Homeಕರ್ನಾಟಕನಮ್ಮ ಶಾಸಕರಿಗೆ ಕುಮಾರಸ್ವಾಮಿ ಆಫರ್, ಧಮಕಿ ಬಗ್ಗೆ ಮಾಹಿತಿ ಬಂದಿದೆ: ಡಿಸಿಎಂ ಡಿ.ಕೆ ಶಿವಕುಮಾರ್

ನಮ್ಮ ಶಾಸಕರಿಗೆ ಕುಮಾರಸ್ವಾಮಿ ಆಫರ್, ಧಮಕಿ ಬಗ್ಗೆ ಮಾಹಿತಿ ಬಂದಿದೆ: ಡಿಸಿಎಂ ಡಿ.ಕೆ ಶಿವಕುಮಾರ್

- Advertisement -
- Advertisement -

“ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಕುಮಾರಸ್ವಾಮಿ ಯಾರಿಗೆ ಫೋನ್ ಮಾಡಿ ಏನು ಮಾತನಾಡುತ್ತಿದ್ದಾರೆ, ಯಾರಿಗೆ ಧಮಕಿ ಹಾಕುತ್ತಿದ್ದಾರೆ ಎಲ್ಲವೂ ನಮಗೆ ತಿಳಿಯುತ್ತಿದೆ. ಕುಮಾರಸ್ವಾಮಿ ಯಾರಿಗೆ, ಯಾವೆಲ್ಲಾ ಆಫರ್ ಕೊಟ್ಟಿದ್ದಾರೆ ಎಂದು ಶಾಸಕರು ನಮಗೆ ಮಾಹಿತಿ ನೀಡಿದ್ದಾರೆ. ಬಿಜೆಪಿ ತಂತ್ರಗಾರಿಕೆ ಬಗ್ಗೆಯೂ ಗೊತ್ತಿದೆ. ಮೊದಲು ಅವರು ತಮ್ಮ ಮನೆ ಸರಿಪಡಿಸಿಕೊಳ್ಳಲಿ. ಈಗ ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದರು.

ವಿರೋಧ ಪಕ್ಷಗಳು ಅಡ್ಡ ಮತದಾನದ ಪ್ರಯತ್ನ ಮಾಡುತ್ತಿವೆಯಾ? ಎಂದು ಕೇಳಿದಾಗ, “ಸುಮ್ಮನೆ ಐದನೇ ಅಭ್ಯರ್ಥಿ ಕಣಕ್ಕಿಳಿಸುತ್ತಾರಾ? ಒಂದು ಪ್ರಯತ್ನ ಮಾಡೋಣ ಎಂದು ಹಾಕಿದ್ದಾರೆ. ಮತದಾನದ ದಿನ ಎಲ್ಲವೂ ಗೊತ್ತಾಗಲಿದೆ” ಎಂದು ಹೇಳಿದರು.

ವಿರೋಧ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುತ್ತೀರಾ? ಎಂದು ಕೇಳಿದಾಗ, “ನಮಗೆ ಅದರ ಅಗತ್ಯವಿಲ್ಲ. ಜನ ನಮಗೆ 136 ಸೀಟುಗಳನ್ನು ನೀಡಿದ್ದಾರೆ. 2 ಕ್ಷೇತ್ರದ ಪಕ್ಷೇತರರು ನಮ್ಮ ಜತೆಗಿದ್ದಾರೆ. ನಮ್ಮ ಜತೆ ಇರುವ ಬೇರೆಯವರ ಬಗ್ಗೆ ಈಗ ಮಾತನಾಡುವುದಿಲ್ಲ. ಮತದಾನದ ನಂತರ ಮಾತನಾಡುತ್ತೇವೆ” ಎಂದು ತಿಳಿಸಿದರು.

ಶಾಸಕರಾದ ಸೋಮಶೇಖರ್, ಗೋಪಾಲಯ್ಯ ಜೊತೆ ವೈಯಕ್ತಿಕ ಬಾಂಧವ್ಯವಿದೆ:

ಸೋಮಶೇಖರ್ ಅವರ ಜೊತೆ ವಿಮಾನ ಪ್ರಯಾಣ ಹಾಗೂ ಗೋಪಾಲಯ್ಯ ಅವರ ಭೇಟಿ ವಿಚಾರವಾಗಿ ಕೇಳಿದಾಗ, “ಸೋಮಶೇಖರ್ ಹಾಗೂ ಗೋಪಾಲಯ್ಯ ಅವರ ಜೊತೆ ವೈಯಕ್ತಿಕ ಸ್ನೇಹ, ಸಂಬಂಧಗಳಿವೆ ಎಂದರು. ಸೋಮಶೇಖರ್ ಅವರು ಪದೇ ಪದೆ ನಿಮ್ಮ ಜೊತೆ ಗುರುತಿಸಿಕೊಳ್ಳುತ್ತಿದ್ದಾರೆ ಎಂದು ಕೇಳಿದಾಗ, “ಗುರುತಿಸಿಕೊಳ್ಳುವುದಲ್ಲ. ಅವರು ಕೇವಲ ಮೂರು ವರ್ಷ ಮಾತ್ರ ಬೇರೆ ಕಡೆ ಹೋಗಿದ್ದಾರೆ. ಆದರೆ 35 ವರ್ಷಗಳಿಂದ ನಾವು ರಾಜಕೀಯವಾಗಿ ಜೊತೆಗಿದ್ದೇವೆ” ಎಂದು ಹೇಳಿದರು.

ಕಮಲನಾಥ್ ಸೇರಿದಂತೆ ಯಾರೂ ಬಿಜೆಪಿ ಸೇರಲ್ಲ:

“ಬಿಜೆಪಿ ಬರೀ ಸುಳ್ಳನ್ನು ಪ್ರಚಾರ ಮಾಡಿಕೊಂಡೆ ಇರುತ್ತದೆ. ಕಮಲನಾಥ್ ಅವರು ಬಹಳ ಹಿರಿಯ ನಾಯಕರು. ಅವರು ಈಗಷ್ಟೇ ಚುನಾವಣೆ ಮುಗಿಸಿದ್ದಾರೆ. ಅವರು ಎಲ್ಲೂ ಬಿಜೆಪಿ ಸೇರುವುದಾಗಿ ಹೇಳಿಲ್ಲ. ಆದರೂ ಅವರು ಬಿಜೆಪಿ ಸೇರುತ್ತಾರೆ ಎಂದು ಸುಳ್ಳು ಹರಡುತ್ತಿದ್ದಾರೆ. ಬೇರೆಯವರ ಹೆಸರೂ ಸೇರಿಸಿದ್ದಾರೆ. ಕಮಲನಾಥ್ ಅವರು 50 ವರ್ಷಗಳ ರಾಜಕಾರಣದಲ್ಲಿ ಗಾಂಧಿ ಕುಟುಂಬದ ಜೊತೆ ಒಡನಾಟ ಇಟ್ಟುಕೊಂಡು ಪಕ್ಷ ಕಟ್ಟಿದ್ದಾರೆ. ಇಂತಹವರು ಬಿಜೆಪಿ ಸೇರುತ್ತಾರೆ ಎಂದು ಸುಳ್ಳು ಹೇಳಿ ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

“ಕಳೆದ 35 ವರ್ಷಗಳಿಂದ ನನಗೆ ಕಮಲನಾಥ್ ಅವರು ಪರಿಚಯವಿದ್ದಾರೆ. ಅವರು ಸಿದ್ಧಾಂತ, ಮೌಲ್ಯಗಳ ವ್ಯಕ್ತಿ. ಸಿದ್ಧಾಂತ ಬಿಟ್ಟು ಈ ವಯಸ್ಸಿನಲ್ಲಿ ಕಾಂಗ್ರೆಸ್ ಯಾಕೆ ತೊರೆಯುತ್ತಾರೆ? ಇನ್ನು ಮನೀಶ್ ತಿವಾರಿ ಅವರೂ ಕೂಡ ಕಾಂಗ್ರೆಸ್ ಪಕ್ಷದ ಪ್ರಮುಖ ಸಂಘಟಕರು. ಇವರೆಲ್ಲರೂ ಕಾಂಗ್ರೆಸ್ ಪಕ್ಷದ ನಾಯಕರು. ಕಮಲನಾಥ್ ಅವರೂ ಸೇರಿದಂತೆ ಯಾರೊಬ್ಬರು ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಕಾಂಗ್ರೆಸ್ ಪಕ್ಷ ಯಾವುದೇ ಒಬ್ಬ ನಾಯಕ ಮೇಲೆ ಅವಲಂಬಿತವಾಗಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಕಾರ್ಯಕರ್ತರ ಬುನಾದಿ ಇದೆ. ಗಾಂಧಿ ಕುಟುಂಬ ಇರುವವರೆಗೂ ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿರಲಿದೆ. ಕಾಂಗ್ರೆಸ್ ಪಕ್ಷ ಇರುವವರೆಗೂ ದೇಶ ಒಗ್ಗಟ್ಟಾಗಿರಲಿದೆ” ಎಂದರು.

ಬಿಜೆಪಿ ಬಲಿಷ್ಠವಾಗಿದ್ದರೆ ಕಾಂಗ್ರೆಸ್ ನಾಯಕರನ್ನು ಯಾಕೆ ಸೆಳೆಯುತ್ತಿದ್ದಾರೆ?

“ಬಿಜೆಪಿ ಬಲಿಷ್ಠವಾಗಿದ್ದರೆ ಕಾಂಗ್ರೆಸ್ ನಾಯಕರನ್ನು ಸೆಳೆಯುತ್ತಿರುವುದೇಕೆ? ಬಿಜೆಪಿ ದುರ್ಬಲವಾಗಿರುವುದಕ್ಕೆ ಕಾಂಗ್ರೆಸ್ ನಾಯಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಧಾನ ಮಂತ್ರಿಗಳು ಈ ಚುನಾವಣೆಯಲ್ಲಿ 370 ಕ್ಷೇತ್ರ ಗೆಲ್ಲುವುದಾಗಿ ಹೇಳಿದ್ದಾರೆ. ಬಿಜೆಪಿ ಅಷ್ಟು ಕ್ಷೇತ್ರ ಗೆಲ್ಲುವುದು ನಿಜವೇ ಆದರೆ ಕಾಂಗ್ರೆಸ್ ನಾಯಕರನ್ನು ಯಾಕೆ ಸೆಳೆಯುತ್ತಿದ್ದಾರೆ? ಯಾರು ಗೆಲ್ಲಬೇಕು ಎಂದು ಜನ ತೀರ್ಮಾನಿಸಲಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಹೈಕಮಾಂಡ್ ತೀರ್ಮಾನ ಎಲ್ಲರೂ ಪಾಲಿಸಬೇಕು:

ಸಚಿವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಕೇಳಿದಾಗ, “ಲೋಕಸಭೆ ಚುನಾವಣೆಯಲ್ಲಿ ಯಾರು ಸ್ಪರ್ಧಿಸಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ. ಪಕ್ಷದ ತೀರ್ಮಾನವನ್ನು ನಾನು ಸೇರಿದಂತೆ ಎಲ್ಲರೂ ಪಾಲಿಸಬೇಕು. ನಾವೆಲ್ಲ ಒಟ್ಟಾಗಿ ಕೆಲಸ ಮಾಡಿ ಹೆಚ್ಚಿನ ಕ್ಷೇತ್ರದಲ್ಲಿ ಪಕ್ಷ ಗೆಲ್ಲುವಂತೆ ಮಾಡಬೇಕು” ಎಂದು ಹೇಳಿದರು.

ಕುವೆಂಪು ಅವರ ತತ್ವ ಸಿದ್ಧಾಂತ ಪಾಲನೆ, ಪ್ರಚಾರ ಮಾಡುತ್ತಿರುವವರು ನಾವು :

ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಾವು ಕುವೆಂಪು ಅವರ ಆಚಾರ, ವಿಚಾರ ಪ್ರಚಾರ ಮಾಡುತ್ತಿದ್ದೇವೆ. ಕುವೆಂಪು ಅವರ “ಭಾರತ ಜನನಿಯ ತನುಜಾತೆ…”, “ಸರ್ವಜನಾಂಗದ ಶಾಂತಿಯ ತೋಟ…” ಸಂದೇಶವನ್ನು ಪ್ರತಿನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಜ್ಯದ ಜನರಿಗೆ ಹೇಳುತ್ತಾ ಬಂದಿದ್ದೇವೆ. ಕುವೆಂಪು ಅವರ ತತ್ವ ಸಿದ್ಧಾಂತಗಳನ್ನು ನಾವು ಪಾಲಿಸಿ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಹೀಗಾಗಿ ಎಲ್ಲದರಲ್ಲೂ ತಪ್ಪು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಜನರ ಬದುಕಿನ ಬಗ್ಗೆ ಯೋಚಿಸುವುದಿಲ್ಲ, ಭಾವನೆ ಬಗ್ಗೆ ಮಾತ್ರ ಆಲೋಚಿಸಿ ಸಮಾಜ ಕೆಡಿಸುವ ಕೆಲಸ ಮಾಡುತ್ತಾರೆ” ಎಂದರು.

ಬರ ನಿರ್ವಹಣೆಗೆ ಅಗತ್ಯ ಕ್ರಮ:

ಬರದಿಂದಾಗಿ ನೀರಿನ ಕೊರತೆ ವಿಚಾರವಾಗಿ ಕೇಳಿದಾಗ, “ಬರ ಪರಿಸ್ಥಿತಿಯಿಂದಾಗ ನೀರಿನ ಅಭಾವ ಹೆಚ್ಚಿದೆ. 200 ತಾಲೂಕುಗಳಲ್ಲಿ ಅಂತರ್ಜಲ ನೀರಿನ ಮಟ್ಟ ಕುಸಿದಿದೆ. ಬೆಂಗಳೂರಿನ 110 ಹಳ್ಳಿಗಳಿಗೆ ಸೇರಿದಂತೆ ಕುಡಿಯುವ ನೀರು ಪೂರೈಸಲು ನಮ್ಮ ಸರ್ಕಾರ ಬಜೆಟ್ ನಲ್ಲಿ ಅಗತ್ಯ ಕ್ರಮ ಕೈಗೊಂಡಿದೆ. ಇನ್ನು ಬೆಂಗಳೂರಿಗೆ ಹೆಚ್ಚುವರಿಯಾಗಿ 6 ಟಿಎಂಸಿ ನೀರನ್ನು ಬಳಸಲು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ರಾಜ್ಯದ ಇತರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳಿಗೆ ಹಣ ನೀಡಲಾಗಿದೆ. ಕೆಲವು ಶಾಸಕರು ಈಗಾಗಲೇ ಇರುವ ಕೊಳವೆ ಬಾವಿಗಳನ್ನು ಇನ್ನು 500 ಅಡಿಗಳಷ್ಟು ಆಳಕ್ಕೆ ಕೊರೆಸಿದರೆ ಹೊಸ ಕೊಳವೆಬಾವಿ ಕೊರೆಯುವ ಅಗತ್ಯವಿಲ್ಲ ಎಂದು ಸಲಹೆ ನೀಡಿದ್ದಾರೆ. ಈ ಅವಕಾಶದ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ” ಎಂದು ತಿಳಿಸಿದರು.

ತಮಿಳುನಾಡಿನಲ್ಲಿ ಕಮಲ್ ಹಾಸನ್ ಅವರು ಇಂಡಿಯಾ ಮೈತ್ರಿಕೂಟಕ್ಕೆ ಸೇರಲು ಮುಂದಾಗಿದ್ದು ಇದರಿಂದ ಮೈತ್ರಿಗೆ ಅನುಕೂಲವಾಗುತ್ತದೆಯೇ ಎಂದು ಕೇಳಿದಾಗ, “ಖಂಡಿತವಾಗಿಯೂ ಅನುಕೂಲವಾಗುತ್ತದೆ. ನಮ್ಮ ಜೊತೆ ಕೈಜೋಡಿಸುವವರಿಗೆ ನಾವು ಸ್ವಾಗತಿಸುತ್ತೇವೆ” ಎಂದರು.

ಇದನ್ನೂ ಓದಿ : ವಿಧಾನಸಭೆ ಅಧಿವೇಶನ: ‘ಗ್ರಾಮ ಸ್ವರಾಜ್, ಪಂಚಾಯತ್ ರಾಜ್ ತಿದ್ದುಪಡಿ’ ಸೇರಿ 2 ವಿಧೇಯಕ ಅಂಗೀಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

0
ಕೋವಿಡ್ -19 ವಿರುದ್ಧದ 'ಕೋವಿಶೀಲ್ಡ್‌' ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಮರ್ಥ್ಯವನ್ನು ಹೊಂದಿದೆ ಎಂದು ಬ್ರಿಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’  ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. TTS ಅಥವಾ...