ರಾಮೇಶ್ವರ ಕೆಫೆ ಸ್ಪೋಟ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಿ. ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಅವರು ಇಂದು ಗೃಹ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜನನಿಬಿಡ ಸ್ಥಳಗಳನ್ನು ಗುರುತಿಸಿ, ಅಂಥ ಪ್ರದೇಶಗಳಲ್ಲಿ ಪೊಲೀಸ ಗಸ್ತು ಹೆಚ್ಚಿಸುವ ಮೂಲಕ, ಜನರಿಗೆ ರಕ್ಷಣೆ ಒದಗಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಇಂಥ ಘಟನೆ ನಡೆದಾಗ ಪೊಲೀಸರು ಎಚ್ಚರಿಕೆ ವಹಿಸಿ ನಂತರ ಮರೆಯುವುದಾಗಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರ ದಾರಿ ತಪ್ಪಿಸುವ ಕೆಲಸವನ್ನು ಮಟ್ಟ ಹಾಕಬೇಕು ಎಂದು ಸೂಚನೆ ನೀಡಿದರು.
ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಿ:
ಇಂಟೆಲಿಜೆನ್ಸ್ ಹೆಚ್ಚು ಜಾಗೃತವಾಗಿರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು. ಈ ಬಗ್ಗೆಯೇ ಪೊಲೀಸ್ ಇಲಾಖೆ ಜೊತೆಗೆ ಪ್ರತ್ಯೇಕ ಸಭೆ ಕರೆಯುವುದಾಗಿ ಹೇಳಿದರು. ಸಮಯ ಸಂದರ್ಭಕ್ಕೆ ತಕ್ಕಂತೆ ನಾವೂ ಬದಲಾಗಬೇಕು; ತ್ವರಿತ ಗತಿಯಲ್ಲಿ ಕೆಲಸ ಮಾಡಬೇಕು ಎಂದರು.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಬ್ರೂಕ್ ಫಿಲ್ಡ್ ಮತ್ತು ವೈದೇಹಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ.#BengaluruBlast pic.twitter.com/ApogxCdALz
— Siddaramaiah (@siddaramaiah) March 2, 2024
ಸಭೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ‘ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಬ್ರೂಕ್ ಫಿಲ್ಡ್ ಮತ್ತು ವೈದೇಹಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ’ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್, ಸಚಿವ ಪ್ರಿಯಾಂಕ ಖರ್ಗೆ, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ; ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಭದ್ರತಾ ವ್ಯವಸ್ಥೆ ಹೆಚ್ಚಿಸಲು ಮುಂದಾದ ಬೆಂಗಳೂರು ಹೋಟೆಲ್ಸ್ ಅಸೋಸಿಯೇಷನ್