ಎಂಟು ಮಂದಿ ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಗೆ ಮರಣದಂಡನೆ ವಿಧಿಸಿರುವ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಗೆ ಕತಾರ್ ನ್ಯಾಯಾಲಯ ಒಪ್ಪಿಕೊಂಡಿದೆ.
ನ್ಯಾಯಾಲಯ ನಿರ್ದಿಷ್ಟ ಸಮಯ ನೀಡಿಲ್ಲ. ಆದರೆ, ಶೀಘ್ರದಲ್ಲೇ ಮನವಿ ಆಲಿಸುವುದಾಗಿ ಹೇಳಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಮಾಜಿ ನೌಕಾಪಡೆಯ ಸಿಬ್ಬಂದಿಗೆ ಕತಾರ್ನ ಪ್ರಥಮ ನಿದರ್ಶನ ನ್ಯಾಯಾಲಯವು ಮರಣದಂಡನೆ ವಿಧಿಸಿದ ಒಂದು ತಿಂಗಳ ನಂತರ ಮೇಲ್ಮನವಿ ವಿಚಾರಣೆಗೆ ಒಪ್ಪಿಕೊಂಡಿದೆ.
ಈ ಹಿಂದೆ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡಿ ನಿವೃತ್ತರಾದ 8 ಮಂದಿ ಅಧಿಕಾರಿಗಳು ಕತಾರ್ನ ಸಶಸ್ತ್ರ ಪಡೆಗಳಿಗೆ ತರಬೇತಿ ಮತ್ತು ಸಂಬಂಧಿತ ಸೇವೆಗಳನ್ನು ಒದಗಿಸುವ ಖಾಸಗಿ ಸಂಸ್ಥೆಯಾದ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್ಗಾಗಿ ಕೆಲಸ ಮಾಡುತ್ತಿದ್ದರು.
ಇಟಾಲಿಯನ್ ತಂತ್ರಜ್ಞಾನ ಆಧಾರಿತ ಮಿಡ್ಗೆಟ್ ಜಲಾಂತರ್ಗಾಮಿ ನೌಕೆಗಳಲ್ಲಿ ಕತಾರ್ ದೇಶದ ಭದ್ರತೆಗೆ ಸಂಬಂಧಿಸಿದ ಅತ್ಯಂತ ಸೂಕ್ಷ ಕೆಲಸವನ್ನು ಈ ಅಧಿಕಾರಿಗಳು ಮಾಡುತ್ತಿದ್ದರು. ಆದರೆ, ಗೂಢಚಾರಿಕೆ ಆರೋಪದ ಮೇಲೆ 8 ಮಂದಿಯನ್ನೂ ಬಂಧಿಸಿದ್ದ ಕತಾರ್ ಪೊಲೀಸರು, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ಬಳಿಕ ನ್ಯಾಯಾಲಯ 8 ಮಂದಿಗೂ ಮರಣದಂಡನೆ ಶಿಕ್ಷೆ ವಿಧಿಸಿದೆ.
ಕತಾರ್ ನ್ಯಾಯಾಲಯದ ತೀರ್ಪಿನ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಭಾರತ ಸರ್ಕಾರ, ಕಾನೂನು ಮತ್ತು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಮೂಲಕ ಬಂಧಿತರ ಬಿಡುಗಡೆಗೆ ಪ್ರಯತ್ನಿಸುತ್ತಿದೆ.
ಇದನ್ನೂ ಓದಿ: ಇಸ್ರೇಲ್-ಹಮಾಸ್ ಕದನ ವಿರಾಮ: 13 ಒತ್ತೆಯಾಳುಗಳ ಬಿಡುಗಡೆ