ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯನ್ನು ಕಡ್ಡಾಯಗೊಳಿಸುವ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ’ವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ.
ವಿಧಾನಸಭೆ ಅಧಿವೇಶನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಶಿವರಾಜ ತಂಗಡಗಿ ಅವರ ಪರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧೇಯಕವನ್ನು ಮಂಡಿಸಿದ್ದಾರೆ. ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್ಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರಮಾಣದಲ್ಲಿ ಪ್ರದರ್ಶಿಸುವುದನ್ನು ವಿಧೇಯಕದಲ್ಲಿ ಕಡ್ಡಾಯಗೊಳಿಸಲಾಗಿದೆ.
ಇದಕ್ಕೆಂದು ಅಧಿನಿಯಮದ ಸೆಕ್ಷನ್ 13ಕ್ಕೆ ತಿದ್ದುಪಡಿ ತರಲಾಗಿದ್ದು, ಭಾಷಾ ಅನುಷ್ಠಾನ ರಾಜ್ಯ ಸಮಿತಿಗೆ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ನಿರ್ದೇಶಕರನ್ನು ಸದಸ್ಯರನ್ನಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರನ್ನು ಸಂಚಾಲಕರನ್ನಾಗಿಯೂ ನೇಮಿಸಲು ನಿರ್ಧರಿಸಲಾಗಿದೆ.
ವಿಧೇಯಕದಲ್ಲಿ 100ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ರಾಜ್ಯ, ಕೇಂದ್ರ ಸರಕಾರಿ ಸಂಸ್ಥೆಗಳಲ್ಲಿ ಕನ್ನಡ ಕೋಶ ಸ್ಥಾಪನೆಗೆ ಸೂಚನೆ, ದಿನ ನಿತ್ಯದ ವ್ಯವಹಾರಗಳ ನಿರ್ವಹಣೆಯಲ್ಲಿ ಕನ್ನಡ ಭಾಷೆ ಬಳಕೆಗೆ ಹಿರಿಯ ಉದ್ಯೋಗಿಗಳ ನೇತೃತ್ವದಲ್ಲಿ ಕನ್ನಡ ಕೋಶ ಸ್ಥಾಪಿಸಲು ಸೂಚನೆ, ಕನ್ನಡ ಭಾಷೆ ಮಾತನಾಡಲು ಬರದ ಉದ್ಯೋಗಿಗಳಿಗೆ ಕನ್ನಡ ಪರಿಚಯಿಸಲು ಕನ್ನಡ ಕಲಿಕಾ ಘಟಕ ಸ್ಥಾಪಿಸಲು ಸೂಚನೆ, ರಾಜ್ಯದ ಬ್ಯಾಂಕ್, ಹಣಕಾಸು ಸಂಸ್ಥೆಗಳಲ್ಲಿ ಸಾರ್ವಜನಿಕರ ಜೊತೆಗಿನ ಸಂಪರ್ಕ, ಪತ್ರ ವ್ಯವಹಾರಗಳಲ್ಲಿ ಕನ್ನಡ ಕಡ್ಡಾಯ, ರಸ್ತೆಗಳು, ಬಡಾವಣೆ ಪ್ರದೇಶದ ನಾಮಫಲಕದಲ್ಲೂ ಕನ್ನಡ ಕಡ್ಡಾಯ, ರಾಜ್ಯದೊಳಗೆ ತಯಾರಿಸಿದ ಉತ್ಪನ್ನಗಳ ಹೆಸರು, ಮಾಹಿತಿಯಲ್ಲೂ ಇತರ ಭಾಷೆಯ ಜೊತೆಗೆ ಕನ್ನಡ ಕಡ್ಡಾಯದ ಬಗ್ಗೆ ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.
ಮಸೂದೆಯ ಮೂಲಕ ಇನ್ನು ಮುಂದೆ ನಾಮಫಲಕಗಳಲ್ಲಿ ಕಾಟಾಚಾರಕ್ಕೆ ಮಾತ್ರ ಕನ್ನಡ ಬರದಂತೆ ಮಾಡುವುದು ಅಥವಾ ನಾಮಫಲಕದ ಒಂದು ಮೂಲೆಯಲ್ಲಿ ಮಾತ್ರ ಕನ್ನಡ ಭಾಷೆ ಬಳಸುವುದಕ್ಕೆ ಕಡಿವಾಣ ಬೀಳಲಿದೆ. ಅನೇಕ ಕಡೆಗಳಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಇಂತಹ ನಿರ್ಲಕ್ಷ್ಯ ಎದ್ದು ಕಾಣುತ್ತಿತ್ತು. ಇದೇ ಕಾರಣಕ್ಕೆ ಕನ್ನಡಪರ ಸಂಘಟನೆಗಳು ಹಲವು ಬಾರಿ ಪ್ರತಿಭಟನೆ ನಡೆಸಿದ್ದವು. ಬೇರೆ ರಾಜ್ಯಗಳಲ್ಲಿ ಅಲ್ಲಿನ ಸ್ಥಳೀಯ ಭಾಷೆಗಳು ಎದ್ದು ಕಾಣುವಂತೆಯೇ ಕರ್ನಾಟಕದಲ್ಲೂ ಆಗಬೇಕು ಎಂದು ಆಗ್ರಹಿಸಲಾಗಿತ್ತು.
ಕನ್ನಡ ಬಳಕೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದ ಬಿಬಿಎಂಪಿ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ ಅನುಮತಿ ಪಡೆದ ಎಲ್ಲಅಂಗಡಿ-ಮುಂಗಟ್ಟುಗಳು, ಹೋಟೆಲ್ಗಳು, ಮಾಲ್ಗಳು, ಕಂಪನಿಗಳು, ವಾಣಿಜ್ಯ ಸಂಸ್ಥೆಗಳು ಸಾರ್ವತ್ರಿಕವಾಗಿ ಪ್ರದರ್ಶಿಸುವ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಅಗ್ರಸ್ಥಾನ ನೀಡುವುದು ಮತ್ತು ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿಯು 2017, 2018 ಮತ್ತು 2019ರಲ್ಲಿಆದೇಶ ಹೊರಡಿಸಿತ್ತು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರು 2017ರ ಜು.18ರಂದು ಬಿಬಿಎಂಪಿಯಲ್ಲಿಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕನ್ನಡದಲ್ಲಿ ನಾಮಫಲಕ ಬರೆಸದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪಾಲಿಕೆಯ ವಿರುದ್ಧ ಶಿಸ್ತು ಕ್ರಮಕ್ಕೆ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಇದರಿಂದ ಎಚ್ಚೆತ್ತುಕೊಂಡಿದ್ದ ಬಿಬಿಎಂಪಿ, ನಗರದ ಎಲ್ಲ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳ ನಾಮಫಲಕವನ್ನು ಕನ್ನಡದಲ್ಲಿ ಬರೆಸಲು ಮಾಲೀಕರಿಗೆ ತಾಕೀತು ಮಾಡಿತ್ತು. ಆದರೆ ಈ ಆದೇಶವು ಕಾಗದಕ್ಕಷ್ಟೇ ಸೀಮಿತವಾಗಿದೆ. ಎಲ್ಲೆಡೆ ನಿಯಮ ಕಟ್ಟು ನಿಟ್ಟಾಗಿ ಪಾಲನೆ ನಡೆದಿರಲಿಲ್ಲ.
ಇದಾದ ಬಳಿಕ ಬೆಂಗಳೂರಿನಲ್ಲಿ 2024ರ ಫೆಬ್ರವರಿ ಅಂತ್ಯದೊಳಗೆ ಎಲ್ಲಾ ವಾಣಿಜ್ಯ ಸಂಸ್ಥೆಗಳು ತಮ್ಮಸಂಸ್ಥೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಪ್ರಮುಖವಾಗಿ ಅಂದರೆ ಶೇಕಡಾ 60ರಷ್ಟು ಬಳಸಬೇಕು. ಇಲ್ಲವಾದರೆ ಟ್ರೇಡ್ ಲೈಸೆನ್ಸ್ನ್ನು ಕಳೆದುಕೊಂಡು ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಬಿಬಿಎಂಪಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು.


