ಕಾಂಗ್ರೆಸ್ ಸಂಸದೆ ಪ್ರಣೀತ್ ಕೌರ್ ಶನಿವಾರ ಪಂಜಾಬ್ನ ಪಟಿಯಾಲದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ತಮ್ಮ ಪತಿ, ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪರ ಮತ ಯಾಚಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರೊಂದಿಗಿನ ತೀವ್ರ ಬಿಕ್ಕಟ್ಟಿನ ನಂತರ ಕಳೆದ ವರ್ಷ ಕಾಂಗ್ರೆಸ್ ಹೈಕಮಾಂಡ್ ಅಮರಿಂದರ್ ಸಿಂಗ್ ಅವರನ್ನು ಅನೌಪಚಾರಿಕವಾಗಿ ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಿದ ನಂತರ ಅಮರಿಂದರ್ ಸಿಂಗ್ ಅವರು ತಮ್ಮದೇ ಆದ ಪಂಜಾಬ್ ಲೋಕ ಕಾಂಗ್ರೆಸ್ (PLC) ಪಕ್ಷವನ್ನು ಕಟ್ಟಿದ್ದಾರೆ.
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಅಮರಿಂದರ್ ಸಿಂಗ್ ಅವರಿಗಾಗಿ ಆಯೋಜಿಸಲಾಗಿದ್ದ ಬಿಜೆಪಿ ಸಭೆಯಲ್ಲಿ ಪಟಿಯಾಲದ ಕಾಂಗ್ರೆಸ್ ಸಂಸದೆ ಪ್ರಣೀತ್ ಕೌರ್ ಭಾಗವಹಿಸಿದ್ದರು. ಅಮರಿಂದರ್ ಸಿಂಗ್ ನೇತೃತ್ವದ ಪಿಎಲ್ಸಿ, ಬಿಜೆಪಿ ಮತ್ತು ಎಸ್ಎಡಿ (ಸಂಯುಕ್ತ) ಮೈತ್ರಿ ಪಕ್ಷಗಳು ಚುನಾವಣೆ ಎದುರಿಸುತ್ತಿವೆ.
ಇದನ್ನೂ ಓದಿ: ಪಂಜಾಬ್ ಚುನಾವಣೆ: ಚರಣ್ಜಿತ್ ಸಿಂಗ್ ಚನ್ನಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ- ರಾಹುಲ್ ಗಾಂಧಿ ಘೋಷಣೆ
ಮಾಜಿ ಮುಖ್ಯಮಂತ್ರಿ ಸಿಂಗ್ ಪಂಜಾಬ್ ಲೋಕ ಕಾಂಗ್ರೆಸ್ ಅಭ್ಯರ್ಥಿಯಾಗಿ ತಮ್ಮ ಸಾಂಪ್ರದಾಯಿಕ ಕ್ಷೇತ್ರವಾದ ಪಟಿಯಾಲ (ನಗರ) ದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.
ಇತ್ತ, ಕಾಂಗ್ರೆಸ್ ಪರ ಪ್ರಚಾರದಿಂದ ದೂರ ಉಳಿದಿರುವ ಪ್ರಣೀತ್ ಕೌರ್ ಅವರ ಈ ನಡೆ ಅವರ ಮುಂದಿನ ರಾಜಕೀಯ ನಡೆ ಬಗ್ಗೆ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ಶನಿವಾರದ ಬಿಜೆಪಿ ಸಭೆಯಲ್ಲಿ ಮಾತನಾಡಿರುವ ಅವರು,”ನಿಮ್ಮ ಕುಟುಂಬದ ಸದಸ್ಯರಾಗಿ ಅಮರಿಂದರ್ ಸಿಂಗ್ ಪರ ಮತ ಕೇಳಲು ನಿಮ್ಮ ಬಳಿಗೆ ಬಂದಿದ್ದೇನೆ” ಎಂದು ಹೇಳಿದ್ದಾರೆ.
“ನಾನು ನನ್ನ ಕುಟುಂಬದೊಂದಿಗೆ ಇದ್ದೇನೆ. ಕುಟುಂಬವು ಎಲ್ಲಕ್ಕಿಂತ ಮಿಗಿಲಾಗಿದೆ” ಎಂದು ಈ ಹಿಂದೆ ಹೇಳಿದ್ದರು. ಕೆಲವು ದಿನಗಳ ಹಿಂದೆ, ಪಟಿಯಾಲದಿಂದ (ನಗರ) ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ವಿಷ್ಣು ಶರ್ಮಾ ಅವರು ಪ್ರಣೀತ್ ಕೌರ್ ಅವರನ್ನು ಪಕ್ಷದ ಪ್ರಚಾರಕ್ಕೆ ಬನ್ನಿ ಅಥವಾ ರಾಜೀನಾಮೆ ನೀಡಿ ಎಂದು ಹೇಳಿದ್ದರು.
ಕಳೆದ ವರ್ಷ ನವೆಂಬರ್ನಲ್ಲಿ ಕಾಂಗ್ರೆಸ್ ಸಂಸದೆಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ‘ಪಕ್ಷ ವಿರೋಧಿ ಚಟುವಟಿಕೆ’ ಆರೋಪದ ಮೇಲೆ ವಿವರಣೆ ಕೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಅವರು, ನನಗೆ ಅಂತಹ ಯಾವುದೇ ಸೂಚನೆ ಬಂದಿಲ್ಲ. ಅದರ ಬಗ್ಗೆ ಪತ್ರಿಕೆಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಮಾತ್ರ ಓದಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಹಿಜಾಬ್ ವಿರೋಧಿ ಹಿಂಸಾಚಾರವು ರಾಜ್ಯದ ಸಮ್ಮಿಶ್ರ ವೈವಿಧ್ಯ ಸಂಸ್ಕೃತಿಯನ್ನು ನಾಶ ಮಾಡುತ್ತಿದೆ: ‘ಬಹುತ್ವ ಕರ್ನಾಟಕ’ ಆಕ್ರೋಶ