ಈ ವರ್ಷದ ಗಣರಾಜ್ಯೋತ್ಸವ ಪರೇಡ್ನಲ್ಲಿ ರಾಜ್ಯದ ಟ್ಯಾಬ್ಲೊ(ಸ್ತಬ್ಧಚಿತ್ರ)ಗೆ ಅನುಮತಿ ನಿರಾಕರಣೆ ಮಾಡಿದ್ದ ಒಕ್ಕೂಟ ಸರ್ಕಾರ ಇದೀಗ ತನ್ನ ಮನಸ್ಸನ್ನು ಬದಲಾಯಿಸಿದ್ದು, ಕರ್ನಾಟಕಕ್ಕೆ ಅವಕಾಶ ನೀಡುವುದಾಗಿ ಹೇಳಿದೆ. ಟ್ಯಾಬ್ಲೊಗೆ ಅವಕಾಶ ನಿರಾಕರಣೆ ಮಾಡಿರುವುದರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ಗುರಿಯಾಗಿಟ್ಟುಕೊಂಡು ವಿರೋಧ ಪಕ್ಷಗಳು ಮತ್ತು ಕನ್ನಡ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದವು.
ಟ್ಯಾಬ್ಲೊಗೆ ಅವಕಾಶ ನೀಡದೆ ಇರುವುದು ರಾಜ್ಯದಲ್ಲಿ ಆಕ್ರೋಶ ಉಂಟಾಗಿತ್ತು. ಮುಂದಿನ ಕೆಲವೇ ತಿಂಗಳಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿರುವುದರಿಂದ ಇದು ಬಿಜೆಪಿಗೆ ಹಿನ್ನಡೆಯೆಂದು ಕೂಡಾ ಅರ್ಥೈಸಲಾಗಿತ್ತು. ಹೀಗಾಗಿ ಒಕ್ಕೂಟ ಸರ್ಕಾರ ತನ್ನ ಮನಸ್ಸನ್ನು ಬದಲಾಯಿಸಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಗುರುವಾರ ರಾಜ್ಯ ಸರ್ಕಾರಕ್ಕೆ ಒಕ್ಕೂಟ ಸರ್ಕಾರವು ಬರೆದಿರುವ ಹೊಸ ಪತ್ರದಲ್ಲಿ, ರಕ್ಷಣಾ ಸಚಿವಾಲಯವು ಕರ್ನಾಟಕದ ಟ್ಯಾಬ್ಲೊವನ್ನು ಶಾರ್ಟ್ಲಿಸ್ಟ್ ಮಾಡಲಾಗಿದೆ ಎಂದು ಹೇಳಿದೆ.
“ಈ ವರ್ಷದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ಥಬ್ದಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕಕ್ಕೆ ಮಾಡಿರುವ ಅವಮಾನ. ಕರ್ನಾಟಕದ ಸ್ತಬ್ಧಚಿತ್ರವನ್ನು ತಿರಸ್ಕರಿಸಿರುವುದು ಬಿಜೆಪಿ ನಮ್ಮ ರಾಜ್ಯದ ಹೆಮ್ಮೆಯನ್ನು ಎತ್ತಿಹಿಡಿಯುವ ಬಗ್ಗೆ ಎಷ್ಟು ಗಂಭೀರವಾಗಿದೆ ಎಂಬುದನ್ನು ಪ್ರತಿಬಿಂಬಿಸುತ್ತದೆ” ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಈ ಹಿಂದೆ ಆಕ್ರೋಶ ವ್ಯಕ್ತಪಡಿಸಿದ್ದರು.
ಕಳೆದ ಎಂಟು ವರ್ಷಗಳಿಂದ ಕೈಬಿಟ್ಟಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಕ್ಷಣಾ ಸಚಿವಾಲಯ ಅವಕಾಶ ನೀಡಲು ಬಯಸಿದ್ದರಿಂದ ಈ ಬಾರಿ ಕರ್ನಾಟಕಕ್ಕೆ ಅವಕಾಶ ನೀಡಿಲ್ಲ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರದ ಕ್ರಮವನ್ನು ಸಮರ್ಥಿಸಿಕೊಂಡಿತ್ತು.
ಏತನ್ಮಧ್ಯೆ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಕೂಡಾ ತಮ್ಮ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದರು ಮತ್ತು ತಜ್ಞರು ತೆಗೆದುಕೊಳ್ಳುವ ನಿರ್ಧಾರಗಳಲ್ಲಿ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದ್ದರು.
ಕಳೆದ ವರ್ಷ ಕೇರಳ ಸರ್ಕಾರವು ನಾರಾಯಣ ಗುರು ಅವರ ಬಗ್ಗೆಗಿನ ಸ್ತಬ್ಧಚಿತ್ರವನ್ನು ನಿರ್ಮಾಣ ಮಾಡಿಕೊಂಡಿತ್ತು. ಆದರೆ ಕೇಂದ್ರ ಸರ್ಕಾರ ಕೇರಳಕ್ಕೆ ಅವಕಾಶ ನೀಡದ ಕಾರಣ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಕರಾವಳಿಯ ಬಿಲ್ಲವ ಸಂಘಟನೆಗಳು ಇದನ್ನು ವಿರೋಧಿಸಿ ನಾರಾಯಣ ಗುರುಗಳ ಟ್ಯಾಬ್ಲೋ ರ್ಯಾಲಿ ನಡೆಸಿತ್ತು.