HomeಅಂಕಣಗಳುKarnataka SIRವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

- Advertisement -
- Advertisement -

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ರಾಮದಾಸ್ ಅವರ ಹೆಸರನ್ನು ಕೈಬಿಟ್ಟಿರುವುದನ್ನು ಉಲ್ಲೇಖಿಸಿ, ಪೊಲೀಸರು ನಕಾರಾತ್ಮಕ ವರದಿ (Adverse Report) ನೀಡಿದ್ದಾರೆ ಎನ್ನಲಾಗಿದೆ. ಈ ಕಾರಣದಿಂದಾಗಿ ಅವರ ಪಾಸ್‌ಪೋರ್ಟ್ ನವೀಕರಣ ವಿಳಂಬವಾಗುತ್ತಿದ್ದು, ಇದು ಪತ್ರಕರ್ತರು ಮತ್ತು ರಾಜಕೀಯ ನಾಯಕರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

“ಖ್ಯಾತ ಹಿರಿಯ ಪತ್ರಕರ್ತ ಆರ್. ರಾಜಗೋಪಾಲ್ ಅವರಿಗೆ ಪಾಸ್‌ಪೋರ್ಟ್ ನವೀಕರಣವನ್ನು ನಿರಾಕರಿಸಿರುವ ವರದಿಗಳ ಹಿನ್ನೆಲೆಯಲ್ಲಿ, ತಕ್ಷಣವೇ ಮಧ್ಯಪ್ರವೇಶಿಸಬೇಕೆಂದು ಕೋರಿ ನಾನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇನೆ” ಎಂದು ಕೇರಳ ಸಿಎಂ ಸತೀಶನ್ ತಮ್ಮ ‘X’ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಬರೆದಿರುವ ಪತ್ರದಲ್ಲಿ, ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವುದರ ವಿರುದ್ಧ ಈಗಾಗಲೇ ಮೇಲ್ಮನವಿ ಸಲ್ಲಿಸಲಾಗಿದ್ದರೂ, ಪೊಲೀಸರು ಅದನ್ನೇ ಆಧಾರವಾಗಿಟ್ಟುಕೊಂಡು ನಕಾರಾತ್ಮಕ ವರದಿ ನೀಡಿರುವುದು ಸರಿಯಲ್ಲ ಎಂದಿದ್ದಾರೆ.

“ವಿಶೇಷ ತೀವ್ರ ಪರಿಷ್ಕರಣೆಯ ಸಂದರ್ಭದಲ್ಲಿ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದ್ದನ್ನೇ ಆಧಾರವಾಗಿಟ್ಟುಕೊಂಡು ಈ ನಕಾರಾತ್ಮಕ ವರದಿ ನೀಡಲಾಗಿದೆ ಎಂದು ನನಗೆ ತಿಳಿದುಬಂದಿದೆ. ಈ ಮತದಾರರ ಪಟ್ಟಿಯ ಸಮಸ್ಯೆಯನ್ನು ಈಗಾಗಲೇ ಸೂಕ್ತ ಮೇಲ್ಮನವಿ ಪ್ರಕ್ರಿಯೆಯ ಮೂಲಕ ಪರಿಹರಿಸಲಾಗುತ್ತಿದೆ. ಆದರೂ, ಪೊಲೀಸರ ಈ ವರದಿಯಿಂದಾಗಿ ಅವರ ಪಾಸ್‌ಪೋರ್ಟ್ ನವೀಕರಣ ವಿಳಂಬವಾಗಿದೆ,” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜಗೋಪಾಲ್ ರಾಮದಾಸ್ ಅವರು ಕಳೆದ ಮೂರು ದಶಕಗಳಿಂದ ಕೋಲ್ಕತ್ತಾದಲ್ಲಿ ವಾಸಿಸುತ್ತಾ ಕೆಲಸ ಮಾಡುತ್ತಿರುವ ಒಬ್ಬ ಹೆಸರಾಂತ ಮಲಯಾಳಿ ಪತ್ರಕರ್ತರಾಗಿದ್ದಾರೆ ಎಂದು ಬಣ್ಣಿಸಿದ ಸತೀಶನ್, ಭಾರತೀಯ ಪತ್ರಿಕೋದ್ಯಮಕ್ಕೆ ಅವರ ಕೊಡುಗೆ ಮತ್ತು ಅವರ ಕುಟುಂಬದ ಸಾರ್ವಜನಿಕ ಸೇವೆಯ ಪರಂಪರೆಯನ್ನು ಎತ್ತಿ ತೋರಿಸಿದ್ದಾರೆ. “ಇದನ್ನು ಗಮನದಲ್ಲಿಟ್ಟುಕೊಂಡು, ತಾವು ವೈಯಕ್ತಿಕವಾಗಿ ಈ ವಿಷಯವನ್ನು ತುರ್ತಾಗಿ ಪರಿಶೀಲಿಸಬೇಕೆಂದು ವಿನಂತಿಸುತ್ತೇನೆ,” ಎಂದು ಕೇರಳ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.

ರಾಜಕೀಯ ದ್ವೇಷದ ಆರೋಪ ಮಾಡಿದ ಪಿಣರಾಯಿ ವಿಜಯನ್

ಈ ವಿವಾದವು ಕೇರಳದ ವಿರೋಧ ಪಕ್ಷದ ನಾಯಕ ಪಿಣರಾಯಿ ವಿಜಯನ್ ಅವರಿಂದಲೂ ತೀವ್ರ ರಾಜಕೀಯ ಪ್ರತಿಕ್ರಿಯೆಯನ್ನು ಸೆಳೆದಿದೆ. ಪಾಸ್‌ಪೋರ್ಟ್ ನವೀಕರಣವನ್ನು ನಿರಾಕರಿಸಿರುವುದನ್ನು “ದಿಗ್ಭ್ರಮೆಗೊಳಿಸುವಂತಹದ್ದು” ಎಂದು ಕರೆದಿರುವ ಅವರು, ಇದು ಅಧಿಕಾರಿಗಳ ರಾಜಕೀಯ ದ್ವೇಷದ ಕ್ರಮ ಎಂದು ಆರೋಪಿಸಿದ್ದಾರೆ.

ಪಿಣರಾಯಿ ವಿಜಯನ್ ಅವರ ಪ್ರಕಾರ, ಮಾರ್ಚ್ ತಿಂಗಳಲ್ಲಿ ಕೋಲ್ಕತ್ತಾದ ಬಾಲಿಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಲ್ಲಿ ಹೆಸರು ಕಳೆದುಕೊಂಡ ಸುಮಾರು 27 ಲಕ್ಷ ಮತದಾರರಲ್ಲಿ ರಾಮದಾಸ್ ಕೂಡ ಒಬ್ಬರಾಗಿದ್ದಾರೆ. ಈ ಹೆಸರು ಕೈಬಿಟ್ಟಿರುವುದನ್ನು ಹಿರಿಯ ಪತ್ರಕರ್ತರು ಈಗಾಗಲೇ ನ್ಯಾಯಾಧೀಕರಣದ (Tribunal) ಮುಂದೆ ಪ್ರಶ್ನಿಸಿದ್ದಾರೆ.

ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ (RPO) ಹಾಜರಾಗಲು ಕೋರಿದ್ದರೂ, ರಾಮದಾಸ್ ಅವರಿಗೆ ಜುಲೈ 17 ರಂದು ಮಾತ್ರ ಅಪಾಯಿಂಟ್‌ಮೆಂಟ್ ನೀಡಲಾಗಿದೆ. ಇದರಿಂದಾಗಿ ಅವರು ಕ್ಯಾಲಿಫೋರ್ನಿಯಾದಲ್ಲಿ ನಡೆಯಲಿರುವ ತಮ್ಮ ಮಗಳ ಮದುವೆಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ವಿಜಯನ್ ಆತಂಕ ವ್ಯಕ್ತಪಡಿಸಿದ್ದಾರೆ.

“ಜಾಗತಿಕವಾಗಿ ಪ್ರಸಿದ್ಧರಾದ ಒಬ್ಬ ಸಂಪಾದಕರ ಪರಿಸ್ಥಿತಿಯೇ ಹೀಗಾದರೆ, ಇನ್ನು ಈ ದೇಶದ ಸಾಮಾನ್ಯ ನಾಗರಿಕರ ಸ್ಥಿತಿ ಏನಾಗಬೇಡ?” ಎಂದು ವಿಜಯನ್ ಪ್ರಶ್ನಿಸಿದ್ದಾರೆ.

ಬಿಜೆಪಿಯನ್ನು ಸತತವಾಗಿ ಟೀಕಿಸುತ್ತಿದ್ದ ಕಾರಣಕ್ಕಾಗಿಯೇ ರಾಮದಾಸ್ ಅವರನ್ನು ಗುರಿ ಮಾಡಲಾಗಿದೆ ಎಂದು ಆರೋಪಿಸಿದ ವಿಜಯನ್, ನಾಗರಿಕರನ್ನು ವ್ಯವಸ್ಥಿತವಾಗಿ ಹೊರಗಿಡಲು ಅಧಿಕಾರಿಗಳು ಈ SIR ಪ್ರಕ್ರಿಯೆಯನ್ನು ಒಂದು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.

“ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ವಿಭಜಕ ಹಿಂದುತ್ವ ರಾಜಕೀಯದ ಅಜೆಂಡಾವನ್ನು ಮುನ್ನಡೆಸುವ ಸಾಧನವಾಗಿ ಮಾರ್ಪಟ್ಟಿದೆ. ಈ ಪ್ರಕ್ರಿಯೆಯ ಆಧಾರದ ಮೇಲೆ ನಾಗರಿಕತ್ವವನ್ನು ನಿರ್ಧರಿಸದಂತೆ ನೋಡಿಕೊಳ್ಳಬೇಕು. ನಾಗರಿಕರ ಬದುಕು ಮತ್ತು ಹಕ್ಕುಗಳನ್ನು ತುಳಿದುಹಾಕಿದಾಗ, ಈ ದೇಶವನ್ನು ಪ್ರೀತಿಸುವವರು ಸುಮ್ಮನೆ ಕೂರಲು ಸಾಧ್ಯವಿಲ್ಲ,” ಎಂದು ಅವರು ಹೇಳಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತಾದ ಚರ್ಚೆಗಳು ಈಗಾಗಲೇ ದೇಶಾದ್ಯಂತ ನಡೆಯುತ್ತಿದ್ದು, ಈಗ ಈ ಪಾಸ್‌ಪೋರ್ಟ್ ವಿವಾದವು ಅದಕ್ಕೆ ಮತ್ತೊಂದು ರಾಜಕೀಯ ಆಯಾಮವನ್ನು ನೀಡಿದೆ. ವಿರೋಧ ಪಕ್ಷದ ನಾಯಕರು ಇದರ ಅನುಷ್ಠಾನ ಮತ್ತು ನಾಗರಿಕರ ಹಕ್ಕುಗಳ ಮೇಲಾಗುತ್ತಿರುವ ಪರಿಣಾಮಗಳ ಬಗ್ಗೆ ತೀವ್ರ ಕಳವಳ ವ್ಯಕ್ಪಡಿಸಿದ್ದಾರೆ.

ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ತೀವ್ರ ಖಂಡನೆ

ಈ ನಡುವೆ, ಟ್ರಿಬ್ಯುನಲ್‌ಗಳ ಮುಂದೆ ಬಾಕಿ ಇರುವ ಇಂತಹ ಅಪೀಲುಗಳ ವಿಚಾರಣೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಕಲ್ಕತ್ತಾ ಹೈಕೋರ್ಟ್‌ಗೆ ಸೂಚಿಸಿದೆ. ಭಾನುವಾರ ಈ ಕುರಿತು ಪ್ರಕಟಣೆ ಹೊರಡಿಸಿರುವ ದೇಶದ ಪ್ರತಿಷ್ಠಿತ ‘ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ’ ಸಂಸ್ಥೆಯು, “ಯಾರು ಭಾರತದ ನಾಗರಿಕರು ಮತ್ತು ಯಾರು ಅಲ್ಲ ಎಂಬುದನ್ನು ನಿರ್ಧರಿಸುವ ಇಂತಹ ಅಧಿಕಾರಿಶಾಹಿ ಧೋರಣೆ”ಯನ್ನು ತೀವ್ರವಾಗಿ ಖಂಡಿಸಿದೆ.

“ಚುನಾವಣಾ ಆಯೋಗ ನಡೆಸುತ್ತಿರುವ ಈ ವಿಶೇಷ ತೀವ್ರ ಪರಿಷ್ಕರಣೆಯಿಂದಾಗಿ (SIR) ದೇಶದ ಲಕ್ಷಾಂತರ ಭಾರತೀಯರು ಎಂತಹ ನರಕಯಾತನೆ ಅನುಭವಿಸುತ್ತಿದ್ದಾರೆ ಎಂಬುದಕ್ಕೆ ರಾಜಗೋಪಾಲ್ ಅವರ ಪರಿಸ್ಥಿತಿಯೇ ಸಾಕ್ಷಿ. ದೇಶವೇ ಗುರುತಿಸುವ ಒಬ್ಬ ಪ್ರಮುಖ ಸಾರ್ವಜನಿಕ ವ್ಯಕ್ತಿಗೇ ಇಂತಹ ಪರಿಸ್ಥಿತಿ ಎದುರಾಗಬೇಕಾದರೆ, ಇನ್ನು ಅಧಿಕಾರಿಗಳ ಒಂದೇ ಒಂದು ಪೆನ್ನಿನ ಗೀಟಿಗೆ ವೋಟಿನ ಹಕ್ಕನ್ನು ಕಳೆದುಕೊಂಡು, ತಮ್ಮ ನೋವನ್ನು ಹೇಳಿಕೊಳ್ಳಲು ಧ್ವನಿಯೇ ಇಲ್ಲದ ಸಾಮಾನ್ಯ ಬಡ ಜನರ ಗತಿ ಏನಾಗಿರಬೇಡ ಎಂಬುದನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ,” ಎಂದು ಎಡಿಟರ್ಸ್ ಗಿಲ್ಡ್ ಆಕ್ರೋಶ ವ್ಯಕ್ತಪಡಿಸಿದೆ.

ಕೋಲ್ಕತ್ತಾದ ಬ್ಯಾಲಿಗಂಜ್ ವಿಧಾನಸಭಾ ಕ್ಷೇತ್ರದಿಂದ ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ ಎಂದು ರಾಜಗೋಪಾಲ್ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ನೋಟ್‌ನಲ್ಲಿ ಬಹಿರಂಗಪಡಿಸಿದ್ದರು. ಬಂಗಾಳ ವಿಧಾನಸಭೆ ಚುನಾವಣೆಗೆ ಮುನ್ನ ಹೆಸರು ಕಳೆದುಕೊಂಡಿರುವ ಸುಮಾರು 27 ಲಕ್ಷ ಮತದಾರರ ಪ್ರಕರಣಗಳನ್ನು ಇತ್ಯರ್ಥಪಡಿಸಲು ರಚಿಸಲಾಗಿರುವ ಅಪೀಲು ಟ್ರಿಬ್ಯುನಲ್ ಮುಂದೆ ಸದ್ಯ ಇವರ ಅರ್ಜಿಯೂ ಬಾಕಿ ಇದೆ.

ಕಳೆದ ಮೇ ತಿಂಗಳಲ್ಲಿ ಈ ಕುರಿತು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, “ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸುವ ಅರ್ಹತೆಯನ್ನು ನಿರ್ಧರಿಸಲು ಚುನಾವಣಾ ಆಯೋಗವು ಒಬ್ಬ ವ್ಯಕ್ತಿಯ ಪೌರತ್ವದ ಬಗ್ಗೆ ಸೀಮಿತ ವಿಚಾರಣೆ ನಡೆಸಬಹುದು. ಆದರೆ, ಆ ತನಿಖೆಯನ್ನೇ ಆ ವ್ಯಕ್ತಿಯ ಪೌರತ್ವದ ಅಂತಿಮ ನಿರ್ಧಾರ ಎಂದು ಪರಿಗಣಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟವಾಗಿ ಹೇಳಿತ್ತು.

ಆದರೆ, ವಾಸ್ತವದಲ್ಲಿ ಕೋರ್ಟ್ ಆದೇಶ ಪಾಲನೆಯಾಗುತ್ತಿಲ್ಲ. ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ (SIR) ಪ್ರಕ್ರಿಯೆಯಡಿ ಹೆಸರು ಕಳೆದುಕೊಂಡ ಲಕ್ಷಾಂತರ ಜನರಿಗೆ ಇವತ್ತು ಬ್ಯಾಂಕ್ ಖಾತೆ, ಪಡಿತರ ಸೌಲಭ್ಯ ಸೇರಿದಂತೆ ಎಲ್ಲಾ ಸರ್ಕಾರಿ ಯೋಜನೆಗಳನ್ನು ನಿರಾಕರಿಸಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ, ಬಂಗಾಳದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರವು, ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆದ ಮಹಿಳೆಯರಿಗೆ ಮಾಸಿಕ 3,000 ರೂಪಾಯಿ ನೀಡುವ ಕಲ್ಯಾಣ ಯೋಜನೆಯ ಲಾಭ ಸಿಗುವುದಿಲ್ಲ ಎಂದು ಈಗಾಗಲೇ ಘೋಷಿಸಿದೆ. ವೋಟರ್ ಲಿಸ್ಟ್‌ನಿಂದ ಹೆಸರು ತೆಗೆದ ನೆಪದಲ್ಲಿ ಬಡವರ ಬದುಕುವ ಹಕ್ಕನ್ನೇ ಕಸಿದುಕೊಳ್ಳಲಾಗುತ್ತಿದೆ ಎಂಬುದಕ್ಕೆ ಈ ಹಿರಿಯ ಪತ್ರಕರ್ತನ ಕಥೆಯೇ ಸಾಕ್ಷಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...