ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧದ ಸಾಮಾಜಿಕ ಮಾಧ್ಯಮಗಳಲ್ಲಿನ ವಿವಾದಾತ್ಮಕ ಪೋಸ್ಟ್ಗಳನ್ನು 24 ಗಂಟೆಯೊಳಗೆ ಡಿಲೀಟ್ ಮಾಡುವಂತೆ ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೆ ಸುಪ್ರೀಂಕೋರ್ಟ್ ಗುರುವಾರ ಸೂಚನೆ ನೀಡಿದೆ.
ರೋಹಿಣಿ ಸಿಂಧೂರಿ ತನ್ನ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಡಿ. ರೂಪಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕಾ ಮತ್ತು ಪಂಕಜ್ ಮಿಥಾಲ್ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ಈ ನಿರ್ದೇಶನ ನೀಡಿದೆ.
ಒಂದು ವೇಳೆ ಎಲ್ಲಾ ಪೋಸ್ಟ್ಗಳನ್ನು ಡಿಲೀಟ್ ಮಾಡಲು ಸಾಧ್ಯವಾಗದಿದ್ದರೆ, ಕನಿಷ್ಠ ಪಕ್ಷ ನಾನು ರೋಹಿಣಿ ಸಿಂಧೂರಿ ವಿರುದ್ಧದ ಎಲ್ಲಾ ಹೇಳಿಕೆಗಳನ್ನು ಹಿಂಪಡೆದಿದ್ದೇನೆ ಎಂದು ಪೋಸ್ಟ್ ಮಾಡಬೇಕು ಎಂದು ಸೂಚಿಸಿದೆ.
ಇಬ್ಬರು ಅಧಿಕಾರಿಗಳು ಮಧ್ಯಸ್ಥಿಕೆ ಮೂಲಕ ವಿವಾದ ಬಗೆಹರಿಸಿಕೊಳ್ಳುವಂತೆ ಸುಪ್ರೀಂ ಕೊರ್ಟ್ ಸೂಚನೆ ನೀಡಿತ್ತು. ಮಧ್ಯಸ್ಥಿಕೆ ವಿಫಲವಾದ ಹಿನ್ನೆಲೆ ಇಬ್ಬರೂ ಗುರುವಾರ ಕೋರ್ಟ್ಗೆ ಹಾಜರಾಗಿದ್ದರು.
ಕ್ರಿಮಿನಲ್ ಪ್ರಕರಣವನ್ನು ಹಿಂಪಡೆಯಲು ರೋಹಿಣಿ ಸಿಂಧೂರಿ ಒಪ್ಪಿಲ್ಲ. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಮೂರ್ತಿ ಎಸ್. ಓಕಾ ಅವರು, ಐಎಎಸ್-ಐಪಿಎಸ್ ಅಧಿಕಾರಿಗಳು ಹೀಗೆ ಕಚ್ಚಾಟ ನಡೆಸಿದರೆ ಆಡಳಿತ ಹೇಗೆ ನಡೆಯುತ್ತದೆ? ಎಂದು ಪ್ರಶ್ನಿಸಿದ್ದಾರೆ.
ಏನಿದು ಪ್ರಕರಣ?
2023ರ ಫೆಬ್ರವರಿ 18 ಮತ್ತು 19 ರಂದು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ರೋಹಿಣಿ ಅವರ ಕೆಲವೊಂದು ಖಾಸಗಿ ಫೋಟೋಗಳನ್ನು ಹಂಚಿಕೊಂಡಿದ್ದರು.
ಇದರಿಂದ ತನ್ನ ವ್ಯಕ್ತಿತ್ವಕ್ಕೆ ರೂಪಾ ಧಕ್ಕೆ ತಂದಿದ್ದಾರೆ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮಾರ್ಚ್ 3ರಂದು ವಿಚಾರಣಾ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ರೂಪಾ ವಿರುದ್ಧ 1 ಕೋಟಿ ರೂ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ದೂರು ಪರಿಗಣಿಸಿದ ಮ್ಯಾಜಸ್ಟ್ರೇಟ್ ನ್ಯಾಯಾಲಯ ಡಿ. ರೂಪಾ ವಿರುದ್ದ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲು ಮಾರ್ಚ್ 24ರಂದು ಆದೇಶಿಸಿತ್ತು. ಈ ಆದೇಶ ಮತ್ತು ಖಾಸಗಿ ದೂರನ್ನು ರದ್ದುಪಡಿಸುವಂತೆ ಕೋರಿ ಡಿ. ರೂಪಾ 2023 ಮೇ 31ರಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಅವರ ಅರ್ಜಿಯನ್ನು ವಜಾ ಮಾಡಿತ್ತು. ಈ ಹಿನ್ನೆಲೆ ರೂಪಾ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಇದನ್ನೂ ಓದಿ: ಸಂಸದೆ ಸ್ಥಾನದಿಂದ ಉಚ್ಛಾಟನೆ: ಇಂದು ಸುಪ್ರೀಂನಲ್ಲಿ ಮಹುವಾ ಅರ್ಜಿ ವಿಚಾರಣೆ