Homeಕರ್ನಾಟಕಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

2008ರಲ್ಲಿ ಜೆಡಿಎಸ್‍ನಿಂದ ಸ್ಪರ್ಧೆ ಮಾಡಿದ್ದ ಹನುಮಂತರಾಯಪ್ಪ ಅವರ ಮಗಳು ಕುಸುಮಾ ಕಾಂಗ್ರೆಸ್ ಅಭ್ಯರ್ಥಿ! ಇದು ಕಾಂಗ್ರೆಸ್‍ಗೆ ತನ್ನ ಓಟಿನ ಬೇಟೆಯನ್ನು ಮತ್ತಷ್ಟು ಹೆಚ್ಚಿಸಲು ಉಪಯೋಗ ಆಗಬಹುದು ಎಂಬ ಲೆಕ್ಕಾಚಾರ ಕೂಡಾ ಇದೆ.

- Advertisement -
- Advertisement -

ರಾಜ್ಯದ ತುಮಕೂರು ಜಿಲ್ಲೆಯ ಶಿರಾ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ವ್ಯಾಪ್ತಿಗೆ ಬರುವ ರಾಜರಾಜೇಶ್ವರಿ ನಗರದಲ್ಲಿ (ಆರ್‌ಆರ್ ನಗರ) ಉಪ ಚುನಾವಣೆ ಘೋಷಣೆಯಾಗಿದೆ. ಮುಂದಿನ ತಿಂಗಳು ನವೆಂಬರ್ 3ರಂದು ಚುನಾವಣೆ ನಡೆಯಲಿದ್ದು ನವೆಂಬರ್ 10ಕ್ಕೆ ಫಲಿತಾಂಶ ಘೋಷಣೆಯಾಗಲಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ – ರಾಜ್ಯದ ಮೂರೂ ಪ್ರಮುಖ ಪಕ್ಷಗಳಿಗೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ.

ರಾಜ್ಯದಲ್ಲಿ ಎರಡು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿರುವುದಕ್ಕೆ ಕಾರಣ ಬೇರೆಬೇರೆ. ಶಿರಾ ಕ್ಷೇತ್ರದ ಶಾಸಕರಾಗಿದ್ದ ಸತ್ಯನಾರಾಯಣ ಅವರ ಸಾವಿನಿಂದಾಗಿ ಉಪಚುನಾವಣೆ ನಡೆಯುತ್ತಿದ್ದರೆ, ಆರ್‌ಆರ್ ನಗರ ಕ್ಷೇತ್ರದ ಚುನಾವಣೆ ಆಪರೇಷನ್ ಕಮಲದ ಕೃಪೆಯಿಂದ ನಡೆಯುತ್ತಿದೆ. ಹಾಗಾಗಿಯೇ ಆರ್‌ಆರ್ ನಗರ ಕ್ಷೇತ್ರದ ಉಪಚುನಾವಣೆ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ.

ಭೌಗೋಳಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಆರ್‌ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ 2018ರ ಮಾಹಿತಿಯಂತೆ 4,71,459 ಮತದಾರರಿದ್ದಾರೆ. ಕ್ಷೇತ್ರದೊಳಗೆ ಬಿಬಿಎಂಪಿಯ ಒಟ್ಟು ಒಂಬತ್ತು ವಾರ್ಡ್‍ಗಳಿವೆ; ಅದರಲ್ಲಿ ಐದು ವಾರ್ಡ್‍ಗಳನ್ನು ಕಾಂಗ್ರೆಸ್ ಗೆದ್ದಿತ್ತು, ಬಿಜೆಪಿ ಮೂರು ಹಾಗೂ ಜೆಡಿಎಸ್ ಒಂದನ್ನು ಕೊನೆಯ ಬಾರಿ ನಡೆದ ಬಿಬಿಎಂಪಿ ಚುನಾವಣೆಯಲ್ಲಿ ಗೆದ್ದುಕೊಂಡಿದ್ದವು. (ಈಗ ಬಿಬಿಎಂಪಿ ಅವಧಿ ಪೂರ್ಣಗೊಂಡಿದ್ದು ಹೊಸದಾಗಿ ಚುನಾವಣೆ ನಡೆಯಬೇಕಿದೆ)

2008ರಲ್ಲಿ ಬಿಜೆಪಿಯ ಎಂ ಶ್ರೀನಿವಾಸ್ ಇಲ್ಲಿ ಗೆದ್ದಿದ್ದರಾದರೂ ನಂತರ ನಡೆದ ಎರಡು ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ವಿಜಯ ಪತಾಕೆಯನ್ನು ಹಾರಿಸುತ್ತಲೇ ಬಂದಿದೆ. ಕಾಂಗ್ರೆಸ್‍ನಿಂದ ವಿಜಯಿಯಾಗಿದ್ದು ಸಿನಿಮೋದ್ಯಮಿ ಮುನಿರತ್ನ ನಾಯ್ಡು ಅವರೇ ಆರ್‌ಆರ್ ನಗರ ಕ್ಷೇತ್ರದ ಈ ಬಾರಿಯ ಉಪಚುನಾವಣೆಗೆ ನೇರ ಕಾರಣಕರ್ತರು ಎನ್ನಬಹುದು.

ಮೇ 12, 2018ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಜಾಲಹಳ್ಳಿಯ ಅಪಾರ್ಟ್‍ಮೆಂಟ್ ಒಂದರಲ್ಲಿ 10 ಸಾವಿರ ಮತದಾರರ ಗುರುತಿನ ಚೀಟಿ ಸಿಕ್ಕಿ, ಚುನಾವಣಾ ಆಯೋಗ ಆರ್‌ಆರ್ ನಗರ ಕ್ಷೇತ್ರದ ಚುನಾವಣೆಯನ್ನು ಮುಂದೂಡಿತ್ತು. ಇದಾದ ಕೆಲವೇ ದಿನಗಳ ನಂತರ ಚುನಾವಣೆ ನಡೆದು (ಮೇ 28) ಕಾಂಗ್ರೆಸ್‍ನಿಂದ ಮುನಿರತ್ನ ಗೆದ್ದಿದ್ದರೂ, ರಾಜ್ಯದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಕೆಡವಲು ನಡೆದ ರಾಜಕೀಯ ಆಟದಲ್ಲಿ ಮುನಿರತ್ನ ಬಿಜೆಪಿಗೆ ಗುಳೆ ಹೋಗಿದ್ದರು. ಆಗ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ ಶಾಸಕರಲ್ಲಿ ಮುನಿರತ್ನ ಕೂಡಾ ಒಬ್ಬರು. ಇದರಿಂದಾಗಿ ಇಲ್ಲಿ ಮತ್ತೆ ಚುನಾವಣೆ ನಡೆಯುತ್ತಿದೆ.

88% ಸಾಕ್ಷರತೆಯಿರುವ ಇಲ್ಲಿ ಸಾಮಾನ್ಯವಾಗಿ ಮಧ್ಯಮವರ್ಗದ ಮತ್ತು ಬಡಜನ ಹೆಚ್ಚಿದ್ದಾರೆ ಹಾಗು ಸ್ಲಂಗಳೇ ಅತ್ಯಧಿಕವಾಗಿರುವ ಕ್ಷೇತ್ರ ಇದಾಗಿದೆ. ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ 50% ಆಸುಪಾಸಿನಲ್ಲೇ ಮತದಾನ ಆಗಿರುವ ಈ ಕ್ಷೇತ್ರದಲ್ಲಿ ಈ ಬಾರಿ ಕೊರೊನಾ ಭಯದಿಂದ 30% ರಿಂದ 35% ದಷ್ಟು ಆಸುಪಾಸು ಮತ ಚಲಾವಣೆಯಾಗಬಹುದು ಎನ್ನುತ್ತಾರೆ ರಾಜಕೀಯ ಪರಿಣಿತರು. ಮೊದಲು ಉತ್ತರಹಳ್ಳಿ ವಿಧಾನ ಸಭಾ ಕ್ಷೇತ್ರಕ್ಕೆ ಸೇರಿಕೊಂಡಿತ್ತಾದರೂ ಕ್ಷೇತ್ರ ವಿಭಜನೆಯ ನಂತರ ಆರ್‌ಆರ್ ನಗರ ಸ್ವತಂತ್ರ ವಿಧಾನಸಭಾ ಕ್ಷೇತ್ರವಾಗಿದೆ.

ಈಗಾಗಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಕುಸುಮಾ ಹನುಮಂತರಾಯಪ್ಪ ಅವರನ್ನು ಆಯ್ಕೆಮಾಡಿಕೊಂಡು ಪ್ರಚಾರದಲ್ಲಿ ತೊಡಗಿಕೊಂಡಿದೆ. ಬಿಜೆಪಿಯಲ್ಲಿ ಅಭ್ಯರ್ಥಿ ಯಾರೆಂಬ ಗೊಂದಲಗಳು ಮುಗಿದು ಮುನಿರತ್ನ ಅವರಿಗೆ ಕೊನೆಗೂ ಟಿಕೆಟ್ ನೀಡಿದೆ. ರಾಜ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬಣ ಮತ್ತು ಆರೆಸ್ಸೆಸ್ ನಿಯಂತ್ರಿತ ಬಿಎಲ್ ಸಂತೋಷ್ ಬಣಗಳ ನಡುವೆ ಮುನಿರತ್ನ ಅವರಿಗೆ ಟಿಕೆಟ್ ಕೊಡುವುದೆ ಬೇಡವೆ ಎನ್ನುವ ಬಗ್ಗೆ ಮಂಗಳವಾರ ಸಂಜೆಯವರೆಗೂ ಕುತೂಹಲವಿತ್ತು. ಯಡಿಯೂರಪ್ಪನವರು ತಮ್ಮ ಅಭ್ಯರ್ಥಿಯಾಗಿ ಮುನಿರತ್ನರನ್ನು ಶಿಫಾರಸ್ಸು ಮಾಡಿದ್ದರೆ, ಬಿಎಲ್ ಸಂತೋಷ್ ಬಣ ಮುನಿರಾಜು ಗೌಡರನ್ನು ಶಿಫಾರಸ್ಸು ಮಾಡಿದ್ದವು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಬಿಜೆಪಿಯ ಇಬ್ಬರೂ ಟಿಕೆಟ್ ಆಕಾಂಕ್ಷಿಗಳನ್ನು ಕರೆಸಿ, ಯಾರಿಗೆ ನಾಮಪತ್ರ ಒಲಿದರೂ ಪಕ್ಷಕ್ಕಾಗಿ ದುಡಿಯಬೇಕು ಎಂಬ ಕಿವಿಮಾತು ಹೇಳಿ ರಾಜಿಗೆ ಪ್ರಯತ್ನಪಟ್ಟಿರುವ ಸುದ್ದಿಯೂ ಹೊರಹೊಮ್ಮಿತ್ತು.

ಮುನಿರತ್ನ ಕಾಂಗ್ರೆಸ್‌ನಲ್ಲಿ ಶಾಸಕನಾಗಿದ್ದಾಗ ಬಿಬಿಎಂಪಿಯ ಬಿಜೆಪಿ ಕಾರ್ಪೋರೇಟರ್‌ಗಳಿಗೆ ಇನ್ನಿಲ್ಲದಂತೆ ಕಾಡಿದ್ದರು ಎನ್ನುವ ಆರೋಪ ಕೂಡಾ ಇದ್ದವು. 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮುನಿರಾಜು ಗೌಡ ಪಿ.ಎಂ 82,572 ಮತಗಳನನ್ನು ಗಳಿಸಿದ್ದರು. ಆಗ ಮುನಿರತ್ನ 1,08,064 ಮತಗಳನ್ನೂ, ಜೆಡಿಎಸ್ ಅಭ್ಯರ್ಥಿ ಜಿ ಎಚ್ ರಾಮಚಂದ್ರ 60,360 ಮತಗಳನ್ನು ಗಳಿಸಿದ್ದರು. ಬಿಜೆಪಿಯಿಂದ ಮುನಿರತ್ನ ಅವರಿಗೆ ಕೊಟ್ಟರೆ ಬಿಜೆಪಿ ಕಾರ್ಪೋರೇಟರ್‌ಗಳ ಕೆಂಗಣ್ಣಿಗೆ ಗುರಿಯಾಗುವ ಭಯ ಬಿಜೆಪಿ ಹೈಕಮಾಂಡ್ ಗಿತ್ತಾದರೂ ಕೊನೆಗೂ ಯಡಿಯೂರಪ್ಪರ ಕೈಮೇಲಾಗಿದೆ. ಅಷ್ಟೇ ಅಲ್ಲದೆ ಬಿಜೆಪಿಯು ಅತೃಪ್ತರಿಗೆ ಜೆಡಿಎಸ್ ಟಿಕಟ್ ನೀಡುತ್ತದೆ ಎನ್ನುವ ವದಂತಿಗೂ ತೆರೆಬಿದ್ದಿದೆ.

ಜೆಡಿಎಸ್ ಬಿಜೆಪಿಯ ಅಭ್ಯರ್ಥಿಯ ಆಧಾರದಲ್ಲಿ ತನ್ನ ಅಭ್ಯರ್ಥಿ ಆಯ್ಕೆ ಮಾಡುತ್ತದೆ ಎಂಬ ವದಂತಿ ಹರಡಿತ್ತು. ಒಂದು ವೇಳೆ ಬಿಜೆಪಿ ಮುನಿರಾಜು ಅವರಿಗೆ ಟಿಕೆಟ್ ನೀಡಿದರೆ ಜೆಡಿಎಸ್‍ನಿಂದ ಮುನಿರತ್ನ ಅವರಿಗೆ ಟಿಕೆಟ್ ನೀಡಲು ತುದಿಗಾಲಲ್ಲಿ ನಿಂತಿದೆ, ಅದಕ್ಕಾಗಿಯೇ ಜೆಡಿಎಸ್ ತನ್ನ ಅಭ್ಯರ್ಥಿಯ ಹೆಸರು ಘೋಷಿಸಿರಲಿಲ್ಲ ಎನ್ನಲಾಗಿತ್ತು. ಇದೀಗ ಅದಕ್ಕೆ ತೆರೆಬಿದ್ದಿದ್ದು ವಿ. ಕೃಷ್ಣಮೂರ್ತಿ ಅವರಿಗೆ ಜೆಡಿಎಸ್ ಟಿಕೆಟ್ ನೀಡಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ “ನನ್ನ ಹಾಗೂ ಮುನಿರತ್ನ ಮಧ್ಯೆ ಸ್ನೇಹ ಇದೆ. ಆದರೆ ಸ್ನೇಹವೇ ಬೇರೆ, ಚುನಾವಣೆ ಬೇರೆ. ನಾನು ಮತ್ತು ಮುನಿರತ್ನ ಸಿನಿಮಾ ಕ್ಷೇತ್ರದವರು. ಹೀಗಾಗಿ ನಮ್ಮ ನಡುವಿನ ಸ್ನೇಹ ಚುನಾವಣೆ ಸಂದರ್ಭದಲಿ ಅನ್ವಯಿಸಲ್ಲ” ಎಂದು ಹೇಳಿದ್ದಾರೆ.

ಈ ಬಾರಿಯ ವಿಶೇಷವೇನೆಂದರೆ 2008ರಲ್ಲಿ ಜೆಡಿಎಸ್‍ನಿಂದ ಸ್ಪರ್ಧೆ ಮಾಡಿದ್ದ ಹನುಮಂತರಾಯಪ್ಪ ಅವರ ಮಗಳು ಕುಸುಮಾ ಕಾಂಗ್ರೆಸ್ ಅಭ್ಯರ್ಥಿ! ಇದು ಕಾಂಗ್ರೆಸ್‍ಗೆ ತನ್ನ ಓಟಿನ ಬೇಟೆಯನ್ನು ಮತ್ತಷ್ಟು ಹೆಚ್ಚಿಸಲು ಉಪಯೋಗ ಆಗಬಹುದು ಎಂಬ ಲೆಕ್ಕಾಚಾರ ಕೂಡಾ ಇದೆ. ಅಷ್ಟೇ ಅಲ್ಲದೆ ಕ್ಷೇತ್ರದಲ್ಲಿ ಒಕ್ಕಲಿಗರ ಮತಗಳು ನಿರ್ಣಾಯಕವಾಗಿದ್ದು, ಕುಸುಮಾ ಅವರು ತಮ್ಮ ಇತ್ತೀಚೆಗಿನ ಸಂದರ್ಶನದಲ್ಲಿ ‘ಒಕ್ಕಲಿಗ ಹೆಣ್ಣು ಮಗಳಾಗಿರುವುದರ ಬಗ್ಗೆ ಹೆಮ್ಮಯಿದೆ’ ಎಂದು ಕೂಡ ಹೇಳಿದ್ದರು.

ಅಲ್ಲದೆ ಕುಸುಮ ಅವರು ದಿವಂಗತ ಜಿಲ್ಲಾಧಿಕಾರಿ ಡಿಕೆ ರವಿಯವರ ಪತ್ನಿಯಾಗಿದ್ದು, ರವಿ ಅವರ ಹೆಸರಿನಲ್ಲಿ ಈ ಹಿಂದೆ ಬಿಜೆಪಿ ರಾಜಕೀಯ ಮಾಡಿತ್ತು. ಅಷ್ಟೇ ಅಲ್ಲದೆ ಸಂಸದೆ ಶೋಭ ಕರಂದ್ಲಾಜೆ, ಕುಸುಮಾ ತಮ್ಮ ಪತಿಯ ಹೆಸರನ್ನು ಬಳಸಬಾರದು ಎಂದು ಡಿಕೆ ರವಿಯ ಬಗೆಗಿನ ಚರ್ಚೆಯನ್ನು ಈಗಾಗಲೇ ಮತ್ತೆ ಮುನ್ನಲೆಗೆ ತಂದಿದ್ದಾರೆ. ಅಕ್ಟೋಬರ್ 16 ರೊಳಗೆ ನಾಮಪತ್ರ ಸಲ್ಲಿಸಬೇಕಾಗಿದ್ದು, ಅ.19 ನಾಮಪತ್ರ ವಾಪಾಸು ಪಡೆಯಲು ಕೊನೆಯ ದಿನಾಂಕವಾಗಿದೆ. ಒಟ್ಟಿನಲ್ಲಿ ಪಕ್ಷಾಂತರದಿಂದ ಸೃಷ್ಟಿಯಾಗಿರುವ ಈ ಉಪಚುನಾವಣೆ ಪ್ರತಿಷ್ಟೆಯ ಕಣವಾಗಿದ್ದು ಇಡೀ ರಾಜ್ಯದ ಗಮನ ಸೆಳೆದಿರುವುದು ನಿಜ.


ಇದನ್ನೂ ಓದಿ: ಉಪಚುನಾವಣೆ: ಆರ್‌.ಆರ್‌ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ರವಿ ಪತ್ನಿ ಕುಸುಮಾ-ಸಿದ್ದರಾಮಯ್ಯ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...