ಹೊಸಬರಿಗೆ ಅವಕಾಶ ನೀಡುವುದಕ್ಕಾಗಿ ಟಿಕೆಟ್ ನೀಡಲಾಗುವುದಿಲ್ಲ ಎಂದು ಬಿಜೆಪಿ ಹೈಕಮಾಂಡ್ ಹೇಳಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸ್ಪರ್ಧೆ ಮಾಡಿಯೇ ತೀರುತ್ತೇನೆ ಎಂದು ಘೋಷಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಸತತ ಆರು ಬಾರಿ ಗೆದ್ದು ಬಂದಿದ್ದೇನೆ. 21,000 ಹೆಚ್ಚು ಮತಗಳ ಅಂತರದಲ್ಲಿ ಗೆದ್ದಿದ್ದೇನೆ. ಪ್ರತಿ ಬಾರಿಯೂ ನನ್ನ ಗೆಲುವಿನ ಅಂತರ ದೊಡ್ಡದಿದೆ. ಆದರೂ ನನಗ್ಯಾಕೆ ಟಿಕೆಟ್ ನೀಡುವುದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ,
“ಪಕ್ಷದ ವರಿಷ್ಠರಿಂದ ಬೆಳಗ್ಗೆ ಫೋನ್ ಬಂದಿತ್ತು. ನೀವು ಹಿರಿಯರಿದ್ದೀರಿ ಬೇರಿಯವರಿಗೆ ಅವಕಾಶ ಕೊಡಿ ಎಂದು ಕೇಳಿದ್ದಾರೆ. ಆದರೆ ಪಕ್ಷದ ಆಂತರೀಕ ಸಮೀಕ್ಷೆಯಲ್ಲಿ ನನ್ನ ಪರವಾಗಿ ವರದಿ ಬಂದಿದೆ. ನನಗೆ ಜನರ ಆರ್ಶೀವಾದವಿದೆ. ಹಾಗಾಗಿ ನಾನು ಸ್ಪರ್ಧಿಸುತ್ತೇನೆ” ಎಂದಿದ್ದಾರೆ.
‘ನನಗೆ ಈ ಸಲವೂ ಸ್ಪರ್ಧಿಸಲು ಪಕ್ಷ ಅವಕಾಶ ನೀಡಬೇಕು. ಇಲ್ಲದಿದ್ದರೆ ಪಕ್ಷಕ್ಕೆ ಒಳ್ಳೆಯದಾಗುವುದಿಲ್ಲ ಎಂದು ಅವರು ಬೆದರಿಕೆ ಹಾಕಿದ್ದಾರೆ. ಪಕ್ಷ ನಿಷ್ಠನಾಗಿ ಆಗಿ ಕೆಲಸ ಮಾಡಿದ್ದೇನೆ. ಲಾಯಲ್ ಆಗಿ ಕೆಲಸ ಮಾಡಿದವರಿಗೆ ಗೌರವ ಇಲ್ಲವೇ ಎಂದು ವರಿಷ್ಠರನ್ನು ಪ್ರಶ್ನಿಸಿದ್ದೇನೆ’ ಎಂದಿದ್ದಾರೆ.
ಹಿರಿಯರು, ಸೀನಿಯಾರಿಟಿಯನ್ನು ಹೇಗೆ ನಿರ್ಧರಿಸುತ್ತೀರಿ ಎಂದು ಸ್ಪಷ್ಟಪಡಿಸಿ. ನನಗೆ ಯಾವುದೇ ಕಪ್ಪು ಚುಕ್ಕೆಗಳಿಲ್ಲ. ಹಾಗಾಗಿ ಹುಬ್ಬಳ್ಳಿ ಕೇಂದ್ರ ವಿಧಾನಸಭೆಗೆ ನಾನು ಸ್ಪರ್ಧಿಸುವುದು ಖಚಿತ ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಇನ್ನೊಂದೆಡೆ ಕರ್ನಾಟಕದ ವಿಧಾನಸಭಾ ಚುನಾವಣೆ ಸನ್ನಿಹಿತವಾಗಿದ್ದರೂ ಆಡಳಿತರೂಢ ಬಿಜೆಪಿ ಪಕ್ಷವು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ಹಿಂದೇಟು ಹಾಕುತ್ತಿದೆ. ಇದೇ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ, ಶಿವಮೊಗ್ಗ ನಗರ ಶಾಸಕ ಕೆ.ಎಸ್ ಈಶ್ವರಪ್ಪನರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.