ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆ ‘ಜನ ಘೋಷಣೆ ಪತ್ರ’ ವನ್ನು ಇಂದು (ನ.21) ಬಿಡುಗಡೆ ಮಾಡಿದೆ. ಜೈಪುರದ ರಾಜ್ಯ ಕಾಂಗ್ರೆಸ್ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುಖುಜಿಂದರ್ ಸಿಂಗ್ ರಾಂಧವ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋಟಸಾರ, ಪ್ರಣಾಳಿಕೆ ಸಮಿತಿ ಮುಖ್ಯಸ್ಥ ಸಿಪಿ ಜೋಶಿ, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಸೇರಿದಂತೆ ಪ್ರಮುಖರು ಈ ವೇಳೆ ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ವಿಧಾಸಭೆ ಚುನಾವಣಾ ಪೂರ್ವ ಘೋಷಿಸಿದಂತೆ ರಾಜಸ್ಥಾನದಲ್ಲೂ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈಗಾಗಲೇ 7 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದಾರೆ. ಅಲ್ಲದೆ, ಪಂಚಾಯತ್ ಮಟ್ಟದಲ್ಲಿ ಉದ್ಯೋಗ ನೀಡಲು ಹೊಸ ಯೋಜನೆ ಮತ್ತು ಜಾತಿ ಗಣತಿಯ ಭರವಸೆಯನ್ನು ಕಾಂಗ್ರೆಸ್ ನೀಡಿದೆ.
ರಾಜಸ್ಥಾನ ಕಾಂಗ್ರೆಸ್ನ ಪ್ರಮುಖ ಭರವಸೆಗಳು ಹೀಗಿವೆ:
- ಕುಟುಂಬದ ಯಜಮಾನಿಗೆ ವಾರ್ಷಿಕ 10 ಸಾವಿರ ರೂಪಾಯಿ ಧನ ಸಹಾಯ
- ರಾಜ್ಯದ 1.05 ಕೋಟಿ ಜನರಿಗೆ ₹500ಕ್ಕೆ ಗ್ಯಾಸ್ ಸಿಲಿಂಡರ್
- ಜಾನುವಾರು ಸಾಕಣೆದಾರರಿಂದ ಕೆ.ಜಿ.ಗೆ ₹2ರಂತೆ ಸಗಣಿ ಖರೀದಿ.
- ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೆ ಕಾನೂನು
- ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಅಥವಾ ಟ್ಯಾಬ್ಲೆಟ್
- ಪ್ರಕೃತಿ ವಿಕೋಪದಿಂದಾಗುವ ನಷ್ಟವನ್ನು ಸರಿದೂಗಿಸಲು ಪ್ರತಿ ಕುಟುಂಬಕ್ಕೆ ₹15 ಲಕ್ಷದವರೆಗೆ ವಿಮಾ ರಕ್ಷಣೆ
- ಇಂಗ್ಲಿಷ್ ಮಾಧ್ಯಮದಲ್ಲಿ ಶಾಲಾ ಶಿಕ್ಷಣ
ರಾಜಸ್ಥಾನದಲ್ಲಿ ನವೆಂಬರ್ 25 ರಂದು ವಿಧಾನಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಹೊರ ಬೀಳಲಿದೆ.
ಇದನ್ನು ಓದಿ : ಮಹಾರಾಷ್ಟ್ರ: ಬಿಜೆಪಿ ರಾಜ್ಯಾಧ್ಯಕ್ಷರ ಜೂಜಾಟದ ಫೋಟೋ ಹಂಚಿಕೊಂಡ ರಾವುತ್: ವಿವಾದ