ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ. ಸ್ಫೋಟದಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದು, ಅವರಲ್ಲಿ ಮೂವರು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಮುಖ್ಯಮಂತ್ರಿ ಜತೆಗಿನ ಸಭೆಯನ್ನು ಖಚಿತಪಡಿಸಿದ್ದು, ಮಧ್ಯಾಹ್ನ 1 ಗಂಟೆಗೆ ಸಭೆ ನಡೆಸುತ್ತೇವೆ, ಮುಖ್ಯಮಂತ್ರಿ ಸಭೆಯ ನೇತೃತ್ವ ವಹಿಸಲಿದ್ದಾರೆ, ಸ್ಫೋಟಕ್ಕೆ ಸಂಬಂಧಿಸಿದಂತೆ ಉನ್ನತ ಪೊಲೀಸ್ ಅಧಿಕಾರಿಗಳು ಸಭೆಗೆ ಹಾಜರಾಗಲಿದ್ದಾರೆ ಎಂದು ಹೇಳಿದರು.
ಘಟನೆಯ ತನಿಖೆಗೆ ಸರ್ಕಾರ ತಂಡಗಳನ್ನು ರಚಿಸಿದೆ ಎಂದು ಹೇಳಿದ ಗೃಹ ಸಚಿವರು, ಆರೋಪಿಗಳನ್ನು ಶೀಘ್ರದಲ್ಲೆ ಬಂಧಿಸಲಾಗುವುದು ಎಂದು ವಿಶ್ವಾಸ ವ್ಯಕತಪಡಿಸಿದ್ದಾರೆ.
‘ನಾವು ಹಲವಾರು ತಂಡಗಳನ್ನು ರಚಿಸಿದ್ದೇವೆ; ಸಿಸಿಟಿವಿ ದೃಶ್ಯಗಳಿಂದ ಕೆಲವು ಪುರಾವೆಗಳನ್ನು ಸಂಗ್ರಹಿಸಿದ್ದೇವೆ. ಘಟನೆಯ ಸಮಯದಲ್ಲಿ ಸುಮಾರು 26 ಬಿಎಂಟಿಸಿ ಬಸ್ಗಳು ಆ ಮಾರ್ಗವಾಗಿ ಚಲಿಸುತ್ತಿದ್ದವು. ಆತ ಬಸ್ನಲ್ಲಿ ಬಂದಿದ್ದಾನೆ ಎಂಬ ಮಾಹಿತಿ ನಮಗೆ ಇದೆ, ನಾವು ಎಲ್ಲ ಬಸ್ಸುಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದೇವೆ’ ಎಂದು ಪರಮೇಶ್ವರ ಹೇಳಿದರು.
‘ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುತ್ತೇವೆ. ನಮ್ಮ ತಂಡಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಸ್ಫೋಟಕ್ಕೆ ಟೈಮರ್ ಬಳಸಲಾಗಿದೆ, ಎಫ್ಎಸ್ಎಲ್ ತಂಡ ಅದನ್ನು ಪರಿಶೀಲಿಸುತ್ತಿದೆ’ ಎಂದು ಅವರು ಹೇಳಿದರು.
ಸ್ಫೋಟದಲ್ಲಿ ಯಾವುದೇ ನಿರ್ದಿಷ್ಟ ಸಂಘಟನೆಯ ಕೈವಾಡದ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಇಲ್ಲ. ಯಾವ ಸಂಸ್ಥೆ ಈ ರೀತಿ ಮಾಡಿದೆ ಎಂಬ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ಘಟನೆಯನ್ನು ರಾಜಕೀಯಗೊಳಿಸುವುದನ್ನು ಪ್ರತಿಪಕ್ಷ ನಾಯಕರು ಮಾಡಬಾರದು’ ಎಂದು ಅವರು ಒತ್ತಾಯಿಸಿದರು.
‘ಬಿಜೆಪಿಗರು ನನ್ನ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ, 2022 ರಲ್ಲಿ ಕುಕ್ಕರ್ ಸ್ಫೋಟ ಸಂಭವಿಸಿದಾಗ ಅವರು ರಾಜೀನಾಮೆ ನೀಡಿದ್ದೀರಾ? ಅವರು ಎಲ್ಲದಕ್ಕೂ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಾರೆ, ನಮಗೆ ಕೆಲವು ಜವಾಬ್ದಾರಿಗಳಿವೆ, ಈ ವಿಷಯದಲ್ಲಿ ರಾಜಕೀಯ ಮಾಡಬೇಡಿ ಎಂದು ನಾನು ವಿರೋಧ ಪಕ್ಷದ ನಾಯಕರಿಗೆ ಮನವಿ ಮಾಡಿದ್ದೇನೆ’ ಎಂದು ಗೃಹ ಸಚಿವರು ಹೇಳಿದರು.
ಪೊಲೀಸರು ಐಪಿಸಿಯ ಸೆಕ್ಷನ್ 307, 471 ಮತ್ತು 16, 18 ಮತ್ತು ಯುಎ(ಪಿ)ಎ ಸೆಕ್ಷನ್ 38 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ ಮತ್ತು ಸ್ಫೋಟಕ ವಸ್ತುವಿನ ಕಾಯ್ದೆಯ ಸೆಕ್ಷನ್ 3 ಮತ್ತು 4 ಅನ್ನು ಸಹ ಎಫ್ಐಆರ್ನಲ್ಲಿ ಸೇರಿಸಲಾಗಿದೆ.
ಎಫ್ಎಸ್ಎಲ್, ಎನ್ಎಸ್ಜಿ, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದ ತಂಡ ಶನಿವಾರ ಬೆಳಗ್ಗೆ ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಪರಿಶೀಲನೆ ನಡೆಸಿತು. ತೀವ್ರವಾಗಿ ಗಾಯಗೊಂಡ ಮೂವರನ್ನು ಬ್ರೂಕ್ಫೀಲ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ನಂತರ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜ್ಯ ಗೃಹ ಸಚಿವ ಜಿ ಪರಮೇಶ್ವರ ಅವರು ಡಿಜಿಪಿ ಅಲೋಕ್ ಮೋಹನ್ ಅವರೊಂದಿಗೆ ಬೆಂಗಳೂರು ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಮೇಶ್ವರಂ ಕೆಫೆ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಮಾಧ್ಯಮದವರು ಸಹಕರಿಸಬೇಕಾಗಿ ಕೋರಿದೆ.
— CP Bengaluru ಪೊಲೀಸ್ ಆಯುಕ್ತ ಬೆಂಗಳೂರು (@CPBlr) March 2, 2024
ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡವೂ ವೈಟ್ಫೀಲ್ಡ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದೆ. ಸ್ಫೋಟಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ತಲೆ ಕೆಡಿಸಿಕೊಳ್ಳಬೇಡಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ ಒತ್ತಾಯಿಸಿದ್ದಾರೆ.
‘ರಾಮೇಶ್ವರಂ ಕೆಫೆ ಘಟನೆಗೆ ಸಂಬಂಧಿಸಿದಂತೆ, ತನಿಖೆಯು ಭರದಿಂದ ಸಾಗುತ್ತಿದೆ. ಇದುವರೆಗೆ ಸಿಕ್ಕಿರುವ ವಿವಿಧ ಲೀಡ್ಗಳಲ್ಲಿ ಹಲವಾರು ತಂಡಗಳು ಕಾರ್ಯನಿರ್ವಹಿಸುತ್ತಿವೆ. ಪ್ರಕರಣದ ಸೂಕ್ಷ್ಮತೆ ಮತ್ತು ಭದ್ರತೆಯ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು, ಮಾಧ್ಯಮಗಳು ಊಹಾಪೋಹಗಳಿಗೆ ಒಳಗಾಗಬೇಡಿ ಮತ್ತು ಸಹಕರಿಸುವಂತೆ ಮನವಿ ಮಾಡಲಾಗಿದೆ’ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಅಧಿಕೃತ ಎಕ್ಸ್ನಲ್ಲಿನ ಪೋಸ್ಟ್ನಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ; ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಖಚಿತ; ಸಿಎಂ ಸಿದ್ದರಾಮಯ್ಯ