Homeಮುಖಪುಟಪ್ರತಿಕ್ರಿಯೆ; ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡಳು!

ಪ್ರತಿಕ್ರಿಯೆ; ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡಳು!

- Advertisement -
- Advertisement -

’ನ್ಯಾಯಪಥ’ 18 ಮೇ 2022ರ ಸಂಚಿಕೆಯಲ್ಲಿ ಡಾ. ರಮೇಶ.ವಿ ರವರ ’ರಾಷ್ಟ್ರೀಯತೆ ಮತ್ತು ಕನ್ನಡದ ಅಸ್ಮಿತೆ’ (ಇಲ್ಲಿ ಓದಿ) ಎಂಬ ಲೇಖನ ಭಾಷಾ ವಿಜ್ಞಾನದ ನೆಲೆಯಲ್ಲಿ ಒಳ್ಳೆಯ ಬರಹವಾಗಿದೆ. ಇಂಡೋ ಆರ್ಯನ್ ಭಾಷೆಗಳು ಹಾಗು ದ್ರಾವಿಡ ಭಾಷೆಗಳು ಕಾಲಕ್ರಮದಲ್ಲಿ ಹೇಗೆ ಕವಲೊಡೆದು ಬೆಳೆದವು ಎಂಬುದನ್ನು ಸುಪ್ರೀಂಕೋರ್ಟು ಒಳಗೊಂಡಂತೆ ಸದ್ಯ ನಮ್ಮ ರಾಷ್ಟ್ರದ ಹಿಂದಿ ರಾಜಕಾರಣ ದ್ರಾವಿಡ ಭಾಷೆಗಳ ಬುಡಕ್ಕೆ ಬಿಸಿನೀರು ಚೆಲ್ಲುತ್ತಿರುವ ಹಿನ್ನೆಲೆಯಲ್ಲಿ ಅತ್ಯಂತ ಸೂಕ್ಷ್ಮವಾಗಿ, ಸೌಮ್ಯವಾಗಿ ವಿಸ್ತರಿಸಿ, ಬಿಡಿಸಿ ಹೇಳಿದ್ದಾರೆ.

ನಾನೀಗ ರಮೇಶ ಅವರೊಂದಿಗೆ ಕೂಡಿಕೊಂಡು ಕೊಂಚ ಗಟ್ಟಿಯಾಗಿ ಹೇಳಬೇಕಾದ ಮಾತೊಂದಿದೆ. ಅದೇನೆಂದರೆ ಕೂಸು ಅಳದಿದ್ದರೆ ಯಾವ ತಾಯಿಯೂ ಹಾಲೂಡಿಸುವುದಿಲ್ಲವಷ್ಟೆ? ಹಾಗೆ ಯಾವುದೇ ಭಾಷಾ ಸಮುದಾಯವು ಸಹ ಕೂಡುರಾಷ್ಟ್ರದ ರಾಜ್ಯಾಂಗಬದ್ಧ ತನ್ನ ಹಕ್ಕನ್ನು ಚಲಾಯಿಸದಿದ್ದರೆ, ಪಾರ್ಲಿಮೆಂಟಿನಲ್ಲಿ ನಿಂತು ಗಟ್ಟಿಯಾಗಿ ಮಾತನಾಡಿ ಪ್ರಶ್ನಿಸದಿದ್ದರೆ ಇದು ಪ್ರಜಾತಂತ್ರ ಅನ್ನಿಸಿಕೊಳ್ಳುವುದೆ? ಇಲ್ಲ. ಈ ನಿಟ್ಟಿನಲ್ಲಿ ರಾಷ್ಟ್ರಕವಿ ಕುವೆಂಪು ಕಳೆದ ಶತಮಾನದ ಮೂರನೆ ದಶಕದಿಂದ ಬಿಟ್ಟೂಬಿಡದಂತೆ ಒಂದೇಸಮನೆ ’ಕನ್ನಡ ಅಸ್ಮಿತೆ’ಯ ಬಗ್ಗೆ ಕವನ ಬರೆದಿದ್ದಾರೆ; ಭಾಷಣ ಮಾಡಿದ್ದಾರೆ, ಸಂದರ್ಶನದಲ್ಲಿ ಹೇಳಿದ್ದಾರೆ. ಕುವೆಂಪು ಅವರ ವೈಜ್ಞಾನಿಕ ದೃಷ್ಟಿ, ವೈಚಾರಿಕ ತಿಳಿವು, ಒಕ್ಕೂಟರಾಷ್ಟ್ರದ ನಿಲುವು ಅಖಂಡ ಎಂಬುದನ್ನು ಹೆಚ್ಚು ವಿಸ್ತರಿಸಬೇಕಾಗಿಲ್ಲ. 1928ರಲ್ಲಿ ಅವರು ಇನ್ನೂ 24ರ ಹರೆಯದ ಕಾಲೇಜು ವಿದ್ಯಾರ್ಥಿ. ಕನ್ನಡದ ಅಸ್ಮಿತೆಯನ್ನು ಕುರಿತು ಆಗಲೇ ಚಿಂತನಮಂಥನ ನಡೆಸಿದ್ದಾರೆ. ಆಗ ಬರೆದದ್ದು ’ಭಾರತ ಜನನಿಗೆ’ ಎಂಬ ಕವನ. ಅಲ್ಲಿಂದ ಮೊದಲುಗೊಂಡು ’ಜಯಹೇ ಕರ್ನಾಟಕ ಮಾತೆ (1928), ಸಾಯುತಿದೆ ನಿಮ್ಮ ನುಡಿ ಓ ಕನ್ನಡದ ಕಂದರಿರ (1935), ಕಂದ ಕನ್ನಡನಿವನು ಕೈಬಿಡದಿರಮ್ಮಾ (1938), ಮೆಟ್ಟುವ ನೆಲ ಅದು ಕರ್ನಾಟಕ (1949), ಕರ್ನಾಟಕ ಮಂತ್ರದೀಕ್ಷೆ (1949), ಕನ್ನಡ ಡಿಂಡಿಮ(1960), ಸಾಕು ಈ ಬಲಾತ್ಕಾರ(1963), ಬಲಾತ್ಕಾರದ ಭಾಷಾ ತ್ರಿಶೂಲ(1963)’ ಹೀಗೆ ಕುವೆಂಪು ಕನ್ನಡ ತಾಯಿಯ ಸೇವೆಯ ಮಾಡಲು ಜೀವಮಾನ ಪರ್ಯಂತ ಹಾತೊರೆದರು; ಬರೆದರು, ಮಾತಾಡಿ ಕನ್ನಡದ ಅಸ್ಮಿತೆಯನ್ನು ಎತ್ತಿಹಿಡಿದರು. ಸಂಸ್ಕೃತ, ಹಿಂದಿ, ಇಂಗ್ಲಿಷ್ ಯಜಮಾನ್ಯದ ’ಕೊಲ್ವಮುನ್ನ ಸೊಲ್ಲಡಗಿಸುವ ಹುನ್ನಾರ’ವನ್ನು ಕಂಡು ಮರುಗಿದರು;

ಸಾಯುತಿದೆ ನಿಮ್ಮನುಡಿ, ಓ ಕನ್ನಡದ ಕಂದರಿರ
ಹೊರನುಡಿಯ ಹೊರೆಯಿಂದ ಕುಸಿದು ಕುಗ್ಗಿ!
ರಾಜನುಡಿಯೆಂದೊಂದು, ರಾಷ್ಟ್ರನುಡಿಯೆಂದೊಂದು,
ದೇವನುಡಿಯೆಂದೊಂದು ಹತ್ತಿ ಜಗ್ಗಿ

ಎಂದು ಎಚ್ಚರಿಸಿದರು. ಆದರೆ ಇವತ್ತಿಗೂ ಕನ್ನಡಿಗರು ಎಚ್ಚರಗೊಳ್ಳಲಾಗಿಲ್ಲ. ಇಂಗ್ಲಿಷ್, ಹಿಂದಿ, ಸಂಸ್ಕೃತದ ಹೊರೆ ಕನ್ನಡದ ಮಕ್ಕಳಿಗೆ ತಪ್ಪಿಲ್ಲ. ’ಕರ್ನಾಟಕ ಎಂಬುದು ಬರಿಯ ಹೆಸರೆ ಮಣ್ಣಿಗೆ?’ ಎಂದು ಕೇಳಲಾಗಿಲ್ಲ! ಸ್ವಾತಂತ್ರ್ಯವೂ ಬಂತು; ಸ್ವರಾಜ್ಯವೂ ಆಯಿತು; ಭಾಷಾವಾರು ಪ್ರಾಂತ್ಯಗಳೂ ಉದಯವಾದವು; ’ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು’ ಎಂದು ಕವಿಗಳು, ಗಮಕಿಗಳು ಹಾಡಿ ದಣಿದರು. ಆದರೆ ಚೆಲುವ ಕನ್ನಡ ನಾಡು ಎಲ್ಲಿ? ಎಲ್ಲವೂ ಜಾತಿಯಲ್ಲಿ, ಸ್ವಜನಪಕ್ಷಪಾತದಲ್ಲಿ, ಭ್ರಷ್ಟಾಚಾರದಲ್ಲಿ, ಮಂತ್ರಿ ಮಹೋದಯರ ಕುರ್ಚಿ ಹರಾಜಿನಲ್ಲಿ, ಹೈಕಮಾಂಡ್ ಎದುರು ಡೊಗ್ಗು ಸಲಾಮು ಹೊಡೆಯುವಲ್ಲಿ ಕನ್ನಡ, ಕರ್ನಾಟಕ, ಕನ್ನಡಿಗರ ಅಸ್ಮಿತೆಯೇ ಮರೆತು ಹೋಗುತ್ತಿದೆ. ’ಮಾತು ಮರೆತ’ ಜನಾಂಗ ಬದುಕಿದ್ದರೂ ಸತ್ತಂತೆ ತಾನೆ? ’ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯಶಿವ’ ಎಂದು ಸತ್ತಂತಿರುವ ಕನ್ನಡಿಗರನ್ನು ಬಡಿದೆಬ್ಬಿಸುವ ದಾತಾರರೇ ಈಗ ಇಲ್ಲ. ನೆರೆಯ ತಮಿಳರು ನಾಡು-ನುಡಿಯ ’ಅಸ್ಮಿತೆ’ಗೆ ಕುಂದು ಬಂದಾಗಲೆಲ್ಲಾ ದಂಗೆಯೆದ್ದು ದ್ರಾವಿಡತನವನ್ನು ಮೆರೆದಿದ್ದಾರೆ. ಕನ್ನಡಿಗರರಿಗೆ ಆ ಭಾಷಾಭಿಮಾನವಾಗಲೀ, ಸ್ವಾಭಿಮಾನವಾಗಲೀ ಇಲ್ಲ. ಲಾಗಾಯ್ತಿನಿಂದ ಒಬ್ಬ ಮಂತ್ರಿಯನ್ನು ಕೈಬಿಡುವುದಕ್ಕೂ ಇನ್ನೊಬ್ಬರನ್ನು
ಸೇರಿಸಿಕೊಳ್ಳುವುದಕ್ಕೂ ಸಹ ಮುಖ್ಯಮಂತ್ರಿಯವರು ದೆಹಲಿ ದರ್ಬಾರ್‌ಗೆ ಹೋಗಿ ಹೈಕಮಾಂಡಿನ ಬಾಗಿಲು ಕಾಯುವ ಪರಿಸ್ಥಿತಿ ಉದ್ಭವಿಸಿದೆ. ಇದಕ್ಕೆಲ್ಲಾ ಕಾರಣ ಕರ್ನಾಟಕದ ಶಾಸಕರು, ಸಂಸದರು ಮತ್ತು ರಾಜ್ಯಸರ್ಕಾರದ ದೌರ್ಬಲ್ಯ. ಬಗ್ಗಿದಷ್ಟೂ ಉತ್ತರದವರ ಪಾರುಪತ್ಯ ಎದ್ದು ಕಾಣುತ್ತದೆ. ಹಾಗಾದರೆ ಏನು ಮಾಡಬೇಕು?

ಏನು ಮಾಡಬೇಕು ಎಂಬುದನ್ನು ಕುವೆಂಪು 1965ರಲ್ಲೇ ’ರಾಷ್ಟ್ರಕವಿ ಪ್ರಶಸ್ತಿ’ ಸ್ವೀಕಾರ ಮಾಡಿದ ಸಂದರ್ಭದಲ್ಲಿ ಹೀಗೆ ಹೇಳಿದ್ದಾರೆ: “ಮಹನೀಯರೆ, ಕೊನೆಯದಾಗಿ ಅಧಿಕೃತ ಶಾಸನಕರ್ತರಾದ ನಿಮ್ಮಲ್ಲಿ ಅನಧಿಕೃತ ಶಾಸನಕರ್ತನಾದ ನನ್ನ ಒಂದು ಅಹವಾಲು; ಅದು ಇಂಗ್ಲಿಷ್ ಭಾಷೆಗೂ ಶಿಕ್ಷಣ ಮಾಧ್ಯಮಕ್ಕೂ ಸಂಬಂಧಪಟ್ಟಿದ್ದು. ವಿವರಕ್ಕಾಗಲಿ ವಾದಕ್ಕಾಗಲಿ ಜಿಜ್ಞಾಸೆಗಾಗಲಿ ನಾನೀಗ ಕೈ ಹಾಕುವುದಿಲ್ಲ. ಅದು ತತ್ಸಮಯ ಸಾಧ್ಯವು ಅಲ್ಲ; ಅದಕ್ಕಿಲ್ಲಿ ಕಾಲಾವಕಾಶವೂ ಇಲ್ಲ. ತಮ್ಮ ಗಮನವನ್ನು ಅತ್ತಕಡೆ ಎಳೆದು, ಅದು ತಮ್ಮ ಶೀಘ್ರ ಪರಿಶೀಲನೆಗೂ ಇತ್ಯರ್ಥಕ್ಕೂ ಒಳಗಾಗುವಂತೆ ಮಾಡುವುದೆ ನನ್ನ ಸದ್ಯ ಪ್ರಯತ್ನದ ಮುಖ್ಯ ಉದ್ದೇಶ. ಆ ವಿಚಾರವಾಗಿ ನಮ್ಮ ರಾಷ್ಟ್ರಪಿತನಾದಿಯಾಗಿ ಸಾವಿರಾರು ದೇಶಭಕ್ತರೂ ನೂರಾರು ಸ್ವದೇಶೀಯ ಮತ್ತು ವಿದೇಶೀಯ ವಿದ್ಯಾತಜ್ಞರೂ ಹೇಳಿದ್ದಾರೆ, ಮಾತನಾಡಿದ್ದಾರೆ, ಬರೆದಿದ್ದಾರೆ. ಹೊತ್ತಗೆಗಳನ್ನೆ ಪ್ರಕಟಿಸಿಯೂ ಇದ್ದಾರೆ. ಆದರೆ ನಮ್ಮ ದೇಶದ ಪ್ರಚ್ಛನ್ನ ಶತ್ರುಗಳಾದ ಸ್ವಾರ್ಥಸಾಧಕ ಪಟ್ಟಭದ್ರ ಹಿತಾಸಕ್ತ ಪ್ರತಿಗಾಮಿ ಶಕ್ತಿಗಳು, ಮಕ್ಕಳಿಗೆ ಹಾಲುಣಿಸುವ ನೆವದಿಂದ ಅವರನ್ನು ಕೊಲ್ಲುತ್ತಿದ್ದ ಭಾಗವತ ಪುರಾಣದ ಪೂತನಿಯಂತೆ, ಬಲಾತ್ಕಾರದ ಇಂಗ್ಲಿಷ್ ಭಾಷೆಯಿಂದಲೂ ಇಂಗ್ಲಿಷ್ ಮಾಧ್ಯಮದಿಂದಲೂ ವರ್ಷವರ್ಷವೂ ಪರೀಕ್ಷೆಯ ಜಿಲೊಟಿನ್ನಿಗೆ ಕೋಟ್ಯಾಂತರ ಬಾಲಕರ ಮತ್ತು ತರುಣರ ತಲೆಗಳನ್ನು ಬಲಿಕೊಡುತ್ತಿದ್ದಾರೆ. ಆ ನಷ್ಟದ ಪರಿಮಾಣವನ್ನು ಊಹಿಸಲೂ ಸಾಧ್ಯವಿಲ್ಲ. ಬಹುಶಃ ಸರಿಯಾಗಿ ಲೆಕ್ಕ ಹಾಕಿದರೆ, ನಾಲ್ಕಾರು ಪಂಚವಾರ್ಷಿಕ ಯೋಜನೆಗಳ ಮೊತ್ತವೆ ಆದರೂ ಆಗಬಹುದೇನೊ!”

“ಇಂಗ್ಲಿಷ್ ಭಾಷೆ ಬಲಾತ್ಕಾರದ ಸ್ಥಾನದಿಂದ ಐಚ್ಛಿಕ ಸ್ಥಾನಕ್ಕೆ ನಿಯಂತ್ರಣಗೊಳ್ಳದಿದ್ದರೆ, ಇಂಗ್ಲಿಷ್ ಶಿಕ್ಷಣ ಮಾಧ್ಯಮ ತೊಲಗಿ ಪ್ರಾದೇಶಿಕ ಭಾಷೆಗೆ ಆ ಸ್ಥಾನ ಲಭಿಸದಿದ್ದರೆ, ನಮ್ಮ ದೇಶ ಹತ್ತೇ ವರ್ಷಗಳಲ್ಲಿ ಸಾಧಿಸಬೇಕಾದುದನ್ನು ಇನ್ನೊಂದು ನೂರು ವರ್ಷಗಳಲ್ಲಿಯೂ ಸಾಧಿಸಲಾರದೆ ನಿತ್ಯ ರೋಗಿಯಂತಿರಬೇಕಾಗುತ್ತದೆ.”

ಇಂದಿಗೂ ಪರಿಸ್ಥಿತಿ ಕುವೆಂಪು ಅಂದು ಹೇಳಿದ ಹಾಗೇ ಇದೆ. ಬದಲಾಗಿರುವುದೇನೆಂದರೆ ಇಂಗ್ಲಿಷಿನ ಸ್ಥಾನಕ್ಕೆ ಹಿಂದಿಯನ್ನು ತರಲಾಗುತ್ತಿದೆ ಅಷ್ಟೇ! ಇದು ವಿದ್ಯಾರ್ಥಿಗಳ, ರೈತರ, ದಲಿತರ ಮಕ್ಕಳ ದನಿಯನ್ನು ಹತ್ತಿಕ್ಕುತ್ತದೆ. ಅಳದ ಕಂದನಿಗೆ ಯಾವ ತಾಯಿಯೂ ಹಾಲೂಡುವುದಿಲ್ಲ! ಮುಖ್ಯ ನಮ್ಮ ಜನಪ್ರತಿನಿಧಿಗಳು ಹೈಕಮಾಂಡ್ ಹೇಳಿದ ಮಾತಿಗೆಲ್ಲಾ ’ಕೌಲೆ ಬಸವಣ್ಣನಂತೆ ತಲೆ ಹಾಕದೆ’ ಲೋಕಸಭೆಯಲ್ಲಿ ವಿಧಾನಸಭೆಯಲ್ಲಿ ಎದ್ದುನಿಂತು ಪ್ರಾದೇಶಿಕ ಭಾಷೆಗಳ ಪರವಾಗಿ ದನಿ ಎತ್ತಬೇಕು. ಬಂಗಾಳಿ, ತಮಿಳು ಮುಂತಾದ ಭಾಷೆಗಳಂತೆ ಕನ್ನಡದ ’ಅಸ್ಮಿತೆ’ಯನ್ನು ನಾವು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯತತ್ಪರರಾಗಬೇಕು. ಇಲ್ಲವಾದರೆ ಕನ್ನಡ ಭಾಷೆಯೊಂದಿಗೆ ಕನ್ನಡ ಜನಾಂಗವೂ ಕಣ್ಮರೆಯಾಗುವ ಕಾಲ ದೂರವಿಲ್ಲ! ಈ ನಿಟ್ಟಿನಲ್ಲಿ ನಮ್ಮ ಮಾಧ್ಯಮಗಳ ಜವಾಬ್ದಾರಿ ಎಷ್ಟಿದೆಯೆಂಬುದನ್ನು ಒತ್ತಿ ಹೇಳಬೇಕಾಗಿಲ್ಲ.

ಪ್ರೊ. ಶಿವರಾಮಯ್ಯ

ಪ್ರೊ. ಶಿವರಾಮಯ್ಯ
ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ ಶಿವರಾಮಯ್ಯನವರು ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು. ಸ್ವಪ್ನ ಸಂಚಯ (ಕವನ ಸಂಕಲನ), ಉರಿಯ ಉಯಾಲೆ (ವಿಮರ್ಶಾ ಬರಹಗಳ ಸಂಕಲನ), ದನಿ ಇಲ್ಲದವರ ದನಿ, ಪಂಪಭಾರತ ಭಾಗ-1 &2 (ಸಂಪಾದನೆ ಮತ್ತು ಗದ್ಯಾನುವಾದ) ಅವರ ಪುಸ್ತಕಗಳಲ್ಲಿ ಕೆಲವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ರಾಷ್ಟ್ರೀಯ ಭಾಷೆಯ ಕಲ್ಪನೆ ಮತ್ತು ಕನ್ನಡದ ಅಸ್ಮಿತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...