Homeಕರ್ನಾಟಕದೇವನಹಳ್ಳಿ ಭೂಮಿ ಹೋರಾಟಕ್ಕೆ 'ಸಂಯುಕ್ತ ಕಿಸಾನ್ ಮೋರ್ಚಾ' ಬೆಂಬಲವಿದೆ: ಡಾ. ದರ್ಶನ್‌ ಪಾಲ್‌

ದೇವನಹಳ್ಳಿ ಭೂಮಿ ಹೋರಾಟಕ್ಕೆ ‘ಸಂಯುಕ್ತ ಕಿಸಾನ್ ಮೋರ್ಚಾ’ ಬೆಂಬಲವಿದೆ: ಡಾ. ದರ್ಶನ್‌ ಪಾಲ್‌

ಸರ್ಕಾರ ಬಿಜಿನೆಸ್‌ ಮಾಡುವುದಿದ್ದರೆ ಬೇರೆ ಕಡೆ ಮಾಡಲಿ: ಟಿಕಾಯತ್

- Advertisement -
- Advertisement -

ಚನ್ನರಾಯಪಟ್ಟಣ 13 ಹಳ್ಳಿಗಳ ಬಲವಂತದ ಭೂಸ್ವಾಧೀನ ವಿರೋಧಿಸಿ ನಡೆಯುತ್ತಿರುವ ದೇವನಹಳ್ಳಿ ಭೂಮಿ ಹೋರಾಟಕ್ಕೆ ‘ಸಂಯುಕ್ತ ಕಿಸಾನ್ ಮೋರ್ಚಾ’ ಬೆಂಬಲವಿದೆ ಎಂದು ಸಮಿತಿ ಮುಖಂಡರಾದ ಡಾ. ದರ್ಶನ್‌ ಪಾಲ್‌ ಘೋಷಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕಿನ ಭೂಮಿ ಸತ್ಯಾಗ್ರಹ ವೇದಿಕೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬೆಂಗಳೂರು ನಗರಕ್ಕೆ ಇಷ್ಟು ಹತ್ತಿರವಿದ್ದೂ ತಮ್ಮ ಭೂಮಿಯನ್ನು ಬಿಡುವುದಿಲ್ಲವೆಂದು ಸುಮಾರು ಮೂರೂವರೆ ವರ್ಷಗಳಿಂದ ಹೋರಾಟ ನಡೆಸುತ್ತಿರುವ ರೈತರಿಗೆ ಅಭಿನಂದನೆಗಳು. ಈ ಹೋರಾಟ ಮಾದರಿಯಾದದ್ದು. ಈಚೆಗೆ ಎಸ್‌.ಕೆ.ಎಂ ಸಭೆ ನಡೆಸಲಾಗಿದ್ದು, ಎರಡು ವಿಚಾರಗಳಿಗೆ ಬೆಂಬಲವನ್ನು ನೀಡಬೇಕೆಂದು ನಿರ್ಧಾರವಾಗಿದೆ. ಮೊದಲನೇಯದ್ದು, ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೀಡಿರುವ ‘ಅಖಿಲ ಭಾರತ ಮುಷ್ಕರ’ಕ್ಕೆ ಬೆಂಬಲ ನೀಡಬೇಕೆಂಬುದು. ಹಾಗೆಯೇ, ಭೂಸ್ವಾಧೀನಗಳ ವಿರುದ್ಧದ ರೈತರ ಹೋರಾಟವನ್ನು ಬೆಂಬಲಿಸಲು ನಿರ್ಧರಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ದೆಹಲಿಯಲ್ಲಿ ಕೇಂದ್ರ ಸರ್ಕಾರದ ಕರಾಳ ಕಾಯ್ದೆಗಳ ವಿರುದ್ಧ ಹದಿಮೂರು ತಿಂಗಳು ನಿರಂತರ ಹೋರಾಟ ನಡೆಸಿ ಗೆಲುವು ಸಾಧಿಸಿದೆವು. ಆದರೆ, ಇಲ್ಲಿನ ರೈತರು ಮೂರೂವರೆ ವರ್ಷ ಹೋರಾಡಿದ್ದಾರೆ. ದೇಶದಾದ್ಯಂತ ಭೂಸ್ವಾಧೀನ ನಡೆಯುವಾಗ ಪ್ಯಾಕೇಜ್‌ ಬಗ್ಗೆ ಚರ್ಚೆಯಾಗುತ್ತದೆ; ಆದರೆ ಇಲ್ಲಿನ ರೈತರು ಜಮೀನು ಕೊಡುವುದಿಲ್ಲ ಎಂದು ನಿರ್ಧರಿಸಿ, ಇಂದಿಗೂ ಆ ನಿಲುವಿಗೆ ಬದ್ಧರಾಗಿದ್ದಾರೆ. ಆ ಕಾರಣಕ್ಕೆ ಇದು ವಿಶಿಷ್ಟವಾದ ಹೋರಾಟ” ಎಂದು ಅವರು ಹೋರಾಟನಿರತ ರೈತರನ್ನು ಅಭಿನಂದಿಸಿದರು.

ಎಸ್‌ಕೆಎಂ ಮುಖಂಡರಾದ ಡಾ. ಸುನಿಲಮ್‌ ಮಾತನಾಡಿ, “ಈ ರೈತ ಆಂದೋಲನದ ಸಮಯದಲ್ಲಿ ನಡೆದ ಪೊಲೀಸ್‌ ದೌರ್ಜನ್ಯ ಖಂಡನೀಯ, ದಬ್ಬಾಳಿಕೆ ನಡೆಸಿದ ಪೊಲೀಸರ ಮೇಲೆ ಕಾನೂನು ಕ್ರಮ ಆಗಬೇಕೆಂದು ಎಸ್‌.ಕೆ.ಎಂ ಒತ್ತಾಯಿಸುತ್ತದೆ. ದರ್ಶನ್‌ ಪಾಲ್‌ ಅವರು ಹೇಳಿದಂತೆ ಇದು ವಿಶಿಷ್ಟ ಹೋರಾಟ, ಈ ಹೋರಾಟದ ಪ್ರತಿನಿಧಿಗಳೊಂದಿಗೆ ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕರೆದಿರುವ ಸಭೆ ಇದೆ. ಅದು ಯಶಸ್ವಿಯಾಗುತ್ತದೆಂದು ನಾವು ಭರವಸೆ ಇಟ್ಟಿದ್ದೇವೆ. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರು ಇಡೀ ದೇಶಾದ್ಯಂತ ಸುತ್ತಾಡಿ ಎನ್‌ಡಿಎ ಸರ್ಕಾರದ ಕರಾಳ ಕಾನೂನುಗಳ ವಿರುದ್ಧ ಮಾತನಾಡುವವರು, ತಮ್ಮದೇ ಪಕ್ಷದ ಸರ್ಕಾರ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಅವರು ರೈತರಿಗೆ ನ್ಯಾಯ ಸಿಗುವುದನ್ನು ಖಾತ್ರಿ ಪಡಿಸಬೇಕಲ್ಲವೇ? ಹಾಗೆಯೇ ʼಜನಚಳವಳಿಗಳ ರಾಷ್ಟೀಯ ವೇದಿಕೆʼ (ಎನ್‌ಎಪಿಎಂ) ಮುಖಂಡರಾದ ಮೇಧಾ ಪಾಟ್ಕರ್‌ ಅವರೂ ಕೂಡಾ ಮುಖ್ಯಮಂತ್ರಿಯವರಿಗೆ ಒಂದು ಪತ್ರ ಬರೆದು ದೇವನಹಳ್ಳಿಯ ರೈತರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಿದ್ಧರಾಮಯ್ಯನವರಿಗೆ ನೆನಪಿಸಲು ಬಯಸುತ್ತೇನೆ, ಅವರ ಸರ್ಕಾರ ಅಧಿಕಾರಕ್ಕೆ ಬರಲು ದಾರಿಮಾಡಿಕೊಟ್ಟ ಎಲ್ಲ ಚಳುವಳಿಗಾರರೂ ಇಂದು ದೇವನಹಳ್ಳಿಯ ಹೋರಾಟದ ಜೊತೆಗಿದ್ದಾರೆ. ಇದನ್ನು ಅವರು ಗಂಭೀರವಾಗಿ ಪರಿಗಣಿಸುತ್ತಾರೆಂದು ನಂಬಿದ್ದೇನೆ” ಎಂದು ಹೇಳಿದರು.

ಉತ್ತರಪ್ರದೇಶದಿಂದ ಬಂದಿರುವ ಎಸ್‌.ಕೆ.ಎಂನ ರಾಷ್ಟ್ರೀಯ ನಾಯಕರಾದ ಯುಧ್‌ವೀರ್‌ ಸಿಂಗ್‌ ಅವರು ಮಾತನಾಡುತ್ತಾ, “ರೈತರು ಹೆಚ್ಚೂಕಡಿಮೆ 1200 ದಿನಗಳ ಕಾಲ ಹೋರಾಟ ನಡೆಸಿದ್ದಾರೆ ಎಂದರೆ ಅದೇನೂ ಕಡಿಮೆ ವಿಚಾರವಲ್ಲ; ಸ್ವತಃ ಸಿದ್ಧರಾಮಯ್ಯ ಅವರು ಈ ರೈತರಿಗೆ ಭೂಸ್ವಾಧೀನವನ್ನು ರದ್ದುಪಡಿಸುವ ಭರವಸೆಯನ್ನು ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ನೀಡಿದ್ದಾರೆ, ಆ ಮಾತನ್ನು ಅವರು ಉಳಿಸಿಕೊಳ್ಳಬೇಕಿದೆ. ಸಿದ್ಧರಾಮಯ್ಯ ಅವರನ್ನು ಮಾತನಾಡಿಸುವಾಗ, ಅವರು ನಮ್ಮಲ್ಲೇ ಒಬ್ಬರೇನೋ ಎಂದು ಅನಿಸುತ್ತದೆ. ಹಾಗೆಯೇ, ರೈತರ ನಡುವಿನಿಂದ ಹೋದವರೊಬ್ಬರು ಮುಖ್ಯಮಂತ್ರಿಗಳಾದಾಗ ಅವರ ಮೇಲೆ ರೈತರ ನಿರೀಕ್ಷೆ ಬಹಳ ಹೆಚ್ಚಿದೆ, ಇಂತಹ ರಾಜ್ಯದಲ್ಲಿ ರೈತರಿಗೆ ಈ ಸ್ಥಿತಿ ಬರಲೇಬಾರದಿತ್ತು” ಎಂದು ಬೇಸರ ವ್ಯಕ್ತಪಡಿಸಿದರು.

ಉತ್ತರ ಪ್ರದೇಶದಿಂದ ಸಾವಿರಾರು ರೈತರನ್ನು ಕರೆದುಕೊಂಡು ಬರುತ್ತೇವೆ

“ನಾವು ಕರ್ನಾಟಕಕ್ಕೆ ಮೊದಲ ಬಾರಿಗೆ ಬರುತ್ತಿರುವುದಲ್ಲ, ಈ ಹಿಂದೆ 90ರ ದಶಕದಲ್ಲಿ ಮಹೇಂದ್ರ ಸಿಂಗ್‌ ಟಿಕಾಯತ್‌ ಅವರು ಬಂದಿದ್ದಾಗ 1500 ರೈತರನ್ನು ಕರೆದುಕೊಂಡು ನಾವು ಉತ್ತರ ಪ್ರದೇಶದಿಂದ ಕರ್ನಾಟಕದ ರೈತರಿಗೆ ಬೆಂಬಲ ನೀಡಲು ಬಂದಿದ್ದೆವು; ನಾಳೆಯ ಸಭೆಯಲ್ಲಿ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಈ ಸಮಸ್ಯೆಯನ್ನು ಬಗೆಹರಿಸುತ್ತಾರೆಂಬ ನಿರೀಕ್ಷೆ ವ್ಯಕ್ತಪಡಿಸುತ್ತಿದ್ದೇನೆ. ಒಂದು ವೇಳೆ ಹಾಗಾಗದಿದ್ದರೆ, ಇಲ್ಲಿನ ಸಂಯುಕ್ತ ಹೋರಾಟ-ಕರ್ನಾಟಕ ದೇವನಹಳ್ಳಿಯ ರೈತರ ಜೊತೆಗೂಡಿ ಏನು ನಿರ್ಧಾರ ಕೈಗೊಳ್ಳುತ್ತದೋ ಮುಂದಿನ ಹೋರಾಟದ ಆ ಕಾರ್ಯತಂತ್ರಕ್ಕೆ ಸಂಯುಕ್ತ ಕಿಸಾನ್‌ ಮೋರ್ಚಾದ ಸಂಪೂರ್ಣ ಬೆಂಬಲ ಇರುತ್ತದೆ, ನಾವು ಸಾವಿರಾರು ರೈತರನ್ನು ಕರೆದುಕೊಂಡು ಇಲ್ಲಿಗೆ ಬಂದಿಳಿಯಬೇಕಾಗುತ್ತದೆ, ಇದನ್ನು ನಾನು ಭಾರವಾದ ಹೃದಯದಿಂದ ಹೇಳುತ್ತಿದ್ದೇನೆ, ಅಂತಹ ಸ್ಥಿತಿ ಬರದಿರಲಿ ಎಂದು ಆಶಿಸುತ್ತೇನೆ” ಎಂದರು.

ಸರ್ಕಾರ ಬಿಜಿನೆಸ್‌ ಮಾಡುವುದಿದ್ದರೆ ಬೇರೆ ಕಡೆ ಮಾಡಲಿ: ಟಿಕಾಯತ್

ರೈತ ಮುಖಂಡರಾದ ರಾಕೇಶ್‌ ಟಿಕಾಯತ್‌ ಮಾತನಾಡಿ, “ಈ ಚಳವಳಿ ನಡೆಯುತ್ತಿರುವುದು ಭೂಮಿಯ ರಕ್ಷಣೆಗಾಗಿ, ಇಡೀ ದೇಶದ ಕಣ್ಣು ಈ ಚಳವಳಿಯ ಮೇಲಿದೆ, ಪೂರ್ತಿ ಮೂರೂವರೆ ವರ್ಷ ನಡೆದಿದೆ. ಬಹಳಷ್ಟು ಚಳವಳಿಗಳಲ್ಲಿ ರೈತರು ಸರ್ಕಾರದ ಜೊತೆಗೆ ಮಾತುಕತೆಗೆ ಕೂರುತ್ತಾರೆ. ಆದರೆ, ಇಲ್ಲಿನ ರೈತರು, ‘ನಮಗೆ ಮಾತುಕತೆ ಬೇಕಾಗಿಯೇ ಇಲ್ಲ, ಭೂಮಿ ಕೊಡುವುದಿಲ್ಲ’ ಎಂದು ಹೇಳಿದ್ದಾರೆ; ಆ ಕಾರಣದಿಂದ ಇದು ಬಹಳ ವಿಶೇಷವಾದ ಹೋರಾಟ. ಇಡೀ ದೇಶದ ರೈತರು, ಹೋರಾಟಗಾರರು ರೈತರ ಜೊತೆಗಿದ್ದಾರೆ. ಸರ್ಕಾರ ಬಿಜಿನೆಸ್‌ ಮಾಡುವುದಿದ್ದರೆ ಬೇರೆ ಕಡೆ ಮಾಡಲಿ, ರೈತರು ಭೂಮಿ ಕೊಡುವುದಿಲ್ಲ ಎಂದ ಮೇಲೆ ರೈತರಿಗೆ ಅವರ ಭೂಮಿ ಕಸಿಯಲು ಯಾವುದೇ ಅಧಿಕಾರ ಇಲ್ಲ” ಎಂದು ಸರ್ಕಾರಕ್ಕೆ ಸಂದೇಶ ನೀಡಿದರು.

“ದೆಹಲಿಯಲ್ಲಿ ಎಸ್‌ಕೆಎಂ ಸಭೆಯಲ್ಲಿ ಈಗಾಗಲೇ ಈ ಹೋರಾಟದ ವಿಚಾರ ಅಜೆಂಡಾದಲ್ಲಿದೆ, ಒಂದು ವೇಳೆ ನಾಳಿನ ಸಭೆಯಲ್ಲಿ ಒಳ್ಳೆಯ ನಿರ್ಧಾರದ ಜೊತೆಗೆ ಹೋರಾಟ ಮುಕ್ತಾಯ ಆಗದಿದ್ದರೆ, ಮುಂದೆಯೂ ಅದನ್ನು ಚರ್ಚೆಯಲ್ಲಿ ಸೇರಿಸಿಕೊಳ್ಳುತ್ತೇವೆ, ಎಸ್‌ಕೆಎಂ ಇಲ್ಲಿನ ರೈತರು ಮತ್ತು ಸಂಘಟನೆಗಳೂ ಏನು ನಿರ್ಧಾರ ಕೈಗೊಂಡರೂ ಅದರ ಜೊತೆಗಿರುತ್ತದೆ” ಎಂದರು.

ರಾಷ್ಟ್ರೀಯ ರೈತ ನಾಯಕರಾದ ವಿಜು ಕೃಷ್ಣನ್‌ ಮಾತನಾಡಿ, “ವಿರೋಧ ಪಕ್ಷದ ನಾಯಕರಾಗಿದ್ದಾಗ ಸಿದ್ಧರಾಮಯ್ಯ ಅವರು ರೈತರ ಪರವಾಗಿದ್ದರು, ಈಗ ಸರ್ಕಾರದಲ್ಲಿ ಇರುವಾಗಲೂ ಅವರು ರೈತರೊಂದಿಗೆ ಇರಬೇಕೆಂದು ನಾವು ಆಶಿಸುತ್ತೇವೆ. ನಾಳೆಯ ಸಭೆಯಲ್ಲಿ ಮುಖ್ಯಮಂತ್ರಿಗಳು ರೈತಪರ ನಿಲುವನ್ನು ಕೈಗೊಳ್ಳುತ್ತಾರೆ ಎಂದು ಆಶಿಸುತ್ತೇವೆ. ಆದರೆ, ಒಂದು ವೇಳೆ ಹಾಗೆ ಆಗದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರವಾಗಿ ಮುಂದುವರೆಸುತ್ತೇವೆ, ಜುಲೈ 9ರಂದು ದೇಶಮಟ್ಟದ ಕಾರ್ಮಿಕರ ಸಾರ್ವತ್ರಿಕ ಮುಷ್ಕರ ಇದೆ, ಅದರಲ್ಲೂ ನಾವು ಈ ಹೋರಾಟವನ್ನು ಬೆಂಬಲಿಸುತ್ತೇವೆ” ಎಂದು ಹೇಳಿದರು.

“ಈ ಹಿಂದೆ ಕೇಂದ್ರದಲ್ಲೂ ಒಬ್ಬರು ಪ್ರಧಾನ ಮಂತ್ರಿಗಳಿದ್ದರು, ರೈತರ ಹೋರಾಟವನ್ನು ಕಡೆಗಣಿಸಿದರು. ಆದರೆ, ನಿರಂತರವಾಗಿ 380 ದಿನಗಳ ಕಾಲ ಹೋರಾಟ ನಡೆಸಿದ ರೈತರು, ಚಳಿಗಾಲದಲ್ಲೂ ಬಿರುಗಾಳಿಯಲ್ಲೂ ಮಳೆಗಾಲದಲ್ಲೂ ಹೋರಾಟ ಮುಂದುವರೆಸಿದರು. 736 ರೈತರು ಪ್ರಾಣ ಕಳೆದುಕೊಂಡರೂ ಹೋರಾಟ ನಿಲ್ಲಲಿಲ್ಲ. ನಿಜವಾದ ರೈತ ಹೋರಾಟ ಅಂದರೆ ಹಾಗಿರುತ್ತದೆ. ಇಲ್ಲಿ ಈಗಾಗಲೇ ಸಾವಿರದಿನ್ನೂರು ದಿನ ಇಲ್ಲಿ ದೇವನಹಳ್ಳಿಯ ಹೋರಾಟ ನಡೆದಿದೆ, ಈಗ ಅವರಿಗೆ ಎಲ್ಲ ಸಂಘಟನೆಗಳ ಬೆಂಬಲವಿದೆ, ಎಷ್ಟು ದಿನಗಳಾದರೂ ಹೋರಾಟ ಗೆಲುವು ಸಾಧಿಸುವ ತನಕ ನಿಲ್ಲದು” ಎಂದು ವರದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ ಹೇಳಿದರು.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಡಾ. ದರ್ಶನ್‌ ಪಾಲ್‌ ಮತ್ತು ಯುಧ್‌ವೀರ್‌ ಸಿಂಗ್‌, “ಪಾರ್ಲಿಮೆಂಟಿನಲ್ಲಿ ತೆಗೆದುಕೊಂಡ ಮೂರು ಕರಾಳ ಕಾಯ್ದೆಗಳನ್ನು ಪಾರ್ಲಿಮೆಂಟಿನಲ್ಲೇ ವಾಪಾಸ್‌ ಪಡೆದುಕೊಳ್ಳುವಂತಹ ಒತ್ತಡವನ್ನು ರೈತಾಂದೋಲನ ಹೇರಿತು. ಈಗ ಕೈಗಾರಿಕಾ ಸಚಿವರು ಒಂದು ನಿರ್ಧಾರ ಕೈಗೊಂಡಿದ್ದಾರೆಂದರೆ ಅವರು ಅದನ್ನು ವಾಪಾಸ್‌ ಪಡೆಯಬಾರದೆಂದೇನೂ ಇಲ್ಲ, ಅಲ್ಲಿಯವರೆಗೆ ಹೋರಾಟ ನಡೆದಾಗ ರಾಜ್ಯ ಸಚಿವ ಸಂಪುಟ ತನ್ನ ನಿರ್ಧಾರ ಬದಲಿಸಬೇಕಾಗುತ್ತದೆ” ಎಂದರು.

“2013ರ ಭೂಸ್ವಾಧೀನ ಕಾಯ್ದೆಯು ರೈತರ ಒಪ್ಪಿಗೆಯಿಲ್ಲದೆ ಭೂಮಿ ರೈತರಿಂದ ಕಸಿಯಲು ಸಾಧ್ಯವಿಲ್ಲ, 80% ರೈತರು ಒಪ್ಪಿದರೆ ಮಾತ್ರ ಮುಂದುವರೆಯಬಹುದು. ಆದರೆ, ಇಲ್ಲಿ ಪ್ರಶ್ನೆಯಿರುವುದು ಇದನ್ನು ಎಷ್ಟರಮಟ್ಟಿಗೆ ಪಾಲಿಸಲಾಗುತ್ತದೆ ಎಂಬುದು, ಕಾನೂನುಗಳೇನೂ ಕಲ್ಲಿನ ಮೇಲೆ ಬರೆಯಲ್ಪಟ್ಟಿಲ್ಲ ಬದಲಿಸಲು ಆಗುವುದಿಲ್ಲ ಎನ್ನಲು, ಸಾರ್ವಜನಿಕರ ಹಿತಾಸಕ್ತಿಗೆ ವಿರುದ್ಧವಾಗಿದ್ದರೆ ಬದಲಿಸಬೇಕು” ಎಂದರು.

“ಮಧ್ಯಪ್ರದೇಶದ ರಾಯಗಢದಲ್ಲಿ ಎಸ್‌ಇಜಡ್‌ ಗೆ ಭೂಮಿ ಪಡೆಯುವ ಸಂಧರ್ಭದಲ್ಲಿ ಅಲ್ಲಿದ್ದ ಕಾಂಗ್ರೆಸ್‌ ಸರ್ಕಾರ ಜನಾಭಿಪ್ರಾಯ ಸಂಗ್ರಹ ಮಾಡಿತು, ಆಗ ಶೇ.90ರಷ್ಟು ರೈತರು ಭೂಮಿ ಕೊಡುವುದಿಲ್ಲ ಎಂದಾಗ ಆ ಯೋಜನೆ ರದ್ದಾಯಿತು. ಅದೇ ಮಾದರಿ ಇಲ್ಲಿಯೂ ಜಾರಿಯಾಗಲಿ, ಈ ಸರ್ಕಾರಗಳು ರೈತರ ಓಟಿನಿಂದ ರಚನೆಯಾಗಿವೆ, ಕಾರ್ಪೊರೇಟ್‌ಗಳ ಓಟಿನಿಂದಲ್ಲ, ಯಾವುದಾದರೂ ಸರ್ಕಾರಕ್ಕೆ ಧೈರ್ಯವಿದ್ದರೆ ಅವರು ಹೇಳಿಬಿಡಲಿ, ರೈತರ ಓಟು ನಮಗೆ ಬೇಕಾಗಿಲ್ಲ ಎಂದು” ಎಂದು ಡಾ. ಸುನಿಲಮ್‌ ಸವಾಲು ಹಾಕಿದರು.

ಪತ್ರಿಕಾ ಗೋಷ್ಟಿಯಲ್ಲಿ ಹಿರಿಯ ಹೋರಾಟಗಾರರಾದ ಎಸ್.ಆರ್.ಹಿರೇಮಠ್‌ ಮಾತನಾಡಿದರು. “ಬಹಳ ಗೌರವ ಮತ್ತು ನಂಬಿಕೆಯಿಂದ ಈ ಸಭೆಗೆ ಹೋಗುತ್ತಿದ್ದೇವೆ, ಇದು ಸಕಾರಾತ್ಮಕ ಫಲಿತ ಕಾಣಬೇಕು, ಇಲ್ಲದಿದ್ದರೆ ಇದರ ರಾಜಕೀಯ ಪರಿಣಾಮಗಳು ದೀರ್ಘಕಾಲಿಕವಾಗಿರುತ್ತವೆ” ಎಂದು ಸರ್ಕಾರಕ್ಕೆ ಸಂದೇಶ ನೀಡಿದರು.

ದೇವನಹಳ್ಳಿ ರೈತ ಹೋರಾಟದ ಪರಿಚಯ ನೀಡುವ ಉದ್ದೇಶದಿಂದ ಪತ್ರಕರ್ತ ರವಿಕುಮಾರ್‌ ಈಚಲಮರ ಅವರು ಬರೆದಿರುವ ʼಪ್ರಾಣ ಹೋದರೂ ಭೂಮಿ ಕೊಡೆವುʼ ಕಿರುಪುಸ್ತಕವನ್ನು ಸಾರ್ವಜನಿಕರ ಓದಿಗೆ ನೀಡಿದರು.

ಸಂಯುಕ್ತ ಕಿಸಾನ್‌ ಮೋರ್ಚಾದ ರಾಷ್ಟ್ರೀಯ ನಾಯಕರುಗಳಾದ ದರ್ಶನ್‌ ಪಾಲ್‌, ರಾಕೇಶ್‌ ಟಿಕಾಯತ್‌, ಯುಧ್‌ವೀರ್‌ ಸಿಂಗ್‌, ವಿಜು ಕೃಷ್ಣನ್‌, ಡಾ. ಸುನಿಲಮ್‌ ಮತ್ತು ಕರ್ನಾಟಕದ ಜನಚಳುವಳಿಗಳ ಐಕ್ಯ ವೇದಿಕೆಯಾದ ಸಂಯುಕ್ತ ಹೋರಾಟ ಕರ್ನಾಟಕದ ಪ್ರತಿನಿಧಿಗಳಾದ ಎಚ್ .ಎಂ.ಬಸವರಾಜಪ್ಪ, ಚುಕ್ಕಿ ನಂಜುಂಡಸ್ವಾಮಿ, ಟಿ. ಯಶವಂತ್‌ ಮತ್ತಯ ಸಾಮಾಜಿಕ ಹೋರಾಟಗಾರರರಾದ ಎಸ್‌.ಆರ್.ಹಿರೇಮಠ್‌ ಅವರುಗಳು ಪತ್ರಕರ್ತನ್ನು ಉದ್ದೇಶಿಸಿ ಮಾತನಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...