ಉತ್ತರ ಕರ್ನಾಟಕದ ಪ್ರವಾಹ ಸ್ಥಿತಿಗೆ ಕೊಯ್ನಾ ಜಲಾಶಯದಿಂದ ಬಿಡುಗಡೆಯಾಗುತ್ತಿರುವ ಭಾರೀ ಪ್ರಮಾಣದ ನೆರೆ ನೀರು ಕಾರಣ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ತಕ್ಷಣ ಕಾರ್ಯಪ್ರವರ್ತರಾಗಿ ಕೊಯ್ನಾ ಜಲಾಶಯದ ನೀರಿನ ಬಿಡುಗಡೆಯನ್ನು ನಿಯಂತ್ರಿಸುವಂತೆ ಮಹಾರಾಷ್ಟ್ರ ಸರ್ಕಾರದ ಮೇಲೆ ಕೇಂದ್ರ ಸರ್ಕಾರದ ಮೂಲಕ ಒತ್ತಡ ಹೇರಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಉತ್ತರ ಕರ್ನಾಟಕದ ಜನತೆ ಭಾರೀ ಪ್ರಮಾಣದ ಪ್ರವಾಹ ಪರಿಸ್ಥಿತಿಯಿಂದಾಗಿ ಕಷ್ಟ ನಷ್ಟಕ್ಕೀಡಾಗಿ ಕಂಗಾಲಾಗಿದ್ದಾರೆ. ಇಂಥ ಸನ್ನಿವೇಶದಲ್ಲಿ ಅವರಿಗೆ ನೆರವಾಗುವುದು ನಮ್ಮೆಲ್ಲರ ಕರ್ತವ್ಯ. ಕಾಂಗ್ರೆಸ್ ಪಕ್ಷದ ಎಲ್ಲ ಕಾರ್ಯಕರ್ತರು, ಮುಖಂಡರು ಪ್ರವಾಹ ಪೀಡಿತರ ನೆರವಿಗೆ ತಕ್ಷಣ ಧಾವಿಸಬೇಕೆಂದು ಮನವಿ ಮಾಡುತ್ತಿದ್ದೇನೆ ಎಂದು ಸಹ ತಿಳಿಸಿದ್ದಾರೆ.
ಅದೇ ರೀತಿಯಲ್ಲಿ ಭಾರೀ ಮಳೆಯಿಂದ ಉಂಟಾಗಿರುವ ಪ್ರವಾಹದಲ್ಲಿ ಸಿಲುಕಿರುವ ಜನರಿಗೆ ಶಕ್ತಿ ಮೀರಿ ಸಹಾಯಮಾಡಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ಪ್ರವಾಹಕ್ಕೆ ತುತ್ತಾಗಿರುವ ಕೇರಳ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಒಡಿಸ್ಸಾ, ಅಸ್ಸಾಂ ಮತ್ತು ಬಿಹಾರ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಲಕ್ಷಾಂತರ ಜನ ಸ್ಥಳಾಂತರಗೊಂಡಿದ್ದಾರೆ ಕೆಲವು ಕಳೆದು ಹೋಗಿದ್ದಾರೆ. ಈ ರಾಜ್ಯಗಳಲ್ಲಿ ಸಂಕಷ್ಟದಲ್ಲಿರುವವರಿಗೆ ಎಲ್ಲಾ ರೀತಿಯ ನೆರವು ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ. ಜೊತೆಗೆ ಬೇಗ ಪ್ರವಾಹ ಪರಿಸ್ಥಿತಿ ನಿಲ್ಲಲ್ಲೆಂದು ಪ್ರಾರ್ಥಿಸಿ ಎಂದು ಸಹ ಕರೆ ನೀಡಿದ್ದಾರೆ.