ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಒಂದೇ ದಿನದಲ್ಲಿ 204.4 ಮಿ.ಮೀ.ಗಿಂತಲೂ ಅಧಿಕ ಮಳೆ ಸುರಿದಿದ್ದು ಹಲವು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಕೋಡಿ, ಮರವಂತೆಯಲ್ಲಿ ಕಡಲ್ಕೂರೆತ ಮುಂದುವರಿದಿದೆ. ಮಲ್ಪೆ, ಪಡುಕರೆ, ಪಡುಬಿದ್ರಿ, ಕಾಪು, ಕೋಡಿ ಸೀ ವಾಕ್ನಲ್ಲಿ ಅಲೆಗಳು ಹೆಚ್ಚಾಗಿದ್ದು, ಬೃಹತ್ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಹಲವೆಡೆ ಕೃಷಿ ಭೂಮಿ ಸಹಿತ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಗಾಳಿ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಒಟ್ಟು 41 ಮನೆಗಳಿಗೆ ಹಾನಿಯಾಗಿದೆ. 230ಕ್ಕೂ ಅಧಿಕ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, 24 ಟ್ರಾನ್ಸ್ಫಾರ್ಮರ್ಗಳಿಗೆ ಹಾನಿಯಾಗಿದೆ. ಬೃಹತ್ ಮರಗಳು ಬುಡ ಸಹಿತ ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ ಅಲ್ಲಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.
ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಶಂಕರನಾರಾಯಣ, ಈ ಕಾಪು ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಮೆಸ್ಕಾಂ ಇಲಾಖೆಗೆ ಹಾನಿಯಾಗಿದ್ದು, ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿದೆ.
ಮಳೆಗೆ ನದಿಗಳು ತುಂಬಿ ಹರಿಯುತ್ತಿದ್ದು, ಹಲವಾರು ಹಳ್ಳ-ಕೊಳ್ಳಗಳಲ್ಲಿ ನೀರು ನುಗ್ಗಿದೆ. ಹಾಗಾಗಿ ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ತಗ್ಗು ಹಾಗೂ ಅಪಾಯಕಾರಿ ಪ್ರದೇಶಗಳಿಂದ ಜನಸಾಮಾನ್ಯರು ದೂರವಿರಲು ಎಚ್ಚರಿಕೆ ನೀಡಲಾಗಿದೆ.
ಏನಿವು ಅಲರ್ಟ್ಗಳು?
ಮಳೆಗಾಲದಲ್ಲಿ ಅಥವಾ ಯಾವುದೇ ಅನಿರೀಕ್ಷಿತ ಚಂಡಮಾರುತಗಳು ಬೀಸುವ ಸಂದರ್ಭದಲ್ಲಿ ಜನಸಾಮಾನ್ಯರ ಸುರಕ್ಷತೆಯ ದೃಷ್ಟಿಯಿಂದ ಭಾರತೀಯ ಹವಾಮಾನ ಇಲಾಖೆಯು ಹಸಿರು, ಹಳದಿ ಕಿತ್ತಳೆ ಮತ್ತು ಕೆಂಪು ಅಲರ್ಟ್ಗಳನ್ನು ಹೊರಡಿಸುತ್ತದೆ. ಅವುಗಳ ಅರ್ಥವೇನು? ಅವು ಏನನ್ನು ಸೂಚಿಸುತ್ತವೆ ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ
ನಮ್ಮ ದೇಶದಲ್ಲಿ ಭಾರತೀಯ ಹವಾಮಾನ ಇಲಾಖೆ (IMD)ಯು ಈ ಎಚ್ಚರಿಕೆಗಳನ್ನು ನೀಡುತ್ತದೆ ಮತ್ತು ವಿಭಿನ್ನ ಸಂದೇಶಗಳನ್ನು ವಿವರಿಸಲು 4 ವಿಭಿನ್ನ ಬಣ್ಣದ ಕೋಡ್ಗಳನ್ನು ಬಳಸುತ್ತದೆ. ಹಸಿರು, ಹಳದಿ, ಕಿತ್ತಳೆ ಮತ್ತು ಕೆಂಪು ಬಣ್ಣದ ಎಚ್ಚರಿಕೆಗಳನ್ನು ನೀಡುತ್ತದೆ.
1. ಹಸಿರು ಎಚ್ಚರಿಕೆ (ಗ್ರೀನ್ ಅಲರ್ಟ್)
ಗ್ರೀನ್ ಅಲರ್ಟ್ ಎಂದರೆ ಸಾಮಾನ್ಯವಾಗಿ ಹವಾಮಾನ ಪರಿಸ್ಥಿತಿಗಳು ಉತ್ತಮವಾಗಿವೆ ಎಂದರ್ಥ. ಬಹುತೇಕ ಸಮಯದಲ್ಲಿ ಈ ಅಲರ್ಟ್ ಜಾರಿಯಲ್ಲಿರುತ್ತದೆ. ಅಲ್ಲದೆ ಈ ಎಚ್ಚರಿಕೆಯ ಸಮಯದಲ್ಲಿ ಭಾರತೀಯ ಹವಾಮಾನ ಇಲಾಖೆಯು ನಾಗರೀಕರಿಗೆ ಯಾವುದೇ ಸಲಹೆಯನ್ನು ನೀಡುವುದಿಲ್ಲ.
2. ಹಳದಿ ಎಚ್ಚರಿಕೆ (ಯೆಲ್ಲೋ ಅಲರ್ಟ್)
ಹವಾಮಾನ ಇಲಾಖೆಯು ಜನರಿಗೆ ಎಚ್ಚರಿಕೆ ನೀಡಲು ಹಳದಿ ಅಲರ್ಟ್ ಅನ್ನು ನೀಡುತ್ತದೆ. 7.5 ರಿಂದ 15 ಮಿಮೀ ವರೆಗೆ ಭಾರೀ ಮಳೆಯಾಗಲಿದ್ದು, ಇದು ಮುಂದಿನ 1 ಅಥವಾ 2 ಗಂಟೆಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದಾಗ ಇದನ್ನು ಹೊರಡಿಸುತ್ತದೆ. ಅಂದರೆ ಇದು ಕೇವಲ ಮುಂದೊದಗಬಹುದಾದ ಅಪಾಯದ ಬಗ್ಗೆ ಎಚ್ಚರವಿರಲಿ ಎಂದರ್ಥ. ಹಳದಿ ಎಚ್ಚರಿಕೆಯ ಸಮಯದಲ್ಲಿ ಹವಾಮಾನವನ್ನು ನಿರಂತರವಾಗಿ ಮತ್ತು ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತದೆ.
3. ಕಿತ್ತಳೆ ಎಚ್ಚರಿಕೆ (ಆರೆಂಜ್ ಅಲರ್ಟ್)
ಹವಾಮಾನವು ಹದಗೆಟ್ಟಾಗ, ಹಳದಿ ಎಚ್ಚರಿಕೆಯನ್ನು ಆರೆಂಜ್ ಅಲರ್ಟ್ ಆಗಿ ಬದಲಾಯಿಸಲಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳುತ್ತದೆ. “ಈ ಚಂಡಮಾರುತವು ಹವಾಮಾನ ಪರಿಸ್ಥಿತಿಗಳು ಹದಗೆಡಲು ಕಾರಣವಾಗಬಹುದು. ಇದು ರಸ್ತೆ ಮತ್ತು ವಾಯು ಸಾರಿಗೆಗೆ ಹಾನಿಯನ್ನುಂಟುಮಾಡುತ್ತದೆ ಮತ್ತು ಜೀವ ಮತ್ತು ಆಸ್ತಿ ನಷ್ಟವನ್ನು ಉಂಟುಮಾಡಬಹುದು” ಎಂಬುದನ್ನು ಆರೆಂಜ್ ಅಲರ್ಟ್ ವಿವರಿಸುತ್ತದೆ.
ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಿದ ಸಮಯದಲ್ಲಿ ಜನರು ತಮ್ಮ ಮನೆಗಳಲ್ಲಿಯೇ ಇರುವಂತೆ ಸೂಚಿಸಲಾಗುತ್ತದೆ. ಅಂತಹ ಪರಿಸ್ಥಿತಿಗಳಲ್ಲಿ ಗಾಳಿಯ ವೇಗ ಗಂಟೆಗೆ 65 ರಿಂದ 75 ಕಿಮೀ ಇದ್ದು, 15 ರಿಂದ 33 ಮಿಮೀ ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಆರೆಂಜ್ ಅಲರ್ಟ್ ಘೋಷಿಸಿದಾಗ ಮಳೆ ಪೀಡಿತ ಪ್ರದೇಶದಲ್ಲಿ ಅಪಾಯಕಾರಿ ಪ್ರವಾಹದ ಸಾಧ್ಯತೆಯಿರುವುದರಿಂದ ಪೀಡಿತ ಪ್ರದೇಶದಿಂದ ಜನರನ್ನು ಸ್ಥಳಾಂತರಿಸಲು ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಸ್ಥಳೀಯ ಆಡಳಿತಗಳಿಗೆ ಸೂಚಿಸಲಾಗುತ್ತದೆ.
4. ಕೆಂಪು ಎಚ್ಚರಿಕೆ (ರೆಡ್ ಅಲರ್ಟ್)
ರೆಡ್ ಅಲರ್ಟ್ ಎಂದರೆ ಅಪಾಯಕಾರಿ ಪರಿಸ್ಥಿತಿ ಎಂದರ್ಥ. ಇದು ಅಂತಿಮ ಎಚ್ಚರಿಕೆಯಾಗಿದೆ. ಈ ಸಮಯದಲ್ಲಿ ಜನರು ಹೊರಗಡೆ ಹೋಗದಂತೆ ಸೂಚಿಸಲಾಗುತ್ತದೆ. ಚಂಡಮಾರುತವು ಗಂಟೆಗೆ 130 ಕಿಮೀ ಗಾಳಿಯ ವೇಗದ ತೀವ್ರತೆಯೊಂದಿಗೆ ಬೀಸಿದಾಗ ಮತ್ತು ತೀವ್ರ ಮಳೆ ಬಂದಾಗ ಭಾರತೀಯ ಹವಾಮಾನ ಇಲಾಖೆಯು ಕೆಂಪು ಎಚ್ಚರಿಕೆ ನೀಡುತ್ತದೆ. ಆ ಪ್ರದೇಶದ ಆಡಳಿತವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗುತ್ತದೆ.
ಹವಾಮಾನವು ಅಪಾಯಕಾರಿ ಮಟ್ಟಕ್ಕೆ ತಲುಪಿದಾಗ ಮತ್ತು ಭಾರೀ ಹಾನಿಯ ಅಪಾಯವಿದ್ದರೆ, ಆಗ ರೆಡ್ ಅಲರ್ಟ್ ನೀಡಲಾಗುವುದು ಎಂದು ಹವಾಮಾನ ಇಲಾಖೆ ಹೇಳಿದೆ. 30 ಮಿ.ಮೀ.ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಮತ್ತು ಕನಿಷ್ಠ 2 ಗಂಟೆಗಳ ಕಾಲ ಇದು ಮುಂದುವರಿಯುವ ಸಾಧ್ಯತೆ ಇದ್ದಾಗ ಮಾತ್ರ ಈ ರೀತಿಯ ಎಚ್ಚರಿಕೆಯನ್ನು ಘೋಷಿಸಲಾಗುತ್ತದೆ. ಹೆಚ್ಚಿನ ಸಂದರ್ಭಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದ ಅಪಾಯವು ಹಲವಾರು ಪಟ್ಟು ಹೆಚ್ಚಾಗುವುದರಿಂದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸಲಾಗುತ್ತದೆ.
ಈ ಎಚ್ಚರಿಕೆಗಳನ್ನು ಟಿವಿ, ರೆಡಿಯೋ ಸೇರಿದಂತೆ ಹಲವು ಮಾಧ್ಯಮಗಳ ಮೂಲಕ ಹವಾಮಾನ ಇಲಾಖೆ ಹೊರಡಿಸುತ್ತದೆ. ಇವುಗಳನ್ನು ಜನರು ಪಾಲಿಸುವುದು ಸುರಕ್ಷತೆಯ ದೃಷ್ಟಿಯಿಂದ ಒಳ್ಳೆಯದು. ಅಲ್ಲದೆ ಇದರಿಂದ ತೀವ್ರ ಮಳೆ ಸಂದರ್ಭದಲ್ಲಿ ಹೆಚ್ಚಿನ ಜೀವ ಹಾನಿಯಾಗದಂತೆ ತಡೆಯಲು ಸ್ಥಳೀಯ ಆಡಳಿತಗಳಿಗೆ ಸಹಕಾರಿಯಾಗುತ್ತದೆ.
ಇದನ್ನೂ ಓದಿ: ಧರ್ಮಸ್ಥಳದ ’ನಿರ್ಭಯಾ’ ಪ್ರಕರಣ: ಪರಮ ಪಾಪಿಗಳ ಪಾರು ಮಾಡಲು ಫಿಕ್ಸ್ ಮಾಡಲಾಗಿದ್ದ ಸಂತೋಷ್ ರಾವ್…