ ಪ್ರವೇಶಿಸಿದ್ದಾರೆ. ಬಳಿಕ ಸೂಚನಾ ಫಲಕವನ್ನು ಹಾನಿಗೊಳಿಸಿ ಅದರ ಮೇಲೆ ಮಸಿ ಎರಚಿದ್ದಾರೆ ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಪುಣೆಯ ಸಾವಿತ್ರಿಬಾಯಿ ಫುಲೆ ವಿಶ್ವವಿದ್ಯಾನಿಲಯದಲ್ಲಿ ಪರಿಸ್ಥಿತಿ ಹದಗೆಟ್ಟಿದ್ದ ಕಾರಣ ಚತುರ್ಶೃಂಗಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಬ್ ಇನ್ಸ್ಪೆಕ್ಟರ್ ಸಚಿನ್ ಗಡೇಕರ್ ಅವರನ್ನು ಅಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು, ಅವರು ಪರಿಸ್ಥಿತಿಯನ್ನು ನಿಯಂತ್ರಿಸಲು ಯಾವುದೇ ಕ್ರಮವನ್ನು ಕೈಗೊಂಡಿರಲಿಲ್ಲ. ಅವರು ಸಹಾಯಕ್ಕಾಗಿ ಕರೆ ಮಾಡಿರಲಿಲ್ಲ ಮತ್ತು ಹಿರಿಯ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿರಲಿಲ್ಲ. ಇದರಿಂದಾಗಿ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ಹೇಳಿದ್ದಾರೆ.
ಇದನ್ನು ಓದಿ: ಎಸ್ಸಿ-ಎಸ್ಟಿ ಕಾಯ್ದೆಯಡಿ ಎಫ್ಐಆರ್ ಪ್ರಶ್ನಿಸಿ ಕೋರ್ಟ್ ಮೊರೆ ಹೋದ ‘ED’ ಅಧಿಕಾರಿಗಳು