Homeಕರ್ನಾಟಕಶೈಕ್ಷಣಿಕ ವರ್ಷದ ಕೊನೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರ ಮರು ಹೊಂದಾಣಿಕೆ | ಶಿಕ್ಷಣ ಇಲಾಖೆಯ ಕ್ರಮಕ್ಕೆ...

ಶೈಕ್ಷಣಿಕ ವರ್ಷದ ಕೊನೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರ ಮರು ಹೊಂದಾಣಿಕೆ | ಶಿಕ್ಷಣ ಇಲಾಖೆಯ ಕ್ರಮಕ್ಕೆ ತಜ್ಞರ ವಿರೋಧ

ಸರಕಾರಿ ಶಾಲೆಗಳನ್ನು ಮುಚ್ಚಲು ಸರಕಾರ ಮುಂದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಶೈಕ್ಷಣಿಕ ವರ್ಷದ ಕೊನೆಯಲ್ಲಿ ಸರಕಾರಿ ಶಾಲಾ ಶಿಕ್ಷಕರ ಮರು ಹೊಂದಾಣಿಕೆ ಮತ್ತು ಹೆಚ್ಚುವರಿ ಪ್ರಕ್ರಿಯೆಯನ್ನು ಪ್ರಾರಂಭಿಸಿರುವ ಶಿಕ್ಷಣ ಇಲಾಖೆ ಕ್ರಮವನ್ನು ಶಿಕ್ಷಣ ತಜ್ಞರು ವಿರೋಧಿಸಿದ್ದು, “ಹೆಚ್ಚುವರಿ ಪ್ರಕ್ರಿಯೆ ಮಾಡುವ ಮೂಲಕ ಸರಕಾರಿ ಶಾಲೆಗಳನ್ನು ಮುಚ್ಚಲು ಸರಕಾರ ಮುಂದಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಕ್ರಮಗಳ ಬಗ್ಗೆ ಪ್ರತಿಕ್ರಿಯಿಸಿರುವ ಶಿಕ್ಷಣ ತಜ್ಞರ ಗುಂಪಾದ, ‘ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ-ಕರ್ನಾಟಕ’ದ ಪ್ರಧಾನ ಸಂಚಾಲಕರಾದ ಡಾ. ನಿರಂಜನಾರಾಧ್ಯ ವಿ.ಪಿ. ಅವರು, “ಶಾಲೆಗಳು 2022-23 ನೇ ಶೈಕ್ಷಣಿಕ ವರ್ಷದ ಕೊನೆಯಲ್ಲಿದ್ದು, ಶಿಕ್ಷಕರು ನಿಗದಿತ ಪಠ್ಯವಸ್ತು ಮುಗಿಸಿ, ನಿರಂತರ ಹಾಗು ವ್ಯಾಪಕ ಮೌಲ್ಯ ಮಾಪನದ ಮೂಲಕ ಮೌಲ್ಯಾಂಕನ ಮುಗಿಸಿ, ಮಕ್ಕಳ ಕಲಿಕೆಯನ್ನು ಪರಾಮರ್ಶಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಶಿಕ್ಷಕರನ್ನು ಮಾನಸಿಕವಾಗಿ ತೊಂದರೆಗೆ ಗುರಿಪಡಿಸುವುದು ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ಅವೈಜ್ಞಾನಿಕ ಕ್ರಮವಾಗಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಮರು ಹೊಂದಾಣಿಕೆಯ ವಿಧಾನವು ಶಿಕ್ಷಣ ಹಕ್ಕು ಕಾಯಿದೆಯ ಗೊತ್ತುಪಡಿಸಿರುವ ಪ್ರಾಥಮಿಕ ಹಾಗು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಇರಲೇಬೇಕಾದ ಕನಿಷ್ಠ ಶಿಕ್ಷಕರ ಸಂಖ್ಯೆಗೆ ವಿರುದ್ಧವಾಗಿದೆ. ಈ ಪ್ರಕ್ರಿಯೆ ಸರ್ಕಾರಿ ಕನ್ನಡ ಶಾಲೆಗಳಿಗೆ ಮಾರಕವಾಗಿ ಪರಿಣಮಿಸಲಿದೆ” ಎಂದು ನಿರಂಜನಾರಾಧ್ಯ ಎಚ್ಚರಿಸಿದ್ದಾರೆ.

“ಶೈಕ್ಷಣಿಕ ವರ್ಷದಲ್ಲಿ ಬಹು ಮುಖ್ಯ ಘಟ್ಟವಾದ, ಜನವರಿ-ಫೆಬ್ರವರಿ -ಮಾರ್ಚ್ ತಿಂಗಳುಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗು ಕಲಿಕಾ ಹಿತದೃಷ್ಟಿಯಿಂದ ತುಂಬಾ ಮಹತ್ವದ ಕಲಿಕಾ ದಿನಗಳಾಗಿರುತ್ತವೆ. ಈ ಸಂದರ್ಭದಲ್ಲಿ ಶಿಕ್ಷಕರ ಹೆಚ್ಚುವರಿ ಅಥವಾ ಮರು ಹೊಂದಾಣಿಕೆ ಪ್ರಕ್ರಿಯೆ ಆರಂಭಿಸುವುದು ನೇರವಾಗಿ ಕಲಿಕೆಯ ಮೇಲೆ ಪರಿಣಾಮ ಬೀರುವುದಲ್ಲದೆ ಶಿಕ್ಷಕರು ಮಾನಸಿಕವಾಗಿ ತೊಂದರೆಗೊಳಗಾಗುತ್ತಾರೆ” ಎಂದು ಅವರು  ಆತಂಕ ವ್ಯಕ್ತಪಡಿಸಿದ್ದಾರೆ.

“ಕಲಿಕಾ ಯೋಜನೆಗೆ ಸಂಬಂಧಿಸಿದಂತೆ ಪ್ರತಿಯೊಬ್ಬ ಶಿಕ್ಷಕರು ತನ್ನದೇ ಆದ ಯೋಜನೆ ಹೊಂದಿರುತ್ತಾರೆ. ಶೈಕ್ಷಣಿಕ ವರ್ಷ ಮುಕ್ತಾಯವಾಗುವ ಸಂದರ್ಭದಲ್ಲಿ ಪರಿಣಾಮಕಾರಿ ಕಲಿಕೆಗೆ ಏನು ಮಾಡಬೇಕು ಎಂಬುದರ ಬಗ್ಗೆ ತನ್ನದೇ ಆದ ಕ್ರಿಯಾ ಯೋಜನೆ ಅವರು ಹೊಂದಿರುತ್ತಾರೆ. ಈ ಘಟ್ಟದಲ್ಲಿ ಹೆಚ್ಚುವರಿ – ಮರು ಹೊಂದಾಣಿಕೆ ಪ್ರಕ್ರಿಯೆ ಶಿಕ್ಷಕರ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತದೆ. ಇದು ಸರಕಾರವೇ ಸರಕಾರೀ ಶಾಲೆಗಳನ್ನು ಮುಚ್ಚುವ ಕಾರ್ಯ ಯೋಜನೆಯಂತಿದೆ” ಎಂದು ಅವರು ಹೇಳಿದ್ದಾರೆ.

“ಹೆಚ್ಚುವರಿ ಮತ್ತು ಮರು ಹೊಂದಾಣಿಕೆಗೆ ಒಳಪಟ್ಟ ಶಿಕ್ಷಕ/ ಶಿಕ್ಷಕಿ ಶೈಕ್ಷಣಿಕ ವರ್ಷದ ಮಧ್ಯದಲ್ಲಿ ಈ ಶಾಲೆ ಬಿಟ್ಟು ಮತ್ತೊಂದು ಶಾಲೆಗೆ ಹೋಗುವುದರಿಂದ, ಅಲ್ಲಿನ ಪರಿಸ್ಥಿತಿಗೆ ಶಿಕ್ಷಕರು ತಕ್ಷಣ ಹೊಂದಿಕೊಳ್ಳಲು ಕಷ್ಟವಾಗುತ್ತದೆ. ವಿದ್ಯಾರ್ಥಿಗಳು ಸಹ ಬದಲಾದ ಕಲಿಕಾ ವ್ಯವಸ್ಥೆಗೆ ಹೊಂದಿಕೊಳ್ಳಲು ಕಷ್ಟವಾಗುತ್ತದೆ. ಹೀಗಾಗಿ, ಇದು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತ ದೃಷ್ಟಿಯಿಂದ ಒಳ್ಳೆಯದಲ್ಲ” ಎಂದು ಅವರು ತಿಳಿಸಿದ್ದಾರೆ.

ಇಂತಹ ಅವೈಜ್ಞಾನಿಕ ನಿಯಮ ಅಳವಡಿಸಿಕೊಂಡು ಮರು ಹೊಂದಾಣಿಕೆ ಹಾಗು ಶಿಕ್ಷಕರ ಹೆಚ್ಚುವರಿ ಮಾಡುವುದರಿಂದ ಸರ್ಕಾರಿ ಶಾಲೆಗಳನ್ನು ಶಾಶ್ವತವಾಗಿ ಮುಚ್ಚಬೇಕೆಂಬ ತೀರ್ಮಾನಕ್ಕೆ ಸರ್ಕಾರ ಬಂದಂತಿದೆ ಎಂದು ಅನುಮಾನ ವ್ಯಕ್ತಪಡಿಸಿರುವ ನಿರಂಜನಾರಾಧ್ಯ ಅವರು, “ಸಂಪನ್ಮೂಲಗಳನ್ನು ಕಡಿತಗೊಳಿಸಿ ಆ ಮೂಲಕ ಸರಕಾರೀ ಶಾಲೆಗಳನ್ನು ಮುಚ್ಚಿ ವಿಲೀನಗೊಳಿಸಿ ಖಾಸಗೀಕರಣಕ್ಕೆ ಅನುವು ಮಾಡಿಕೊಡಬೇಕೆಂಬ ರಾಷ್ಟ್ರೀಯ ಶಿಕ್ಷಣ ನೀತಿಯ ಹುನ್ನಾರ ಈಗ ಬಯಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಮಂಜೂರಾಗಿರುವ ಶಿಕ್ಷಕರ ಹುದ್ದೆಗಳ ಪೈಕಿ 2019-20 ರಲ್ಲಿ 22,200 , 2020-21 ರಲ್ಲಿ 34,079 ಮತ್ತು 2021-22 ರಲ್ಲಿ 1,41,358 ಹುದ್ದೆಗಳು ಖಾಲಿ ಇವೆ. ದೇಶದಲ್ಲಿ ಅತಿ ಹೆಚ್ಚು ಶಿಕ್ಷಕರ ಹುದ್ದೆ ಖಾಲಿ ಇರುವ ರಾಜ್ಯ ಕರ್ನಾಟಕವಾಗಿ ಹೊರಹೊಮ್ಮಿದೆ. “ಖಾಲಿ ಇರುವ ಹುದ್ದೆಗಳನ್ನು ತುಂಬದೇ ಇಲಾಖೆ ಮರು ಹೊಂದಾಣಿಕೆ ಹಾಗು ಹೆಚ್ಚುವರಿ ನೆಪದಲ್ಲಿ ಸರ್ಕಾರಿ ಶಾಲೆಗಳ ಸುಧಾರಣೆಗೆ ಕ್ರಮ ಕೈಗೊಳ್ಳುತ್ತೇವೆ ಎಂಬುದು ಹಾಸ್ಯಾಸ್ಪದ” ಎಂದು ನಿರಂಜನಾರಾಧ್ಯ ಹೇಳಿದ್ದಾರೆ..

“ಒಂದೆಡೆ ,ಮುಖ್ಯಮಂತ್ರಿಯವರು ಸರಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಸರ್ಕಾರ ಬದ್ಧ ಎಂದರೆ, ಮತ್ತೊಂದೆಡೆ ಶಿಕ್ಷಣ ಸಚಿವರು ಸರಕಾರಿ ಶಾಲೆಗಳನ್ನು ಮುಚ್ಚಲು ಶಿಕ್ಷಕರ ಮರು ಹೊಂದಾಣಿಕೆ ಹಾಗು ಹೆಚ್ಚುವರಿ ಪ್ರಕ್ರಿಯೆ ಆರಂಭಿಸಿದ್ದಾರೆ. ಸರಕಾರಕ್ಕೆ ಇಚ್ಛಾಶಕ್ತಿ ಇದ್ದರೆ ಸರಕಾರೀ ಶಾಲೆಗಳ ಸಬಲೀಕರಣ ವರದಿ 2017 ರ ಅನ್ವಯ ಎಲ್ಲ ಸರಕಾರೀ ಶಾಲೆಗಳಿಗೆ ವಿಷಯವಾರು, ತರಗತಿವಾರು ಶಿಕ್ಷಕ ಹುದ್ದೆಗಳನ್ನು ಮಂಜೂರು ಮಾಡುವ ಮೂಲಕ ಸರಕಾರೀ ಶಾಲೆಗಳ ಬಲವರ್ಧನೆಗೆ ಮುಂದಾಗಬೇಕು” ಎಂದು ಅಭಿವೃದ್ಧಿ ಶಿಕ್ಷಣ ತಜ್ಞರಾದ ಡಾ.ನಿರಂಜನಾರಾಧ್ಯ ವಿ.ಪಿ. ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೋದಿ ಹುಬ್ಬಳ್ಳಿ ಭೇಟಿ: ಪ್ರಾಂಶುಪಾಲರಿಗೆ 100 ವಿದ್ಯಾರ್ಥಿಗಳನ್ನು ಕರೆತರುವಂತೆ ಟಾರ್ಗೆಟ್‌ ನೀಡಿದ ಶಿಕ್ಷಣ ಇಲಾಖೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...