ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದತಿಯನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಭಿನ್ನತೆ ಇಲ್ಲದಿರುವುದು ವಿಷಾದನೀಯ ಎಂದು ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನವದೆಹಲಿಯ ಇಂಡಿಯಾ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ನ್ಯಾ. ಸುನಂದಾ ಭಂಡಾರೆ ಸ್ಮಾರಕ 28ನೇ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕಾಶ್ಮೀರದ ವಿಚಾರವಾಗಿ ಇತ್ತೀಚೆಗೆ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ನೀಡಿದ ತೀರ್ಪನ್ನು ಓದಿದಾಗ ಅದರಲ್ಲಿ ಯಾವುದೇ ಭಿನ್ನ ತೀರ್ಪು ಕಂಡು ಬರದಿರುವುದು ವಿಷಾದದ ಸಂಗತಿಯಾಗಿದೆ” ಎಂದಿದ್ದಾರೆ.
ಭಿನ್ನ ತೀರ್ಪಿನಿಂದ ಫಲಿತಾಂಶದಲ್ಲಿ ಹೆಚ್ಚೇನೂ ವ್ಯತ್ಯಾಸ ಉಂಟಾಗದಿದ್ದರೂ, ಪ್ರಕರಣ ಒಳಗೊಂಡಿರುವ ಸಮಸ್ಯೆಗಳನ್ನು ಉತ್ತಮ ರೀತಿಯಲ್ಲಿ ಅರ್ಥ ಮಾಡಿಕೊಳ್ಳಲು ಸಾರ್ವಜನಿಕರಿಗೆ ಸಹಾಯವಾಗುತ್ತಿತ್ತು ಎಂದು ಹೇಳಿದ್ದಾರೆ.
ಭಿನ್ನ ತೀರ್ಪುಗಳು ಕೇವಲ ಸುರಕ್ಷತಾ ಕವಾಟವಲ್ಲ, ಬದಲಿಗೆ ನ್ಯಾಯಾಲಯ ಆರೋಗ್ಯಕರವಾಗಿರುವುದರ ಬಗ್ಗೆ ಸಾರ್ವಜನಿಕರಿಗೆ ಸಂದೇಶ ಕಳುಹಿಸುತ್ತವೆ ಎಂದು ಫಾಲಿ ಎಸ್ ನಾರಿಮನ್ ತಿಳಿಸಿದ್ದಾರೆ.
ಸಂವಿಧಾನದ 370ನೇ ವಿಧಿ ರದ್ದುಪಡಿಸುವುದನ್ನು ಎತ್ತಿ ಹಿಡಿದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ವಿಚಲಿತಗೊಳಿಸುವಂತಿದೆ ಎಂದು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ರೋಹಿಂಟನ್ ಫಾಲಿ ನಾರಿಮನ್ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸುಪ್ರೀಂಕೋರ್ಟ್ ತಡೆ