Homeಅಂತರಾಷ್ಟ್ರೀಯಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

- Advertisement -
- Advertisement -

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ ದ್ವೇಷ ಅಪರಾಧ ಎಂದು ಪರಿಗಣಿಸಿ ತನಿಖೆ ನಡೆಸುತ್ತಿದ್ದಾರೆ.

ಸ್ಯಾನ್ ಡಿಯಾಗೋ ಪೊಲೀಸ್ ಮುಖ್ಯಸ್ಥ ಸ್ಕಾಟ್ ವಾಲ್ ಅವರು ತಿಳಿಸುವ ಪ್ರಕಾರ, ದಾಳಿ ಮಸೀದಿ ಹಾಗೂ ಶಾಲೆ ಸೇರಿದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋದಲ್ಲಿ ನಡೆದಿದೆ. ಇಬ್ಬರು ಶಂಕಿತ ಶೂಟರ್‌ಗಳು ದಾಳಿ ನಂತರ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. 

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಮುಖ್ಯಸ್ಥ ಸ್ಕಾಟ್ ವಾಲ್, “ಇಸ್ಲಾಮಿಕ್ ಕೇಂದ್ರದ ಸ್ಥಳವನ್ನು ಗಮನಿಸಿ, ಇದನ್ನು ದ್ವೇಷ ಅಪರಾಧವೆಂದು ಪರಿಗಣಿಸಿ ತನಿಖೆ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ. 

ಶಂಕಿತರು 17 ವರ್ಷದ ಕೇನ್ ಲೀ ಕ್ಲಾರ್ಕ್ ಮತ್ತು 18 ವರ್ಷದ ಕ್ಯಾಲೆಬ್ ಲಿಯಾಮ್ ವಾಸ್ಕ್ವೆಜ್ ಎಂದು ಗುರುತಿಸಲಾಗಿದೆ. ಇಬ್ಬರೂ ಸ್ಯಾನ್ ಡಿಯಾಗೋ ಪ್ರದೇಶದವರು. ಅವರು ಆನ್‌ಲೈನ್‌ನಲ್ಲಿ ಭೇಟಿಯಾಗಿ ರ್ಯಾಡಿಕಲೈಸ್ ಆಗಿದ್ದರು ಎಂದು ತನಿಖೆಯಲ್ಲಿ ಬಯಲಾಗಿದೆ. 

ದಾಳಿಕೋರರು ಬಿಟ್ಟು ಹೋದ ಸುಮಾರು 75 ಪುಟಗಳ ಮ್ಯಾನಿಫೆಸ್ಟೊ ಮತ್ತು ಆನ್‌ಲೈನ್ ಬರಹಗಳಲ್ಲಿ ವೈಟ್ ಸುಪ್ರಿಮಸಿಸ್ಟ್ ಸಂಕೇತಗಳು, ನಿಯೋ-ನಾಜಿ ಚಿಹ್ನೆಗಳು, ಇಸ್ಲಾಂ ವಿರೋಧಿ, ಯಹೂದಿ ವಿರೋಧಿ ಹಾಗೂ ವಿವಿಧ ಧರ್ಮ ಮತ್ತು ಜನಾಂಗಗಳ ವಿರುದ್ಧ ತೀವ್ರ ದ್ವೇಷ ವ್ಯಕ್ತವಾಗಿದೆ. ಕ್ರೈಸ್ಟ್‌ಚರ್ಚ್ ಮಸೀದಿ ದಾಳಿಕೋರನನ್ನು ಅವರು ಪ್ರಶಂಸಿಸಿದ್ದರು ಎಂದು ವರದಿಯಾಗಿದೆ. ದಾಳಿಯನ್ನು ಲೈವ್‌ಸ್ಟ್ರೀಮ್ ಮಾಡುವ ಪ್ರಯತ್ನವೂ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿಯಲ್ಲಿ ಸಾವನ್ನಪ್ಪಿದ ಮೂವರು ಬಲಿಪಶುಗಳು ವಯಸ್ಕರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲೆಯಲ್ಲಿ ಯಾವುದೇ ಮಕ್ಕಳಿಗೆ ದೈಹಿಕ ಹಾನಿಯಾಗಿಲ್ಲ ಎಂದು ದೃಢಪಡಿಸಲಾಗಿದೆ. ಹತ್ಯೆಗೀಡಾದವರಲ್ಲಿ ಒಬ್ಬರು ಸ್ಯಾನ್ ಡಿಯಾಗೋ ಇಸ್ಲಾಮಿಕ್ ಸೆಂಟರ್‌ನ ಭದ್ರತಾ ಸಿಬ್ಬಂದಿ ಅಮೀನ್ ಅಬ್ದುಲ್ಲಾ ಎಂದು ತಿಳಿದುಬಂದಿದೆ. ಅವರು ದಾಳಿಯನ್ನು ಇನ್ನಷ್ಟು ಮಾರಕವಾಗುವುದನ್ನು ತಡೆಯುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.

ಅಮೀನ್ ಅಬ್ದುಲ್ಲಾ ಅವರು ಎಂಟು ಮಕ್ಕಳ ತಂದೆ, ಇಸ್ಲಾಂಗೆ ಮತಾಂತರಗೊಂಡವರು ಹಾಗೂ ಸಮುದಾಯದಲ್ಲಿ ದಯೆ ಮತ್ತು ಸ್ವಾಗತಾರ್ಹ ವ್ಯಕ್ತಿಯಾಗಿ ಪರಿಚಿತರಾಗಿದ್ದರು. ಉಳಿದ ಬಲಿಪಶುಗಳು ಮನ್ಸೂರ್ ಕಜೀಹಾ ಮತ್ತು ನಾದಿರ್/ನೇಡರ್ ಅವಾದ್ ಎಂದು ಗುರುತಿಸಲಾಗಿದೆ. ಈ ಮೂವರೂ ದಾಳಿಕೋರರನ್ನು ಮಸೀದಿ ಒಳಗೆ ಪ್ರವೇಶಿಸದಂತೆ ತಡೆಯುವಲ್ಲಿ ತಮ್ಮ ಪ್ರಾಣವನ್ನೇ ಹರಾಜು ಹಾಕಿದ ಹೀರೋಗಳಾಗಿ ಸಮುದಾಯದಲ್ಲಿ ಸ್ಮರಣೆಗೊಳ್ಳುತ್ತಿದ್ದಾರೆ.

ಶಂಕಿತರಲ್ಲಿ ಒಬ್ಬನ ತಾಯಿ ದಾಳಿಗೆ ಸುಮಾರು ಎರಡು ಗಂಟೆಗಳ ಮುಂಚೆ ಪೊಲೀಸರಿಗೆ ಮಗ ಆತ್ಮಹತ್ಯೆಗೆ ಯತ್ನಿಸುತ್ತಿದ್ದಾನೆ ಎಂದು ಮತ್ತು ಹಲವು ಬಂದೂಕುಗಳೊಂದಿಗೆ ನಾಪತ್ತೆಯಾಗಿದ್ದಾನೆ ಎಂದು ವರದಿ ಮಾಡಿದ್ದರು ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ದಾಳಿಕೋರರ ಮನೆಗಳಲ್ಲಿ 30ಕ್ಕೂ ಹೆಚ್ಚು ಬಂದೂಕುಗಳು ಪತ್ತೆಯಾಗಿವೆ. ಸ್ಯಾನ್ ಡಿಯಾಗೋ ಪೊಲೀಸ್ ಇಲಾಖೆ ಆರಂಭದಲ್ಲಿ ಐಸಿಎಸ್‌ಡಿಯಲ್ಲಿ ಸಕ್ರಿಯ ಶೂಟರ್ ಘಟನೆ ಎಂದು ವರದಿ ಮಾಡಿತ್ತು. ನಂತರ ಬೆದರಿಕೆಯನ್ನು ತಟಸ್ಥಗೊಳಿಸಲಾಗಿದೆ ಎಂದು ಘೋಷಿಸಿತು. 

ಮಸೀದಿಯ ಇಮಾಮ್ ತಹಾ ಹಸಾನ್ ಅವರು, ದಾಳಿಯ ನಂತರ ಮುಸ್ಲಿಂ ಸಮುದಾಯ ತೀವ್ರ ದುಃಖದಲ್ಲಿದೆ ಎಂದು ತಿಳಿಸಿದ್ದಾರೆ. “ಇಂತಹ ಘಟನೆ ಎಂದಿಗೂ ನಿರೀಕ್ಷಿಸಿರಲಿಲ್ಲ” ಎಂದು ಅವರು ಬಣ್ಣಿಸಿದ್ದಾರೆ. ಅಮೆರಿಕದಲ್ಲಿ ಹೆಚ್ಚುತ್ತಿರುವ ಧಾರ್ಮಿಕ ಅಸಹಿಷ್ಣುತೆ ಮತ್ತು ದ್ವೇಷದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಪೋಷಕರು, ಮಾಧ್ಯಮಗಳು, ಚುನಾಯಿತ ಪ್ರತಿನಿಧಿಗಳು, ಕಾನೂನು ಜಾರಿ ಸಂಸ್ಥೆಗಳು ಮತ್ತು ಧಾರ್ಮಿಕ ಮುಖಂಡರು ಒಟ್ಟಾಗಿ ಸಹಿಷ್ಣುತೆಯನ್ನು ಉತ್ತೇಜಿಸಬೇಕು ಎಂದು ಒತ್ತಾಯಿಸಿದ್ದಾರೆ. 

ಸಂತ್ರಸ್ತರ ಕುಟುಂಬಗಳ ಗೌಪ್ಯತೆಯನ್ನು ಗೌರವಿಸುವಂತೆ ಮತ್ತು ಘಟನಾ ಸ್ಥಳದ ಗ್ರಾಫಿಕ್ ಚಿತ್ರಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ. ಇಸ್ಲಾಮಿಕ್ ಸೆಂಟರ್ ಸ್ಯಾನ್ ಡಿಯಾಗೋ ನಗರದ ಮಧ್ಯಭಾಗದ ಉತ್ತರಕ್ಕೆ ಕ್ಲೇರ್‌ಮಾಂಟ್ ನೆರೆಹೊರೆಯಲ್ಲಿದೆ. ಈ ದಾಳಿ ಅಮೆರಿಕದಲ್ಲಿ ಇಸ್ಲಾಮೋಫೋಬಿಯಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಡೆದಿದೆ. ರಾಜಕೀಯ ವ್ಯಕ್ತಿಗಳು ಮತ್ತು ವಿಮರ್ಶಕರು ಮುಸ್ಲಿಂ ವಿರೋಧಿ ವಾಕ್ಚಾತುರ್ಯವನ್ನು ತೀವ್ರವಾಗಿ ಟೀಕಿಸುತ್ತಿದ್ದಾರೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಘಟನೆಯನ್ನು “ಭಯಾನಕ” ಎಂದು ಬಣ್ಣಿಸಿದ್ದಾರೆ ಮತ್ತು ಪರಿಸ್ಥಿತಿಯ ಬಗ್ಗೆ ತಮಗೆ ವಿವರಿಸಲಾಗಿದೆ ಎಂದು ಹೇಳಿದ್ದಾರೆ. 

ಅಮೆರಿಕದಾದ್ಯಂತ ಹಲವು ಅಧಿಕಾರಿಗಳು ದಾಳಿಯನ್ನು ಖಂಡಿಸಿದ್ದಾರೆ. ಸ್ಯಾನ್ ಡಿಯಾಗೋದ ಸಾರಾ ಜೇಕಬ್ಸ್ ಅವರು, “ಆರಾಧಕರು, ವಿದ್ಯಾರ್ಥಿಗಳು ಮತ್ತು ಕ್ಲೇರ್‌ಮಾಂಟ್ ಸಮುದಾಯಕ್ಕಾಗಿ ನಾನು ದುಃಖಿಸುತ್ತೇನೆ. ಪ್ರತಿಯೊಬ್ಬರೂ ಪ್ರಾರ್ಥನೆ, ಪೂಜೆ ಮತ್ತು ಶಾಂತಿಯಿಂದ ಕಲಿಯುವ ಸ್ಥಳವಾಗಿರಬೇಕು” ಎಂದು ಹೇಳಿದ್ದಾರೆ. ಕ್ಯಾಲಿಫೋರ್ನಿಯಾ ರಾಜ್ಯಪಾಲ ಗ್ಯಾವಿನ್ ನ್ಯೂಸಮ್ ಅವರ ಕಚೇರಿ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಕಾನೂನು ಜಾರಿ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸುತ್ತಿದೆ ಎಂದು ತಿಳಿಸಿದೆ. 

ಎಫ್‌ಬಿಐ ಸ್ಥಳೀಯ ಅಧಿಕಾರಿಗಳಿಗೆ ಸಹಾಯ ನೀಡುತ್ತಿದೆ ಮತ್ತು ತನಿಖೆಗೆ ಅಗತ್ಯವಾದ ಎಲ್ಲಾ ಸಂಪನ್ಮೂಲಗಳನ್ನು ನಿಯೋಜಿಸುತ್ತಿದೆ ಎಂದು ಕಾಶ್ ಪಟೇಲ್ ದೃಢಪಡಿಸಿದ್ದಾರೆ. ದಾಳಿಯ ನಂತರ ನ್ಯೂಯಾರ್ಕ್ ಪೊಲೀಸ್ ಇಲಾಖೆ ನಗರದಾದ್ಯಂತ ಮಸೀದಿಗಳ ಸುತ್ತಲೂ ಭದ್ರತೆ ಹೆಚ್ಚಿಸಿದೆ. ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ಅವರು ದಾಳಿಯನ್ನು ಖಂಡಿಸಿ, “ಇದು ಮುಸ್ಲಿಂ ವಿರೋಧಿ ಹಿಂಸಾಚಾರದ ಸ್ಪಷ್ಟ ಕೃತ್ಯ” ಎಂದು ಬಣ್ಣಿಸಿದ್ದಾರೆ. ಭಯ ಮತ್ತು ವಿಭಜನೆಯ ರಾಜಕೀಯದ ವಿರುದ್ಧ ಸಾಮೂಹಿಕ ಕ್ರಮಕ್ಕೆ ಕರೆ ನೀಡಿದ್ದಾರೆ. ಕೌನ್ಸಿಲ್ ಆನ್ ಅಮೇರಿಕನ್-ಇಸ್ಲಾಮಿಕ್ ರಿಲೇಶನ್ಸ್ (CAIR) ಸಂಸ್ಥೆ ದಾಳಿಯನ್ನು ಖಂಡಿಸಿ, “ಯಾರೂ ಪೂಜಾ ಸ್ಥಳದಲ್ಲಿ ಪ್ರಾರ್ಥನೆ ಮಾಡುವಾಗ ಅಥವಾ ಪ್ರಾಥಮಿಕ ಶಾಲೆಯಲ್ಲಿ ಓದುವಾಗ ತಮ್ಮ ಸುರಕ್ಷತೆಯ ಬಗ್ಗೆ ಭಯಪಡಬಾರದು” ಎಂದು ಹೇಳಿದೆ.

2025ರಲ್ಲಿ CAIR 8, 683 ನಾಗರಿಕ ಹಕ್ಕುಗಳ ದೂರುಗಳನ್ನು ದಾಖಲಿಸಿದೆ ಎಂದು ವರದಿಯಾಗಿದೆ. ಮುಸ್ಲಿಮರು ಮತ್ತು ವಲಸಿಗರ ವಿರುದ್ಧ ಹೆಚ್ಚುತ್ತಿರುವ ವಿರೋಧಿ ವಾಕ್ಚಾತುರ್ಯದ ನಡುವೆ ಇದು ಅತ್ಯಧಿಕ ಸಂಖ್ಯೆಯಾಗಿದೆ ಎಂದು ಸಂಸ್ಥೆ ತಿಳಿಸಿದೆ. ವಿಮರ್ಶಕರು, ಹಲವು ರಿಪಬ್ಲಿಕನ್ ರಾಜಕಾರಣಿಗಳು ಮತ್ತು ಬಲಪಂಥೀಯ ವ್ಯಾಖ್ಯಾನಕಾರರ ಹೇಳಿಕೆಗಳು ಭಯದ ವಾತಾವರಣವನ್ನು ಸೃಷ್ಟಿಸುತ್ತಿವೆ ಎಂದು ಆರೋಪಿಸಿದ್ದಾರೆ. 

ರಾಂಡಿ ಫೈನ್, ಆಂಡಿ ಓಗಲ್ಸ್, ಟಾಮಿ ಟ್ಯೂಬರ್ವಿಲ್ಲೆ ಮತ್ತು ಚಿಪ್ ರಾಯ್ ಅವರಂತಹ ನಾಯಕರ ಹೇಳಿಕೆಗಳು ಈ ಸಂದರ್ಭದಲ್ಲಿ ತೀವ್ರ ಟೀಕೆಗೆ ಗುರಿಯಾಗಿವೆ. ಘಟನೆಯ ಕುರಿತು ತನಿಖೆ ಇನ್ನೂ ಮುಂದುವರಿದಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...