ಕಳೆದ ನಾಲ್ಕು ವರ್ಷಗಳಲ್ಲಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳು ಮತ್ತು ಸಾವಿನ ಸಂಖ್ಯೆ ದ್ವಿಗುಣಗೊಂಡಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ನೇಮಕಾತಿ) ಮತ್ತು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಆಯುಕ್ತ ಕೆ.ವಿ.ಶರತ್ ಚಂದ್ರ ಹೇಳಿದ್ದಾರೆ. ಅತಿವೇಗವೆ ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣ ಎಂದು ಅವರು ಪ್ರತಿಪಾದಿಸಿದ್ದಾರೆ. ರಸ್ತೆ ಅಪಘಾತ
ಬೆಂಗಳೂರಿನಲ್ಲಿ 2020 ರಲ್ಲಿ, 1,928 ರಸ್ತೆ ಅಪಘಾತ ಪ್ರಕರಣಗಳು ದಾಖಲಾಗಿದ್ದು, 2024 ರಲ್ಲಿ ಅಕ್ಟೋಬರ್ 31 ರವರೆಗೆ 3,969 ಪ್ರಕರಣಗಳು ವರದಿಯಾಗಿವೆ ಎಂದು ಅವರು ಹೇಳಿದ್ದಾರೆ. ಈ ಅವಧಿಯಲ್ಲಿ ರಸ್ತೆ ಅಪಘಾತ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದೆ. 2020 ರಲ್ಲಿ ರಸ್ತೆ ಅಪಘಾತದ ಕಾರಣಕ್ಕೆ 344 ಸಾವುಗಳು ವರದಿಯಾಗಿದ್ದು, 2024 ರಲ್ಲಿ ಇದು 723 ಕ್ಕೆ ಏರಿದೆ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಅತಿ ಹೆಚ್ಚು ರಸ್ತೆ ಅಪಘಾತಗಳು, ಗಾಯಗಳು ಮತ್ತು ಸಾವುನೋವುಗಳಲ್ಲಿ ಬೆಂಗಳೂರು ನಗರವು ರಾಜ್ಯದಲ್ಲೆ ಅಗ್ರಸ್ಥಾನದಲ್ಲಿದೆ ಎಂದು ಅವರು ಹೇಳಿದ್ದಾರೆ. ತುಮಕೂರು ನಂತರದ ಸ್ಥಾನದಲ್ಲಿದೆ ಎಂದು ಶರತ್ ಚಂದ್ರ ಹೇಳಿದ್ದಾರೆ.
ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ ಶರತ್ ಚಂದ್ರ, “ಹೆದ್ದಾರಿಗಳಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅವುಗಳ ಮೂಲಕ ಸಮಗ್ರ ಸಂಚಾರ ನಿರ್ವಹಣೆ ಪರಿಹಾರಗಳನ್ನು ಪರಿಚಯಿಸಲಾಗಿದೆ. ಆದಾಗ್ಯೂ, ರಸ್ತೆ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ ಎಂದು ಹೇಳಿದ್ದಾರೆ. ಅದರಲ್ಲೂ ಮುಖ್ಯವಾಗಿ ದ್ವಿಚಕ್ರ ವಾಹನಗಳು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ 34,178 ರಸ್ತೆ ಅಪಘಾತಗಳು 2020ರಲ್ಲಿ ವರದಿಯಾಗಿದ್ದು, ಅದರಲ್ಲಿ 9,720 ಮಂದಿ ಸಾವನ್ನಪ್ಪಿದ್ದಾರೆ. 2023ರಲ್ಲಿ 43,440 ಅಪಘಾತಗಳು ಸಂಭವಿಸಿದ್ದು, ಅದರಲ್ಲಿ 12,321 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ. ಜಾಗೃತಿ, ಉತ್ತಮ ರಸ್ತೆ ಎಂಜಿನಿಯರಿಂಗ್ ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದರೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದು ಅವರು ಪ್ರತಿಪಾದಿಸಿದ್ದಾರೆ.
ಬ್ಲೂಮ್ಬರ್ಗ್ ಫಿಲಾಂತ್ರಪೀಸ್ ಇನಿಶಿಯೇಟಿವ್ ಫಾರ್ ಗ್ಲೋಬಲ್ ರೋಡ್ ಸೇಫ್ಟಿ ಅಡಿಯಲ್ಲಿ ಜಾಗತಿಕ ಸಾರ್ವಜನಿಕ ಆರೋಗ್ಯ ಸಂಸ್ಥೆಯಾದ ವೈಟಲ್ ಸ್ಟ್ರಾಟಜೀಸ್ನ ತಾಂತ್ರಿಕ ಬೆಂಬಲದೊಂದಿಗೆ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ‘ಮೋಟಾರ್ ಸೈಕಲ್ ಪುನರ್ನಿರ್ಮಾಣ’ ಅಭಿಯಾನಕ್ಕೆ ಮಂಗಳವಾರ ಬೆಂಗಳೂರಿನಲ್ಲಿ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.


