ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಕುರಿತ ತನಿಖೆಗೆ ಸಂಬಂಧಿಸಿದಂತೆ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ಸಿಂಗ್ ದೋತಸ್ರಾ ಮತ್ತು ಮಹುವಾ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಓಂಪ್ರಕಾಶ್ ಹುಡ್ಲಾ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸಿಕರ್ ಮತ್ತು ಜೈಪುರದಲ್ಲಿ ಮಾಜಿ ಶಿಕ್ಷಣ ಸಚಿವ ದೋತಸ್ರಾ ಅವರ ನಿವಾಸ, ಮಹುವಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಓಂಪ್ರಕಾಶ್ ಹುಡ್ಲಾ ಮತ್ತು ಇತರ ಕೆಲವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಶೋಧಿಸಲಾಗಿದೆ ಎಂದು ವರದಿ ತಿಳಿಸಿದೆ.
ಇದಲ್ಲದೆ ವಿದೇಶಿ ವಿನಿಮಯ ಕಾನೂನನ್ನು ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೂಟ್ ಅವರ ಮಗ ವೈಭವ್ ಗೆಹ್ಲೂಟ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ರಾಜ್ಯದಲ್ಲಿ ಚುನಾವಣಾ ಹೊಸ್ತಿಲಲ್ಲಿ ಈ ದಾಳಿ ನಡೆದಿದೆ. 200 ಸದಸ್ಯ ಬಲದ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನ.25ರಂದು ನಡೆಯಲಿದೆ. ಸಿಕರ್ನ ಲಕ್ಷ್ಮಣಗಢ ಕ್ಷೇತ್ರದ ಹಾಲಿ ಶಾಸಕರೂ ಆಗಿರುವ ದೋತಸ್ರಾ ಬಿಜೆಪಿಯ ಸುಭಾಷ್ ಮಹಾರಿಯ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.
ಇಡಿ ದಾಳಿ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಚುನಾವಣೆಯಲ್ಲಿ ಬಿಜೆಪಿಯ ಸೋಲು ಖಚಿತವಾದ ಹಿನ್ನೆಲೆ ಇಡಿ ದಾಳಿ ನಡೆದಿದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಖರ್ಗೆ, ರಾಜಸ್ಥಾನ ಚುನಾವಣೆಯಲ್ಲಿ ಸೋಲು ಖಚಿತವಾದ ಹಿನ್ನೆಲೆ ಬಿಜೆಪಿ ತನ್ನ ಕೊನೆಯ ದಾಳವನ್ನು ಪ್ರಯೋಗಿಸಿದೆ. ಛತ್ತೀಸ್ಗಢದ ನಂತರ ರಾಜಸ್ಥಾನದ ಕಾಂಗ್ರೆಸ್ ನಾಯಕರ ವಿರುದ್ಧ ಇ.ಡಿ ದಾಳಿ ನಡೆದಿದೆ. ಮೋದಿ ಸರ್ಕಾರದ ಸರ್ವಾಧಿಕಾರ ಧೋರಣೆಯು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ತನಿಖಾ ಸಂಸ್ಥೆಗಳ ದುರುಪಯೋಗದ ವಿರುದ್ಧ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ. ಬಿಜೆಪಿಗೆ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ಇದನ್ನು ಓದಿ: ಮುಸ್ಲಿಂ ಮಹಾಪಂಚಾಯತ್ಗೆ ಅನುಮತಿ ನಿರಾಕರಿಸಿದ ದೆಹಲಿ ಹೈಕೋರ್ಟ್