ಸಚಿವ ಈಶ್ವರಪ್ಪ ವಿರುದ್ದ ಲಂಚ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, “ಮೃತ ಸಂತೋಷ್ ಬರೆದಿರುವ ಡೆತ್ನೋಟ್ ಕುರಿತು ನನಗೆ ಯಾವುದೆ ಮಾಹಿತಿ ಇಲ್ಲ. ಬಹುಷಃ ಅದು ಡೆತ್ನೋಟ್ ಅಲ್ಲ ಎಂದೆನಿಸುತ್ತದೆ” ಎಂದು ಹೇಳಿದ್ದಾರೆ.
ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಅವರು ಸಚಿವ ಕೆ.ಎಸ್. ಈಶ್ವರಪ್ಪ ಅವರು 40% ಕಮೀಷನ್ಗೆ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿಗೆ ಇತ್ತೀಚೆಗೆ ಪತ್ರ ಬರೆದಿದ್ದರು. ಇದು ರಾಜ್ಯದ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಇದೀಗ ಸಂತೋಷ್ ಅವರು ಉಡುಪಿಯ ಲಾಡ್ಜ್ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮಂಗಳವಾರ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ನಿನ್ನೆ ತಡರಾತ್ರಿಯೆ ಅವರು ಆತ್ಮಹತ್ಯೆ ನೋಟ್ ಬರೆದು ಅದನ್ನು ಮಾಧ್ಯಮ ಪತ್ರಿನಿಧಿಗಳಿಗೆ ಕಳುಹಿಸಿದ್ದರು ಎಂದು ವರದಿಯಾಗಿದ್ದು, ಈ ಡೆತ್ ನೋಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಪತ್ರದಲ್ಲಿ ಅವರು ನೇರವಾಗಿಯೆ, “ನನ್ನ ಸಾವಿಗೆ ಈಶ್ವರಪ್ಪ ಕಾರಣ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: 40% ಕಮಿಷನ್: ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ
ಇದರ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ, “ಡೆತ್ ನೋಟ್ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಡೆತ್ ನೋಟ್ ಇದೆಯೋ ಇಲ್ಲವೊ ಮಾಹಿತಿ ಪಡೆದುಕೊಳ್ಳುತ್ತೇನೆ. ಬಹುಶಃ ಅದು ಡೆತ್ನೋಟ್ ಅಲ್ಲ ಎನ್ನಿಸುತ್ತದೆ” ಎಂದು ಹೇಳಿದ್ದಾರೆ.
“ಆರೋಪ ಮಾಡೋದು, ಸಾಬೀತು ಮಾಡೋದು, ಎಲ್ಲದಕ್ಕೂ ವಿಧಾನಗಳಿವೆ. ಆತ್ಮಹತ್ಯೆಗೆ ಕಾರಣವೇನು ಎನ್ನುವ ವಿವರ ಮೊದಲು ಪಡೆದುಕೊಳ್ಳುತ್ತೇನೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತದೆ” ಎಂದು ಆರಗ ಅವರು ಹೇಳಿದ್ದಾರೆ.
ಸಂತೋಷ್ ಪಾಟಿಲ್ ಅವರು ಬರೆದಿದ್ದಾರೆ ಎಂದು ಎನ್ನಲಾಗಿರುವ ಪತ್ರದಲ್ಲಿ, “ನನ್ನ ಸಾವಿಗೆ ನೇರ ಕಾರಣ ಸಚಿವ ಕೆ.ಎಸ್. ಈಶ್ವರಪ್ಪ. ಅವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ” ಎಂದು ಬರೆಯಲಾಗಿದೆ.
“ನನ್ನ ಹೆಂಡತಿ ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಹಾಗೆ ಅವರಿವರಿಂದನೆ ಎಲ್ಲರು ಸಹಾಯ ಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು” ಎಂದು ಬರೆದಿದ್ದಾರೆ.
ಪತ್ರದಲ್ಲಿ ಅವರು “ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ ಮತ್ತು ಪ್ರಶಾಂತ್ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕಳೆದುಕೊಂಡ ಬಂದಿರುತ್ತೆನೆ ಅಷ್ಟೆ. ಅವರಿಗೆ ನನ್ನ ಸಾವಿನ ಬಗ್ಗೆ ಯಾವುದೆ ಸಂಬಂಧ ಇರುವುದಿಲ್ಲ” ಎಂದು ಪತ್ರವನ್ನು ಕೊನೆಗೊಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಇದನ್ನೂ ಓದಿ: ಸಚಿವ ಈಶ್ವರಪ್ಪ ವಿರುದ್ಧ 40% ಕಮೀಷನ್ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಉಡುಪಿ ಲಾಡ್ಜ್ನಲ್ಲಿ ಶವವಾಗಿ ಪತ್ತೆ



ಮಾಹಿತಿರಹಿತ ಸಚಿವ